ಕರ್ನಾಟಕ

karnataka

By

Published : Feb 25, 2020, 11:43 PM IST

ETV Bharat / state

ಸಚಿವ ಆನಂದ್ ಸಿಂಗ್ ನಿರಾಳ: ಹೈಕೋರ್ಟ್​ಗೆ ಅರಣ್ಯ ಖಾತೆ ಪ್ರಶ್ನಿಸಿ ಸಲ್ಲಿಸಿದ್ದ ಅರ್ಜಿ ಇತ್ಯರ್ಥ

ಆನಂದ್ ಸಿಂಗ್ ಅವರಿಗೆ ಅರಣ್ಯ ಖಾತೆ ನೀಡಿರುವುದನ್ನು ಪ್ರಶ್ನಿಸಿ ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಹೈಕೋರ್ಟ್ ಇತ್ಯರ್ಥಪಡಿಸಿದ್ದು, ನೂತನ ಸಚಿವರಿಗೆ ರಿಲೀಫ್ ಸಿಕ್ಕಂತಾಗಿದೆ.

high-court
high-court

ಬೆಂಗಳೂರು: ಆನಂದ್ ಸಿಂಗ್ ಅವರಿಗೆ ಅರಣ್ಯ ಖಾತೆ ನೀಡಿರುವುದನ್ನು ಪ್ರಶ್ನಿಸಿ ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಹೈಕೋರ್ಟ್ ಇತ್ಯರ್ಥಪಡಿಸಿದ್ದು, ನೂತನ ಸಚಿವರಿಗೆ ರಿಲೀಫ್ ಸಿಕ್ಕಂತಾಗಿದೆ.

ವಿಜಯನಗರದ ವಕೀಲ ಕೆಬಿ ವಿಜಯಕುಮಾರ್, ಆನಂದ್ ಸಿಂಗ್​ಗೆ ಅರಣ್ಯ ಖಾತೆ ನೀಡಿದ್ದನ್ನು ಪ್ರಶ್ನಿಸಿ ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಮುಖ್ಯ ನ್ಯಾಯಮೂರ್ತಿ ಎ.ಎಸ್ ಓಕ ನೇತೃತ್ವದ ವಿಭಾಗೀಯ ಪೀಠ ವಿಚಾರಣೆ ನಡೆಸಿತು.

ಕೆಲ ಕಾಲ ವಾದ ಆಲಿಸಿದ ಪೀಠ, ಅರ್ಜಿಯಲ್ಲಿನ ಲೋಪ ಕಾರಣಕ್ಕಾಗಿ ವಿಚಾರಣೆ ಮುಂದುವರೆಸಲು ಸಾಧ್ಯವಿಲ್ಲ. ಅರ್ಜಿದಾರರು ಸರ್ಕಾರದ ಮುಖ್ಯ ಕಾರ್ಯದರ್ಶಿಗೆ ಸಚಿವರ ಖಾತೆ ಬದಲಿಸಲು ಕೋರಿದ್ದಾರೆ. ಆದರೆ, ಈ ಅಧಿಕಾರಿಗೆ ಸಚಿವರ ಹುದ್ದೆ ಬದಲಿಸಲು ಅಧಿಕಾರ ಇಲ್ಲ ಎಂದು ತಿಳಿಸಿ ಅರ್ಜಿ ಇತ್ಯರ್ಥಪಡಿಸಿತು.

ಅರ್ಜಿದಾರರು, ಸಚಿವ ಆನಂದ್ ಸಿಂಗ್ ವಿರುದ್ಧ ಅರಣ್ಯ ಇಲಾಖೆಯೇ ಹಲವು ಕ್ರಿಮಿನಲ್ ಪ್ರಕರಣಗಳನ್ನು ದಾಖಲಿಸಿದೆ. ರಾಜ್ಯ ಹೈಕೋರ್ಟ್​ನಲ್ಲಿಯೂ ಕೆಲವು ಅರ್ಜಿಗಳು ವಿಚಾರಣೆ ಹಂತದಲ್ಲಿವೆ. ಅಲ್ಲದೇ ಆನಂದ್ ಸಿಂಗ್ ಕುಟುಂಬ ಗಣಿಗಾರಿಕೆಯಲ್ಲಿ ಭಾಗಿಯಾಗಿದೆ‌ ಎಂದು ಆರೋಪಿಸಿದ್ದರು. ಜತೆಗೆ ನೂತನ ಅರಣ್ಯ ಸಚಿವ ಆನಂದ್ ಸಿಂಗ್ ಇಲಾಖೆಯಲ್ಲಿ ಯಾವುದೇ ಕಾರ್ಯನಿರ್ವಹಿಸದಂತೆ ತಡೆ ನೀಡಬೇಕು. ಸಾರ್ವಜನಿಕ ಹಿತದೃಷ್ಟಿಯಿಂದ ಆನಂದ್ ಸಿಂಗ್ ಅವರನ್ನು ಅರಣ್ಯ ಇಲಾಖೆಗೆ ಸಚಿವರನ್ನಾಗಿ ನೇಮಕ ಮಾಡಿರುವ ಕ್ರಮ ಅನೂರ್ಜಿತಗೊಳಿಸಬೇಕು ಎಂದು ಕೋರಿದ್ದರು.

ಅರ್ಜಿಯಲ್ಲಿ ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ಮತ್ತು ಸಚಿವ ಆನಂದ್ ಸಿಂಗ್ ಅವರನ್ನು ಪ್ರತಿವಾದಿಗಳನ್ನಾಗಿ ಮಾಡಲಾಗಿತ್ತು.

ABOUT THE AUTHOR

...view details