ಬೆಂಗಳೂರು: ಕೇಂದ್ರ ಸರ್ಕಾರದ ಪರಿಸರ ಪರಿಣಾಮ ಅಧ್ಯಯನ 2020 ಕರಡು ಅಧಿಸೂಚನೆಗೆ ಆಕ್ಷೇಪಣೆ ಸಲ್ಲಿಸಲು ಕಾಲಾವಕಾಶ ವಿಸ್ತರಿಸುವಂತೆ ನಿರ್ದೇಶಿಸಲು ಕೋರಿ ಸಲ್ಲಿಸಿರುವ ಅರ್ಜಿ ಸಂಬಂಧ ಹೈಕೋರ್ಟ್ ಕೇಂದ್ರ ಪರಿಸರ ಸಚಿವಾಲಯಕ್ಕೆ ನೋಟಿಸ್ ಜಾರಿ ಮಾಡಿದೆ.
ಲಾಕ್ಡೌನ್ ಸಮಸ್ಯೆಯಿಂದಾಗಿ ಸರ್ಕಾರದ ಕರಡು ಅಧಿಸೂಚನೆಗೆ ಆಕ್ಷೇಪಣೆ ಸಲ್ಲಿಸಲು ಸಾಧ್ಯವಾಗಿರಲಿಲ್ಲ. ಆದ್ದರಿಂದ ಆಕ್ಷೇಪಣೆ ಸಲ್ಲಿಸಲು ಕಾಲಾವಕಾಶ ವಿಸ್ತರಿಸುವಂತೆ ಕೇಂದ್ರ ಸರ್ಕಾರಕ್ಕೆ ನಿರ್ದೇಶಿಸಬೇಕು ಎಂದು ಕೋರಿ ಯುನೈಟೆಡ್ ಮೂವ್ಮೆಂಟ್ ಚಾರಿಟೇಬಲ್ ಅಂಡ್ ವೆಲ್ಫೇರ್ ಟ್ರಸ್ಟ್ ಸಲ್ಲಿಸಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಮುಖ್ಯ ನ್ಯಾಯಮೂರ್ತಿ ಅಭಯ್ ಶ್ರೀನಿವಾಸ್ ಓಕ ನೇತೃತ್ವದ ವಿಭಾಗೀಯ ಪೀಠ ವಿಚಾರಣೆ ನಡೆಸಿತು.
ಕೆಲಕಾಲ ಅರ್ಜಿದಾರರ ಪರ ವಕೀಲ ಪ್ರಿನ್ಸ್ ಐಸಾಕ್ ಅವರ ವಾದ ಆಲಿಸಿದ ಪೀಠ, ಅರ್ಜಿದಾರರ ಕೋರಿಕೆಗೆ ಸಂಬಂಧಿಸಿದಂತೆ ಜುಲೈ 15ರೊಳಗೆ ಅಭಿಪ್ರಾಯ ತಿಳಿಸುವಂತೆ ಕೇಂದ್ರ ಪರಿಸರ ಸಚಿವಾಲಯಕ್ಕೆ ಸೂಚಿಸಿ, ವಿಚಾರಣೆಯನ್ನು ಜುಲೈ 16ಕ್ಕೆ ಮುಂದೂಡಿತು.
ಪ್ರಕರಣದ ಹಿನ್ನೆಲೆ:ಪ್ರಸ್ತುತ ಜಾರಿಯಲ್ಲಿರುವ ಅಭಿವೃದ್ಧಿ ಯೋಜನೆಗಳ ವಿಸ್ತರಣೆ ಮತ್ತು ಹೊಸದಾಗಿ ಕೈಗೊಳ್ಳಲಿರುವ ಯೋಜನೆಗಳಲ್ಲಿ ಕೆಲವೊಂದು ನಿರ್ಬಂಧಗಳನ್ನು ವಿಧಿಸಲು ಮತ್ತು ನಿಷೇಧಿಸಲು ಕೇಂದ್ರ ಸರ್ಕಾರ 'ಪರಿಸರ ಪರಿಣಾಮ ಅಧ್ಯಯನ 2020' ಕರಡು ರೂಪಿಸಿದೆ. ಜತೆಗೆ ಸಾರ್ವಜನಿಕ ಅಭಿಪ್ರಾಯ ಕೋರಿ ಅಧಿಸೂಚನೆ ಹೊರಡಿಸಿದ್ದು, ಅದಕ್ಕಾಗಿ 60 ದಿನಗಳ ಕಾಲಾವಕಾಶ ನೀಡಲಾಗಿದೆ.
ಆದರೆ ಕರಡು ಪ್ರತಿಯಲ್ಲಿ 2006ರ ಸೆಪ್ಟೆಂಬರ್ 14ರಂದು ಹೊರಡಿಸಿದ್ದ ಪರಿಸರ ಪರಿಣಾಮ ಅಧ್ಯಯನ ಅಂಶಗಳನ್ನು ಕೈಬಿಡಲಾಗಿದೆ ಎಂದು ಆರೋಪಿಸಿರುವ ಅರ್ಜಿದಾರರು, ಆಕ್ಷೇಪಣೆ ಸಲ್ಲಿಸಲು ಕಾಲಾವಕಾಶವನ್ನು ಡಿಸೆಂಬರ್ 31ರವರೆಗೆ ವಿಸ್ತರಿಸಬೇಕು ಎಂದು ಕೋರಿದ್ದಾರೆ.
ಸರ್ಕಾರ ನೀಡಿದ 60 ದಿನಗಳ ಅವಧಿಯಲ್ಲಿ ಲಾಕ್ಡೌನ್ ಜಾರಿಯಲ್ಲಿತ್ತು. ಪ್ರಸ್ತುತ ಕೊರೊನಾ ಪ್ರಕರಣಗಳು ಹೆಚ್ಚುತ್ತಿದ್ದು, ಸಾರ್ವಜನಿಕ ಅಭಿಪ್ರಾಯ ಸಂಗ್ರಹಿಸಲು ಸಮಸ್ಯೆಯಾಗುತ್ತಿದೆ. ಆದ್ದರಿಂದ ಕಾಲಾವಕಾಶ ವಿಸ್ತರಿಸಬೇಕು ಮತ್ತು ಕರಡು ಪ್ರತಿಯನ್ನು ಎಲ್ಲಾ ಸ್ಥಳೀಯ ಭಾಷೆಗಳಲ್ಲಿ ಪ್ರಕಟಿಸಿ ವ್ಯಾಪಕ ಪ್ರಚಾರ ನೀಡಬೇಕು. ಸಾರ್ವಜನಿಕರು ಆಕ್ಷೇಪಣೆ ಸಲ್ಲಿಸುವವರೆಗೂ ಕರಡನ್ನು ಅಂತಿಮಗೊಳಿಸಿ ಕಾನೂನಾಗಿ ರೂಪಿಸದಂತೆ ಕೇಂದ್ರ ಸರ್ಕಾರಕ್ಕೆ ನಿರ್ದೇಶಿಸಬೇಕು ಎಂದು ಅರ್ಜಿದಾರರು ಕೋರಿದ್ದಾರೆ.