ಕರ್ನಾಟಕ

karnataka

ಕೊಡವರಿಗೆ ಪ್ರತ್ಯೇಕ ಸ್ಥಾನಮಾನ ನೀಡಲು ಸೂಚನೆ ನೀಡುವಂತೆ ಕೋರಿ ಪಿಐಎಲ್​

By

Published : Apr 6, 2023, 10:19 PM IST

ಕೊಡವರಿಗೆ ಪ್ರತ್ಯೇಕ ಸ್ಥಾನಮಾನ ಮತ್ತು ಡಿಕೆಶಿ ಪ್ರಕರಣದ ಅರ್ಜಿ ವಿಚಾರಣೆ ಹೈಕೋರ್ಟ್‌ನಲ್ಲಿಂದು ವಿಚಾರಣೆಗೆ ಬಂದಿದೆ.

ಹೈಕೋರ್ಟ್
ಹೈಕೋರ್ಟ್

ಬೆಂಗಳೂರು:ಕೊಡವರಿಗೆ ಪ್ರತ್ಯೇಕ ಸ್ಥಾನಮಾನಕ್ಕಾಗಿ ಆಗ್ರಹಿಸಿ ಕೊಡವ ನ್ಯಾಷನಲ್‌ ಕೌನ್ಸಿಲ್‌ (ಸಿಎನ್‌ಸಿ) ಸರ್ಕಾರಕ್ಕೆ ಸಲ್ಲಿಸಿರುವ ಮನವಿ ಪರಿಗಣಿಸುವಂತೆ ನಿರ್ದೇಶಿಸಬೇಕು ಎಂದು ಕೋರಿ ಹೈಕೋರ್ಟ್‌ನಲ್ಲಿ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಕೆಯಾಗಿದೆ. ರಾಜ್ಯಸಭಾ ಸದಸ್ಯರೂ ಆದ ಅರ್ಜಿದಾರ ಸುಬ್ರಮಣಿಯನ್‌ ಸ್ವಾಮಿ ಗುರುವಾರ ಖುದ್ದು ಹೈಕೋರ್ಟ್‌ಗೆ ಹಾಜರಾಗಿ ಮುಖ್ಯ ನ್ಯಾಯಮೂರ್ತಿ ಪ್ರಸನ್ನ ಬಾಲಚಂದ್ರ ವರಾಳೆ ಮತ್ತು ಎಂಜಿಎಸ್​ ಕಮಲ್​ ಅವರಿದ್ದ ವಿಭಾಗೀಯ ನ್ಯಾಯಪೀಠಕ್ಕೆ ಮೆಮೊ ಸಲ್ಲಿಸಿದರು.

ಮೆಮೊ ಸ್ವೀಕರಿಸಿದ ನ್ಯಾಯಪೀಠ ಇದೇ 17ಕ್ಕೆ ವಿಚಾರಣೆ ನಡೆಸುವುದಾಗಿ ತಿಳಿಸಿತು. ಕೊಡವರು ಭೌಗೋಳಿಕ, ರಾಜಕೀಯ ಸ್ವಾಯತ್ತತೆ ಹೊಂದಲು ಕೋರಿ ಸಿಎನ್‌ಸಿ ಸರ್ಕಾರಕ್ಕೆ ಮನವಿ ಸಲ್ಲಿಸಿದೆ. ಈ ಕುರಿತಂತೆ ಸರ್ಕಾರವು ಆಯೋಗವೊಂದನ್ನು ರಚಿಸಲು ನಿರ್ದೇಶಿಸಬೇಕು ಎಂದು ಅರ್ಜಿಯಲ್ಲಿ ಕೋರಲಾಗಿದೆ. ಪ್ರಕರಣದಲ್ಲಿ ಕಾನೂನು ಇಲಾಖೆ ಕಾರ್ಯದರ್ಶಿ, ಕೇಂದ್ರ ಕಾನೂನು ಸಚಿವಾಲಯದ ಕಾರ್ಯದರ್ಶಿ, ಕೇಂದ್ರ ಗೃಹ ಸಚಿವಾಲಯದ ಕಾರ್ಯದರ್ಶಿ ಹಾಗೂ ಕೊಡವ ನ್ಯಾಷನಲ್‌ ಕೌನ್ಸಿಲ್‌ ಅಧ್ಯಕ್ಷ ಎನ್‌.ಯು.ನಾಚಪ್ಪ ಅವರನ್ನು ಪ್ರತಿವಾದಿಗಳನ್ನಾಗಿ ಹೆಸರಿಸಲಾಗಿದೆ.

ಡಿಕೆಶಿ ಪ್ರಕರಣ: ಕರ್ನಾಟಕ ಪ್ರದೇಶ ಕಾಂಗ್ರೆಸ್​ ಸಮಿತಿಯ ಅಧ್ಯಕ್ಷ ಡಿ.ಕೆ.ಶಿವಕುಮಾರ್​ ವಿರುದ್ಧ ಅಕ್ರಮ ಆಸ್ತಿ ಗಳಿಕೆ ಆರೋಪದಲ್ಲಿ ಕೇಂದ್ರೀಯ ತನಿಖಾ ದಳ(ಸಿಬಿಐ)ದ ತನಿಖೆಗೆ ನೀಡಿರುವ ತಡೆಯಾಜ್ಞೆಯನ್ನು ಏ.13ರ ವರೆಗೂ ಹೈಕೋರ್ಟ್ ವಿಸ್ತರಿಸಿದೆ. ತಮ್ಮ ವಿರುದ್ಧ ತನಿಖೆ ನಡೆಸಲು ಸಿಬಿಐಗೆ ಅನುಮತಿ ನೀಡಿರುವ ಸರ್ಕಾರದ ಆದೇಶ ಮತ್ತು ಸಿಬಿಐ ತನಿಖೆಯನ್ನೂ ರದ್ದುಪಡಿಸುವಂತೆ ಕೋರಿ ಡಿ.ಕೆ.ಶಿವಕುಮಾರ್ ಸಲ್ಲಿಸಿದ್ದ ಸಲ್ಲಿಸಿರುವ ಎರಡು ಪ್ರತ್ಯೇಕ ಅರ್ಜಿಗಳ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಕೆ.ನಟರಾಜನ್​ ಅವರಿದ್ದ ನ್ಯಾಯಪೀಠ ತಡೆಯಾಜ್ಞೆಯನ್ನು ವಿಸ್ತರಿಸಿ ವಿಚಾರಣೆ ಮುಂದೂಡಿದೆ.

ಸಿಬಿಐ ತನಿಖೆಗೆ ಅನುಮತಿ ನೀಡಿದ ಸರ್ಕಾರದ ಆದೇಶವನ್ನು ಪ್ರಶ್ನಿಸಿ ಶಿವಕುಮಾರ್ ಸಲ್ಲಿಸಿರುವ ಮತ್ತೊಂದು ಅರ್ಜಿ ವಿಚಾರಣೆಯನ್ನು ಏ.13ಕ್ಕೆ ನ್ಯಾಯಪೀಠ ಮುಂದೂಡಿತು. ಹಾಗಾಗಿ, ಅಲ್ಲಿಯವರೆಗೆ ಸಿಬಿಐ ತನಿಖೆಗೆ ನೀಡಿರುವ ಮಧ್ಯಂತರ ತಡೆಯಾಜ್ಞೆ ಮುಂದುವರಿಸಿತು. ಭ್ರಷ್ಟಾಚಾರ ನಿಗ್ರಹ ಕಾಯ್ದೆ-1988 ರ ವಿವಿಧ ಸೆಕ್ಷನ್‌ಗಳ ಅಡಿಯಲ್ಲಿ ಸಿಬಿಐ 2020ರ ಅ.3ರಂದು ಡಿ.ಕೆ. ಶಿವಕುಮಾರ್ ವಿರುದ್ಧ ಪ್ರಕರಣ ದಾಖಲಿಸಿತ್ತು. ಸಿಬಿಐ ದಾಖಲಿಸಿರುವ ಈ ಎಫ್‌ಐಆರ್ ಕಾನೂನು ಬಾಹಿರವಾಗಿದ್ದು, ತನಿಖೆ ರದ್ದುಪಡಿಸಬೇಕು ಎಂದು ಕೋರಿ ಶಿವಕುಮಾರ್ ಹೈಕೋರ್ಟ್ ಮೆಟ್ಟಿಲೇರಿದ್ದಾರೆ.

ಸಿಬಿಐ ತನಿಖೆಗೆ 2023ರ ಫೆ.10ರಂದು ಹೈಕೋರ್ಟ್ ಮಧ್ಯಂತರ ತಡೆಯಾಜ್ಞೆ ನೀಡಿತ್ತು. ಇದೇ ವೇಳೆ ಸಿಬಿಐ ತನಿಖೆಗೆ ಅನುಮತಿ ನೀಡಿರುವ ಸರ್ಕಾರದ ಆದೇಶವನ್ನು ರದ್ದುಪಡಿಸುವಂತೆ ಕೋರಿ ಶಿವಕುಮಾರ್ ಮತ್ತೊಂದು ಅರ್ಜಿ ಸಲ್ಲಿಸಿದ್ದಾರೆ. ಈ ಎರಡೂ ಅರ್ಜಿಗಳ ವಿಚಾರಣೆಯನ್ನು ಏ.13ಕ್ಕೆ ಹೈಕೋರ್ಟ್ ನಿಗದಿಪಡಿಸಿದೆ.

ಇದನ್ನೂ ಓದಿ:ರಾಷ್ಟ್ರೀಯ ಪಕ್ಷದ ಮಾನ್ಯತೆ ಕೋರಿ ಹೈಕೋರ್ಟ್​ ಮೊರೆ ಹೋದ ಆಪ್​​

ABOUT THE AUTHOR

...view details