ಕರ್ನಾಟಕ

karnataka

By ETV Bharat Karnataka Team

Published : Dec 6, 2023, 6:41 AM IST

ETV Bharat / state

ಚಿಕ್ಕಮಗಳೂರು ವಕೀಲನ ಮೇಲೆ ಪೊಲೀಸರ ಹಲ್ಲೆ ಪ್ರಕರಣ ಸಿಐಡಿಗೆ ಹಸ್ತಾಂತರ: ಹೈಕೋರ್ಟ್​ಗೆ ರಾಜ್ಯ ಸರ್ಕಾರದ ಮಾಹಿತಿ

ಚಿಕ್ಕಮಗಳೂರಿನಲ್ಲಿ ನಡೆದ ವಕೀಲನ ಮೇಲೆ ಪೊಲೀಸರ ಹಲ್ಲೆ ಪ್ರಕರಣವನ್ನು ಸಿಐಡಿಗೆ ಹಸ್ತಾಂತರಿಸಲಾಗಿದೆ.

ವಕೀಲನ ಮೇಲೆ ಪೊಲೀಸರ ಹಲ್ಲೆ ಪ್ರಕರಣ ವಿಚಾರಣೆ
ವಕೀಲನ ಮೇಲೆ ಪೊಲೀಸರ ಹಲ್ಲೆ ಪ್ರಕರಣ ವಿಚಾರಣೆ

ಬೆಂಗಳೂರು: ಚಿಕ್ಕಮಗಳೂರಿನ ವಕೀಲ ಪ್ರೀತಮ್ ಅವರ ಮೇಲಿನ ಪೊಲೀಸರ ಹಲ್ಲೆ ಪ್ರಕರಣವನ್ನು ಸಿಐಡಿ ತನಿಖೆಗೆ ವಹಿಸಲಾಗಿದೆ ಎಂದು ರಾಜ್ಯ ಸರ್ಕಾರ ಹೈಕೋರ್ಟ್​ಗೆ ಮಾಹಿತಿ ನೀಡಿದೆ. ಘಟನೆಗೆ ಸಂಬಂಧಿಸಿದಂತೆ ಹೈಕೋರ್ಟ್ ಸ್ವಯಂ ಪ್ರೇರಿತವಾಗಿ ದಾಖಲಿಸಿಕೊಂಡಿರುವ ಅರ್ಜಿ ವಿಚಾರಣೆ ನಡೆಸಿದ ಮುಖ್ಯ ನ್ಯಾಯಮೂರ್ತಿ ಪ್ರಸನ್ನ ಬಾಲಚಂದ್ರ ವರಾಳೆ ಮತ್ತು ನ್ಯಾಯಮೂರ್ತಿ ಕೃಷ್ಣ ಎಸ್. ದೀಕ್ಷಿತ್ ಅವರ ನೇತೃತ್ವದ ವಿಭಾಗೀಯ ಪೀಠಕ್ಕೆ ಅಡ್ವೋಕೇಟ್ ಜನರಲ್ ಶಶಿಕಿರಣ್ ಶೆಟ್ಟಿ ಅವರು ಮಾಹಿತಿ ನೀಡಿದರು.

ವಿಚಾರಣೆ ಆರಂಭವಾಗುತ್ತಿದ್ದಂತೆ ಚಿಕ್ಕಮಗಳೂರು ವಕೀಲರ ಸಂಘದ ಪರವಾಗಿ ಹಾಜರಾಗಿದ್ದ ಹಿರಿಯ ವಕೀಲರಾದ ಕೆ ಎನ್ ಫಣೀಂದ್ರ ಮತ್ತು ಡಿ ಆರ್ ರವಿಶಂಕರ್ ಅವರು ಪ್ರೀತಮ್ ಘಟನೆಯ ಹಿನ್ನೆಲೆಯಲ್ಲಿ ಚಿಕ್ಕಮಗಳೂರು ವಕೀಲರ ಸಂಘದ ಪದಾಧಿಕಾರಿಗಳು ಹಾಗೂ ಇತರ ವಕೀಲರ ವಿರುದ್ಧ ಪ್ರತ್ಯೇಕ ಪ್ರಕರಣ ದಾಖಲಿಸಲಾಗಿದೆ. ಪೊಲೀಸರೂ ಪ್ರತಿಭಟನೆ ನಡೆಸಿದ್ದಾರೆ ಎಂದು ನ್ಯಾಯಪೀಠಕ್ಕೆ ತಿಳಿಸಿದರು.

ಇದಕ್ಕೆ ಪ್ರತಿಕ್ರಿಯಿಸಿದ ನ್ಯಾಯಪೀಠ, ಚಿಕ್ಕಮಗಳೂರು ವಕೀಲರು ನಿರಂತರವಾಗಿ ನ್ಯಾಯಾಲಯದ ಕಲಾಪದಿಂದ ದೂರ ಉಳಿಯುವುದು ಸರಿಯಾದ ಕ್ರಮವಲ್ಲ. ಇದು ಸಮರ್ಥನೀಯವಲ್ಲ ಎಂದು ತಿಳಿಸಿತು. ಈ ವೇಳೆ ಪ್ರತಿಕ್ರಿಯಿಸಿದ ಅಡ್ವೊಕೇಟ್ ಜನರಲ್, ಪ್ರಕರಣವನ್ನು ಸಿಐಡಿಗೆ ವಹಿಸಲಾಗಿದೆ. ಸೂಕ್ತ ರೀತಿಯಲ್ಲಿ ತನಿಖೆ ನಡೆಸಲಾಗುವುದು. ಪ್ರತಿಭಟನೆಯಲ್ಲಿ ನಿರತವಾಗಿದ್ದ ಪೊಲೀಸರ ವಿರುದ್ಧ ಯಾವ ಕ್ರಮಕೈಗೊಳ್ಳಲಾಗಿದೆ ಎಂದು ಪೀಠದ ಪ್ರಶ್ನೆಗೆ ಪ್ರತಿಕ್ರಿಯಿಸಿದ ಎಜಿ, ತಪ್ಪಿತಸ್ಥ ಅಧಿಕಾರಿಗಳ ವಿರುದ್ಧ ಕ್ರಮಕೈಗೊಳ್ಳಲಾಗುವುದು ಎಂದು ಪೀಠಕ್ಕೆ ಭರವಸೆ ನೀಡಿದರು. ಈ ಅಂಶವನ್ನು ದಾಖಲಿಸಿಕೊಂಡ ನ್ಯಾಯಪೀಠ, ಪ್ರಕರಣದ ತನಿಖೆಯನ್ನು ಡಿಜಿಪಿ ಮಟ್ಟದ ಅಧಿಕಾರಿ ತನಿಖೆ ನಡೆಸಬೇಕು. ಡಿಐಜಿ ಮಟ್ಟದ ಅಧಿಕಾರಿಯು ನಿಗಾವಹಿಸಬೇಕು ಎಂದು ತಿಳಿಸಿತು.

ಜತೆಗೆ, ಕಲಾಪ ಬಹಿಷ್ಕರಿಸುವುದಿಲ್ಲ ಮತ್ತು ಪ್ರತಿಭಟನೆ ಮುಂದುವರಿಸುವುದಿಲ್ಲ ಎಂದು ಫಣೀಂದ್ರ ಹಾಗೂ ಬೆಂಗಳೂರು ವಕೀಲರ ಸಂಘದ ಅಧ್ಯಕ್ಷ ವಿವೇಕ್ ಸುಬ್ಬಾರೆಡ್ಡಿ ಅವರು ನೀಡಿದ ಹೇಳಿಕೆಯನ್ನು ನ್ಯಾಯಾಲಯವು ದಾಖಲಿಸಿಕೊಂಡಿತು. ಸಮಸ್ಯೆಗಳನ್ನು ಪರಿಹರಿಸುವ ಮತ್ತು ವಕೀಲರ ಬೇಡಿಕೆಗಳನ್ನು ಆಲಿಸಲು ಡಿಸೆಂಬರ್ 9 ರಂದು ಅಡ್ವೊಕೇಟ್ ಜನರಲ್ ಅವರ ಕಚೇರಿಯಲ್ಲಿ ಸಭೆ ನಡೆಸಬೇಕು ಎಂದು ತಿಳಿಸಿ ವಿಚಾರಣೆಯನ್ನು ಡಿಸೆಂಬರ್ 12ಕ್ಕೆ ಮುಂದೂಡಿದೆ.

ಪ್ರಕರಣದ ಹಿನ್ನೆಲೆ:ನ.30 ರಂದು ಸಂಜೆ 7 ಗಂಟೆ ವೇಳೆಗೆ ಚಿಕ್ಕಮಗಳೂರು ನಗರದ ಮಾರ್ಕೆಟ್ ರಸ್ತೆಯಲ್ಲಿ ನಗರ ಠಾಣೆ ಮುಂಭಾಗ ಯುವ ವಕೀಲ ಪ್ರೀತಮ್​ ಹೆಲ್ಮೆಟ್ ಹಾಕದೇ ಬೈಕಿನಲ್ಲಿ ಪ್ರಯಾಣಿಸುತ್ತಿದ್ದರು. ಇದನ್ನು ಪ್ರಶ್ನಿಸಿದ ಪೊಲೀಸರು ಹಾಗೂ ವಕೀಲನ ಮಧ್ಯೆ ಮಾತಿನ ಚಕಮಕಿ ನಡೆದಿದೆ. ಬೈಕ್​ನ ಕೀ ತೆಗೆದ ವಿಚಾರಕ್ಕೆ ಈ ಮಾತಿನ ಚಕಮಕಿ ನಡೆದಿದೆ. ಬಳಿಕ ಪೊಲೀಸರು ವಕೀಲನನ್ನು ಠಾಣೆಗೆ ಕರೆದೊಯ್ದು ಹಲ್ಲೆ ಮಾಡಿದ್ದಾರೆಂದು ವಕೀಲರ ಸಂಘ ಆರೋಪಿಸಿತ್ತು.

ಇದನ್ನೂ ಓದಿ:ಆರೋಪಿಗೆ ಪಾಸ್​ಪೋರ್ಟ್ ನವೀಕರಣ ಅವಕಾಶ ನಿರಾಕರಿಸಿದ್ದ ಕ್ರಮ ಎತ್ತಿಹಿಡಿದ ಹೈಕೋರ್ಟ್

ABOUT THE AUTHOR

...view details