ಕರ್ನಾಟಕ

karnataka

ETV Bharat / state

ಈ ದರಿದ್ರ ಸರ್ಕಾರ ಮಕ್ಕಳಿಂದಲೂ 100 ರೂಪಾಯಿ ವಸೂಲಿಗೆ ಮುಂದಾಗಿದೆ: ರಾಮಲಿಂಗಾರೆಡ್ಡಿ - ಬಡಜನ ವಿರೋಧಿ ಬಿಜೆಪಿ ಸರಕಾರ

ಪ್ರಸಕ್ತ ಶೈಕ್ಷಣಿಕ ವರ್ಷದ ಅವಧಿ ಅರ್ಧದಷ್ಟು ಮುಕ್ತಾಯವಾಗಿದ್ದು, ಇನ್ನೂ ಹಲವೆಡೆ ವಿದ್ಯಾರ್ಥಿಗಳಿಗೆ ಸಮವಸ್ತ್ರ, ಪಠ್ಯಪುಸ್ತಕ, ಶೂ ಸಾಕ್ಸ್ ವಿತರಣೆ ಆಗಿಲ್ಲ. ಪಠ್ಯ ಪರಿಕರಗಳನ್ನು ಪೂರೈಸದಿದ್ದರೆ ಮಕ್ಕಳು ಕಲಿಯುವುದಾದರೂ ಹೇಗೆ? ಬಹುಶಃ ಸರ್ಕಾರ 40 % ಕಮಿಷನ್ ಬೆನ್ನು ಬಿದ್ದಿರುವುದರಿಂದ ಈ ವಿಳಂಬ ಆಗಿರಬಹುದು ಎಂದು ರಾಮಲಿಂಗಾರೆಡ್ಡಿ ಛೇಡಿಸಿದ್ದಾರೆ.

ಮಕ್ಕಳಿಂದಲೂ 100 ರೂಪಾಯಿ ವಸೂಲಿಗೆ ಮುಂದಾಗಿದೆ ದರಿದ್ರ ಸರ್ಕಾರ: ರಾಮಲಿಂಗಾರೆಡ್ಡಿ
Poor government is ready to collect Rs 100 from children too says Ramalingareddy

By

Published : Oct 22, 2022, 3:42 PM IST

ಬೆಂಗಳೂರು: ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದ ದಿನದಿಂದಲೂ ಜನ ಸಾಮಾನ್ಯರ ರಕ್ತ ಹೀರುತ್ತಿದ್ದು, ಅದರ ಮುಂದುವರಿದ ಭಾಗವಾಗಿ ಈಗ ಸರ್ಕಾರಿ ಶಾಲೆ ವಿದ್ಯಾರ್ಥಿಗಳ ಪೋಷಕರಿಂದ ತಿಂಗಳಿಗೆ 100 ರೂ. ದೇಣಿಗೆ ವಸೂಲಿಗೆ ಮುಂದಾಗಿದೆ. ಈ ಸರ್ಕಾರ ಅದೆಷ್ಟು ದರಿದ್ರಗೇಡಿ ಎಂಬುದಕ್ಕೆ ಇದಕ್ಕಿಂತ ಸಾಕ್ಷಿ ಬೇಕೇ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ರಾಮಲಿಂಗಾರೆಡ್ಡಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಮಾಧ್ಯಮ ಪ್ರಕಟಣೆ ಬಿಡುಗಡೆ ಮಾಡಿರುವ ಅವರು, ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದಾಗಿನಿಂದ ರಾಜ್ಯದಲ್ಲಿ ಶಿಕ್ಷಣ ವ್ಯವಸ್ಥೆ ಸಂಪೂರ್ಣ ಅಸ್ತವ್ಯಸ್ತವಾಗಿದೆ. ಸಾವಿರಾರು ಸರ್ಕಾರಿ ಶಾಲೆಗಳನ್ನು ಮುಚ್ಚಲಾಗಿದೆ. 10 ಲಕ್ಷಕ್ಕೂ ಹೆಚ್ಚು ಮಕ್ಕಳು ಶಿಕ್ಷಣದಿಂದ ವಿಮುಖರಾಗಿದ್ದಾರೆ. ಇದು ಸರ್ಕಾರದ ಶಿಕ್ಷಣ ವಿರೋಧಿ ನೀತಿ ಅಲ್ಲದೆ ಮತ್ತೇನು ಎಂದು ರಾಮಲಿಂಗಾರೆಡ್ಡಿ ಅವರು ಕಿಡಿಕಾರಿದ್ದಾರೆ.

ಪ್ರಸಕ್ತ ಶೈಕ್ಷಣಿಕ ವರ್ಷದ ಅವಧಿ ಅರ್ಧದಷ್ಟು ಮುಕ್ತಾಯವಾಗಿದ್ದು, ಇನ್ನೂ ಹಲವೆಡೆ ವಿದ್ಯಾರ್ಥಿಗಳಿಗೆ ಸಮವಸ್ತ್ರ, ಪಠ್ಯಪುಸ್ತಕ, ಶೂ ಸಾಕ್ಸ್ ವಿತರಣೆ ಆಗಿಲ್ಲ. ಪಠ್ಯ ಪರಿಕರಗಳನ್ನು ಪೂರೈಸದಿದ್ದರೆ ಮಕ್ಕಳು ಕಲಿಯುವುದಾದರೂ ಹೇಗೆ? ಬಹುಶಃ ಸರ್ಕಾರ 40 % ಕಮಿಷನ್ ಬೆನ್ನು ಬಿದ್ದಿರುವುದರಿಂದ ಈ ವಿಳಂಬ ಆಗಿರಬಹುದು ಎಂದು ಅವರು ಛೇಡಿಸಿದ್ದಾರೆ.

ಸರ್ಕಾರಿ ಶಾಲೆಗಳಲ್ಲಿ ವ್ಯಾಸಂಗ ಮಾಡುವ ಬಹುತೇಕ ವಿದ್ಯಾರ್ಥಿಗಳು ಬಡ ಹಾಗೂ ಕೆಳಮಧ್ಯಮ ಕುಟುಂಬಗಳಿಗೆ ಸೇರಿದವರು. ಈಗ ಅವರಿಂದಲೂ ಹಣ ವಸೂಲಿಗೆ ಇಳಿದಿರುವುದು ಖಂಡನೀಯ. ಇದರ ಹಿಂದೆ ಅವರನ್ನು ಶಿಕ್ಷಣ ವಂಚಿತರನ್ನಾಗಿ ಮಾಡುವ ಹುನ್ನಾರವಿದೆ. ಈ ಸರ್ಕಾರದ ಬೇಜವಾಬ್ದಾರಿತನ, ನಿರ್ಲಕ್ಷ್ಯದಿಂದ ಮಕ್ಕಳು ಶಿಕ್ಷಣ ವಂಚಿತರಾಗುತ್ತಿದ್ದಾರೆ ಎಂದು ಅವರು ಆರೋಪಿಸಿದ್ದಾರೆ.

ಹಿಂದೆ ಕಾಂಗ್ರೆಸ್ ಸರ್ಕಾರ ವಿದ್ಯಾರ್ಥಿಗಳಿಗೆಂದು ಜಾರಿಗೆ ತಂದಿದ್ದ ಮಧ್ಯಾಹ್ನದ ಬಿಸಿಯೂಟ, ಹಾಲು, ಸಮವಸ್ತ್ರ, ಶೂ-ಸಾಕ್ಸ್ ವಿತರಣೆ, ವಿದ್ಯಾಸಿರಿ, ಹಾಸ್ಟೆಲ್, ವಿದೇಶ ವ್ಯಾಸಂಗಕ್ಕೆ ಸಾಲ ಸೌಲಭ್ಯ ಮತ್ತಿತರ ಯೋಜನೆಗಳನ್ನು ಈಗಿನ ಬಡಜನ ವಿರೋಧಿ ಬಿಜೆಪಿ ಸರಕಾರ ಒಂದೊಂದಾಗಿ ಕಿತ್ತುಕೊಳ್ಳುತ್ತಿದೆ. ಈಗ ಅದರ ಜತೆಗೆ ಬಡ ವಿದ್ಯಾರ್ಥಿಗಳಿಂದ ವಸೂಲಿಗೆ ಮುಂದಾಗಿದೆ. ಇದು ಸರ್ಕಾರದಿಂದ ಬಡ ಜನರಿಗೆ ಆಗುತ್ತಿರುವ ಅನ್ಯಾಯದ ಪರಮಾವಧಿ. ಈ ಸರ್ಕಾರಕ್ಕೆ ಸರ್ಕಾರಿ ಶಾಲೆ ನಡೆಸುವ ಯೋಗ್ಯತೆಯೂ ಇಲ್ಲವಾಗಿದೆ ಎಂದು ರಾಮಲಿಂಗಾರೆಡ್ಡಿ ಹೇಳಿಕೆಯಲ್ಲಿ ಟೀಕಿಸಿದ್ದಾರೆ.

ABOUT THE AUTHOR

...view details