ಕರ್ನಾಟಕ

karnataka

ETV Bharat / state

ಖಾಸಗಿ ಜಮೀನು ವಶಪಡಿಸಿಕೊಳ್ಳುವಂತೆ ನಿರ್ದೇಶನ ನೀಡಲಾಗದು: ಹೈಕೋರ್ಟ್

ಹಿಡಕಲ್ ಜಲಾಶಯದ ಹಿನ್ನೀರಿನಲ್ಲಿ ಮುಳುಗಡೆಯಾಗುವ ತಮ್ಮ ಜಮೀನು ಸ್ವಾಧೀನಪಡಿಸಿಕೊಂಡು ಪರಿಹಾರ ನೀಡಲು ರಾಜ್ಯ ಸರ್ಕಾರಕ್ಕೆ ನಿರ್ದೇಶಿಸುವಂತೆ ಕೋರಿ ರೈತರು ಈ ಹಿಂದೆ ಹೈಕೋರ್ಟ್​ಗೆ ಅರ್ಜಿ ಸಲ್ಲಿಸಿದ್ದರು.

By

Published : May 17, 2023, 8:11 PM IST

highcourt
ಹೈಕೋರ್ಟ್​

ಬೆಂಗಳೂರು: ಭೂ ಸ್ವಾಧೀನ ಪ್ರಾಧಿಕಾರಕ್ಕೆ ಖಾಸಗಿ ಜಮೀನೊಂದನ್ನು ವಶಪಡಿಸಿಕೊಳ್ಳುವಂತೆ ಸೂಚನೆ ನೀಡುವುದಕ್ಕೆ ನ್ಯಾಯಾಲಯಕ್ಕೆ ಅವಕಾಶವಿಲ್ಲ ಎಂದು ಹೈಕೋರ್ಟ್ ನಿರ್ದೇಶನ ನೀಡಿದೆ. ಬೆಳಗಾವಿ ಜಿಲ್ಲೆ ಹುಕ್ಕೇರಿಯ ಐವರು ರೈತರು ಸಲ್ಲಿಸಿದ್ದ ನ್ಯಾಯಾಂಗ ನಿಂದನೆಯ ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಆರ್.ದೇವದಾಸ್ ಮತ್ತು ನ್ಯಾಯಮೂರ್ತಿ ಕೆ.ರಾಜೇಶ್ ರೈ ಅವರಿದ್ದ ವಿಭಾಗೀಯ ಪೀಠ ಈ ಮಾಹಿತಿ ನೀಡಿದೆ.

ಅಲ್ಲದೆ, ಜಮೀನು ಸ್ವಾಧೀನ ಪಡಿಸಿಕೊಳ್ಳುವಂತೆ ನ್ಯಾಯಾಲಯಗಳೂ ನಿರ್ದೇಶನ ನೀಡಲು ಸಾಧ್ಯವಿಲ್ಲ ಎಂಬುದಾಗಿ ಸುಪ್ರೀಂಕೋರ್ಟ್ ಸ್ಪಷ್ಟ ಆದೇಶ ಮಾಡಿದೆ. ಅಲ್ಲದೇ ಕಾವೇರಿ ನೀರಾವರಿ ನಿಗಮದ ಮುಖ್ಯ ಎಂಜಿನಿಯರ್ ಹಾಗೂ ಕಾರ್ಯಕಾರಿ ಎಂಜಿನಿಯರ್​ಗೆ ಹೈಕೋರ್ಟ್​ ಏಕ ಸದಸ್ಯ ನ್ಯಾಯಪೀಠ ನಿರ್ದೇಶಿಸಿದೆ. ಆದರೆ, ಅವರು ಭೂ ಸ್ವಾಧೀನ ಪ್ರಾಧಿಕಾರದ ಅಧಿಕಾರಿಗಳಲ್ಲ ಎಂದು ತಿಳಿಸಿತು.

ಈ ವೇಳೆ ಅರ್ಜಿದಾರರ ಪರ ವಕೀಲರು, ಏಕ ಸದಸ್ಯ ನ್ಯಾಯಪೀಠದ ಆದೇಶದ ಸ್ಪಷ್ಟೀಕರಣಕ್ಕೆ ಅಥವಾ ತಿದ್ದುಪಡಿಗೆ ಕೋರಲಾಗುವುದು. ಅದಕ್ಕೆ ಅನುಮತಿ ನೀಡುವಂತೆ ಕೋರಿದರು. ಆ ಮನವಿ ಪುರಸ್ಕರಿಸಿದ ವಿಭಾಗೀಯಪೀಠ, ಅರ್ಜಿದಾರರು ಏಕ ಸದಸ್ಯಪೀಠದ ಮುಂದೆ ಹೋಗಿ, ಆ ನ್ಯಾಯಾಲಯದ ಹಿಂದಿನ ಆದೇಶದ ಸ್ಪಷ್ಟೀಕರಣಕ್ಕೆ ಅಥವಾ ತಿದ್ದುಪಡಿಗೆ ಕೋರಬಹುದು ಎಂದು ತಿಳಿಸಿ ಅರ್ಜಿ ಇತ್ಯರ್ಥಡಿಸಿತು.

ಪ್ರಕರಣದ ಹಿನ್ನೆಲೆ ಏನು ?:ಹಿಡಕಲ್ ಜಲಾಶಯದ ಹಿನ್ನೀರಿನಲ್ಲಿ ಮುಳುಗಡೆಯಾಗುತ್ತಿರುವ ತಮ್ಮ ಜಮೀನು ಸ್ವಾಧೀನಪಡಿಸಿಕೊಂಡು ಪರಿಹಾರ ನೀಡಲು ರಾಜ್ಯ ಸರ್ಕಾರಕ್ಕೆ ನಿರ್ದೇಶಿಸುವಂತೆ ಕೋರಿ ರೈತರು ಈ ಹಿಂದೆ ಹೈಕೋರ್ಟ್​ಗೆ ತಕರಾರು ಅರ್ಜಿ ಸಲ್ಲಿಸಿದ್ದರು. ಅರ್ಜಿ ವಿಚಾರಣೆ ನಡೆಸಿದ್ದ ಏಕ ಸದಸ್ಯ ನ್ಯಾಯಪೀಠ, ರೈತರ ಮನವಿ ಸಂಬಂಧ ಸೂಕ್ತ ಕ್ರಮ ಜರುಗಿಸಬೇಕು. ಈ ಕುರಿತು ನಾಲ್ಕು ವಾರದಲ್ಲಿ ಸೂಕ್ತ ಆದೇಶ ಹೊರಡಿಸುವಂತೆ ಕಾವೇರಿ ನೀರಾವರಿ ನಿಗಮದ ಮುಖ್ಯ ಎಂಜಿನಿಯರ್ ಮತ್ತು ಕಾರ್ಯಕಾರಿ ಎಂಜಿನಿಯರ್​ಗೆ ನಿರ್ದೇಶಿಸಿತ್ತು.
ಸರ್ಕಾರಿ ಪ್ರಾಧಿಕಾರಗಳು ಹೈಕೋರ್ಟ್​ನ ಆದೇಶ ಪಾಲಿಸಿಲ್ಲ ಎಂದು ಆಕ್ಷೇಪಿಸಿ ರೈತರು ಹೈಕೋರ್ಟ್​ಗೆ ನ್ಯಾಯಾಂಗ ನಿಂದನೆ ಅರ್ಜಿ ಸಲ್ಲಿಸಿದ್ದರು. ಅರ್ಜಿ ವಿಚಾರಣೆ ನಡೆಸಿದ ವಿಭಾಗೀಯ ಪೀಠ ಈ ಆದೇಶ ನೀಡಿದೆ.

ಇದನ್ನೂ ಓದಿ:ಸಹಕಾರ ಸಂಘಗಳ ಅಧ್ಯಕ್ಷರ ವಿರುದ್ಧ ಸದಸ್ಯರು ಅವಿಶ್ವಾಸ ನಿರ್ಣಯ ಮಂಡನೆ ಮಾಡಿದರೆ ಕಾರಣ ನೀಡುವ ಅಗತ್ಯವಿಲ್ಲ: ಹೈಕೋರ್ಟ್​

ABOUT THE AUTHOR

...view details