ಕರ್ನಾಟಕ

karnataka

ETV Bharat / state

ಕುಡಿಯುವ ನೀರು ಪೂರೈಕೆಗೆ ಆಗ್ರಹ: ಖಾಲಿಕೊಡ ಪ್ರದರ್ಶಿಸಿ ಪ್ರತಿಭಟನೆ

ಚಿಕ್ಕಜಾಲದಿಂದ ಮೆರವಣಿಗೆಯಲ್ಲಿ ತೆರಳಿದ ಪ್ರತಿಭಟನಾಕಾರರು, ಮೀನುಕುಂಟೆ ಹೊಸೂರು ಗ್ರಾಮಪಂಚಾಯತಿ ಕಚೇರಿಗೆ ಮುತ್ತಿಗೆ ಹಾಕಿ ವಿವಿಧ ಘೋಷಣೆಗಳನ್ನು ಕೂಗಿ ಈ ಕೂಡಲೇ ನೀರು ಸರಬರಾಜು ಮಾಡಬೇಕೆಂದು ಪಟ್ಟು ಹಿಡಿದರು.

By

Published : Jun 20, 2019, 4:37 AM IST

ಸಮರ್ಪಕ ಕುಡಿಯುವ ನೀರು ಪೂರೈಕೆಗೆ ಆಗ್ರಹ

ಬೆಂಗಳೂರು:ನಗರದ ಏರ್​ಪೋರ್ಟ್​ ರಸ್ತೆಯ ಮೀನುಕುಂಟೆ ಹೊಸೂರು ಗ್ರಾಮ ಪಂಚಾಯತಿ ವ್ಯಾಪ್ತಿಯ ಗ್ರಾಮಗಳಲ್ಲಿ ಕುಡಿಯುವ ನೀರಿನ ಅಭಾವ ಸೃಷ್ಟಿಯಾಗಿದ್ದು, ಈ ಕೂಡಲೇ ಸಮರ್ಪಕವಾಗಿ ನೀರು ಒದಗಿಸಬೇಕೆಂದು ಆಗ್ರಹಿಸಿ ಪ್ರಜಾ ವಿಮೋಚನಾ ಚಳವಳಿ(ಸ್ವಾಭಿಮಾನ) ಬೆಂಗಳೂರು ನಗರ ಜಿಲ್ಲಾ ಘಟಕದ ಕಾರ್ಯಕರ್ತರು ಹಾಗೂ ಗ್ರಾಮಸ್ಥರು ಪ್ರತಿಭಟನೆ ನಡೆಸಿದರು.

ಚಿಕ್ಕಜಾಲದಿಂದ ಮೆರವಣಿಗೆಯಲ್ಲಿ ತೆರಳಿದ ಪ್ರತಿಭಟನಾಕಾರರು, ಮೀನುಕುಂಟೆ ಹೊಸೂರು ಗ್ರಾಮ ಪಂಚಾಯತಿ ಕಚೇರಿಗೆ ಮುತ್ತಿಗೆ ಹಾಕಿ ವಿವಿಧ ಘೋಷಣೆಗಳನ್ನು ಕೂಗಿ ಈ ಕೂಡಲೇ ನೀರು ಸರಬರಾಜು ಮಾಡಬೇಕೆಂದು ಪಟ್ಟು ಹಿಡಿದರು.

ಸಮರ್ಪಕ ಕುಡಿಯುವ ನೀರು ಪೂರೈಕೆಗೆ ಆಗ್ರಹ

ಈ ವೇಳೆ ಪ್ರತಿಭಟನಾಕಾರರನ್ನುದ್ದೇಶಿಸಿ ಪಿವಿಸಿ ಸ್ವಾಭಿಮಾನ ಸಂಘಟನೆ ರಾಜ್ಯಾಧ್ಯಕ್ಷ ಮುನಿಆಂಜಿನಪ್ಪ ಮಾತನಾಡಿ, ಗ್ರಾಮಪಂಚಾಯತಿ ವ್ಯಾಪ್ತಿಯ ಹುತ್ತನಹಳ್ಳಿ, ಮಾರನಾಯಕನಹಳ್ಳಿ ಮತ್ತು ಕಾಲೋನಿ, ಕೋಳಿಪುರ ಹಾಗೂ ಹೊಸೂರು ಗ್ರಾಮಗಳಲ್ಲಿ ಪರಿಶಿಷ್ಟ ಜಾತಿ-ಪಂಗಡ ಹಾಗೂ ಹಿಂದುಳಿದ ವರ್ಗಗಳ ಜನರೇ ಹೆಚ್ಚಾಗಿ ವಾಸಿಸುತ್ತಿದ್ದಾರೆ. ಆದರೆ ಗ್ರಾಮ ಪಂಚಾಯತಿಯಿಂದ ಈ ಗ್ರಾಮಗಳಿಗೆ ಸಮರ್ಪಕವಾಗಿ ಕುಡಿಯುವ ನೀರಿನ ವ್ಯವಸ್ಥೆ ಕಲ್ಪಿಸದೆ, 15 ದಿನಗಳಿಗೊಮ್ಮೆ ಒಂದೆರಡು ಟ್ಯಾಂಕರ್ ನೀರು ಸರಬರಾಜು ಮಾಡುತ್ತಿರುವುದರಿಂದ ಜನರು ನಿತ್ಯವೂ ತೊಂದರೆ ಅನುಭವಿಸುವಂತಾಗಿದೆ ಎಂದು ದೂರಿದರು.

ಗ್ರಾಮಗಳಲ್ಲಿ ಉಲ್ಬಣಗೊಂಡಿರುವ ನೀರಿನ ಸಮಸ್ಯೆಯನ್ನು ಗಂಭೀರವಾಗಿ ಪರಿಗಣಿಸಬೇಕು. ಬರಗಾಲ ಇರುವುದರಿಂದ ವಿಶೇಷ ಆದ್ಯತೆ ಮೇರೆಗೆ ಸರ್ಕಾರದಲ್ಲಿ ನಿಗದಿಯಾಗಿರುವ ಅನುದಾನದಲ್ಲಿ ಅಗತ್ಯವಿರುವ ಕಡೆಗಳಲ್ಲಿ ಕೊಳವೆಬಾವಿಗಳನ್ನು ಕೊರೆಸಲು ತುರ್ತಾಗಿ ಕ್ರಮ ಕೈಗೊಳ್ಳಬೇಕು. ಈ ಕೂಡಲೇ ಸಮಸ್ಯೆಯನ್ನು ಬಗೆಹರಿಸದಿದ್ದರೆ ತಾಲೂಕು ಪಂಚಾಯತಿ ಕಾರ್ಯಾಲಯಕ್ಕೆ ಮುತ್ತಿಗೆ ಹಾಕುವ ಕಾರ್ಯಕ್ರಮ ಹಮ್ಮಿಕೊಳ್ಳಲಾಗುವುದು ಎಂದು ಎಚ್ಚರಿಕೆ ನೀಡಿದರು.

ABOUT THE AUTHOR

...view details