ಕರ್ನಾಟಕ

karnataka

ರಾಜ್ಯಸಭೆ ಉಪ ಚುನಾವಣೆ: ಇನ್ನೂ ಅಭ್ಯರ್ಥಿಗಳನ್ನು ಪ್ರಕಟಿಸದ ಕಾಂಗ್ರೆಸ್​​-ಜೆಡಿಎಸ್​

ರಾಜ್ಯ ವಿಧಾನಸಭೆಯಿಂದ ರಾಜ್ಯಸಭೆಯ ಒಂದು ಸ್ಥಾನಕ್ಕೆ ನಡೆಯುವ ಉಪ ಚುನಾವಣೆಗೆ ಕಾಂಗ್ರೆಸ್ ಹಾಗೂ ಜೆಡಿಎಸ್ ಪಕ್ಷದಿಂದ ಇದುವರೆಗೂ ನಾಮಪತ್ರ ಸಲ್ಲಿಕೆಯಾಗಿಲ್ಲ.

By

Published : Nov 30, 2019, 11:55 PM IST

Published : Nov 30, 2019, 11:55 PM IST

Rajya Sabha by-election: Congress-JDS yet to announce candidates
ರಾಜ್ಯಸಭೆ ಉಪಚುನಾವಣೆ : ಇನ್ನೂ ಅಭ್ಯರ್ಥಿಗಳನ್ನು ಪ್ರಕಟಿಸದ ಕಾಂಗ್ರೆಸ್-ಜೆಡಿಎಸ್

ಬೆಂಗಳೂರು: ರಾಜ್ಯ ವಿಧಾನಸಭೆಯಿಂದ ರಾಜ್ಯಸಭೆಯ ಒಂದು ಸ್ಥಾನಕ್ಕೆ ನಡೆಯುವ ಉಪ ಚುನಾವಣೆಗೆ ಕಾಂಗ್ರೆಸ್ ಹಾಗೂ ಜೆಡಿಎಸ್ ಪಕ್ಷದಿಂದ ಇದುವರೆಗೂ ನಾಮಪತ್ರ ಸಲ್ಲಿಕೆಯಾಗಿಲ್ಲ.

ನಾಮಪತ್ರ ಸಲ್ಲಿಸಲು ಸೋಮವಾರ ಕಡೇ ದಿನವಾಗಿದ್ದು, ರಾಜ್ಯಸಭೆಯ ಮಾಜಿ ಸದಸ್ಯ ಕೆ.ಸಿ.ರಾಮಮೂರ್ತಿ ಬಿಜೆಪಿ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿದ್ದಾರೆ. ಇದುವರೆಗೂ ಮೂವರು ನಾಮಪತ್ರ ಸಲ್ಲಿಸಿದ್ದಾರೆ. ಕಾಂಗ್ರೆಸ್, ಜೆಡಿಎಸ್ ರಾಜ್ಯಸಭೆ ಚುನಾವಣೆಗೆ ಸ್ಪರ್ಧಿಸುವ ಬಗ್ಗೆ ಇಲ್ಲಿಯತನಕ ಯಾವುದೇ ಅಧಿಕೃತ ನಿರ್ಧಾರ ಪ್ರಕಟಿಸಿಲ್ಲ. ರಾಜ್ಯ ವಿಧಾನಸಭೆಯಲ್ಲಿ 34 ಶಾಸಕರನ್ನು ಹೊಂದಿರುವ ಜೆಡಿಎಸ್​​ಗೆ ಸ್ಪರ್ಧೆ ಮಾಡಿದರೂ ಕಾಂಗ್ರೆಸ್ ಹಾಗೂ ಪಕ್ಷೇತರರ ಬೆಂಬಲ ಬೇಕಾಗುತ್ತದೆ. ಹಾಗಾಗಿ, ರಾಜ್ಯಸಭೆ ಚುನಾವಣೆಯಿಂದ ದೂರ ಉಳಿಯುವ ಬಗ್ಗೆ ಜೆಡಿಎಸ್ ತೀರ್ಮಾನಿಸಿದೆ ಎಂದು ಹೇಳಲಾಗುತ್ತಿದೆ.

ಇನ್ನು ಕಾಂಗ್ರೆಸ್​​​ನಿಂದ ಮಾಜಿ ಕೇಂದ್ರ ಸಚಿವ ಮಲ್ಲಿಕಾರ್ಜುನ್ ಖರ್ಗೆ ಅವರ ಹೆಸರು ಪ್ರಸ್ತಾಪವಾಗುತ್ತಿದೆ. ಆದರೆ, ರಾಜ್ಯಸಭೆಗೆ ಅವರು ಸ್ಪರ್ಧಿಸುವ ಬಗ್ಗೆ ಇನ್ನೂ ಸ್ಪಷ್ಟ ನಿರ್ಧಾರ ತೆಗೆದುಕೊಂಡಿಲ್ಲ. 66 ಶಾಸಕರನ್ನು ಹೊಂದಿರುವ ಕಾಂಗ್ರೆಸ್​​​ಗೂ ರಾಜ್ಯಸಭೆ ಚುನಾವಣೆಯಲ್ಲಿ ಜೆಡಿಎಸ್ ಬೆಂಬಲವಿಲ್ಲದೆ ಗೆಲ್ಲಲು ಸಾಧ್ಯವಿಲ್ಲ. ಪ್ರಸ್ತುತ ವಿಧಾನಸಭೆ ಉಪ ಚುನಾವಣೆಯಲ್ಲಿ ಎರಡೂ ಪಕ್ಷಗಳು ಪ್ರತ್ಯೇಕವಾಗಿ ಸ್ಪರ್ಧಿಸಿ ಪರಸ್ಪರ ಎದುರಾಳಿಗಳಾಗಿವೆ.

ರಾಜ್ಯಸಭೆ ಚುನಾವಣೆಯ ಮೈತ್ರಿ ಬಗ್ಗೆ ಉಭಯ ಪಕ್ಷಗಳ ನಾಯಕರ ನಡುವೆ ಯಾವುದೇ ಚರ್ಚೆಯೂ ಆಗಿಲ್ಲ. ಆಡಳಿತ ಪಕ್ಷ ಬಿಜೆಪಿ ವಿಧಾನಸಭೆಯಲ್ಲಿ 104 ಶಾಸಕರನ್ನು ಹೊಂದಿದ್ದು, ಬಿಜೆಪಿ ಅಭ್ಯರ್ಥಿಯ ಗೆಲುವಿನ ಹಾದಿ ಸದ್ಯಕ್ಕೆ ಸುಗಮವಾಗಿದೆ. ಬಿಎಸ್ಪಿ-1, ಪಕ್ಷೇತರ-1, ವಿಧಾನಸಭಾಧ್ಯಕ್ಷರ 1 ಸ್ಥಾನ ಸೇರಿದಂತೆ ವಿಧಾನಸಭೆಯಲ್ಲಿ 207 ಸದಸ್ಯರಿದ್ದಾರೆ.

ರಾಜ್ಯ ವಿಧಾನಸಭೆಯ 15 ಕ್ಷೇತ್ರಗಳಿಗೆ ಉಪ ಚುನಾವಣೆ ನಡೆಯುತ್ತಿದ್ದು, ಡಿ. 9ರಂದು ಫಲಿತಾಂಶ ಹೊರಬೀಳಲಿದೆ. ಹೀಗಾಗಿ ರಾಜ್ಯಸಭೆ ಚುನಾವಣೆ ನಡೆಯುವ ಡಿ. 12ರ ವೇಳೆಗೆ ವಿಧಾನಸಭೆ ಸದಸ್ಯರ ಬಲ 222ಕ್ಕೆ ಏರಿಕೆಯಾಗಲಿದೆ. ಆದರೆ ವಿಧಾನಸಭೆಯ ನಾಮಕರಣ ಸದಸ್ಯರಿಗೆ ಮತ ಹಾಕುವ ಹಕ್ಕಿಲ್ಲ. ಹೀಗಾಗಿ ರಾಜ್ಯಸಭೆಗೆ ಆಯ್ಕೆಯಾಗಲು ಕನಿಷ್ಠ 112 ಶಾಸಕರ ಮತ ಪಡೆಯಬೇಕಾಗುತ್ತದೆ ಎಂದು ಲೆಕ್ಕಾಚಾರ ಹಾಕಲಾಗುತ್ತಿದೆ.
ಡಿ. 3ರಂದು ರಾಜ್ಯಸಭೆಗೆ ಸಲ್ಲಿಸಿರುವ ನಾಮಪತ್ರಗಳ ಪರಿಶೀಲನೆ ನಡೆಯಲಿದ್ದು, ಡಿ. 5ರವರೆಗೆ ನಾಮಪತ್ರ ವಾಪಸ್ ಪಡೆಯಲು ಕಾಲಾವಕಾಶವಿದೆ. ಸೋಮವಾರದೊಳಗೆ ಕಾಂಗ್ರೆಸ್ ಮತ್ತು ಜೆಡಿಎಸ್​ನಿಂದ ಯಾವುದೇ ಅಭ್ಯರ್ಥಿಗಳು ನಾಮಪತ್ರ ಸಲ್ಲಿಕೆಯಾಗದಿದ್ದರೆ ಬಿಜೆಪಿ ಅಭ್ಯರ್ಥಿ ಕೆ.ಸಿ.ರಾಮಮೂರ್ತಿ ಅವಿರೋಧವಾಗಿ ಆಯ್ಕೆಯಾಗುವ ಸಾಧ್ಯತೆ ಹೆಚ್ಚಿದೆ.

ABOUT THE AUTHOR

...view details