ಬೆಂಗಳೂರು :ಪೂರ್ವ ಅರಬ್ಬೀಸಮುದ್ರದ ಕರ್ನಾಟಕದ ಕರಾವಳಿಯಲ್ಲಿ ಕಡಿಮೆ ಒತ್ತಡವಿರುವ ವಿಸ್ತರಿಸಿದ ಪ್ರದೇಶವಿದೆ. ಜುಲೈ 21ರಂದು ಬಂಗಾಳ ಉಪಸಾಗರದ ವಾಯವ್ಯ ಭಾಗದಲ್ಲಿ ವಾಯುಭಾರ ಕುಸಿತ ಉಂಟಾಗುವ ಹೆಚ್ಚಿನ ಸಾಧ್ಯತೆಯಿದೆ.
ಇದರ ಪ್ರಭಾವದಿಂದ ಕರಾವಳಿ, ಉತ್ತರ ಒಳನಾಡು ಹಾಗೂ ದಕ್ಷಿಣ ಒಳನಾಡಿನಲ್ಲಿ ಜುಲೈ 18 ರಿಂದ 22ರವರೆಗೆ ಗುಡುಗಿನಿಂದ ಕೂಡಿದ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಪ್ರಾದೇಶಿಕ ನಿರ್ದೇಶಕ ಸಿ ಎಸ್ ಪಾಟೀಲ್ ತಿಳಿಸಿದ್ದಾರೆ.
ಹವಾಮಾನ ಇಲಾಖೆ ಪ್ರಾದೇಶಿಕ ನಿರ್ದೇಶಕ ಸಿ ಎಸ್ ಪಾಟೀಲ್ ಉತ್ತರಕನ್ನಡ, ಉಡುಪಿ, ದಕ್ಷಿಣಕನ್ನಡ, ಶಿವಮೊಗ್ಗ, ಚಿಕ್ಕಮಗಳೂರು, ಹಾಸನ ಹಾಗೂ ಕೊಡಗು ಜಿಲ್ಲೆಗಳ ಕೆಲವೆಡೆ ಗುಡುಗಿನಿಂದ ಕೂಡಿದ ಭಾರಿ ಹಾಗೂ ಅತಿಭಾರಿ ಮಳೆ ನಿರೀಕ್ಷಿಸಲಾಗಿದೆ. ಕೆಲವೊಮ್ಮೆ ಅತ್ಯಂತ ಭಾರಿ ಮಳೆಯಾಗುವ ಸಾಧ್ಯತೆಯಿದೆ. ಜುಲೈ 18 ಮತ್ತು 19ರಂದು ರೆಡ್ ಅಲರ್ಟ್ ಹಾಗೂ ಜುಲೈ 20ರಿಂದ 22ರವರೆಗೆ ಆರೆಂಜ್ ಘೋಷಿಸಲಾಗಿದೆ ಎಂದು ಮಾಹಿತಿ ನೀಡಿದ್ದಾರೆ.
ಉತ್ತರ ಒಳನಾಡಿನ ಬೆಳಗಾವಿ, ಧಾರವಾಡ, ಹಾವೇರಿ, ಗದಗ, ಬೀದರ್, ಕಲಬುರ್ಗಿ, ಯಾದಗಿರಿ, ವಿಜಯಪುರ, ಬಾಗಲಕೋಟೆ, ಕೊಪ್ಪಳ ಹಾಗೂ ದಕ್ಷಿಣ ಒಳನಾಡಿನ ದಾವಣಗೆರೆ, ಚಿತ್ರದುರ್ಗ, ಮೈಸೂರು ಹಾಗೂ ಚಾಮರಾಜನಗರ ಜಿಲ್ಲೆಗಳಿಗೆ ಜುಲೈ 18, 19ರಂದು ಆರೆಂಜ್ ಅಲರ್ಟ್, ಜುಲೈ 21 ಮತ್ತು 22ರಂದು ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ ಎಂದರು.
ರಾಜ್ಯಾದ್ಯಂತ ಮುಂಗಾರು ಚುರುಕು :ರಾಜ್ಯಾದ್ಯಂತ ಭಾನುವಾರ ನೈರುತ್ಯ ಮುಂಗಾರು ಚುರುಕಾಗಿದೆ. ಕರಾವಳಿ, ಉತ್ತರ ಒಳನಾಡು ಹಾಗೂ ದಕ್ಷಿಣ ಒಳನಾಡಿನಲ್ಲಿ ವ್ಯಾಪಕ ಮಳೆಯಾಗಿದೆ. ಉತ್ತರಕನ್ನಡ ಜಿಲ್ಲೆಯ ಭಟ್ಕಳದಲ್ಲಿ 21 ಸೆಂ.ಮೀ, ದಾವಣಗೆರೆಯ ಉಚ್ಚಂಗಿದುರ್ಗದಲ್ಲಿ 20 ಸೆಂ.ಮೀ, ಉತ್ತರ ಕನ್ನಡದ ಶಿರಾಲಿಯಲ್ಲಿ 18 ಸೆಂ.ಮೀ ಮಳೆಯಾಗಿದೆ ಎಂದು ಮಾಹಿತಿ ನೀಡಿದ್ದಾರೆ.
ಓದಿ:ರಾಜ್ಯಾದ್ಯಂತ ವರುಣಾರ್ಭಟ : ಮಳೆಗೆ ಧರೆಗುರುಳಿದ ಮರ, ಬ್ಯಾರೇಜ್ ಒಡೆದು ಹೊಲಕ್ಕೆ ನುಗ್ಗಿದ ನೀರು