ಬೆಂಗಳೂರು: ಪಿಯುಸಿ ಪರೀಕ್ಷೆ ರದ್ದುಗೊಳಿಸಿರುವ ರೀತಿಯಲ್ಲೇ ಎಸ್ಎಸ್ಎಲ್ಸಿ ಪರೀಕ್ಷೆಯನ್ನೂ ರದ್ದುಪಡಿಸಬೇಕು ಎಂದು ಕೋರಿ ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಹೈಕೋರ್ಟ್ ವಜಾ ಮಾಡಿ ಆದೇಶ ಹೊರಡಿಸಿದೆ. ಪ್ರಸಕ್ತ ಸಾಲಿನ ಪಿಯು ವಿದ್ಯಾರ್ಥಿಗಳು ಹಾಗೂ ಪುನರಾವರ್ತಿತ ವಿದ್ಯಾರ್ಥಿಗಳನ್ನು ಪರೀಕ್ಷೆ ಇಲ್ಲದೆ ಪಾಸ್ ಮಾಡಿದಂತೆಯೇ ಎಸ್ಎಸ್ಎಲ್ಸಿ ವಿದ್ಯಾರ್ಥಿಗಳನ್ನೂ ತೇರ್ಗಡೆ ಮಾಡಬೇಕು ಎಂದು ಕೋರಿ ನಗರದ ಜ್ಞಾನಮಂದಿರ ಟ್ರಸ್ಟ್ನ ಎಸ್.ವಿ.ಸಿಂಗ್ರೇಗೌಡ ಅವರು ಈ ಪಿಐಎಲ್ ಸಲ್ಲಿಸಿದ್ದರು.
ಅರ್ಜಿ ವಿಚಾರಣೆ ನಡೆಸಿದ ಹಿರಿಯ ನ್ಯಾಯಮೂರ್ತಿ ಬಿ.ವಿ ನಾಗರತ್ನ ಹಾಗೂ ನ್ಯಾ. ಹಂಚಾಟೆ ಸಂಜೀವ್ ಕುಮಾರ್ ಅವರಿದ್ದ ವಿಭಾಗೀಯ ಪೀಠ ವಿಚಾರಣೆ ನಡೆಸಿತು. ಈ ವೇಳೆ ಸರ್ಕಾರದ ಪರ ಹಾಜರಿದ್ದ ಅಡ್ವೊಕೇಟ್ ಪ್ರಭುಲಿಂಗ ನಾವದಗಿ ಅವರು ಪೀಠಕ್ಕೆ ಮಾಹಿತಿ ನೀಡಿ, ಎಸ್ಎಸ್ಎಲ್ ಸಿ ಪರೀಕ್ಷೆಗಳನ್ನು ಜುಲೈ 19 ಹಾಗೂ 22ರಂದು ದಿನಕ್ಕೆ ಮೂರು ಸಬ್ಜೆಕ್ಟ್ ಗಳಂತೆ 2 ದಿನಗಳ ಕಾಲ ನಡೆಸಲು ವೇಳಾ ಪಟ್ಟಿ ಪ್ರಕಟಿಸಲಾಗಿದೆ. ಪರೀಕ್ಷೆಗಳನ್ನು ನಡೆಸಲು ಎಲ್ಲ ಸುರಕ್ಷತಾ ಕ್ರಮಗಳನ್ನು ಕೈಗೊಳ್ಳಲಾಗಿದೆ. ಜತೆಗೆ ಕೋವಿಡ್ ಸೋಂಕು ಕೂಡ ಇಳಿಮುಖವಾಗಿದ್ದು, ಪರೀಕ್ಷೆ ನಡೆಸಲು ಯಾವುದೇ ಸಮಸ್ಯೆಗಳಿಲ್ಲ ಎಂದು ವಿವರಿಸಿದರು.
ಇದಕ್ಕೆ ಆಕ್ಷೇಪ ವ್ಯಕ್ತಪಡಿಸಿದ ಅರ್ಜಿದಾರರ ಪರ ವಕೀಲರು, ಪರೀಕ್ಷೆ ನಡೆಸಿದರೆ ವಿದ್ಯಾರ್ಥಿಗಳು ಸೋಂಕಿನ ಅಪಾಯಕ್ಕೆ ಸಿಲುಕಲಿದ್ದಾರೆ. ಜತೆಗೆ ಪೋಷಕರಿಗೂ ಸಮಸ್ಯೆಯಾಗಲಿದೆ ಎಂದರು. ಅರ್ಜಿದಾರರ ವಾದ ಪರಿಗಣಿಸದ ಪೀಠ, ಕೋವಿಡ್ ಇಳಿಮುಖವಾಗುತ್ತಿರುವುದು ಕಂಡುಬಂದಿದೆ. ಹೀಗಾಗಿ ವಿದ್ಯಾರ್ಥಿಗಳ ಪರೀಕ್ಷೆ ಬರೆಯಲು ಸಮಸ್ಯೆಯಾಗದು. ಇನ್ನು ಪರೀಕ್ಷೆ ಬರೆಯಲು ಹಾಜರಾಗುವುದು ರಿಸ್ಕ್ ಎಂದುಕೊಳ್ಳುವ ವಿದ್ಯಾರ್ಥಿಗಳಿಗೆ ಪೋಷಕರಿಗೆ ಪರೀಕ್ಷೆಗೆ ಹಾಜರಾಗುವಂತೆ ಒತ್ತಾಯಿಸುತ್ತಿಲ್ಲ. ಹೀಗಾಗಿ ಪರೀಕ್ಷೆ ನಡೆಸದಂತೆ ಕೋರಿ ಸಲ್ಲಿಸಿರುವ ಅರ್ಜಿಯನ್ನು ಪುರಸ್ಕರಿಸಲಾಗದು ಎಂದು ಅಭಿಪ್ರಾಯಪಟ್ಟು ಅರ್ಜಿ ವಜಾಗೊಳಿಸಿ ಆದೇಶಿಸಿತು.