ಬೆಂಗಳೂರು:ಹೈಕೋರ್ಟ್ನ ಹಿರಿಯ ವಕೀಲ, ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಡಿ.ಎನ್. ನಂಜುಂಡರೆಡ್ಡಿ (68) ಗುರುವಾರ ಬೆಳಗ್ಗೆ ನಗರದ ಹೆಚ್ಸಿಜಿ ಆಸ್ಪತ್ರೆಯಲ್ಲಿ ನಿಧನರಾದರು. ದೇವರಗುಡಿಪಲ್ಲಿ ಗ್ರಾಮದಲ್ಲಿ ಜನಿಸಿದ್ದ ನಂಜುಂಡರೆಡ್ಡಿ ಅವರು, ಬೆಂಗಳೂರಿನ ಬಿಎಂಎಸ್ ಕಾನೂನು ಕಾಲೇಜಿನಲ್ಲಿ ಕಾನೂನು ಪದವಿ ಪೂರೈಸಿ, ಬೆಂಗಳೂರು ವಿಶ್ವವಿದ್ಯಾಲಯದಿಂದ ಸಾಂವಿಧಾನಿಕ ಕಾನೂನು ವಿಷಯದಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದರು.
ಹಿರಿಯ ವಕೀಲ ನಂಜುಂಡರೆಡ್ಡಿ ನಿಧನ - ಹೈಕೋರ್ಟ್ನ ಹಿರಿಯ ವಕೀಲ
ಹೈಕೋರ್ಟ್ನಲ್ಲಿ ಚುನಾವಣಾ ತಕರಾರು ಅರ್ಜಿಗಳನ್ನು ನಡೆಸುವುದರಲ್ಲಿ ಪರಿಣಿತರಾಗಿದ್ದ ಹಿರಿಯ ವಕೀಲ ನಂಜುಂಡರೆಡ್ಡಿ ನಿಧನ.

ಹೈಕೋರ್ಟ್ನಲ್ಲಿ ಚುನಾವಣಾ ತಕರಾರು ಅರ್ಜಿಗಳನ್ನು ನಡೆಸುವುದರಲ್ಲಿ ಅವರದ್ದು ಎತ್ತಿದ ಕೈ ಎನಿಸಿತ್ತು. ಹೈಕೋರ್ಟ್ ವಕೀಲರುಗಳಾದ ಚಿತ್ರದುರ್ಗದ ಬ್ಯಾರಿಸ್ಟರ್ ವಾಸುದೇವ ರೆಡ್ಡಿ ಮತ್ತು ಗೌರಿಬಿದನೂರಿನ ಜಿ.ವಿ. ಶಾಂತರಾಜು ಅವರ ಬಳಿ ಕಿರಿಯ ವಕೀಲರಾಗಿ ವೃತ್ತಿ ಆರಂಭಿಸಿದ್ದ ಅವರು, ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರ (ಬಿಡಿಎ), ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ಪರ ವಕೀಲರಾಗಿ ಸುದೀರ್ಘ ಕಾಲ ವಕೀಲಿಕೆ ನಡೆಸಿದ್ದರು. ಬಾಗೇಪಲ್ಲಿ ತಾಲೂಕಿನ ಗಡಿದಂ ಗ್ರಾಮದಲ್ಲಿ ಅಂತ್ಯಕ್ರಿಯೆ ನೆರವೇರಲಿದೆ ಎಂದು ಅವರ ಕುಟುಂಬದ ಸದಸ್ಯರೊಬ್ಬರು ಮಾಹಿತಿ ನೀಡಿದ್ದಾರೆ.
ನಂಜುಂಡರೆಡ್ಡಿ ಅವರ ನಿಧನಕ್ಕೆ ಸಿಎಂ ಸೇರಿ ಗಣ್ಯರು ಸಂತಾಪ ಸೂಚಿಸಿದ್ದಾರೆ. ಹೈಕೋರ್ಟ್ ಹಿರಿಯ ನ್ಯಾಯವಾದಿಗಳಾಗಿದ್ದ, ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಡಿ ಎನ್ ನಂಜುಂಡ ರೆಡ್ಡಿಯವರ ಅಗಲಿಕೆ ಅತ್ಯಂತ ದುಃಖದಾಯಕ. ಅವರ ಆತ್ಮಕ್ಕೆ ಸದ್ಗತಿ ದೊರೆಯಲಿ. ಅವರ ಅಗಲಿಕೆಯ ನೋವನ್ನು ಭರಿಸುವ ಶಕ್ತಿಯನ್ನು ಭಗವಂತ ಅವರ ಕುಟುಂಬ ವರ್ಗಕ್ಕೆ ಕರುಣಿಸಲಿ ಎಂದು ಪ್ರಾರ್ಥಿಸುತ್ತೇನೆ ಎಂದು ಸಿಎಂ ಬೊಮ್ಮಾಯಿ ಟ್ವೀಟ್ ಮಾಡಿದ್ದಾರೆ.