ಬೆಂಗಳೂರು: ಹಿಂದೂಸ್ಥಾನಿ ಹಾಗೂ ಕರ್ನಾಟಕ ಶಾಸ್ತ್ರೀಯ ಸಂಗೀತ ಎರಡರಲ್ಲಿಯೂ, ತಮ್ಮದೇ ಆದ ಛಾಪು ಮೂಡಿಸಿದ್ದ ಸಂಗೀತ ವಿದುಷಿ ಶ್ಯಾಮಲಾ ಜಿ. ಭಾವೆ (79)ಕೊನೆಯುಸಿರೆಳೆದಿದ್ದಾರೆ.
1941ರ ಮಾರ್ಚ್ 14ರಂದು ಜನಿಸಿದ್ದ ಇವರು, ಸಂಗೀತ ಹಾಗೂ ರಂಗಭೂಮಿ ಪರಂಪರೆಯ ಮನೆತನದಲ್ಲಿ ಬೆಳೆದವರು. 1950 ರಲ್ಲಿ ಬಾಲ್ಯದಲ್ಲಿಯೇ ತಮ್ಮ ಪ್ರತಿಭೆ ತೋರಿದ್ದರು. ಇವರ ಕುಟುಂಬ ಮೂರು ತಲೆಮಾರುಗಳಿಂದ ಸಂಗೀತವನ್ನೇ ಉಸಿರಾಗಿಸಿಕೊಂಡಿದೆ.
ಹಲವು ವಿದ್ಯಾರ್ಥಿಗಳನ್ನು ಸಂಗೀತ ಕ್ಷೇತ್ರಕ್ಕೆ ಕೊಡುಗೆ ನೀಡಿದ ಇವರು, ಅನೇಕ ಪ್ರಶಸ್ತಿಗಳನ್ನು ಮುಡಿಗೇರಿಸಿಕೊಂಡಿದ್ದರು. ದೇಶ-ವಿದೇಶಗಳಲ್ಲಿ ಸಂಗೀತ ಕ್ಷೇತ್ರದಲ್ಲಿ ಸೇವೆ ಸಲ್ಲಿಸಿದ್ದು, 73 ವರ್ಷಗಳ ಕಾಲ ಸಂಗೀತ ಕ್ಷೇತ್ರದಲ್ಲಿ ಸಾಧನೆ ಮಾಡಿದ್ದಾರೆ. ಶೇಷಾದ್ರಿಪುರಂನ ನಿವಾಸದಲ್ಲಿ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದೆ. ಚಾಮರಾಜಪೇಟೆ ರುದ್ರಭೂಮಿಯಲ್ಲಿ ಅಂತ್ಯಸಂಸ್ಕಾರ ನೆರವೇರಲಿದೆ ಎಂದು ಕುಟುಂಬದ ಸದಸ್ಯರು ತಿಳಿಸಿದ್ದಾರೆ.
ಉಭಯಗಾನ ವಿದುಷಿ ಶ್ಯಾಮಲಾ ಜಿ. ಭಾವೆ ನಿಧನ ಹಿಂದೂಸ್ಥಾನಿ ಹಾಗೂ ಕರ್ನಾಟಕ ಸಂಗೀತ ಪದ್ಧತಿಗಳೆರಡರಲ್ಲೂ ನಿಷ್ಣಾತರಾಗಿ, ಶಾಸ್ತ್ರೀಯ ಸಂಗೀತದ ಜೊತೆಗೆ ಸುಗಮ ಸಂಗೀತದಲ್ಲಿ ವಿಶೇಷ ಸಾಧನೆಗೈದು, ಕರ್ನಾಟಕ ಸಂಗೀತ ನೃತ್ಯ ಅಕಾಡೆಮಿ ಅಧ್ಯಕ್ಷರಾಗಿ ಕಾರ್ಯ ನಿರ್ವಹಿಸಿ, ಸಂಗೀತಕ್ಕಾಗಿ ತಮ್ಮ ಸಂಪೂರ್ಣ ಜೀವನವನ್ನು ಮೀಸಲಾಗಿರಿಸಿಕೊಂಡಿದ್ದ ಉಭಯ ಗಾನ ವಿದುಷಿ ಶ್ರೀಮತಿ ಶ್ಯಾಮಲಾ ಜಿ. ಭಾವೆ ಕರ್ನಾಟಕ ಮಹಿಳಾ ಸಂಗೀತಗಾರರಲ್ಲಿ ಅಗ್ರಗಣ್ಯರು.
ಶ್ಯಾಮಲಾ ಭಾವೆ ಅವರ ಮುತ್ತಜ್ಜ ವಿಷ್ಣುದಾಸ ಭಾವೆ ಮರಾಠಿ ರಂಗಭೂಮಿಯ ಆದ್ಯ ಪ್ರವರ್ತಕರು. ತಂದೆ ಗೋವಿಂದ ವಿಠಲ ಭಾವೆ ಗಾಯಕರಷ್ಟೇ ಅಲ್ಲದೆ ಹದಿನಾಲ್ಕು ವಾದ್ಯ ನುಡಿಸಬಲ್ಲ ಪ್ರತಿಭಾನ್ವಿತರು. ಸಂಗೀತೋದ್ಧಾರಕ ಪಂ. ವಿಷ್ಣು ದಿಗಂಬರ ಪಲುಸ್ಕರ ಅವರ ಶಿಷ್ಯಂದಿರು. ತಾಯಿ ಶ್ರೀಮತಿ ಲಕ್ಷ್ಮೀ ಭಾವೆ ಜೇನು ಕಂಠದ ಗಾಯಕಿ. ಇಂತಹ ಸಂಗೀತ ವಾತಾವರಣದ ಮನೆತನದಲ್ಲಿ ಜನಿಸಿದ ಶ್ಯಾಮಲಾ ಅವರಿಗೆ 3ನೇ ವಯಸ್ಸಿನಲ್ಲಿ ಸಂಗೀತ ಕಲಿಕೆಗೆ ನಾಂದಿಯಾಯಿತು. 6ನೇ ವಯಸ್ಸಿನಲ್ಲಿ ಸಂಗೀತ ಸ್ಪರ್ಧೆಯಲ್ಲಿ ಭಾಗವಹಿಸಿ ಪ್ರಥಮ ಬಹುಮಾನ ಪಡೆದ ಹೆಗ್ಗಳಿಕೆ ಸಂದಿತು. 12ನೇ ವಯಸ್ಸಿಗೆ ಸಾರ್ವಜನಿಕ ಸಂಗೀತ ಕಛೇರಿ ನೀಡಿದರು. ತಂದೆ-ತಾಯಿಯರಿಂದ ಹಿಂದೂಸ್ಥಾನಿ ಸಂಗೀತವನ್ನು, ಬಿ. ದೊರೆಸ್ವಾಮಿ ಹಾಗೂ ಎ. ಸುಬ್ಬರಾಯ ಅವರಲ್ಲಿ ಕರ್ನಾಟಕ ಸಂಗೀತದ ತಾಲೀಮು ಪಡೆದು ಉಭಯಗಾನ ವಿದುಷಿ ಎಂಬ ಖ್ಯಾತಿಗಳಿಸಿದರು.
1930ರಲ್ಲಿ ಬೆಂಗಳೂರಿನಲ್ಲಿ ಶ್ಯಾಮಲಾ ಅವರ ತಂದೆ ಗೋವಿಂದ ವಿಠಲ ಭಾವೆಯವರು ಪ್ರಪ್ರಥಮ ಹಿಂದುಸ್ಥಾನಿ ಸಂಗೀತ ಶಾಲೆ ಸರಸ್ವತಿ ಸಂಗೀತ ವಿದ್ಯಾಲಯವನ್ನು ಸ್ಥಾಪಿಸಿದರು. ಅದನ್ನ ಸಮರ್ಥವಾಗಿ ಮುನ್ನಡೆಸುತ್ತ, ಸಹಸ್ರಾರು ಆಸಕ್ತರಿಗೆ ಸಂಗೀತ ಶಿಕ್ಷಣ ನೀಡುತ್ತಿರುವ ಶ್ಯಾಮಲಾ ಅವರು ವಿವಿಧ ದೇಶಗಳಲ್ಲಿ ಸಂಗೀತ ಕಛೇರಿ ನೀಡಿ ಭಾರತೀಯ ಸಂಗೀತಕ್ಕೆ ರಾಷ್ಟ್ರೀಯ ಖ್ಯಾತಿ ತಂದುಕೊಟ್ಟಿದ್ದಾರೆ. ಪಂ. ಜಸರಾಜ್ ಅವರ ಮಾರ್ಗದರ್ಶನದಲ್ಲಿ ಸಂಗೀತ ತಾಲೀಮು ಪಡೆದ ಅವರು ಅನೇಕ ಚಲನಚಿತ್ರ, ಸಾಕ್ಷಚಿತ್ರ, ಗ್ರಾಮಫೋನ್ ಹಾಗೂ ಕ್ಯಾಸೆಟ್ಗಳಲ್ಲಿ ಧ್ವನಿ ನೀಡಿ, ಸಂಗೀತ ನಿರ್ದೇಶನ ಮಾಡಿದ್ದಾರೆ. 9 ಭಾಷೆಗಳ ಸುಮಾರು 1500ಕ್ಕೂ ಹೆಚ್ಚಿನ ಗೀತೆಗಳಿಗೆ ರಾಗ ಸಂಯೋಜಿಸಿದ್ದಾರೆ.
ಪುಟ್ಟ ವಯಸ್ಸಿನಲ್ಲೇ ಹಿಂದೂಸ್ಥಾನಿ ಮತ್ತು ಕರ್ನಾಟಕ ಸಂಗೀತಗಳೆರಡಲ್ಲೂ ಹಾಡಿದ ಶ್ಯಾಮಲಾ ಅವರ ಗಾಯನವನ್ನು ಕೇಳಿದ ಅವರ ತಂದೆಯವರ ಮಿತ್ರರಾಗಿದ್ದ ಸರ್ ಎಂ. ವಿಶ್ವೇಶ್ವರಯ್ಯನವರು ಉಭಯಗಾನ ವಿದುಷಿ ಎಂದು ಸಂಬೋಧಿಸಿದ ಹೆಸರು ಮುಂದೆ ಅವರೊಂದಿಗೆ ಶಾಶ್ವತವಾಗಿ ಉಳಿಯಿತು.
1997ರಲ್ಲಿ ಅವರ ಶಿಷ್ಯರು, ಅಭಿಮಾನಿಗಳು ‘ಸ್ವರ ಸಾಧನಾ’ ಎಂಬ ಅಭಿನಂದನ ಗ್ರಂಥ ಅರ್ಪಿಸಿದ್ದಾರೆ. ಅವರಿಗೆ, ಉಭಯಗಾನ ವಿಶಾರದೆ, ಉಭಯ ಗಾನ ವಿದುಷಿ, ಕರ್ನಾಟಕ ರಾಜ್ಯೋತ್ಸವ, ಗಾನ ಮಾಧುರಿ, ಸುರಮಣಿ, ಕರ್ನಾಟಕ ಸಂಗೀತ ನೃತ್ಯ ಅಕಾಡೆಮಿಯ ಕರ್ನಾಟಕ ಕಲಾ ತಿಲಕ, ಅಮೆರಿಕಾದ ಹ್ಯೂಸ್ಟನ್ ವಿಶ್ವವಿದ್ಯಾಲಯದ ಗೌರವ ಡಾಕ್ಟರೇಟ್, ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾಲಯದ ಗೌರವ ಡಾಕ್ಟರೇಟ್ (2007), ಭಾರತ ಗೌರವ್, ‘ವರ್ಷದ ಮಹಿಳೆ’ (1997), ಗಾನ ಕೋಕಿಲ, ಕೃಷ್ಣಗಾನ ಮಾಧುರಿ ಮುಂತಾದ ಅನೇಕ ಪ್ರಶಸ್ತಿ ಪುರಸ್ಕಾರಗಳು ಸಂದಿವೆ.