ಬೆಂಗಳೂರು :ಕೆಪಿಸಿಸಿ ಆರಂಭಿಸಿರುವ ಕೊರೊನಾ ಪರಿಹಾರ ನಿಧಿಗೆ ವೈಯಕ್ತಿಕವಾಗಿ ಕನಿಷ್ಠ ಒಂದು ಲಕ್ಷ ರೂ.ಗಳನ್ನು ದೇಣಿಗೆಯಾಗಿ ನೀಡುವಂತೆ ಕಾಂಗ್ರೆಸ್ ಪಕ್ಷದ ಶಾಸಕರು, ಸಂಸದರಲ್ಲಿ ವಿಧಾನಸಭೆ ವಿಪಕ್ಷ ನಾಯಕ ಸಿದ್ದರಾಮಯ್ಯ ಮನವಿ ಮಾಡಿದ್ದಾರೆ.
ಕೊರೊನಾ ವೈರಸ್ ರಾಜ್ಯದ ಜನತೆಯನ್ನು ತೀವ್ರವಾಗಿ ಸಂಕಷ್ಟಕ್ಕೀಡು ಮಾಡಿದೆ. ಇದರಿಂದಾಗಿ ದುಡಿಯುವ ಕೈಗಳಿಗೆ ಉದ್ಯೋಗಗಳಿಲ್ಲದೆ ಆಹಾರ, ನೀರು, ಔಷಧಗಳಿಗೆ ಪರದಾಡಬೇಕಾದ ಪರಿಸ್ಥಿತಿ ತಲೆದೋರಿದೆ.
ಮೊದಲೇ ಪ್ರವಾಹದಿಂದ ನಲುಗಿದ್ದ ನಾಡಿನ ರೈತರು, ಕೂಲಿ ಕಾರ್ಮಿಕರನ್ನೂ ಸಹ ಈ ವೈರಸ್ ಧೃತಿಗೆಡುವಂತೆ ಮಾಡಿದೆ. ಈ ಸಂದರ್ಭದಲ್ಲಿ ಕೇಂದ್ರ,ರಾಜ್ಯ ಸರ್ಕಾರಗಳೆರಡೂ ಸನ್ನಿವೇಶವನ್ನು ಸಮರ್ಪಕವಾಗಿ ನಿಭಾಯಿಸಬೇಕಾಗಿತ್ತು. ಆದರೆ ಎರಡೂ ಸರ್ಕಾರಗಳಿಂದ ಪರಿಹಾರ ಕಾರ್ಯ ನಿರೀಕ್ಷಿತ ಮಟ್ಟದಲ್ಲಿ ನಡೆಯುತ್ತಿಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ಈ ಸಂದರ್ಭದಲ್ಲಿ ನಾವೆಲ್ಲರೂ ಜನ ಕಂಗೆಡದಂತೆ ಅವರ ಜೊತೆ ನಿಂತು ಪರಿಣಾಮಕಾರಿಯಾಗಿ ಕೆಲಸ ಮಾಡಬೇಕಾಗಿದೆ ಪಕ್ಷದ ಶಾಸಕರಿಗೆ ಸಿದ್ದರಾಮಯ್ಯ ಮನವಿ ಮಾಡಿದ್ದಾರೆ.