ಕರ್ನಾಟಕ

karnataka

By

Published : Sep 6, 2022, 9:09 PM IST

ETV Bharat / state

ಬೆಂಗಳೂರಿಗೆ ಒಬ್ಬ ಸ್ವತಂತ್ರ ಸಚಿವರನ್ನೂ ನೇಮಿಸಿಲ್ಲ, ಬೇಜವಾಬ್ಧಾರಿ ಆಡಳಿತ ನಿಲ್ಲಿಸಿ: ಸಿದ್ದರಾಮಯ್ಯ ವಾಗ್ದಾಳಿ

ಬೆಂಗಳೂರು ಅಭಿವೃದ್ಧಿಗಾಗಿ ಈವರೆಗೂ ಒಬ್ಬ ಸ್ವತಂತ್ರ ಸಚಿವರನ್ನು ಬೊಮ್ಮಾಯಿ ಸರ್ಕಾರ ನೇಮಿಸಿಲ್ಲ. ಶಿಸ್ತಿನ ಪಕ್ಷವೆಂದು ಹೇಳಿಕೊಳ್ಳುವ ಬಿಜೆಪಿಯು ಬೆಂಗಳೂರು ನಗರಾಭಿವೃದ್ಧಿಗಾಗಿ ಒಬ್ಬ ಸಚಿವರನ್ನು ನೇಮಿಸಿದರೆ ಉಳಿದವರು ಕಿತ್ತಾಟಕ್ಕಿಳಿಯುತ್ತಾರೆ ಎಂದು ಸಿದ್ದರಾಮಯ್ಯ ವಾಗ್ದಾಳಿ ನಡೆಸಿದ್ದಾರೆ.

siddaramaiah-lashed-out-at-cm-bommai-over-bengaluru-floods
ಬೆಂಗಳೂರಿಗೆ ಒಬ್ಬ ಸ್ವತಂತ್ರ ಸಚಿವರನ್ನೂ ಬೊಮ್ಮಾಯಿ ನೇಮಿಸಿಲ್ಲ, ಬೇಜವಾಬ್ಧಾರಿ ಆಡಳಿತ ನಿಲ್ಲಿಸಿ: ಸಿದ್ದರಾಮಯ್ಯ ವಾಗ್ದಾಳಿ

ಬೆಂಗಳೂರು:ಬೆಂಗಳೂರಿನಲ್ಲಿ ಇತ್ತೀಚೆಗೆ ಸುರಿದ ಮಳೆಯಿಂದಾಗಿ ಜನರ ಬದುಕು ನರಕ ಸದೃಶವಾಗಿದೆ. ಮುಖ್ಯಮಂತ್ರಿಗಳು ಮಾತ್ರ ಇದಕ್ಕೆಲ್ಲ ಹಿಂದಿನ ಸರ್ಕಾರಗಳು ಕಾರಣ ಎಂದು ಓಡಾಡುತ್ತಿದ್ದಾರೆ. ಸರ್ಕಾರ ಇಂತಹ ಬೇಜವಾಬ್ಧಾರಿ ಆಡಳಿತವನ್ನು ನಿಲ್ಲಿಸಿ ನಾಗರಿಕರಿಗೆ ನೆಮ್ಮದಿ ನೀಡಬೇಕೆಂದು ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಆಗ್ರಹಿಸಿದ್ದಾರೆ.

ಈ ಸಂಬಂಧ ಮಾಧ್ಯಮ ಪ್ರಕಟಣೆ ಬಿಡುಗಡೆ ಮಾಡಿರುವ ಅವರು, ಮುಖ್ಯಮಂತ್ರಿ ಬೊಮ್ಮಾಯಿ ಬೆಂಗಳೂರಿನ ಮಳೆ ಅನಾಹುತಗಳಿಗೆ ಹಿಂದಿನ ಸರ್ಕಾರಗಳು ಕಾರಣ ಎಂದು ಪದೇ ಪದೆ ಹೇಳಿಕೆ ಕೊಡುತ್ತಿದ್ದಾರೆ. ಬೊಮ್ಮಾಯಿಗೆ ಕೆಲವೇ ಕೆಲವು ಅಂಶಗಳನ್ನು ನೆನಪಿಸಬಯಸುತ್ತೇನೆ ಎಂದು ವಿವರವಾಗಿ ಹೇಳಿದ್ದಾರೆ.

ಎಟಿ ರಾಮಸ್ವಾಮಿಯವರು ಬೆಂಗಳೂರಿನಲ್ಲಿ 11,980 ಎಕರೆ ಭೂಮಿ ಒತ್ತುವರಿಯಾಗಿತ್ತು ಎಂದು ವರದಿ ನೀಡಿದ್ದರು. ಇದರಲ್ಲಿ 11,680 ಎಕರೆ ಭೂಮಿಯನ್ನು ನಮ್ಮ ಸರ್ಕಾರದ ಅವಧಿಯಲ್ಲಿ ತೆರವುಗೊಳಿಸಿದ್ದೆವು. ರಾಮಸ್ವಾಮಿಯವರು ಅತಿಕ್ರಮಣವಾಗಿದೆಯೆಂದು ಹೇಳಿದ ಜಾಗವನ್ನು ತೆರವುಗೊಳಿಸುವುದರ ಜೊತೆಗೆ 7 ಸಾವಿರ ಎಕರೆಗಳನ್ನು ಹೆಚ್ಚುವರಿಯಾಗಿ ತೆರವುಗೊಳಿಸಿದ್ದೆವು. ನಾವು ತೆರವುಗೊಳಿಸಿದ್ದ ಜಮೀನಿನ ಅಂದಾಜು ಮೌಲ್ಯ 4 ಲಕ್ಷ ಕೋಟಿ ರೂಪಾಯಿಗಳೆಂದು ಅಂದಾಜು ಮಾಡಲಾಗಿತ್ತು ಎಂದಿದ್ದಾರೆ.

ಇದನ್ನೂ ಓದಿ:ಬೆಂಗಳೂರಿನ ಈ ದುಸ್ಥಿತಿಗೆ ಕಾಂಗ್ರೆಸ್​ ದುರಾಡಳಿತವೇ ಕಾರಣ: ಸಿಎಂ ಬೊಮ್ಮಾಯಿ

ಅಲ್ಲದೇ, ಹಲವು ಸಂಘ ಸಂಸ್ಥೆಗಳಿಗೆ ನೀಡಿದ್ದ ಜಮೀನುಗಳ ಮಂಜೂರಾತಿ ನಿಯಮ ಉಲ್ಲಂಘಿಸಿದ್ದವರಿಂದಲೂ ಜಮೀನನ್ನು ವಾಪಸ್​ ಪಡೆದಿದ್ದೇವೆ. ಅಪೊಲೊ ಆಸ್ಪತ್ರೆಯಿಂದ 5 ಎಕರೆ, ರಾಷ್ಟ್ರೋತ್ಥಾನ ಪರಿಷತ್‍ನಿಂದ 10 ಎಕರೆ, ಮಿಥಿಕ್ ಸೊಸೈಟಿ ಸೇರಿದಂತೆ ಹಲವರಿಂದ ಹಿಂಪಡೆದಿದ್ದೆವು. ಬೆಂಗಳೂರು ನಗರ ವ್ಯಾಪ್ತಿಯಲ್ಲಿ ಗೋಮಾಳ, ಕೆರೆ, ಕಟ್ಟೆ, ಕುಂಟೆ, ಸರ್ಕಾರಿ ಖರಾಬು, ಗ್ರಾಮಠಾಣ, ಗುಂಡುತೋಪು, ಸ್ಮಶಾನ ಸೇರಿದಂತೆ ಸುಮಾರು 1.23 ಲಕ್ಷ ಎಕರೆ ಭೂಮಿ ಸರ್ಕಾರಕ್ಕೆ ಸೇರಿದ್ದಾಗಿದೆ ಎಂಬ ಮಾಹಿತಿಯನ್ನೂ ಮುಖ್ಯಮಂತ್ರಿಗಳ ಗಮನಕ್ಕೆ ತರಬಯಸುತ್ತೇನೆ ಎಂದು ತಿಳಿಸಿದ್ದಾರೆ.

ನಾವು ಒತ್ತುವರಿಯನ್ನಷ್ಟೆ ತೆರವುಗೊಳಿಸಿರಲಿಲ್ಲ. ಸರ್ಕಾರಕ್ಕೆ ಪಡೆದ ಜಮೀನನ್ನು ಸದುಪಯೋಗ ಪಡಿಸಿಕೊಳ್ಳಲು ಯೋಜಿಸಿದ್ದೆವು. ಬಡವರಿಗಾಗಿ 1 ಲಕ್ಷ ಮನೆ ಕಟ್ಟಲು 1,500 ಎಕರೆ ಭೂಮಿಯನ್ನು ವಸತಿ ಇಲಾಖೆಗೆ ನೀಡಲಾಗಿತ್ತು. ಸೋಮಣ್ಣನವರು ಇತ್ತೀಚೆಗೆ ಹಾಗೆ ಯಾವುದೇ ಜಮೀನು ಕೊಟ್ಟಿರಲಿಲ್ಲ ಎಂದು ಹೇಳಿದ್ದರು. ಅವರೂ ಸಹ ದಾಖಲೆಗಳನ್ನು ತೆಗೆದು ನೋಡಲಿ, ವಾಸ್ತವಾಂಶ ಏನೆಂದು ಅರ್ಥವಾಗುತ್ತದೆ ಎಂದು ತಿರುಗೇಟು ನೀಡಿದ್ದಾರೆ.

ಮುಲಾಜಿಲ್ಲದೇ ಒತ್ತುವರಿ ತೆರವು:ಸರ್ಕಾರದಿಂದ 10 ಲಕ್ಷ ಸಸಿಗಳನ್ನು ನೆಡಲು ಬಿಬಿಎಂಪಿ, ಬಿಡಿಎಗಳಿಗೆ 1,618 ಎಕರೆ ಜಮೀನನ್ನು ನೀಡಲಾಗಿತ್ತು. ಉಳಿದಂತೆ ವಿವಿಧ ಸಮುದಾಯಗಳಿಗೆ ಹಾಗೂ ಹೆಚ್​ಐವಿ ಪೀಡಿತರಿಗೆ ವಸತಿ ಕಲ್ಪಿಸಲು 300 ಎಕರೆ ಜಮೀನು ನೀಡಲಾಗಿತ್ತು. ಸರ್ಕಾರಿ ಆಸ್ಪತ್ರೆ, ಶಾಲೆ, ಕಾಲೇಜು, ಪೊಲೀಸ್ ಠಾಣೆಯಂತಹ ಸಾರ್ವಜನಿಕ ಉದ್ದೇಶಗಳಿಗೆ 3,604 ಎಕರೆ ಭೂಮಿಯನ್ನು ನೀಡಲಾಗಿತ್ತು. ಉಳಿದ ಜಮೀನಿನಲ್ಲಿ ರಾಜಕಾಲುವೆ, ಕೆರೆ, ಕಟ್ಟೆ, ಅರಣ್ಯ ಮುಂತಾದವುಗಳಿದ್ದವು. ನಮ್ಮ ಸರ್ಕಾರದ ಅವಧಿಯಲ್ಲಿ ಮುಲಾಜಿಲ್ಲದೆ ಒತ್ತುವರಿ ತೆರವುಗೊಳಿಸಿದ್ದೆವು ಎಂದು ಸಿದ್ದರಾಮಯ್ಯ ಹೇಳಿದ್ದಾರೆ.

2014ರ ಸೆಪ್ಟೆಂಬರ್ 26ರಂದು ಒಂದೇ ದಿನ ಬಿದ್ದ ಮಳೆಯ ಪ್ರಮಾಣ 132 ಮಿ.ಮೀಟರುಗಳಷ್ಟಿತ್ತು. ಆದರೆ ಮೊನ್ನೆ ಭಾನುವಾರ ಬಿದ್ದ ಮಳೆಯ ಪ್ರಮಾಣ 131.6 ಮಿಮೀ ಮಾತ್ರ. ಆದರೂ ಬೆಂಗಳೂರಿನ ರಸ್ತೆಗಳಲ್ಲಿ ದೋಣಿಗಳನ್ನು ಓಡಾಡಿಸಬೇಕಾದ ಪರಿಸ್ಥಿತಿ ಬಂದಿತ್ತು. ಐಟಿ ಕಂಪನಿಗಳು ಸರ್ಕಾರಕ್ಕೆ ಪತ್ರ ಬರೆದು ವ್ಯವಸ್ಥೆ ಸರಿಪಡಿಸದಿದ್ದರೆ ಹೊರ ರಾಜ್ಯಗಳಿಗೆ ಹೋಗಬೇಕಾಗುತ್ತದೆ ಎಂದವು. ಸರ್ಕಾರದ ಆರೋಗ್ಯ ಸಚಿವರು ಪತ್ರ ಬರೆದ ಐಟಿ ಸಂಸ್ಥೆಗಳ ಮುಖ್ಯಸ್ಥರಿಗೆ ಧಮಕಿ ಹಾಕುವ ರೀತಿಯಲ್ಲಿ ಮಾತನಾಡಿದ್ದಾರೆ ಎಂದು ತಿಳಿಸಿದರು.

ಒತ್ತುವರಿ ತೆರವು ವಿರುದ್ಧ ಪ್ರತಿಭಟಿಸಿದ್ದ ಬಿಜೆಪಿ: ಬಾಣಸವಾಡಿ ಕೆರೆಯ ಒತ್ತುವರಿ ತೆರವು ಮಾಡುವಾಗ ಮಾಜಿ ಸಚಿವ ಸುರೇಶ್ ಕುಮಾರ್ ಅವರು ಏನು ಹೇಳಿದ್ದರು ಎಂದು ನೆನಪಿಸಿಕೊಳ್ಳಬೇಕು. 'ಸರ್ಕಾರ ಹುಚ್ಚಾಟ ನಡೆಸುತ್ತಿದೆ, ಜನರು ಸರ್ಕಾರಕ್ಕೆ ತೆರಿಗೆ ಕಟ್ಟುತ್ತಿದ್ದಾರೆ, ಆದರೂ ಈ ರೀತಿ ಮಾಡಿರುವುದು ಸರಿಯಲ್ಲ. ಸರ್ಕಾರ ಮನೆ ಒಡೆಯುವ ಪ್ರವೃತ್ತಿ ನಿಲ್ಲಿಸಬೇಕು' ಎಂದು ಸುರೇಶ್​ ಕುಮಾರ್​ ಹೇಳಿದ್ದರು. ಅಲ್ಲದೇ, ಪ್ರತಿಭಟನೆಯ ನೇತೃತ್ವವನ್ನು ಸುರೇಶ್ ಕುಮಾರ್ ಅವರೇ ವಹಿಸಿಕೊಂಡಿದ್ದರು.

ಅವರ ಜೊತೆಯಲ್ಲಿ ಹೆಬ್ಬಾಳದ ಶಾಸಕ ಜಗದೀಶ್ ಕುಮಾರ್ ಹಾಗೂ ವಿಧಾನ ಪರಿಷತ್ ಸದಸ್ಯರೂ ಇದ್ದರು. ನಮ್ಮ ಸರ್ಕಾರವಿದ್ದಾಗ ಮುಂದೆ ಬಂದೊದಗುವ ಪರಿಣಾಮಗಳನ್ನು ಅಂದಾಜು ಮಾಡಿ ಒತ್ತುವರಿ ತೆರವು ಮಾಡುತ್ತಿದ್ದರೆ, ವಿರೋಧ ಪಕ್ಷದಲ್ಲಿದ್ದ ಬಿಜೆಪಿಯು ನಮ್ಮ ತೆರವು ಕಾರ್ಯಾಚರಣೆಯನ್ನು ವಿರೋಧ ಮಾಡುತ್ತಿತ್ತು. ಪರಿಸ್ಥಿತಿ ಹೀಗಿದ್ದರೂ, ಹಿಂದೆ ಮುಂದೆ ನೋಡದ, ಸಣ್ಣ ಮಾಹಿತಿಯನ್ನೂ ಇಟ್ಟುಕೊಳ್ಳದ ಬೊಮ್ಮಾಯಿಯವರು ಬೆಂಗಳೂರಿನ ಮಳೆ ಅನಾಹುತಗಳಿಗೆ ಹಿಂದಿನ ಸರ್ಕಾರಗಳು ಕಾರಣ ಎಂದು ಹೇಳುತ್ತಾರೆ ಎಂದು ತಿರುಗೇಟು ನೀಡಿದ್ದಾರೆ.

ಹಾಗಿದ್ದರೆ ಬಿಜೆಪಿ ಸರ್ಕಾರ ಏನು ಮಾಡಿದೆ?. ಒತ್ತುವರಿ ಮಾಡಿಕೊಂಡಿರುವ ಜಾಗವನ್ನು ಒತ್ತುವರಿದಾರರಿಗೆ ಮಾರಾಟ ಮಾಡುವ ರಿಯಲ್ ಎಸ್ಟೇಟ್ ದಂಧೆಗೆ ಅನುಕೂಲ ಮಾಡಿಕೊಡುವ ಕಾನೂನನ್ನು ಇದೇ ಬಿಜೆಪಿ ಸರ್ಕಾರ ಜಾರಿಗೆ ತಂದಿದೆ. ಬೊಮ್ಮಾಯಿಯವರೂ ಅದರ ಭಾಗವಾಗಿದ್ದರು. ರೆವಿನ್ಯೂ ಲೇಔಟ್‍ಗಳಲ್ಲಿ ಅಕ್ರಮವಾಗಿ ನಿರ್ಮಿಸಿರುವ ನಿವೇಶನಗಳನ್ನು ಮುಕ್ತವಾಗಿ ಖಾತೆ ಮಾಡಿಕೊಡಲು ಬೊಮ್ಮಾಯಿಯವರ ಸರ್ಕಾರವೇ ಅವಕಾಶ ನೀಡಿದೆ ಎಂದು ಟೀಕಿಸಿದ್ದಾರೆ.

ಎಷ್ಟು ವರ್ಷಗಳಿಂದ ಬಿಜೆಪಿ ಶಾಸಕರಿದ್ಧಾರೆ?: ಈಗ ಜಲಾವೃತವಾಗಿರುವ ಮಹದೇವಪುರ, ಬೊಮ್ಮನಹಳ್ಳಿ, ಭಾಗಶಃ ತೊಂದರೆ ಅನುಭವಿಸುತ್ತಿರುವ ಕೆ.ಆರ್.ಪುರಂಗಳಲ್ಲಿ ಎಷ್ಟು ವರ್ಷಗಳಿಂದ ಯಾವ ಪಕ್ಷದ ಶಾಸಕರು ಅಧಿಕಾರದಲ್ಲಿದ್ದಾರೆ ಎಂಬುದನ್ನು ನಾನು ಬೊಮ್ಮಾಯಿಯವರಿಗೆ ನೆನಪಿಸಬೇಕೆ?.

ಬೊಮ್ಮನಹಳ್ಳಿಯ ಸತೀಶ್ ರೆಡ್ಡಿಯವರು ಎಷ್ಟು ವರ್ಷದಿಂದ ಬಿಜೆಪಿ ಶಾಸಕರು?. ಮಹದೇವಪುರದ ಅರವಿಂದ ಲಿಂಬಾವಳಿಯವರು ಎಷ್ಟು ವರ್ಷದಿಂದ ಮಹದೇವಪುರವನ್ನು ಬಿಜೆಪಿಯಿಂದ ಆಯ್ಕೆಯಾಗುತ್ತಿದ್ದಾರೆ?. ಕೆ.ಆರ್.ಪುರಂನ ನಂದೀಶ್ ರೆಡ್ಡಿ ಯಾವ ಪಕ್ಷದವರಾಗಿದ್ದರು?. ಈಗಿರುವ ನಗರಾಭಿವೃದ್ಧಿ ಸಚಿವರಾದ ಬಸವರಾಜುರವರು ಯಾವ ಪಕ್ಷದಿಂದ ಆಯ್ಕೆಯಾಗಿದ್ದಾರೆ?. ಇವರುಗಳೆಲ್ಲ ತಮ್ಮ ಕ್ಷೇತ್ರಗಳನ್ನು ಸರಿಪಡಿಸಿಕೊಳ್ಳಲು ಯಾವ ಪ್ರಯತ್ನ ಮಾಡಿದ್ದಾರೆ ಎಂದು ಕಿಡಿಕಾರಿದ್ದಾರೆ.

ಯಾವ ಮಾಹಿತಿಯೂ ಇಲ್ಲದೆ ಸುಳ್ಳು ಹೇಳಿಕೊಂಡು ಓಡಾಡಿದರೆ, ರಿಯಲ್ ಎಸ್ಟೇಟ್ ದಂಧೆಯವರಿಗಾಗಿ ಕಾನೂನುಗಳನ್ನು ಮನಸೋ ಇಚ್ಛೆ ಬದಲಾಯಿಸಿ ನಗರವನ್ನು ನರಕ ಮಾಡಿದ್ದರೆ ಅದಕ್ಕೆ ಕಾರಣ ಯಾರು?. ಬೊಮ್ಮಾಯಿಯವರು ಮುಖ್ಯಮಂತ್ರಿಗಳಾದ ಮೇಲೆ ರಾಜ್ಯದ ಉಚ್ಛ ನ್ಯಾಯಾಲಯ ಕೇವಲ ರಸ್ತೆ ಗುಂಡಿ ಮುಚ್ಚುವಂತೆ ಎಷ್ಟು ಸಾರಿ ಛೀಮಾರಿ ಹಾಕಿದೆ ಎಂಬ ಲೆಕ್ಕ ಏನಾದರೂ ಮುಖ್ಯಮಂತ್ರಿಗಳಿಗೆ ಗೊತ್ತಿದೆಯಾ?. ಅದನ್ನೂ ನಾನೇ ಹೇಳಬೇಕಾ? ಎಂದು ಕುಟುಕಿದ್ದಾರೆ.

ತಾನು ತಿಂದು ಮೇಕೆ ಬಾಯಿಗೆ ಒರೆಸಿತಂತೆ:ಬೆಂಗಳೂರು ಅಭಿವೃದ್ಧಿಗಾಗಿ ಈವರೆಗೂ ಒಬ್ಬ ಸ್ವತಂತ್ರ ಸಚಿವರನ್ನು ಬೊಮ್ಮಾಯಿ ಸರ್ಕಾರ ನೇಮಿಸಿಲ್ಲ. ಶಿಸ್ತಿನ ಪಕ್ಷವೆಂದು ಹೇಳಿಕೊಳ್ಳುವ ಬಿಜೆಪಿಯು ಬೆಂಗಳೂರು ನಗರಾಭಿವೃದ್ಧಿಗಾಗಿ ಒಬ್ಬ ಸಚಿವರನ್ನು ನೇಮಿಸಿದರೆ ಉಳಿದವರು ಕಿತ್ತಾಟಕ್ಕಿಳಿಯುತ್ತಾರೆ. ಅದನ್ನು ನಿಭಾಯಿಸಲು ಸಾಧ್ಯವಿಲ್ಲ ಎಂದು ಈ ಖಾತೆಯನ್ನು ಮುಖ್ಯಮಂತ್ರಿಗಳೇ ಇಟ್ಟುಕೊಂಡಿದ್ದಾರೆ.

ಬೆಂಗಳೂರಿಗರ ಕಷ್ಟವನ್ನು ಕೇಳುವವರು ಗತಿಯಿಲ್ಲ. ಹಾಗಾಗಿ ಬಿಜೆಪಿಯ ಸನಾತನ ತಂತ್ರವಾದ ತಾನು ಚೆನ್ನಾಗಿ ತಿಂದು ಮೇಕೆ ಬಾಯಿಗೆ ಒರೆಸುವ ಕೋತಿಯ ತಂತ್ರವನ್ನು ಜನರು ಅರ್ಥಮಾಡಿಕೊಳ್ಳದಷ್ಟು ದಡ್ಡರೇನಲ್ಲ ಎಂದು ಹೇಳಿದ್ದಾರೆ.

ಮುಖ್ಯ ಮಂತ್ರಿಗಳಿಗೆ ಧೈರ್ಯವಿದ್ದರೆ ಬೆಂಗಳೂರು ಅಭಿವೃದ್ಧಿಯ ಬಗ್ಗೆಯೆ ಅಧಿವೇಶನದಲ್ಲಿ ಪ್ರತ್ಯೇಕ ಚರ್ಚೆ ನಡೆಸಲಿ, ಜೊತೆಗೆ ಕಳೆದ 20 ವರ್ಷಗಳಲ್ಲಿ ಏನೇನಾಗಿದೆ ಎಂಬ ಕುರಿತು ಸಮಗ್ರ ವರದಿ ಬಿಡುಗಡೆ ಮಾಡಬೇಕು. ಎಲ್ಲಕ್ಕಿಂತ ಮುಖ್ಯವಾಗಿ, ರಿಯಲ್ ಎಸ್ಟೇಟ್‍ನವರಿಗೆ ಅನುಕೂಲ ಮಾಡಿಕೊಡುವ ಕಾನೂನುಗಳನ್ನು ಹಿಂಪಡೆದು, ಸಮಸ್ಯೆಗಳು ಎಲ್ಲಿವೆ ಎಂದು ಪತ್ತೆ ಹಚ್ಚಿ ಜನಪರವಾಗಿ ಕೆಲಸ ಮಾಡಿ ನಗರದ ಜನರಿಗೆ ನೆಮ್ಮದಿ ನೀಡಬೇಕೆಂದು ಸಿದ್ದರಾಮಯ್ಯ ಆಗ್ರಹಿಸಿದ್ದಾರೆ.

ಇದನ್ನೂ ಓದಿ:ಅಧಿಕಾರ ಇದ್ದಾಗ ಕೆಲಸ ಮಾಡದ ಸಿಎಂ.. ಕಾಂಗ್ರೆಸ್ ವಿರುದ್ಧ ವೃಥಾ ಆರೋಪ: ಡಿಕೆಶಿ ತಿರುಗೇಟು

ABOUT THE AUTHOR

...view details