ಬೆಂಗಳೂರು: ರಾಜ್ಯ ಸರ್ಕಾರ ಸಾರಿಗೆ ನೌಕರರ ಪ್ರತಿಭಟನೆಯನ್ನು ಬಲವಂತವಾಗಿ ಹತ್ತಿಕ್ಕಲು ಮುಂದಾಗಿದೆ. ಇದು ಖಂಡನೀಯ ಎಂದು ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಆರೋಪಿಸಿದ್ದಾರೆ.
ಬಿಎಸ್ವೈ ಕರ್ನಾಟಕವನ್ನು ಪೊಲೀಸ್ ರಾಜ್ಯ ಮಾಡಲು ಹೊರಟಿದ್ದಾರೆಯೇ?: ಸಿದ್ದರಾಮಯ್ಯ ಪ್ರಶ್ನೆ
ಸಾರಿಗೆ ನೌಕರರ ಮುಷ್ಕರವನ್ನು ರಾಜ್ಯ ಬಿಜೆಪಿ ಸರ್ಕಾರ ಪೊಲೀಸ್ ಬಲದ ಮೂಲಕ ದಮನಿಸಲು ಹೊರಟಿರುವುದು ಖಂಡನೀಯ ಎಂದು ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಗಡುಗಿದ್ದಾರೆ.
ಟ್ವೀಟ್ ಮೂಲಕ ತಮ್ಮ ಬೇಸರ ವ್ಯಕ್ತಪಡಿಸಿರುವ ಅವರು, ಕೆಎಸ್ಆರ್ಟಿಸಿ ನೌಕರರ ಮುಷ್ಕರವನ್ನು ರಾಜ್ಯ ಬಿಜೆಪಿ ಸರ್ಕಾರ ಪೊಲೀಸ್ ಬಲದ ಮೂಲಕ ದಮನಿಸಲು ಹೊರಟಿರುವುದು ಖಂಡನೀಯ. ಇದು ಪ್ರಜಾಪ್ರಭುತ್ವ ವಿರೋಧಿ ಮಾತ್ರವಲ್ಲ ಅಮಾನವೀಯ ನಡೆ ಕೂಡಾ ಆಗಿದೆ. ರಾಜ್ಯದ ಬಹಳ ಕಡೆಗಳಲ್ಲಿ ರಾಜ್ಯ ಬಿಜೆಪಿ ಸರ್ಕಾರ ಮುಷ್ಕರ ನಿರತ ಕೆಎಸ್ಆರ್ಟಿಸಿ ನೌಕರರನ್ನು ವಾರಂಟ್ ಇಲ್ಲದೇ ಬಂಧಿಸುತ್ತಿದೆ. ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಕರ್ನಾಟಕವನ್ನು ಪೊಲೀಸ್ ರಾಜ್ಯ ಮಾಡಲು ಹೊರಟಿದ್ದಾರೆಯೇ? ಎಂದು ಪ್ರಶ್ನಿಸಿದ್ದಾರೆ.
ಅಕ್ರಮವಾಗಿ ವರ್ಗಾವಣೆ, ಅಮಾನತು ಮತ್ತು ಮನೆ ಖಾಲಿ ಮಾಡಿಸುವ ಮೂಲಕ ಮುಷ್ಕರ ನಿರತ ಕೆಎಸ್ಆರ್ಟಿಸಿ ನೌಕರರನ್ನು ಯಡಿಯೂರಪ್ಪ ಬೆದರಿಸಲು ಹೊರಟಿದ್ದಾರೆ. ಈಗಲೂ ಕಾಲ ಮಿಂಚಿಲ್ಲ, ಸಿಎಂ ಹಠಕ್ಕೆ ಬೀಳದೇ ತಕ್ಷಣ ಮುಷ್ಕರ ನಿರತ ಕೆಎಸ್ಆರ್ಟಿಸಿ ನೌಕರರನ್ನು ಮಾತುಕತೆಗೆ ಕರೆದು ಈಗಿನ ಬಿಕ್ಕಟ್ಟನ್ನು ಪರಿಹರಿಸಬೇಕು ಎಂದು ಒತ್ತಾಯಿಸಿದ್ದಾರೆ.