ಬೆಂಗಳೂರು:ಸ್ವಾತಂತ್ರ್ಯ ಹೋರಾಟಗಾರ ಎಚ್.ಎಸ್.ದೊರೆಸ್ವಾಮಿಯವರನ್ನು ಅವಮಾನಿಸಿದ ಶಾಸಕ ಯತ್ನಾಳ್ ಹೇಳಿಕೆ ಬಗ್ಗೆ ವಿಧಾನಸಭೆಯಲ್ಲಿ ಚರ್ಚೆಗೆ ಅವಕಾಶ ಮಾಡಿಕೊಡಲು ಘನತೆವೆತ್ತ ರಾಜ್ಯಪಾಲರು ಮಧ್ಯಪ್ರವೇಶ ಮಾಡಬೇಕು ಎಂದು ವಿಧಾನಸಭೆ ಪ್ರತಿಪಕ್ಷದ ನಾಯಕ ಸಿದ್ಧರಾಮಯ್ಯ ಮನವಿ ಮಾಡಿಕೊಂಡಿದ್ದಾರೆ.
ಯತ್ನಾಳ್ ವಿರುದ್ಧ ಇನ್ನೊಂದು ಹಂತದ ಹೋರಾಟಕ್ಕೆ ಸಿದ್ದರಾಮಯ್ಯ ಸಿದ್ಧತೆ - Siddaramaiah Yatnal
ಶಾಸಕ ಬಸನಗೌಡ ಯತ್ನಾಳ್, ದೊರೆಸ್ವಾಮಿ ಬಗ್ಗೆ ನೀಡಿರುವ ಹೇಳಿಕೆ ವಿರುದ್ಧ ಹೋರಾಡಲು ಮತ್ತೊಂದು ಹಂತದ ಸಿದ್ಧತೆಯನ್ನು ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ನಡೆಸಿದ್ದಾರೆ.

ಈ ಸಂಬಂಧ ಟ್ವೀಟ್ ಮಾಡಿರುವ ಅವರು, ವಿಧಾನಸಭೆಯಲ್ಲಿ ಪ್ರಮುಖ ವಿಷಯಗಳ ಬಗ್ಗೆ ಚರ್ಚೆ ನಡೆಸಬೇಕು ಎಂದು ಸಂವಿಧಾನದ 175ನೇ ಪರಿಚ್ಛೇದಡಿ ನಿರ್ದೇಶನ ನೀಡಲು ಘನತೆವೆತ್ತ ರಾಜ್ಯಪಾಲರಿಗೆ ಅಧಿಕಾರ ಇದೆ. ಇದನ್ನು ಚಲಾಯಿಸಲು ಒತ್ತಾಯಿಸಿ ಪಕ್ಷದ ನಾಯಕರೊಂದಿಗೆ ನಾನು ನಾಳೆ ಬೆಳಗ್ಗೆ ರಾಜ್ಯಪಾಲರನ್ನು ಭೇಟಿ ಮಾಡಲಿದ್ದೇನೆ ಎಂದಿದ್ದಾರೆ.
ವಿಧಾನಸಭೆ ಕಲಾಪ ಮುಂದೂಡಲಾದ ನಂತರ ಕಾಂಗ್ರೆಸ್ ಹಿರಿಯ ನಾಯಕರ ಜೊತೆ ಸಭೆ ನಡೆಸಿ ಚರ್ಚಿಸಿದ ಸಿದ್ದರಾಮಯ್ಯ, ಮುಂದಿನ ದಿನಗಳಲ್ಲಿ ಕಲಾಪಕ್ಕೆ ಅಡ್ಡಿಯಾಗದ ರೀತಿ ಸುಗಮವಾಗಿ ಸಾಗಲು ಅನುಕೂಲ ಮಾಡಿಕೊಡುವ ತೀರ್ಮಾನ ಮಾಡಿದ್ದಾರೆ. ಆದರೆ, ದೊರೆಸ್ವಾಮಿ ವಿರುದ್ಧ ಅವಹೇಳನಕಾರಿ ಮಾತನಾಡಿರುವ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅವರನ್ನು ಸುಲಭವಾಗಿ ಬಿಡಲು ಸಿದ್ಧರಾಗಿಲ್ಲ. ಈ ಹಿನ್ನೆಲೆ ಮುಂದಿನ ಪ್ರಯತ್ನವಾಗಿ ರಾಜ್ಯಪಾಲರನ್ನು ಭೇಟಿಯಾಗಿ ಮನವಿ ಮಾಡಲು ತೀರ್ಮಾನಿಸಿದ್ದಾರೆ.