ಬೆಂಗಳೂರು: ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಮೀಸಲಾತಿ ಹೆಚ್ಚಳದ ನಿರ್ಧಾರವನ್ನು ತಮ್ಮ ಸಾಧನೆ ಎಂದು ಬಿಂಬಿಸಿಕೊಳ್ಳುತ್ತಿರುವ ರಾಜ್ಯದ ಬಿಜೆಪಿ ಸರ್ಕಾರ, ಈ ಹೆಚ್ಚಳದ ಅನುಷ್ಠಾನದ ಪ್ರಕ್ರಿಯೆ ಬಗ್ಗೆ ವಿವರ ನೀಡದೇ ಮೌನವಾಗಿದ್ದುಕೊಂಡು ಎಸ್ಸಿ ಎಸ್ಟಿ ಸಮುದಾಯವನ್ನು ತಪ್ಪುದಾರಿಗೆಳೆಯುತ್ತಿದೆ ಎಂದು ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಎಸ್ ಸಿ/ಎಸ್ ಟಿ ಮೀಸಲು ಹೆಚ್ಚಳದ ಬಗ್ಗೆ ಪ್ರತಿಕ್ರಿಯೆ ನೀಡಿದ್ದು, ಎಸ್ಸಿ ಎಸ್ಟಿ ಮೀಸಲಾತಿ ಹೆಚ್ಚಿಸಬೇಕೆಂಬ ಬೇಡಿಕೆಯ ಹಿನ್ನೆಲೆಯಲ್ಲಿ ನಮ್ಮ ಸರ್ಕಾರ ನ್ಯಾಯಮೂರ್ತಿ ನಾಗಮೋಹನ್ ದಾಸ್ ಸಮಿತಿ ನೇಮಿಸಿತ್ತು. ಸಮಿತಿಯ ಶಿಫಾರಸುಗಳಿಗೆ ಅನುಗುಣವಾಗಿ ಎಸ್ಸಿ ಎಸ್ಟಿ ಮೀಸಲಾತಿಯನ್ನು ಕ್ರಮವಾಗಿ ಶೇ.17 ಮತ್ತು ಶೇ.7ಕ್ಕೆ ಹೆಚ್ಚಿಸಲು ರಾಜ್ಯ ಸರ್ಕಾರ ನಿರ್ಧಾರ ಕೈಗೊಂಡಿರುವುದು ಸ್ವಾಗತಾರ್ಹ. ಈ ಮೀಸಲಾತಿ ಹೆಚ್ಚಳದ ಅನುಷ್ಠಾನದ ಪ್ರಕ್ರಿಯೆ ದೀರ್ಘವಾದುದು ಮಾತ್ರವಲ್ಲ ಆಳುವ ಪಕ್ಷದ ರಾಜಕೀಯ ಇಚ್ಛಾಶಕ್ತಿಯನ್ನೂ ಅವಲಂಬಿಸಿದೆ ಎಂದಿದ್ದಾರೆ.
ಎಸ್ ಸಿ/ಎಸ್ ಟಿ ಸಮುದಾಯದ ಮೀಸಲಾತಿಯ ಹೆಚ್ಚಳವಾಗಬೇಕಾದರೆ ಮೊದಲು ರಾಜ್ಯದ ವಿಧಾನಮಂಡಲ ನಿರ್ಣಯ ಕೈಗೊಂಡು ಸಂವಿಧಾನದ ತಿದ್ದುಪಡಿಗಾಗಿ ಕೇಂದ್ರ ಸರ್ಕಾರಕ್ಕೆ ಕಳುಹಿಸಬೇಕಾಗುತ್ತದೆ. ಕೇಂದ್ರ ಸರ್ಕಾರ ಸಂಸತ್ನಲ್ಲಿ ಸಂವಿಧಾನ ತಿದ್ದುಪಡಿ ಮಸೂದೆಗೆ ಅಂಗೀಕಾರ ಪಡೆಯಬೇಕು.