ಕರ್ನಾಟಕ

karnataka

ಕೊರೊನಾ ಉಲ್ಭಣಿಸಲು ಸರ್ಕಾರದ ಭ್ರಷ್ಟಾಚಾರವೇ ಕಾರಣ, ಜನತೆ ಅಲ್ಲ: ಸಿದ್ದರಾಮಯ್ಯ

By

Published : Oct 8, 2020, 7:11 PM IST

ಕೊರೊನಾ ನಿಯಂತ್ರಸುವಲ್ಲಿ ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಸಂಪೂರ್ಣ ವಿಫಲವಾಗಿವೆ. ಪ್ರಧಾನಿ ನರೇಂದ್ರ ಮೋದಿ ಮತ್ತು ಯಡಿಯೂರಪ್ಪ ಕೊರೊನಾಕ್ಕಿಂತ ಅಪಾಯಕಾರಿ ಎಂದು ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಆಕ್ರೋಶ ವ್ಯಕ್ತಪಡಿಸಿದ್ದಾರೆ.

Siddaramayya
Siddaramayya

ಬೆಂಗಳೂರು:ಪ್ರಧಾನಿ ನರೇಂದ್ರಮೋದಿ ಸರ್ಕಾರ ಕೊರೊನಾ ಸೋಂಕಿನಲ್ಲಿ ಭಾರತ ವಿಶ್ವದ ನಂಬರ್ ಒನ್ ದೇಶವನ್ನಾಗಿ ಮಾಡುವ ಧಾವಂತದಲ್ಲಿದ್ದಾರೆ. ಸಿಎಂ ಬಿ.ಎಸ್.ಯಡಿಯೂರಪ್ಪನವರು ಕೊರೊನಾ ಸೋಂಕಿನಲ್ಲಿ ಕರ್ನಾಟಕವನ್ನು ದೇಶದ ನಂಬರ್ ಒನ್ ಮಾಡುವ ಉತ್ಸಾಹದಲ್ಲಿದ್ದಾರೆ. ಈ ಇಬ್ಬರು ನಾಯಕರು ದೇಶಕ್ಕೆ ಮತ್ತು ರಾಜ್ಯಕ್ಕೆ ಕೊರೊನಾಕ್ಕಿಂತಲೂ ಅಪಾಯಕಾರಿ ಎಂದು ವಿಧಾನಸಭೆ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಅಭಿಪ್ರಾಯಪಟ್ಟಿದ್ದಾರೆ.

ಈ ಸಂಬಂಧ ಮಾಧ್ಯಮ ಪ್ರಕಟಣೆ ಬಿಡುಗಡೆ ಮಾಡಿರುವ ಅವರು, ಕೊರೊನಾ ಸೋಂಕಿನಲ್ಲಿ ಅಮೆರಿಕ ಮೊದಲ ಸ್ಥಾನದಲ್ಲಿದ್ದರೆ. ಭಾರತ ಎರಡನೇ ಸ್ಥಾನದಲ್ಲಿದೆ. ದೇಶದಲ್ಲಿ ಮಹಾರಾಷ್ಟ್ರ ಮೊದಲ ಸ‍್ಥಾನದಲ್ಲಿದ್ದರೆ. ಕರ್ನಾಟಕ ಎರಡನೇ ಸ್ಥಾನದಲ್ಲಿದೆ. ತಮ್ಮ ದುರಾಡಳಿತದ ಮೂಲಕ ಈ ಜೋಡಿ ದೇಶವನ್ನು ಮತ್ತು ರಾಜ್ಯವನ್ನು ಕೊರೊನಾ ಸೋಂಕಿನಲ್ಲಿ ಮೊದಲ ಸ್ಥಾನಕ್ಕೇರಿಸಲು ಪಣತೊಟ್ಟಂತಿದೆ.

ರಾಜ್ಯದಲ್ಲಿ ನಿತ್ಯ ಕೊರೊನಾ ಸೋಂಕಿನ ಸರಾಸರಿ 10,000 ಪ್ರಕರಣಗಳು ದಾಖಲಾಗುತ್ತಿವೆ. ಸರಾಸರಿ 100 ಸಾವುಗಳಾಗುತ್ತಿವೆ ಇಲ್ಲಿಯವರೆಗೆ 6.68 ಲಕ್ಷ ಜನರಿಗೆ ಕೊರೊನಾ ಸೋಂಕು ತಗಲಿದೆ. 1.16 ಲಕ್ಷಕ್ಕೂ ಅಧಿಕ ಮಂದಿ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ,. ಬಿ.ಎಸ್.ಯಡಿಯೂರಪ್ಪ ಸರ್ಕಾರಕ್ಕೆ ಕೊರೊನಾ ಸೋಂಕು ಬಡಿದಂತಿದೆ ಎಂದಿದ್ದಾರೆ.

ನಾಚಿಕೆಗೇಡಿನ ಸಂಗತಿ :

ರಾಜ್ಯದಲ್ಲಿ ಕೊರೊನಾ ಉಲ್ಭಣಗೊಳ್ಳಲು ಜನರ ನಿರ್ಲಕ್ಷ್ಯ ಕಾರಣ ಎಂಬ ಅತಿಪ್ರಚಾರದ ಮೂಲಕ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಸರ್ಕಾರ ಕೊರೊನಾ ನಿಯಂತ್ರಣದಲ್ಲಿನ ತನ್ನ ವೈಫಲ್ಯ ಮುಚ್ಚಿ ಹಾಕಲು ಪ್ರಯತ್ನಿಸುತ್ತಿರುವುದು ನಾಚಿಕೆಗೇಡಿನ ಸಂಗತಿ. ತನ್ನ ಆಡಳಿತದ ವೈಫಲ್ಯದಿಂದಾಗಿ ಖಾಲಿಯಾಗಿರುವ ಖಜಾನೆ ತುಂಬಿಸಲು ಮದ್ಯದಂಗಡಿಯಿಂದ ಮಾಲ್ ವರೆಗೆ, ದೇವಸ್ಥಾನಗಳಿಂದ ಹೊಟೇಲ್ ಗಳ ವರೆಗೆ ಎಲ್ಲವನ್ನು ತೆರೆದಿಟ್ಟು ಜನರನ್ನು ಕೈಬೀಸಿ ಕರೆಯುತ್ತಿರುವ ರಾಜ್ಯ ಸರ್ಕಾರ ಕೊರೊನಾ ಉಲ್ಭಣಗೊಳ್ಳಲು ಜನತೆಯೇ ಕಾರಣ ಎಂದು ದೂಷಿಸುತ್ತಿರುವುದು ಜನತೆಗೆ ಬಗೆಯುತ್ತಿರುವ ದ್ರೋಹ ಎಂದಿದ್ದಾರೆ.

ಸೂಕ್ತ ವೈದ್ಯಕೀಯ ವ್ಯವಸ್ಥೆ ಇಲ್ಲದಿರುವುದು :

ಕೊರೊನಾ ಸೋಂಕಿನಿಂದಾಗಿ ಸಾವು - ನೋವು ಹೆಚ್ಚಲು ಮುಖ್ಯ ಕಾರಣ ವೈದ್ಯಕೀಯ ಚಿಕಿತ್ಸಾ ವ್ಯವಸ್ಥೆಯಲ್ಲಿನ ವೈಫಲ್ಯ. ಕೊರೊನಾ ಸೋಂಕಿತರಿಗೆ ಸರ್ಕಾರಿ ಆಸ್ಪತ್ರೆ ಮೇಲೆ ನಂಬಿಕೆ ಇಲ್ಲ, ಖಾಸಗಿ ಆಸ್ಪತ್ರೆಗೆ ಹೋಗಲು ಕೈಯಲ್ಲಿ ದುಡ್ಡಿಲ್ಲ. ಇದರಿಂದಾಗಿ ಪರೀಕ್ಷೆ ಮಾಡಿಕೊಳ್ಳದೇ ಸರಿಯಾದ ಚಿಕಿತ್ಸೆ ಪಡೆಯದೇ ನಿರ್ಲಕ್ಷಿಸುತ್ತಿದ್ದಾರೆ. ಕೊರೊನಾ ಸೋಂಕು ರಾಜ್ಯದಲ್ಲಿ ಉಲ್ಭಣಗೊಳ್ಳಲು ರಾಜ್ಯ ಸರ್ಕಾರದ ಬ್ರಹ್ಮಾಂಡ ಭ್ರಷ್ಟಾಚಾರವೇ ಕಾರಣ. ಕೊರೊನಾ ಸೋಂಕು ಜನರ ಸೇವೆ ಮಾಡಲು ಅವಕಾಶ ಎಂದು ಭಾವಿಸದ ಮುಖ್ಯಮಂತ್ರಿ ನೇತೃತ್ವದ ಸಚಿವ ಸಂಪುಟ, ಇದು ದುಡ್ಡು ಮಾಡಲು ಒದಗಿ ಬಂದ ಸುವರ್ಣಾವಕಾಶ ಎಂದು ತಿಳಿದದ್ದೇ ಇಂದಿನ ದುಃಸ್ಥಿತಿಗೆ ಕಾರಣ ಎಂದಿದ್ದಾರೆ.

ಬೇರೆ ಸಾಕ್ಷಿ ಬೇಕೆ?
ಮೊದಲ ದಿನದಿಂದಲೇ ತಪ್ಪು ನೀತಿಗಳು, ಅನಿಶ್ಚಿತ ನಿರ್ಧಾರಗಳು, ತಿದ್ದಿ ತಿರುಚಿದ ಅಂಕಿ ಅಂಶಗಳು, ಮುಖ್ಯಮಂತ್ರಿಗಳು ಮತ್ತು ಸಚಿವರ ನಿಷ್ಕ್ರಿಯತೆ ಮತ್ತು ಬ್ರಹ್ಮಾಂಡ ಭ್ರಷ್ಟಾಚಾರವೇ ಕರ್ನಾಟಕದ ಇಂದಿನ ದುಃಸ್ಥಿತಿಗೆ ಕಾರಣ. ಲಾಕ್ ಡೌನ್ ಹೇರಿಕೆಯಿಂದ ಇಲ್ಲಿಯ ವರೆಗೆ ರಾಜ್ಯ ಸರ್ಕಾರಕ್ಕೆ ಕೊರೊನಾ ನಿಯಂತ್ರಣದ ಬಗ್ಗೆ ಸ್ಪಷ್ಟತೆ ಇಲ್ಲ. ಅಜ್ಞಾನ, ಸುಳ್ಳು ಮತ್ತು ಭ್ರಷ್ಟಾಚಾರ ಕೊರೊನಾಕ್ಕಿಂತಲೂ ಅಪಾಯಕಾರಿ. ಯಾವ ಖಾಸಗಿ ಆಸ್ಪತ್ರೆಗಳು ಕೂಡಾ ಸರ್ಕಾರ ನಿಗದಿಪಡಿಸಿರುವಷ್ಟು ಹಾಸಿಗೆಗಳನ್ನು ನೀಡುತ್ತಿಲ್ಲ. ಸರ್ಕಾರ ನಿಗದಿಪಡಿಸಿರುವ ಚಿಕಿತ್ಸಾ ವೆಚ್ಚದ ಮಿತಿಯನ್ನು ಪಾಲಿಸುತ್ತಿಲ್ಲ. ಸಚಿವರ ಹೇಳಿಕೆಗಳು ಮಾಧ್ಯಮಗಳಿಗಷ್ಟೇ ಸೀಮಿತ.

ಖಾಸಗಿ ಆಸ್ಪತ್ರೆಗಳ ಧಣಿಗಳ ಋಣಕ್ಕೆ ಬಿದ್ದಿರುವ ಸರ್ಕಾರಕ್ಕೆ ಅವರನ್ನು ನಿಯಂತ್ರಿಸುವ ಶಕ್ತಿಯೂ ಇಲ್ಲ. ಒಳಗಿಂದೊಳಗೆ ಎಲ್ಲರೂ ಶಾಮೀಲಾಗಿದ್ದಾರೆ. ರಾಜ್ಯದಲ್ಲಿ ಬಿಬಿಎಂಪಿ ವ್ಯಾಪ್ತಿಯ 303 ಕೊರೊನಾ ಸೋಂಕಿತರು ಸೇರಿದಂತೆ 841 ಸೋಂಕಿತರು ವೆಂಟಿಲೇಟರ್ ನಲ್ಲಿದ್ದಾರೆ ಎಂದು ಆರೋಗ್ಯ ಇಲಾಖೆ ಹೇಳಿದರೆ, ತನ್ನ ವ್ಯಾಪ್ತಿಯಲ್ಲಿಯೇ 957 ಸೋಂಕಿತರು ವೆಂಟಿಲೇಟರ್ ನಲ್ಲಿದ್ದಾರೆ ಎಂದು ಬಿಬಿಎಂಪಿ ಹೇಳುತ್ತಿದೆ. ರಾಜ್ಯ ಸರ್ಕಾರ ತನ್ನ ವೈಫಲ್ಯವನ್ನು ಮುಚ್ಚಿಹಾಕಲು ಸುಳ್ಳಿನ ಮೊರೆ ಹೋಗುತ್ತಿರುವುದಕ್ಕೆ ಇದಕ್ಕಿಂತ ಬೇರೆ ಸಾಕ್ಷಿ ಬೇಕೇ? ಎಂದು ಪ್ರಶ್ನಿಸಿದ್ದಾರೆ.

ಕಳೆದ ಆರು ತಿಂಗಳಲ್ಲಿ ಕೊರೊನಾ ನಿಯಂತ್ರಣಕ್ಕೆ ರಾಜ್ಯ ಸರ್ಕಾರ ಕೈಗೊಂಡ ಕ್ರಮಗಳೇನು ಎಂಬುದನ್ನು ಸತ್ಯನಿಷ್ಠವಾಗಿ ಜನತೆಯ ಮುಂದಿಡುವ ಧೈರ್ಯ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪನವರಿಗೆ ಇದೆಯೇ? ಸರ್ಕಾರಿ ಆಸ್ಪತ್ರೆಗಳಲ್ಲಿ ಎಷ್ಟು ಹಾಸಿಗೆ ಸಾಮರ್ಥ್ಯ ಹೆಚ್ಚಿಸಿದ್ದೀರಿ? ಹೊಸದಾಗಿ ಎಷ್ಟು ಆಮ್ಲಜನಕ ಪೂರೈಕೆಯ ಹಾಸಿಗೆಗಳನ್ನು ಮಾಡಿದ್ದೀರಿ? ಹೊಸದಾಗಿ ಖರೀದಿಸಿದ ವೆಂಟಿಲೇಟರ್ ಗಳೆಷ್ಟು? ಎನ್ನುವುದನ್ನು ತಿಳಿಸುವಿರಾ ಮುಖ್ಯಮಂತ್ರಿಗಳೇ? ಎಂದಿದ್ದಾರೆ.

ABOUT THE AUTHOR

...view details