ಕರ್ನಾಟಕ

karnataka

ಇಹಲೋಕ ತ್ಯಜಿಸಿದ ಸ್ವರ ಸಾಮ್ರಾಟ: ಸವದಿ, ಕಾರಜೋಳ, ಅಶ್ವತ್ಥನಾರಾಯಣ್ ಸಂತಾಪ

By

Published : Sep 25, 2020, 4:44 PM IST

ಕನ್ನಡ ಸೇರಿದಂತೆ ಬೇರೆ ಬೇರೆ ಭಾಷೆಗಳಲ್ಲಿ ಬಾಲಸುಬ್ರಹ್ಮಣ್ಯಂ ತಮ್ಮ ಕಂಠ ಸಿರಿಯಲ್ಲಿ 40 ಸಾವಿರಕ್ಕೂ ಹೆಚ್ಚು ಹಾಡುಗಳನ್ನು ಹಾಡಿದ್ದಾರೆ. ಅವರ ಹಾಡುಗಳನ್ನು ಕೇಳಿ ನಾವು ಬೆಳೆದಿದ್ದೇವೆ. ಅವರ ಸಾಧನೆಗೆ ಪದ್ಮ ಶ್ರೀ ಹಾಗೂ ಪದ್ಮ ಭೂಷಣ ಪ್ರಶಸ್ತಿ ಸೇರಿದಂತೆ 6 ಬಾರಿ ರಾಷ್ಟ್ರ ಪ್ರಶಸ್ತಿ, ರಾಜ್ಯೋತ್ಸವ ಪ್ರಶಸ್ತಿ ಸೇರಿದಂತೆ ಅನೇಕ ಗೌರವಗಳು ಸಂದಿವೆ ಎಂದು ಮೂವರು ಡಿಸಿಎಂಗಳು ಅವರ ಕೊಡುಗೆಯನ್ನು ಸ್ಮರಿಸಿಕೊಂಡಿದ್ದಾರೆ.

SP Balasubrahmanyam passed away: Condolences from State BJP leaders
ಇಹಲೋಕ ತ್ಯಜಿಸಿದ ಸ್ವರ ಸಾಮ್ರಾಟ

ಬೆಂಗಳೂರು:ಹಿನ್ನೆಲೆ ಗಾಯಕ, ಗಾನ ಕೋಗಿಲೆ ಎಸ್.ಪಿ. ಬಾಲಸುಬ್ರಹ್ಮಣ್ಯಂ ನಿಧನಕ್ಕೆ ಉಪ ಮುಖ್ಯಮಂತ್ರಿಗಳಾದ ಲಕ್ಷ್ಮಣ ಸವದಿ, ಗೋವಿಂದ ಕಾರಜೋಳ ಹಾಗೂ ಡಾ.ಅಶ್ವತ್ಥನಾರಾಯಣ್ ಸಂತಾಪ ಸೂಚಿಸಿದ್ದಾರೆ.

ಗಾನಕೋಗಿಲೆಯ ಕೊಡುಗೆ ಸ್ಮರಿಸಿದ ಡಿಸಿಎಂ ಲಕ್ಷ್ಮಣ ಸವದಿ

ಗಾನ ಗಂಧರ್ವ ಎಸ್.ಪಿ. ಬಾಲಸುಬ್ರಹ್ಮಣ್ಯಂ ಅವರು ಇಂದು ಅಸ್ತಂಗತರಾಗುವುದರೊಂದಿಗೆ ಚಲನಚಿತ್ರ ಸಂಗೀತದ ಒಂದು ಯುಗವೇ ಅಂತ್ಯವಾಯಿತು ಎಂದು ಡಿಸಿಎಂ ಲಕ್ಷ್ಮಣ ಸವದಿ ದುಃಖ ವ್ಯಕ್ತಪಡಿಸಿದ್ದಾರೆ.

ಡಿಸಿಎಂ ಲಕ್ಷ್ಮಣ ಸವದಿ (ಸಂಗ್ರಹ ಚಿತ್ರ)

ಎಸ್​​ಪಿಬಿ. ಈಗ ನಮ್ಮೊಂದಿಗೆ ಇಲ್ಲದಿರಬಹುದು, ಆದರೆ, ಅವರ ಮಾಧುರ್ಯ ಸಿರಿಕಂಠದ ಗೀತ, ಸಂಗೀತಗಳಿಂದ ನಮ್ಮ ಮನಸ್ಸಿನಲ್ಲಿ ಸದಾ ನೆಲೆಸಿರುತ್ತಾರೆ. ಅವರಿಗೆ ಸಂಗೀತವೇ ಸರ್ವಸ್ವವಾಗಿತ್ತು. ನಿನ್ನ ನೀನು ಮರೆತರೇನು ಸುಖವಿದೆ ?...ತನ್ನತನವ ತೊರೆದರೇನು ಸೊಗಸಿದೆ?... ಎಂದು ಅತ್ಯಂತ ಸೊಗಸಾಗಿ ಬದುಕಿನ ಅರ್ಥ ಸ್ಫುರಿಸುವಂತೆ ಹಾಡಿದ ಎಸ್.ಪಿ.ಬಿ. ಅವರು ನಿಜಕ್ಕೂ ಅಮರರಾಗಿದ್ದಾರೆ. ಎಸ್.ಪಿ.ಬಿ. ಅವರು ಕನ್ನಡ, ತೆಲುಗು, ತಮಿಳು, ಹಿಂದಿ ಹೀಗೆ ಅನೇಕ ಭಾಷೆಗಳಲ್ಲಿ 40 ಸಾವಿರಕ್ಕೂ ಹೆಚ್ಚು ಗೀತೆಗಳನ್ನು ಹಾಡಿದ್ದಾರೆ ಎಂದರೆ ಅವರ ಸೃಜನಶೀಲತೆಯ ಅಂತಃಸತ್ವ ಎಷ್ಟೊಂದು ಸಮರ್ಥವಾಗಿತ್ತು ಎಂಬುದನ್ನು ಅರ್ಥೈಸಿಕೊಳ್ಳಬಹುದು. ಆದರೆ, ಅವರ ಮೊದಲ ಪ್ರೀತಿ ಮತ್ತು ಒಲವು ಕನ್ನಡದ ಬಗ್ಗೆ ಇತ್ತು ಎಂಬುದು ಹೆಮ್ಮೆಯ ಸಂಗತಿ. ಅನೇಕ ಗೌರವ ಡಾಕ್ಟರೇಟ್​​ಗಳಿಂದ ಹಿಡಿದು ಪದ್ಮ ಪ್ರಶಸ್ತಿವರೆಗೆ ಅನೇಕ ಪುರಸ್ಕಾರಗಳು ಅವರ ಪ್ರತಿಭೆಗೆ ಸಂದಿದ್ದವು ಎಂದು ಗಾನಕೋಗಿಲೆಯ ಕೊಡುಗೆಯನ್ನು ಸ್ಮರಿಸಿದರು.

ಸರಸ್ವತಿಯ ಪುತ್ರರಾಗಿದ್ದ ಎಸ್​​​.ಪಿ.ಬಿ. ಅವರ ಪ್ರತಿಭೆಗೆ ಅವರೇ ಸಾಟಿ. ಅವರ ಸ್ಥಾನವನ್ನು ಯಾರೂ ತುಂಬಲು ಸಾಧ್ಯವಿಲ್ಲ. ಅಗಲಿದ ಅವರ ಆತ್ಮಕ್ಕೆ ಭಗವಂತನು ಸದ್ಗತಿ ಕರುಣಿಸಲಿ. ಅವರ ಕುಟುಂಬದವರಿಗೆ ಮತ್ತು ಅಪಾರ ಅಭಿಮಾನಿಗಳಿಗೆ ನನ್ನ ಸಾಂತ್ವನಗಳು. ಕೊರೊನಾ ಮಹಾಮಾರಿಯಿಂದಾಗಿ ನಮ್ಮ ನಾಡು ಇತ್ತೀಚೆಗೆ ಹಲವು ಗಣ್ಯರನ್ನು ಕಳೆದುಕೊಂಡು ಆತಂಕದಲ್ಲಿದೆ. ಇವರ ಅಗಲಿಕೆಯನ್ನು ನಮಗೆ ಸಹಿಸಲು ಸಾಧ್ಯವಾಗುತ್ತಿಲ್ಲ. ದೇವರು ಕೊರೊನಾ ಪಿಡುಗಿಗೆ ಮುಕ್ತಿ ನೀಡಿ ನಾಡಿನ ಜನರಲ್ಲಿ ಸುಖಶಾಂತಿ ಸಮಾಧಾನ ನೆಲೆಸುವಂತೆ ಆಶೀರ್ವದಿಸಲಿ ಎಂದು ಪ್ರಾರ್ಥಿಸುವುದಾಗಿ ಸವದಿ ತಿಳಿಸಿದರು.

ಕಾರಜೋಳ ಸಂತಾಪ ಸೂಚನೆ:

ಬಹುಭಾಷಾ ಗಾಯಕ ಹಾಗೂ ನಟ ಎಸ್.ಪಿ. ಬಾಲಸುಬ್ರಹ್ಮಣ್ಯಂ ಅವರ ನಿಧನಕ್ಕೆ ಡಿಸಿಎಂ ಗೋವಿಂದ ಎಂ ಕಾರಜೋಳ ತೀವ್ರ ಸಂತಾಪ ಸೂಚಿಸಿದ್ದಾರೆ. ಈ ದೇಶ ಕಂಡ ಖ್ಯಾತ ಗಾಯಕ ಬಾಲಸುಬ್ರಹ್ಮಣ್ಯಂ ಅವರ ನಿಧನ ಸುದ್ದಿ ಕೇಳಿ ಮನಸ್ಸಿಗೆ ಅತೀವ ಬೇಸರವಾಗಿದೆ. ಕಳೆದ ಮೂರು ದಿನಗಳಿಂದ ಒಂದಾದ ಮೇಲೊಂದರಂತೆ ಕೆಟ್ಟ ಸುದ್ದಿಗಳೇ ಬರುತ್ತಿರುವುದು ನೋವಿನ ವಿಚಾರ. ಲಕ್ಷಾಂತರ ಅಭಿಮಾನಿಗಳು ಎಸ್.ಪಿ.ಬಿ. ಅವರ ಆರೋಗ್ಯ ಚೇತರಿಕೆಗೆ ಪ್ರಾರ್ಥನೆ ಸಲ್ಲಿಸಿದ್ದರು‌. ನಮ್ಮ ಪ್ರಾರ್ಥನೆ ಫಲಿಸಲಿಲ್ಲ ಎಂದು ಬೇಸರ ವ್ಯಕ್ತಪಡಿಸಿದರು.

ಡಿಸಿಎಂ ಗೋವಿಂದ ಎಂ ಕಾರಜೋಳ (ಸಂಗ್ರಹ ಚಿತ್ರ)

ಕನ್ನಡ ಸೇರಿದಂತೆ ಬೇರೆ ಬೇರೆ ಭಾಷೆಗಳಲ್ಲಿ ಬಾಲಸುಬ್ರಹ್ಮಣ್ಯಂ ತಮ್ಮ ಕಂಠ ಸಿರಿಯಲ್ಲಿ 40 ಸಾವಿರಕ್ಕೂ ಹೆಚ್ಚು ಹಾಡುಗಳನ್ನು ಹಾಡಿದ್ದಾರೆ. ಅವರ ಹಾಡುಗಳನ್ನು ಕೇಳಿ ನಾವು ಬೆಳೆದಿದ್ದೇವೆ. ಅವರ ಸಾಧನೆಗೆ ಪದ್ಮ ಶ್ರೀ ಹಾಗೂ ಪದ್ಮ ಭೂಷಣ ಪ್ರಶಸ್ತಿ ಸೇರಿದಂತೆ 6 ಬಾರಿ ರಾಷ್ಟ್ರ ಪ್ರಶಸ್ತಿ, ರಾಜ್ಯೋತ್ಸವ ಪ್ರಶಸ್ತಿ ಸೇರಿದಂತೆ ಅನೇಕ ಗೌರವಗಳು ಸಂದಿವೆ ಎಂದು ಗೋವಿಂದ ಕಾರಜೋಳ ಕೊಡುಗೆಯನ್ನು ಸ್ಮರಿಸಿಕೊಂಡಿದ್ದಾರೆ.

ತಮ್ಮ ಸರಳತೆ, ವಿನಯತೆಯಿಂದಲೂ ಅಭಿಮಾನಿಗಳ ಮನಗೆದ್ದಿದ್ದ ಎಸ್.ಪಿ.ಬಿ. ಅವರ ನಿಧನದಿಂದ ಸಿನಿಮಾ ಸಂಗೀತ ಕ್ಷೇತ್ರದಲ್ಲಿ ತುಂಬಲಾರದ ನಷ್ಟ ವುಂಟಾಗಿದೆ. ಅವರ ಮುಗಿಲೆತ್ತರದ ಸಾಧನೆ ಹಾಗೂ ಹಾಡುಗಳಿಂದ ಅವರು ನಮ್ಮೊಂದಿಗೆ ಸದಾ ಜೀವಂತವಾಗಿ ಇರುತ್ತಾರೆ. ಅವರ ಆತ್ಮಕ್ಕೆ ಶಾಂತಿ ಸಿಗಲಿ. ಅವರ ಕುಟುಂಬ ಸದಸ್ಯರು, ಅಭಿಮಾನಿಗಳಿಗೆ ಈ ಅಗಲಿಕೆ ನೋವನ್ನು ಭರಿಸುವ ಶಕ್ತಿಯನ್ನು ಭಗವಂತ ನೀಡಲಿ ಎಂದು ಪ್ರಾರ್ಥಿಸುವುದಾಗಿ ಡಿಸಿಎಂ ತಮ್ಮ ಶೋಕ ಸಂದೇಶದಲ್ಲಿ ತಿಳಿಸಿದ್ದಾರೆ.

ಅಶ್ವತ್ಥ ನಾರಾಯಣ್ ಕಂಬನಿ:

ಅಮರ ಗಾಯಕ ಎಸ್.ಪಿ. ಬಾಲಸುಬ್ರಹ್ಮಣ್ಯಂ ನಿಧನ ದೊಡ್ಡ ಶಾಕ್ ನೀಡಿದೆ. ಕನ್ನಡವೂ ಸೇರಿ ತೆಲುಗು, ತಮಿಳು, ಮಲೆಯಾಳಂ, ಹಿಂದಿ ಸೇರಿ 17 ಭಾಷೆಗಳಲ್ಲಿ ಹಾಡಿ ಅಸಂಖ್ಯಾತ ಅಭಿಮಾನಿಗಳನ್ನು ಹೊಂದಿದ್ದ ಸರ್ವಶ್ರೇಷ್ಠ ಗಾಯಕರಾಗಿದ್ದರು. ಕನ್ನಡದಲ್ಲಿ ಅವರು ಹಾಡಿರುವ ಹಾಡುಗಳೆಲ್ಲವೂ ಅಮೃತವೇ. ಬಂಧನ, ಅಮೃತವರ್ಷಿಣಿ, ಗಾನಯೋಗಿ ಪಂಚಾಕ್ಷರಿ ಗವಾಯಿ ಸೇರಿದಂತೆ ಅನೇಕ ಚಿತ್ರಗಳ ಹಾಡುಗಳು ಅಜರಾಮರವಾಗಿ ಉಳಿಯುತ್ತವೆ. ಬಾಲ್ಯದಿಂದಲೂ ನಾನು ಅವರ ಹಾಡುಗಳನ್ನು ಕೇಳಿಕೊಂಡೇ ಬೆಳೆದಿದ್ದೇನೆ ಎಂಬ ತೃಪ್ತಿ ನನ್ನದು. ಮುಖ್ಯವಾಗಿ ಗಾನಯೋಗಿ ಪಂಚಾಕ್ಷರಿ ಗವಾಯಿ ಚಿತ್ರದ ʼಉಮಂಡುಗು ಮಂಡಗು” ಗೀತೆಗೆ ರಾಷ್ಟ್ರಪ್ರಶಸ್ತಿಯೂ ಬಂದಿತ್ತು ಎಂಬುದು ನಮ್ಮೆಲ್ಲರ ಹೆಮ್ಮೆ. ಕನ್ನಡವನ್ನು ಜೇನಿನಷ್ಟು ಸಿಹಿಯಾಗಿ, ಹಾಲಿನಷ್ಟು ಹಿತವಾಗಿ ಮಾತನಾಡುತ್ತಿದ್ದರು ಎಂದು ಡಿಸಿಎಂ ಅಶ್ವತ್ಥನಾರಾಯಣ್ ಸ್ಮರಿಸಿದರು.

ಡಿಸಿಎಂ ಅಶ್ವತ್ಥನಾರಾಯಣ್ (ಸಂಗ್ರಹ ಚಿತ್ರ)

ಬಾಲಸುಬ್ರಹ್ಮಣ್ಯಂ ಅಗಲಿಕೆಯನ್ನು ಸಹಿಸುವ ಶಕ್ತಿ ಅವರ ಅಭಿಮಾನಿ ಬಳಗಕ್ಕೂ, ಎಸ್.ಪಿ.ಬಿ ಅವರ ಕುಟುಂಬಕ್ಕೆ ಸಿಗಲಿ. ಈ ಅಗಲಿಕೆಯನ್ನು ಎದುರಿಸುವ ಮಾನಸಿಕ ಧೈರ್ಯವನ್ನು ದಯಪಾಲಿಸಲಿ ಎಂದು ಪ್ರಾರ್ಥಿಸಿದ್ದಾರೆ.

ABOUT THE AUTHOR

...view details