ಬೆಂಗಳೂರು: ಲಾಕ್ಡೌನ್ ಹಿನ್ನೆಲೆ ರಾಜ್ಯವು ತೀವ್ರ ಆರ್ಥಿಕ ಸಂಕಷ್ಟ ಅನುಭವಿಸುತ್ತಿದ್ದು, ಸಾಲದ ಮೊರೆ ಹೋಗಲು ನಿರ್ಧರಿಸಿದೆ. ಈವರೆಗೆ ರಾಜ್ಯ ಸರ್ಕಾರ ಮಾಡಿರುವ ಸಾಲದ ಸಮಗ್ರ ವರದಿ ಇಲ್ಲಿದೆ.
ಲಾಕ್ಡೌನ್ ಹಿನ್ನೆಲೆ ರಾಜ್ಯ ಸರ್ಕಾರ ತೀವ್ರ ಆರ್ಥಿಕ ಸಂಕಷ್ಟಕ್ಕೆ ಒಳಗಾಗಿರುವುದು ಗೊತ್ತಿರುವ ವಿಚಾರ. ಆದಾಯದ ಮೂಲಗಳೆಲ್ಲ ಬರಿದಾಗಿದ್ದು, ಬೊಕ್ಕಸ ಖಾಲಿ ಖಾಲಿಯಾಗಿದೆ. ಅನಿವಾರ್ಯ ಸ್ಥಿತಿಯಲ್ಲಿರುವ ಸರ್ಕಾರ 33 ಸಾವಿರ ಕೋಟಿ ರೂ. ಹೆಚ್ಚುವರಿ ಸಾಲವನ್ನು ಮಾರುಕಟ್ಟೆಯಿಂದ ಎತ್ತುವಳಿ ಮಾಡಲು ನಿರ್ಧರಿಸಿದೆ.
ಪ್ರಸಕ್ತ ವರ್ಷದಲ್ಲಿ 2.37 ಲಕ್ಷ ಕೋಟಿ ರೂ. ಗಾತ್ರದ ಆಯವ್ಯಯವನ್ನು ಮಂಡಿಸಿದ್ದು 1,79,920 ಕೋಟಿ ರೂ. ಆದಾಯ ನಿರೀಕ್ಷೆ ಮಾಡಲಾಗಿತ್ತು. ಆದರೆ, ಕೊರೊನಾ ಲಾಕ್ಡೌನ್ ಹಿನ್ನೆಲೆ ತೆರಿಗೆ ಮತ್ತಿತರ ಆದಾಯ 1.14 ಲಕ್ಷ ಕೋಟಿ ರೂ.ಗೆ ಕುಸಿಯುವ ಸಾಧ್ಯತೆ ಇದೆ. ಇದರಿಂದ ಸರ್ಕಾರಕ್ಕೆ 65,920 ಕೋಟಿ ರೂ. ಹಣದ ಕೊರತೆ ಎದುರಾಗಲಿದೆ. ಕೊರೊನಾ ಸಂಕಷ್ಟದಿಂದಾಗಿ ಕೇಂದ್ರ ಸರ್ಕಾರವು ಶೇ.3ರಿಂದ 5ರವರೆಗೆ ಸಾಲ ಪಡೆಯಲು ಅವಕಾಶ ನೀಡಿದೆ. ಇದರಿಂದ 36,700 ಕೋಟಿ ರೂ. ಹೆಚ್ಚುವರಿ ಸಾಲ ಪಡೆಯಲು ಸರ್ಕಾರಕ್ಕೆ ಅವಕಾಶ ಇದ್ದು, ಸದ್ಯ 33,000 ಕೋಟಿ ರೂ. ಸಾಲ ಪಡೆಯಲು ಅಧಿವೇಶನದಲ್ಲೂ ಅನುಮೋದನೆ ಪಡೆಯಲಾಗಿದೆ.
ಈವರೆಗೆ 31,000 ಕೋಟಿ ರೂ. ಸಾಲ:
ರಾಜ್ಯ ಸರ್ಕಾರ ಈ ಬಾರಿ ಸಾಲವನ್ನೇ ಬಹುವಾಗಿ ನೆಚ್ಚಿಕೊಂಡಿದೆ. ಅಭಿವೃದ್ಧಿ ಕೆಲಸ ಹಾಗೂ ಸರ್ಕಾರಿ ನೌಕರರ ವೇತನಕ್ಕಾಗಿ ಸಾಲದ ಮೊರೆ ಹೋಗಲು ನಿರ್ಧರಿಸಿದೆ.
ಆರ್ಬಿಐ ಅಂಕಿಅಂಶದ ಪ್ರಕಾರ 2020-21ರ ಆರ್ಥಿಕ ವರ್ಷದಲ್ಲಿ ಸರ್ಕಾರ ಜುಲೈವರೆಗೆ 12,000 ಕೋಟಿ ರೂ. ಸಾಲ ಪಡೆದಿದೆ. ನಬಾರ್ಡ್ನಿಂದ 52.29 ಕೋಟಿ ರೂ. ಸಾಲ ಪಡೆಯಲಾಗಿದೆ. ರಾಜ್ಯ ಸರ್ಕಾರ ಆರ್ಬಿಐ ಮೂಲಕ ರಾಜ್ಯ ಅಭಿವೃದ್ಧಿ ಸಾಲ (ಎಸ್ ಡಿಎಲ್)ವನ್ನು ಎತ್ತುವಳಿ ಮಾಡುತ್ತಿದೆ.