ಬೆಂಗಳೂರು: ರಾಷ್ಟ್ರೀಯ ಮಟ್ಟದ ಸ್ಫರ್ಧಾತ್ಮಕ ಪರೀಕ್ಷೆಗಳಲ್ಲಿ ರಾಜ್ಯದ ವಿದ್ಯಾರ್ಥಿಗಳು ಹೆಚ್ಚಿನ ಪ್ರಮಾಣದಲ್ಲಿ ತೇರ್ಗಡೆಯಾಗಿ ಉದ್ಯೋಗ ಪಡೆಯಲು ಮಾರ್ಗದರ್ಶನ ನೀಡುವುದಕ್ಕೆ ರಾಜ್ಯ ಸರ್ಕಾರವು ದೇಶದ ಹೆಸರಾಂತ ಆನ್ಲೈನ್ ಕಲಿಕಾ ವೇದಿಕೆ ʼಅನ್ಅಕಾಡೆಮಿʼ ಜೊತೆ ಒಪ್ಪಂದ ಮಾಡಿಕೊಂಡಿತು.
ಉನ್ನತ ಶಿಕ್ಷಣ ಖಾತೆ ಸಚಿವರೂ ಆದ ಉಪಮುಖ್ಯಮಂತ್ರಿ ಡಾ.ಸಿ.ಎನ್.ಅಶ್ವತ್ಥನಾರಾಯಣ ಅವರ ಸಮಕ್ಷಮದಲ್ಲಿ ಇಂದು ಕಾಲೇಜು ಮತ್ತು ತಾಂತ್ರಿಕ ಶಿಕ್ಷಣ ಇಲಾಖೆಯ ಆಯುಕ್ತ ಪ್ರದೀಪ್ ಪ್ರಭಾಕರ್ ಹಾಗೂ ಅನ್ಅಕಾಡೆಮಿಯ ಮುಖ್ಯ ಕಾರ್ಯ ನಿರ್ವಾಹಕ ಅಧಿಕಾರಿ ವಿವೇಕ್ ಸಿನ್ಹಾ ಒಪ್ಪಂದಕ್ಕೆ ಸಹಿ ಹಾಕಿ ದಾಖಲೆ ವಿನಿಮಯ ಮಾಡಿಕೊಂಡರು.
ಈ ಸಂದರ್ಭದಲ್ಲಿ ಮಾತನಾಡಿದ ಡಿಸಿಎಂ, ಈ ಒಪ್ಪಂದವು ಮೂರು ವರ್ಷ, ಅಂದರೆ 2021ರಿಂದ 2024ರವರೆಗೆ ಜಾರಿಯಲ್ಲಿರುತ್ತದೆ. ಈ ಮೂರು ವರ್ಷಗಳ ಅವಧಿಯಲ್ಲಿ ಪ್ರತೀ ವರ್ಷ 1,500 ವಿದ್ಯಾರ್ಥಿಗಳಂತೆ ಒಟ್ಟು 4,500 ವಿದ್ಯಾರ್ಥಿಗಳಿಗೆ ಅನ್ಅಕಾಡೆಮಿ ಉಚಿತ ತರಬೇತಿ ನೀಡಲಿದೆ ಎಂದರು.
ಪ್ರತಿ 6 ತಿಂಗಳಿಗೊಮ್ಮೆ ಆನ್ಲೈನ್ ಪರೀಕ್ಷೆಗಳನ್ನು ನಡೆಸಿ ಅದರಲ್ಲಿ ಆಯ್ಕೆಯಾಗುವ 750 ಪ್ರತಿಭಾನ್ವಿತ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನ ನೀಡಲಾಗುವುದು ಹಾಗೂ ಆ ವಿದ್ಯಾರ್ಥಿಗಳನ್ನು ಯಾವುದೇ ಶುಲ್ಕವಿಲ್ಲದೆ ಅನ್ಅಕಾಡೆಮಿ ಚಂದಾದಾರರನ್ನಾಗಿ ಮಾಡಲಾಗುವುದು ಎಂದು ಹೇಳಿದರು.