ಬೆಂಗಳೂರು :ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದು ನೂರು ದಿನಗಳ ತುಂಬುತ್ತಿದ್ದು, ಈ ಸಮಯದಲ್ಲಿ ಹಿಂದಿನ ಸರ್ಕಾರದ ಹಗರಣಗಳ ಆರೋಪಗಳ ಕುರಿತು ತನಿಖಾಸ್ತ್ರ ಪ್ರಯೋಗಕ್ಕೆ ಸಿದ್ದರಾಮಯ್ಯ ಸರ್ಕಾರ ಮುಂದಾಗಿದೆ. ಸದ್ಯ ಎರಡು ಪ್ರಕರಣಗಳಿಗೆ ವಿಚಾರಣಾ ಆಯೋಗ ರಚನೆ ಮಾಡಿದ್ದು, ಎರಡು ಕೇಸ್ಗಳಿಗೆ ವಿಶೇಷ ತನಿಖಾ ದಳ ರಚಿಸಿದೆ. ಸದ್ಯದಲ್ಲೇ ಮತ್ತೊಂದು ಪ್ರಕರಣದಲ್ಲಿಯೂ ತನಿಖಾ ಆಯೋಗದ ಆದೇಶ ಹೊರಬೀಳಲಿದೆ.
ಪಿಎಸ್ಐ ನೇಮಕಾತಿ ಹಗರಣ ತನಿಖೆ :ಬಸವರಾಜ ಬೊಮ್ಮಾಯಿ ಮುಖ್ಯಮಂತ್ರಿಯಾಗಿದ್ದ ವೇಳೆ ಸದ್ದು ಮಾಡಿದ್ದ ಪ್ರಮುಖ ಹಗರಣದಲ್ಲಿ ಪಿಎಸ್ಐ ನೇಮಕಾತಿ ಹಗರಣವೂ ಒಂದಾಗಿದೆ. ಬಿಜೆಪಿ ಸರ್ಕಾರ ಈ ಪ್ರಕರಣವನ್ನು ಸಿಐಡಿ ತನಿಖೆಗೆ ವಹಿಸಿ ತನಿಖೆ ನಡೆಸಿದ್ದರೂ ಕಾಂಗ್ರೆಸ್ ಸರ್ಕಾರ ನ್ಯಾಯಾಂಗ ತನಿಖೆಗೆ ಆದೇಶಿಸಿದೆ. ಪ್ರತಿಪಕ್ಷವಾಗಿದ್ದಾಗ ನ್ಯಾಯಾಂಗ ತನಿಖೆಯ ಪಟ್ಟು ಹಿಡಿದಿದ್ದ ಸಿದ್ದರಾಮಯ್ಯ, ಇದೀಗ ಮುಖ್ಯಮಂತ್ರಿಯಾಗುತ್ತಿದ್ದಂತೆ ತಮ್ಮ ಬೇಡಿಕೆ ಈಡೇರಿಸಿಕೊಂಡಿದ್ದಾರೆ.
ಬಿಜೆಪಿ ಸರ್ಕಾರದ ಅವಧಿಯಲ್ಲಿ ನಡೆದಿದೆ ಎನ್ನಲಾದ 545 ಪಿಎಸ್ಐ ನೇಮಕಾತಿ ಅಕ್ರಮ ಪ್ರಕರಣ ಸಂಬಂಧ ನ್ಯಾಯಾಂಗ ತನಿಖೆಗೆ ವಿಚಾರಣಾ ಆಯೋಗ ರಚಿಸಲು ಜುಲೈ 21 ರಂದು ರಾಜ್ಯ ಸರ್ಕಾರ ಆದೇಶ ಹೊರಡಿಸಿತ್ತು. ಹೈಕೋರ್ಟ್ ನಿವೃತ್ತ ನ್ಯಾಯಮೂರ್ತಿ ಬಿ ವೀರಪ್ಪ ನೇತೃತ್ವದಲ್ಲಿ ವಿಚಾರಣಾ ಆಯೋಗವನ್ನು ರಚಿಸಲಾಗಿತ್ತು. ಮೂರು ತಿಂಗಳಿನಲ್ಲಿ ವರದಿ ನೀಡುವಂತೆ ಸರ್ಕಾರ ಆಯೋಗಕ್ಕೆ ಸೂಚಿಸಿದೆ.
2021ರ ಅಕ್ಟೋಬರ್ನಲ್ಲಿ ರಾಜ್ಯದ 92 ಕೇಂದ್ರಗಳಲ್ಲಿ ಪಿಎಸ್ಐ ನೇಮಕಾತಿಗೆ ಲಿಖಿತ ಪರೀಕ್ಷೆ ನಡೆಸಲಾಗಿತ್ತು. ನಂತರ ಅಕ್ರಮ ಆರೋಪ ಕೇಳಿಬಂದ ಹಿನ್ನೆಲೆ 52 ಮಂದಿ ವಿರುದ್ಧ ಕ್ರಿಮಿನಲ್ ಕೇಸ್ ದಾಖಲಿಸಲಾಗಿತ್ತು. ಬಳಿಕ ಪ್ರಕರಣದ ತನಿಖೆಯನ್ನು ಸಿಐಡಿಗೆ ವಹಿಸಲಾಗಿತ್ತು. ಸಿಐಡಿ ಹಲವರನ್ನು ಬಂಧಿಸಿ ತನಿಖೆ ನಡೆಸಿದ್ದು, ಇದೀಗ ಸಿಐಡಿ ತಂಡ ಮತ್ತು ಪೊಲೀಸ್ ನೇಮಕಾತಿ ವಿಭಾಗ ಸಮಗ್ರ ಮಾಹಿತಿಯನ್ನು ಆಯೋಗಕ್ಕೆ ಸಲ್ಲಿಸುವಂತೆ ಸೂಚಿಸಿದೆ.
40 ಪರ್ಸೆಂಟ್ ಕಮಿಷನ್ ಪ್ರಕರಣ ತನಿಖೆ :ಬಿಜೆಪಿ ಸರ್ಕಾರದ ವೇಳೆ ರಾಷ್ಟ್ರಮಟ್ಟದಲ್ಲಿ ಸದ್ದು ಮಾಡಿದ್ದ ಗುತ್ತಿಗೆದಾರರಿಂದ 40 ಪರ್ಸೆಂಟ್ ಕಮಿಷನ್ ಪಡೆದ ಆರೋಪ ಪ್ರಕರಣವನ್ನೂ ನ್ಯಾಯಾಂಗ ತನಿಖೆಗೆ ವಹಿಸಲಾಗಿದೆ. ರಾಜ್ಯ ಗುತ್ತಿಗೆದಾರರ ಸಂಘದ ಅಧ್ಯಕ್ಷ ಕೆಂಪಣ್ಣ ಅವರು ಮಾಡಿದ್ದ ಕಮಿಷನ್ ಆರೋಪದ ತನಿಖೆಗೆ ನಿವೃತ್ತ ಹೈಕೋರ್ಟ್ ನ್ಯಾಯಾಧೀಶ ನ್ಯಾಯಮೂರ್ತಿ ನಾಗಮೋಹನ್ ದಾಸ್ ನೇತೃತ್ವದಲ್ಲಿ ತನಿಖಾ ಸಮಿತಿ ರಚಿಸಿ ಆಗಸ್ಟ್ 17ರಂದು ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಕಮಿಷನ್ ಆರೋಪ ಸಂಬಂಧ ಎಲ್ಲ ದಾಖಲಾತಿಗಳನ್ನು ಪರಿಶೀಲಿಸಿ ವಿವರವಾದ ತನಿಖೆ ನಡೆಸಬೇಕು. ಪ್ರಕರಣ ಸಂಬಂಧ ಸಂಪೂರ್ಣ ವರದಿಯನ್ನು ಒಂದು ತಿಂಗಳಲ್ಲಿ ನೀಡಬೇಕು ಎಂದು ಆದೇಶದಲ್ಲಿ ಸೂಚಿಸಲಾಗಿದೆ.
ರಾಜ್ಯ ಗುತ್ತಿಗೆದಾರರ ಸಂಘವು, ಎಲ್ಲ ಸಾರ್ವಜನಿಕ ಯೋಜನೆಗಳಲ್ಲಿ ಶೇ. 40ರಷ್ಟು ಕಮಿಷನ್ ಪಡೆಯುತ್ತಿರುವ ಬಗ್ಗೆ ಪ್ರಧಾನಿ ನರೇಂದ್ರ ಮೋದಿ ಹಾಗೂ ಸಿಎಂಗೆ ಪತ್ರ ಬರೆದಿತ್ತು. ಇದು ರಾಷ್ಟ್ರಮಟ್ಟದಲ್ಲಿ ದೊಡ್ಡ ಸುದ್ದಿಯಾಗಿತ್ತು. ಗುತ್ತಿಗೆದಾರ ಸಂತೋಷ್ ಆತ್ಮಹತ್ಯೆ ವಿಚಾರವೂ ಬಿಜೆಪಿಯನ್ನು ಕಮಿಷನ್ ಆರೋಪ ಪ್ರಕರಣದಲ್ಲಿ ಇಕ್ಕಟ್ಟಿಗೆ ಸಿಲುಕುವಂತೆ ಮಾಡಿತ್ತು. ಇದಕ್ಕೆ ಕೆ ಎಸ್ ಈಶ್ವರಪ್ಪ ಅವರ ತಲೆದಂಡವೂ ಆಗಿತ್ತು. ಈ ಗಂಭೀರ ಆರೋಪಗಳ ಬಗ್ಗೆ ಹಿಂದಿನ ಸರ್ಕಾರದ ಮಟ್ಟದಲ್ಲಿ ಯಾವುದೇ ಕ್ರಮ ಕೈಗೊಂಡಿಲ್ಲ ಎನ್ನುವ ಪ್ರಸ್ತಾಪದೊಂದಿಗೆ ನ್ಯಾಯಾಂಗ ತನಿಖೆಗೆ ಆದೇಶಿಸಲಾಗಿದೆ.