ಕರ್ನಾಟಕ

karnataka

ETV Bharat / state

ಬೀದಿ ನಾಯಿಗಳ ಸಂತಾನ ನಿಯಂತ್ರಣ‌ ಕೈಗೊಳ್ಳುವಂತೆ ಸುತ್ತೋಲೆ ಹೊರಡಿಸಿದ ಸರ್ಕಾರ - ಭಾರತೀಯ ಪ್ರಾಣಿ ಕಲ್ಯಾಣ ಮಂಡಳಿ

ಬೀದಿ ನಾಯಿಗಳ ಸಂತಾನ ನಿಯಂತ್ರಣ‌ಕ್ಕಾಗಿ ನಗರಾಭಿವೃದ್ಧಿ ಹಾಗೂ ಪಶುಸಂಗೋಪನೆ ಇಲಾಖೆ ಜಂಟಿ ಸುತ್ತೋಲೆ ಹೊರಡಿಸಿದೆ.

Stray Dog Breed Control Scheme
ಬೀದಿ ನಾಯಿಗಳ ಸಂತಾನ ನಿಯಂತ್ರಣ‌ ಕೈಗೊಳ್ಳುವಂತೆ ಸುತ್ತೋಲೆ ಹೊರಡಿಸಿದ ಸರ್ಕಾರ

By

Published : Feb 7, 2023, 7:47 AM IST

ಬೆಂಗಳೂರು: ಬೀದಿ ನಾಯಿಗಳ ಸಂತಾನ ನಿಯಂತ್ರಣ ಯೋಜನೆ ಕೈಗೊಳ್ಳುವ ಸಂಬಂಧ ನಗರಾಭಿವೃದ್ಧಿ ಹಾಗೂ ಪಶುಸಂಗೋಪನೆ ಇಲಾಖೆ ಜಂಟಿ ಸುತ್ತೋಲೆ ಹೊರಡಿಸಿದೆ. ಸುತ್ತೋಲೆಯಲ್ಲಿ ಕಾರ್ಯಕ್ರಮ‌ ಅನುಷ್ಠಾನಕ್ಕಾಗಿ ಕೆಲ ಮಾರ್ಗಸೂಚಿಯನ್ನು ಅನುಸರಿಸುವಂತೆ ಸೂಚಿಸಿದೆ. ರಾಜ್ಯದ ಎಲ್ಲಾ ಪುರಸಭೆ, ನಗರಸಭೆ, ಪಟ್ಟಣ ಪಂಚಾಯತ್, ನಗರಪಾಲಿಕೆಗಳ ವ್ಯಾಪ್ತಿಯ ಬೀದಿ ನಾಯಿಗಳ ಸಂತಾನ ನಿಯಂತ್ರಣ (ABC) ಯೋಜನೆಯನ್ನು ಕೈಗೊಳ್ಳುವುದು ಸಂಬಂಧಪಟ್ಟ ಸ್ಥಳೀಯ ಸಂಸ್ಥೆಗಳ ಆದ್ಯ ಕರ್ತವ್ಯವಾಗಿದೆ. ಈ ಯೋಜನೆಯನ್ನು ಕ್ರಮಬದ್ಧವಾಗಿ ಅನುಷ್ಕಾನಗೊಳಿಸುವುದರಿಂದ ಬೀದಿ ನಾಯಿಗಳ ಸಂಖ್ಯೆ ನಿಯಂತ್ರಣವಾಗುವುದರ ಜೊತೆಗೆ ನಾಯಿ ಕಡಿತ ಮತ್ತು ರೇಬಿಸ್ ರೋಗ ನಿಯಂತ್ರಣ ಮಾಡಲು ಸಾಧ್ಯವಾಗುವುದು ಎಂದು ತಿಳಿಸಿದೆ.

ಮಾರ್ಗಸೂಚಿ ಏನು?: -ಭಾರತೀಯ ಪ್ರಾಣಿ ಕಲ್ಯಾಣ ಮಂಡಳಿಯಿಂದ ಮಾನ್ಯತೆ ಪಡೆದ ಪ್ರಾಣಿ ಕಲ್ಯಾಣ ಸಂಸ್ಥೆಗಳಿಗೆ ಮಾತ್ರ ಈ ಯೋಜನೆಯನ್ನು ಕೈಗೆತ್ತಿಕೊಳ್ಳಲು ನಿಯಮಾನುಸಾರ ನೀಡಬಹುದಾಗಿರುತ್ತದೆ. ಪ್ರತಿ ವರ್ಷ ಸ್ಥಳೀಯ ಸಂಸ್ಥೆಗಳ ಆಯವ್ಯಯದಲ್ಲಿ ಬೀದಿ ನಾಯಿಗಳ ಸಂತಾನ ನಿಯಂತ್ರಣಕ್ಕಾಗಿ ಅಗತ್ಯವಿರುವ ಹಣಕಾಸನ್ನು ಹಂಚಿಕೆ ಮಾಡಿಕೊಳ್ಳಬೇಕು. ಯಾವುದೇ ಪ್ರಾಣಿ ಕಲ್ಯಾಣ ಸಂಸ್ಥೆಗಳು ಬೀದಿ ನಾಯಿಗಳ ಸಂತಾನ ನಿಯಂತ್ರಣ (ABC) ಯೋಜನೆಯನ್ನು ಕೈಗೆತ್ತಿಕೊಳ್ಳುವ ಮುನ್ನ ಪ್ರತಿ ಯೋಜನೆಗೆ ಮಾನ್ಯತೆ (Project recognition) ನ್ನು ಭಾರತೀಯ ಪ್ರಾಣಿ ಕಲ್ಯಾಣ ಮಂಡಳಿಯಿಂದ ಅನುಮತಿ ಪಡೆದ ನಂತರವಷ್ಟೆ ಕೈಗೊಳ್ಳಬೇಕು, ಅಗತ್ಯ ಮೂಲಭೂತ ಸೌಲಭ್ಯಗಳನ್ನು ಒದಗಿಸಿಕೊಡುವುದು ಸ್ಥಳೀಯ ಸಂಸ್ಥೆಗಳ ಜವಾಬ್ದಾರಿ, ಸಂತಾನ ನಿಯಂತ್ರಣ ಶಸ್ತ್ರಚಿಕಿತ್ಸೆ ನಡೆಸಲಾದ ನಂತರ ಲಸಿಕೆ ನೀಡಿ ನಾಯಿಗಳನ್ನು ಯಾವ ಪ್ರದೇಶದಿಂದ ಹಿಡಿಯಲಾಗಿತ್ತೋ ಅದೇ ಪ್ರದೇಶದಲ್ಲಿ ವಾಪಸ್​ ಬಿಡಬೇಕು ಎಂದು ಸರ್ಕಾರ ಸುತ್ತೋಲೆ ಹೊರಡಿಸಿದೆ.

ಇದನ್ನೂ ಓದಿ:ಕೊನೆಗೂ ತನ್ನ ಮರಿಗಳೊಂದಿಗೆ ಸೇರಿದ ಶ್ವಾನ: ಇದರ ಹಿಂದಿದೆ ಒಂದು ಮನುಷ್ಯತ್ವದ ಕಥೆ..!

ನಾಯಿಗಳ ಸಂತಾನ ನಿಯಂತ್ರಣ ಕಾರ್ಯಕ್ರಮ ಕೈಗೆತ್ತಿಕೊಂಡ ಪ್ರಾಣಿ ಕಲ್ಯಾಣ ಸಂಸ್ಥೆಗಳು ಸಂಪೂರ್ಣ ದಾಖಲಾತಿಗಳನ್ನು ನಿರ್ವಹಿಸಬೇಕು, ಸ್ಥಳೀಯ ಮಟ್ಟದಲ್ಲಿ, ಬೀದಿ ನಾಯಿಗಳ ಸಂತಾನ ನಿಯಂತ್ರಣ (ABC) ನಿಗಾವಣೆ ಸಮಿತಿಯನ್ನು ಆಯುಕ್ತರು/ಮುಖ್ಯಾಧಿಕಾರಿರವರ ಅಧ್ಯಕ್ಷತೆಯಲ್ಲಿ ಪಶುಸಂಗೋಪನೆ, ಆರೋಗ್ಯ ಹಾಗೂ ಜಿಲ್ಲಾ ಪ್ರಾಣಿದಯಾ ಸಂಘದ ಪ್ರತಿನಿಧಿಗಳನ್ನು ಒಳಗೊಂಡಂತೆ ರಚಿಸಿಕೊಂಡು ಒಟ್ಟಾರೆಯಾಗಿ ಯೋಜನೆಯನ್ನು ಮೇಲುಸ್ತುವಾರಿ ಮಾಡಬೇಕಿದೆ. ನಗರ ಸ್ಥಳೀಯ ಸಂಸ್ಥೆಗಳು ತಮ್ಮ ಮೂಲ ಸಂಪನ್ಮೂಲದಿಂದ ಪ್ರತಿ ವರ್ಷ ಆಯವ್ಯಯದಲ್ಲಿ ಸೂಕ್ತವಾದ ಅನುದಾನವನ್ನು ಕಡ್ಡಾಯವಾಗಿ ನಿಗದಿಪಡಿಸಿಕೊಂಡು ಕೆ.ಟಿ.ಪಿ.ಪಿ ಕಾಯ್ದೆ ಪ್ರಕಾರ ಅನುಷ್ಠಾನಗೊಳಿಸಬೇಕು.

ಸುತ್ತೋಲೆಯಲ್ಲಿನ ನಿರ್ದೇಶನಗಳನ್ನು ಅನುಷ್ಠಾನಗೊಳಿಸುವಲ್ಲಿ ಸ್ಥಳೀಯ ಸಂಸ್ಥೆಗಳಲ್ಲಿ ಲೋಪದೋಷಗಳು ಬೇಜವಾಬ್ದಾರಿ ಉಂಟಾದಲ್ಲಿ ಸಂಬಂಧಪಟ್ಟ ಅಧಿಕಾರಿಗಳ ವಿರುದ್ಧ ನಿಯಮಾನುಸಾರ ಶಿಸ್ತು ಕ್ರಮ ಜರುಗಿಸಲಾಗುವುದು. ಇನ್ನು ಬೀದಿ ನಾಯಿಗಳ ಸಂತಾನ ನಿಯಂತ್ರಣ (ABC) ಯೋಜನೆಯ ಬಗ್ಗೆ ವಿಸ್ತೃತ ಮಾಹಿತಿಯನ್ನು ಭಾರತೀಯ ಪ್ರಾಣಿ ಕಲ್ಯಾಣ ಮಂಡಳಿಯ ವೆಬ್‌ಸೈಟ್ ನಲ್ಲಿ ಪಡೆಯಬಹುದಾಗಿದೆ.

ಇದನ್ನೂ ಓದಿ:ಗೀ ರೈಸ್, ಚಿಕನ್ ಕಬಾಬ್ ತಿಂದು ಫುಡ್ ಪಾಯಿಸನ್; ಮಂಗಳೂರಲ್ಲಿ 137 ನರ್ಸಿಂಗ್ ವಿದ್ಯಾರ್ಥಿನಿಯರು ಅಸ್ವಸ್ಥ

ABOUT THE AUTHOR

...view details