ಕರ್ನಾಟಕ

karnataka

By ETV Bharat Karnataka Team

Published : Dec 5, 2023, 6:44 AM IST

ETV Bharat / state

ಚಿಕ್ಕಮಗಳೂರು ಪೊಲೀಸರಿಗೆ ಬೆದರಿಕೆ ಹಾಕಿದ ಪ್ರಕರಣ: ನಾಲ್ವರು ವಕೀಲರ ವಿರುದ್ಧದ ಎಫ್‌ಐಆರ್‌ಗೆ ಹೈಕೋರ್ಟ್​ ತಡೆ

High Court interim stay on FIR registered against lawyer: ಚಿಕ್ಕಮಗಳೂರಿನ ಪೊಲೀಸ್​ ವಕೀಲರ ಪ್ರಕರಣಕ್ಕೆ ಸಂಬಂಧಿಸಿದಂತೆ ಜಿಲ್ಲೆಯ ನಾಲ್ಕು ವಕೀಲರ ಮೇಲೆ ದಾಖಲಾಗಿದ್ದ ಎಫ್‌ಐಆರ್‌ಗೆ ಹೈಕೋರ್ಟ್ ಮಧ್ಯಂತರ ತಡೆಯಾಜ್ಞೆ ನೀಡಿದೆ.

High Court
ಹೈಕೋರ್ಟ್

ಬೆಂಗಳೂರು:ಪೊಲೀಸ್​ ಅಧಿಕಾರಿಗೆ ಜೀವ ಬೆದರಿಕೆ ಹಾಕಿದ ಮತ್ತು ಅವರ ಕರ್ತವ್ಯ ನಿರ್ವಹಣೆಗೆ ಅಡ್ಡಿಪಡಿಸಿದ ಆರೋಪದ ಮೇಲೆ ಚಿಕ್ಕಮಗಳೂರಿನ ನಾಲ್ವರು ವಕೀಲರ ಮೇಲೆ ದಾಖಲಾಗಿರುವ ಎಫ್‌ಐಆರ್‌ಗೆ ಹೈಕೋರ್ಟ್ ಮಧ್ಯಂತರ ತಡೆಯಾಜ್ಞೆ ನೀಡಿ ಆದೇಶಿಸಿದೆ.

ಪ್ರಕರಣ ಸಂಬಂಧ ತಮ್ಮ ವಿರುದ್ಧ ದಾಖಲಾಗಿರುವ ಎಫ್‌ಐಆರ್ ರದ್ದುಪಡಿಸುವಂತೆ ಕೋರಿ ಚಿಕ್ಕಮಗಳೂರಿನ ವಕೀಲರಾದ ಡಿ.ಬಿ. ಸುಜೇಂದ್ರ, ಎ.ಕೆ. ಭುವನೇಶ್, ಕೆ.ಬಿ. ನಂದೀಶ್ ಮತ್ತು ಎಚ್.ಎಂ. ಸುಧಾಕರ್ ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಹೇಮಂತ್ ಚಂದನ್ ಗೌಡರ್ ಅವರಿದ್ದ ನ್ಯಾಯಪೀಠ ಈ ಆದೇಶ ಮಾಡಿದೆ.

ಅಲ್ಲದೇ, ವಕೀಲ ಪ್ರೀತಮ್ ಎಂಬುವರ ಮೇಲೆ ಪೊಲೀಸರು ದಾಖಲಿಸಿಕೊಂಡಿರುವ ಪ್ರತಿ ದೂರಿಗೆ ಸಂಬಂಧಿಸಿದಂತೆ ಚಿಕ್ಕಮಗಳೂರು ಟೌನ್ ಠಾಣಾ ಪೊಲೀಸರಿಗೆ ನೋಟಿಸ್ ಜಾರಿ ಮಾಡಿದೆ. ವಿಚಾರಣೆ ವೇಳೆ ಅರ್ಜಿದಾರರ ಪರ ವಕೀಲರು, ನಮ್ಮ ಕಕ್ಷಿದಾರರ ವಿರುದ್ಧದ ಸುಳ್ಳು ಆರೋಪ ಮಾಡಲಾಗಿದೆ. ಅವರನ್ನು ಪ್ರಕರಣದಲ್ಲಿ ಸಿಲುಕಿಸುವ ದುರುದ್ದೇಶದಿಂದ ನಾಲ್ಕು ಎಫ್‌ಐಆರ್ ದಾಖಲಿಸಲಾಗಿದೆ. ಪೊಲೀಸ್ ಅಧಿಕಾರಿಗಳು ಕಾನೂನನ್ನು ತಮ್ಮ ಕೈಗೆ ತೆಗೆದುಕೊಂಡಿದ್ದಾರೆ. ಕಾನೂನು ಉಲ್ಲಂಘನೆಕಾರರಂತೆ ವರ್ತಿಸಿದ್ದಾರೆ. ಅರ್ಜಿದಾರರು ಯಾವುದೇ ರೀತಿ ಕಾನೂನು ಉಲ್ಲಂಘನೆ ಮಾಡಿಲ್ಲ. ಆದ್ದರಿಂದ ಅವರ ವಿರುದ್ಧದ ಎಫ್‌ಐಆರ್ ರದ್ದುಪಡಿಸಬೇಕು ಎಂದು ಅರ್ಜಿಯಲ್ಲಿ ಕೋರಿದರು.

ಪ್ರಕರಣದ ಹಿನ್ನೆಲೆ:ಚಿಕ್ಕಮಗಳೂರು ಟೌನ್ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ 2023ರ ನ.30 ರಂದು ಸಂಜೆ 6.30ಕ್ಕೆ ವಕೀಲ ಎನ್.ಟಿ. ಪ್ರೀತಂ ಅವರು ಬೈಕ್​ ನಿಲುಗಡೆ ಮಾಡಿದ್ದರು. ಆಗ ಬೈಕ್ ಕೀ ಎತ್ತಿಕೊಂಡಿದ್ದ ಪೊಲೀಸ್ ಅಧಿಕಾರಿ, ನೀವು ಟ್ರಾಫಿಕ್ ನಿಯಮ ಉಲ್ಲಂಘಿಸಿದ್ದೀರಿ ಎಂದು ತಿಳಿಸಿದ್ದರು. ಅದಕ್ಕೆ ವಕೀಲ ಪ್ರೀತಮ್ ದಂಡ ಪಾವತಿಸುವುದಾಗಿ ಹೇಳಿದ್ದರು. ಅದಕ್ಕೆ ಒಪ್ಪದ ಪೊಲೀಸರು ಪ್ರೀತಮ್ ಅವರನ್ನು ಠಾಣೆಗೆ ಕರೆದೊಯ್ದು ಹಾಕಿ ಹಾಗೂ ಕ್ರಿಕೆಟ್ ಬ್ಯಾಟಿನಿಂದ ಹಲ್ಲೆ ನಡೆಸಿದ್ದಾರೆ. ಘಟನೆಯಲ್ಲಿ ತೀವ್ರವಾಗಿ ಗಾಯಗೊಂಡಿದ್ದರೂ ಪ್ರೀತಮ್ ಅವರನ್ನು ಆಸ್ಪತ್ರೆಗೆ ದಾಖಲಿಸಲಿಲ್ಲ ಎಂದು ಅರ್ಜಿಯಲ್ಲಿ ವಿವರಿಸಲಾಗಿದೆ.

ಅಲ್ಲದೇ, ಈ ಮಾಹಿತಿ ತಿಳಿದಾಗ ಕೆಲ ವಕೀಲರು ಠಾಣೆಗೆ ತೆರಳಿ ಪ್ರತಿಭಟನೆ ನಡೆಸಿ, ಪೊಲೀಸರ ದುಂಡಾವರ್ತನೆಯನ್ನು ಖಂಡಿಸಿದ್ದಾರೆ. ಗಾಯಗೊಂಡ ಪ್ರೀತಮ್ ಅವರನ್ನು ಆಸ್ಪತ್ರೆಗೆ ಸೇರಿದ್ದಾರೆ. ಈ ಮಧ್ಯೆ ಅರ್ಜಿದಾರ ವಕೀಲರ ವಿರುದ್ಧ ಪೊಲೀಸರು ಎಫ್‌ಐಆರ್ ದಾಖಲಿಸಿದ್ದಾರೆ. ಪ್ರೀತಮ್ ಅವರ ಹೇಳಿಕೆ ದಾಖಲಿಸಿಕೊಳ್ಳುತ್ತಿದ್ದ ಪೊಲೀಸ್ ಅಧಿಕಾರಿ ಎ.ಎಂ. ಸತೀಶ್ ಅವರಿಂದ ಮೊಬೈಲ್ ಕಿತ್ತುಕೊಂಡ. ಅದಕ್ಕೆ ಪ್ರಶ್ನೆ ಮಾಡಿದ್ದಕ್ಕೆ ಅವರ ಮೇಲೆ ಹಲ್ಲೆ ನಡೆಸಲು ಯತ್ನಿಸಿದ, ಕರ್ತವ್ಯ ನಿರ್ವಹಣೆಗೆ ಅಡ್ಡಿಪಡಿಸಿದ, ಜೀವ ಬೆದರಿಕೆವೊಡ್ಡಿದ ಮತ್ತು ಸಾರ್ವಜನಿಕ ಶಾಂತಿಭಂಗ ಉಂಟು ಮಾಡಿದ ಆರೋಪ ಮಾಡಿದ್ದಾರೆ ಎಂದು ಅರ್ಜಿಯಲ್ಲಿ ತಿಳಿಸಲಾಗಿದೆ.

ಇದನ್ನೂ ಓದಿ:ಪೊಲೀಸರ ಸ್ಥೈರ್ಯ, ಶಕ್ತಿಯನ್ನು ಕುಂದಿಸುವ ಕೆಲಸ ಆಗ್ತಿದೆ: ನಿವೃತ್ತ ನೌಕರರ ಸಂಘದ ಉಪಾಧ್ಯಕ್ಷ ಅಣ್ಣಯ್ಯ

ABOUT THE AUTHOR

...view details