ಕರ್ನಾಟಕ

karnataka

By

Published : Apr 15, 2021, 5:04 PM IST

ETV Bharat / state

ಜಿಲ್ಲಾಧಿಕಾರಿಗಳ ನಡೆ ಹಳ್ಳಿ ಕಡೆ ಕಾರ್ಯಕ್ರಮ: ಇತ್ಯರ್ಥವಾಗದೇ ಬಾಕಿ ಉಳಿದ ಅರ್ಜಿಗಳೇ ಬೆಟ್ಟದಷ್ಟು!

ಜಿಲ್ಲಾಧಿಕಾರಿಗಳು ಹಳ್ಳಿ ಕಡೆಗೆ ಹೋಗಿ ಗ್ರಾಮಸ್ಥರ ಅಹವಾಲು ಸ್ವೀಕರಿಸುವ ಕಾರ್ಯಕ್ರಮಕ್ಕೆ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ. ಈವರೆಗೆ 30 ಜಿಲ್ಲೆಗಳಲ್ಲಿ ಈ ಕಾರ್ಯಕ್ರಮದ ಮೂಲಕ ಒಟ್ಟು 25,285 ಅರ್ಜಿಗಳನ್ನು ಸ್ವೀಕರಿಸಲಾಗಿದೆ.

ನಡೆ ಹಳ್ಳಿ ಕಡೆ
ನಡೆ ಹಳ್ಳಿ ಕಡೆ

ಬೆಂಗಳೂರು:ಜಿಲ್ಲಾಧಿಕಾರಿಗಳ ನಡೆ ಹಳ್ಳಿಗಳ‌ ಕಡೆ ಎಂಬ ವಿನೂತನ ಕಾರ್ಯಕ್ರಮವನ್ನು ಕಂದಾಯ ಇಲಾಖೆ ಇದೇ ಫೆಬ್ರವರಿಯಲ್ಲಿ ಪ್ರಾರಂಭಿಸಿತ್ತು. ಜಿಲ್ಲಾಧಿಕಾರಿಗಳು ಜಿಲ್ಲೆಯ ಹಳ್ಳಿಗಳಿಗೆ ಹೋಗಿ ಸಮಸ್ಯೆಯನ್ನು ಸ್ಥಳದಲ್ಲೇ ಪರಿಹರಿಸುವ ಕಾರ್ಯಕ್ರಮ ಹಮ್ಮಿಕೊಂಡಿದೆ. ಆದರೆ ಈ ಯೋಜನೆ ಅಡಿ ಇತ್ಯರ್ಥ ಪಡಿಸಿದ ಅಹವಾಲು, ಬಾಕಿ ಉಳಿಸಿಕೊಂಡ ಅರ್ಜಿಗಳೆಷ್ಟು ಎಂಬ ವರದಿ ಇಲ್ಲಿದೆ.

ಜಿಲ್ಲಾಡಳಿತವನ್ನು ಹಳ್ಳಿ ಜನರ ಮನೆ ಬಾಗಿಲಿಗೆ ಕೊಂಡೊಯ್ಯುವ ಜಿಲ್ಲಾಧಿಕಾರಿಗಳ ನಡೆ - ಹಳ್ಳಿ ಕಡೆ ಕಾರ್ಯಕ್ರಮಕ್ಕೆ ಇದೇ ಫೆಬ್ರವರಿ ತಿಂಗಳ ಮೂರನೇ ಶನಿವಾರ ಚಾಲನೆ ದೊರಕಿತ್ತು. ಜಿಲ್ಲಾಧಿಕಾರಿಗಳ ತಂಡ ಗ್ರಾಮಗಳಿಗೆ ಭೇಟಿ ನೀಡಿ ಕುಂದು ಕೊರತೆ ಆಲಿಸಿ ಅಲ್ಲಿಯೇ ಪರಿಹಾರ ಸೂಚಿಸುವುದು ಈ ಕಾರ್ಯಕ್ರಮದ ವೈಶಿಷ್ಟ್ಯವಾಗಿದೆ. ಹಳ್ಳಿಯ ಜನರು ಸಣ್ಣಪುಟ್ಟ ಸಮಸ್ಯೆ ಇದ್ದರೂ ಜಿಲ್ಲಾಧಿಕಾರಿಗಳು, ತಹಶೀಲ್ದಾರ್‌ ಕಚೇರಿಗೆ ಅಲೆಯುವುದು ಸಾಮಾನ್ಯ ಸಂಗತಿಯಾಗಿದೆ. ಇದನ್ನು ತಪ್ಪಿಸಲು ಕಂದಾಯ ಇಲಾಖೆ ಈ ಕಾರ್ಯಕ್ರಮ ರೂಪಿಸಿದೆ.

ಗ್ರಾಮಸ್ಥರಿಂದ ಸ್ವೀಕೃತವಾದ ಮನವಿ

ಜಿಲ್ಲಾಧಿಕಾರಿಗಳ ನಡೆ - ಹಳ್ಳಿ ಕಡೆ ಯೋಜನೆಯ ಅನುಸಾರ ಡಿಸಿಗಳು ಪ್ರತಿ ತಿಂಗಳ ಮೂರನೇ ಶನಿವಾರ ಒಂದು ಗ್ರಾಮ ಪಂಚಾಯಿತಿಗೆ ಭೇಟಿ ನೀಡಿ ಅಲ್ಲಿನ ಹಳ್ಳಿಯ ಜನರ ಅಹವಾಲು ಸ್ವೀಕರಿಸಿ ಸಮಸ್ಯೆ ಇತ್ಯರ್ಥ ಪಡಿಸಬೇಕು. ಪಿಂಚಣಿ, ಆಶ್ರಯ ಯೋಜನೆ, ಸ್ಮಶಾನ, ಫೌತಿ ಖಾತೆ, ಪಹಣಿ ತಿದ್ದುಪಡಿ, ಭೂ ಒತ್ತುವರಿ ತೆರವು, ಮತದಾರರ ಪಟ್ಟಿ ಪರಿಷ್ಕರಣೆ, ಬರ, ಪ್ರವಾಹ ಪರಿಶೀಲನೆ ಹಾಗೂ ಪರಿಹಾರ ನೀಡುವುದು, ಅರ್ಹ ಕುಟುಂಬಗಳಿಗೆ ಬಿಪಿಎಲ್‌ ಕಾರ್ಡ್‌ ಹಂಚಿಕೆ, ಪೋಡಿ ಪ್ರಕರಣ ಇತ್ಯರ್ಥ, ಕಂದಾಯ ಗ್ರಾಮಗಳ ರಚನೆಗೆ ಸಂಬಂಧಿಸಿದ ಅಡೆ - ತಡೆ ನಿವಾರಣೆ ಸಂಬಂಧ ಡಿಸಿಗಳ ಗ್ರಾಮ ವಾಸ್ತವ್ಯದ ಸಂದರ್ಭದಲ್ಲಿ ಕ್ರಮ ಕೈಗೊಳ್ಳಲಾಗುತ್ತದೆ. ಸದ್ಯ ಕೋವಿಡ್ ಹಿನ್ನೆಲೆ ಈ ಕಾರ್ಯಕ್ರಮಕ್ಕೆ ಬ್ರೇಕ್ ಬಿದ್ದಿದೆ. ಕಳೆದ ಎರಡು ತಿಂಗಳಿಂದ ನಡೆದ ಕಾರ್ಯಕ್ರಮದ ವಸ್ತುಸ್ಥಿತಿಯ ಚಿತ್ರಣ ಇಲ್ಲಿದೆ.

ಒಟ್ಟು ಇತ್ಯರ್ಥ ಪಡಿಸಿರುವ ಪ್ರಕರಣ ಎಷ್ಟು?:
ಜಿಲ್ಲಾಧಿಕಾರಿಗಳು ಹಳ್ಳಿ ಕಡೆಗೆ ಹೋಗಿ ಗ್ರಾಮಸ್ಥರ ಅಹವಾಲು ಸ್ವೀಕರಿಸುವ ಕಾರ್ಯಕ್ರಮಕ್ಕೆ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ. ಈವರೆಗೆ 30 ಜಿಲ್ಲೆಗಳಲ್ಲಿ ಈ ಕಾರ್ಯಕ್ರಮದ ಮೂಲಕ ಒಟ್ಟು 25,285 ಅರ್ಜಿಗಳನ್ನು ಸ್ವೀಕರಿಸಲಾಗಿದೆ.

ಜಿಲ್ಲಾಧಿಕಾರಿಗಳು ಸ್ಥಳದಲ್ಲೇ ಒಟ್ಟು 12,845 ಅರ್ಜಿಗಳನ್ನು ಇತ್ಯರ್ಥ ಪಡಿಸಿದ್ದಾರೆ. ಈ ಪೈಕಿ ಬೆಳಗಾವಿ ಜಿಲ್ಲೆಯಲ್ಲಿ ಈ ಕಾರ್ಯಕ್ರಮದಡಿ ಸ್ವೀಕರಿಸಲಾದ 1,075 ಅರ್ಜಿಗಳಲ್ಲಿ ಎಲ್ಲವನ್ನೂ ಅಧಿಕಾರಿಗಳು ಸ್ಥಳದಲ್ಲೇ ಇತ್ಯರ್ಥ ಪಡಿಸಿದ್ದಾರೆ.

ಇತ್ಯರ್ಥವಾಗದೆ ಬಾಕಿ ಉಳಿದ ಅರ್ಜಿಗಳು ಸಾಕಷ್ಟಿವೆ:
ಇನ್ನು ಜಿಲ್ಲಾಧಿಕಾರಿಗಳು ಹಳ್ಳಿ ಕಡೆಗೆ ನಡೆಯಿರಿ ಕಾರ್ಯಕ್ರಮದಲ್ಲಿ ಇತ್ಯರ್ಥವಾಗದ ಪ್ರಕರಣಗಳ ಸಂಖ್ಯೆಯೂ ಸಾಕಷ್ಟಿದೆ. ಬಾಕಿ ಉಳಿದ ಪ್ರಕರಣಗಳ ಸಂಖ್ಯೆ ಬರೋಬ್ಬರಿ 12,400 ಇದೆ. ಈ ಪೈಕಿ ದ.ಕನ್ನಡ ಜಿಲ್ಲೆಯಲ್ಲಿ ಅತಿಹೆಚ್ಚು 826 ಅರ್ಜಿಗಳು ಇತ್ಯರ್ಥವಾಗದೇ ಬಾಕಿ ಉಳಿದುಕೊಂಡಿದೆ. ಇನ್ನು ಹಾಸನದಲ್ಲಿ 808 ಪ್ರಕರಣಗಳು ಬಾಕಿ ಉಳಿದುಕೊಂಡಿದೆ. ಇತ್ಯರ್ಥವಾಗದ ಅಹವಾಲುಗಳಲ್ಲಿ ಕಂದಾಯ ಇಲಾಖೆಗೆ ಸಂಬಂಧಿಸಿದ ಅರ್ಜಿಗಳದ್ದೇ ಸಿಂಹಪಾಲಾಗಿದೆ.

ಬಳ್ಳಾರಿ ಜಿಲ್ಲೆಯಲ್ಲಿ 746, ತುಮಕೂರು 751, ವಿಜಯಪುರ 717, ಕಲಬುರ್ಗಿ 587, ಬೆಂ.ಗ್ರಾಮಾಂತರದಲ್ಲಿ 526, ಗದಗ 485, ಚಿಕ್ಕಬಳ್ಳಾಪುರ 444, ರಾಯಚೂರು 482 ಅರ್ಜಿಗಳು ಇತ್ಯರ್ಥವಾಗದೆ ಬಾಕಿ ಉಳಿದುಕೊಂಡಿದೆ.

ಜಿಲ್ಲಾಧಿಕಾರಿಗಳು ಬಾಕಿ ಉಳಿದಿರುವ ಅರ್ಜಿಗಳನ್ನು ಇತ್ಯರ್ಥಗೊಳಿಸಲು ಸಂಬಂಧಿತ ಇಲಾಖೆಗಳಿಗೆ ಕಳುಹಿಸಿಕೊಡಲಾಗಿದೆ. ನಿಯಮಾನುಸಾರ ವಿಲೇವಾರಿ ಮಾಡಲು ಕ್ರಮ ಕೈಗೊಳ್ಳಲಾಗುತ್ತಿದೆ. ಬಾಕಿ ಉಳಿದ ಪ್ರಕರಣಗಳಲ್ಲಿ ಈಗಾಗಲೇ ಕೆಲ ಅರ್ಜಿಗಳು ಇತ್ಯರ್ಥವಾಗುವ ಹಂತದಲ್ಲಿದೆ ಎಂದು ಕಂದಾಯ ಇಲಾಖೆ ಅಧಿಕಾರಿಗಳು ತಿಳಿಸಿದ್ದಾರೆ.

ಇದನ್ನೂ ಓದಿ..ಇಎಸ್​ಐ ಆಸ್ಪತ್ರೆಯಲ್ಲಿ ಮೃತದೇಹದ ಪಕ್ಕದಲ್ಲೇ ಸೋಂಕಿತರಿಗೆ ಚಿಕಿತ್ಸೆ: ಭಯಬಿದ್ದ ಜನತೆ

ABOUT THE AUTHOR

...view details