ಕರ್ನಾಟಕ

karnataka

ಕೌಟುಂಬಿಕ ದೌರ್ಜನ್ಯ ಪ್ರಕರಣಗಳಲ್ಲಿ ಪರಿಹಾರ ಕೋರಿ ಅರ್ಜಿ ಸಲ್ಲಿಸುವವರ ವಿವಾಹ ಸಿಂಧುತ್ವ ಪ್ರಶ್ನಿಸುವಂತಿಲ್ಲ: ಹೈಕೋರ್ಟ್

By

Published : May 26, 2023, 10:59 PM IST

ಕೌಟುಂಬಿಕ ಕಲಹ ಪ್ರಕರಣಗಳಲ್ಲಿ ಜೀವನಾಂಶ ಕೋರಿ ಸಲ್ಲಿಸಿದ ಅರ್ಜಿ ಸಂದರ್ಭದಲ್ಲಿ ನ್ಯಾಯಾಲಯಗಳು ಮದುವೆಯ ಸಿಂಧುತ್ವದ ಬಗ್ಗೆ ತೀರ್ಮಾನಿಸುವಂತಿಲ್ಲ ಎಂದು ಹೈಕೋರ್ಟ್ ಮಹತ್ವದ ವಿಚಾರಣಾ ನ್ಯಾಯಾಲಯಗಳಿಗೆ ತಾಕೀತು ಮಾಡಿದೆ.

the-validity-of-the-marriage-of-the-petitioner-seeking-relief-cannot-be-questioned-says-hi
ಕೌಟುಂಬಿಕ ದೌರ್ಜನ್ಯ ಪ್ರಕರಣಗಳಲ್ಲಿ ಪರಿಹಾರ ಕೋರಿ ಅರ್ಜಿ ಸಲ್ಲಿಸುವವರ ವಿವಾಹ ಸಿಂಧುತ್ವ ಪ್ರಶ್ನಿಸುವಂತಿಲ್ಲ : ಹೈಕೋರ್ಟ್

ಬೆಂಗಳೂರು: ಕೌಟುಂಬಿಕ ಕಲಹ ಪ್ರಕರಣಗಳಲ್ಲಿ ಜೀವನಾಂಶ ಕೋರಿ ಸಲ್ಲಿಸಿದ ಅರ್ಜಿ ಸಂದರ್ಭದಲ್ಲಿ ನ್ಯಾಯಾಲಯಗಳು ಮದುವೆಯ ಸಿಂಧುತ್ವದ ಬಗ್ಗೆ ತೀರ್ಮಾನಿಸುವಂತಿಲ್ಲ ಎಂದು ಹೈಕೋರ್ಟ್ ಮಹತ್ವದ ವಿಚಾರಣಾ ನ್ಯಾಯಾಲಯಗಳಿಗೆ ತಾಕೀತು ಮಾಡಿದೆ. ಮಹಿಳೆಯೊಬ್ಬರು ಸಲ್ಲಿಸಿದ್ದ ಕ್ರಿಮಿನಲ್ ಮರು ಪರಿಶೀಲನಾ ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಎಸ್.ರಾಚಯ್ಯ ಅವರಿದ್ದ ನ್ಯಾಯಪೀಠ ಈ ಆದೇಶ ನೀಡಿದೆ.

ಒಮ್ಮೆ ವಿಚಾರಣಾ ನ್ಯಾಯಾಲಯ (ಜೆಎಂಎಫ್‌ಸಿ) ಜೀವನಾಂಶ ನೀಡುವ ಬಗ್ಗೆ ಸಾಕ್ಷ್ಯಾಧಾರ ಪರಗಿಣಿಸಿ ಆದೇಶ ಪ್ರಕಟಿಸಿದಾಗ, ಪತ್ನಿ ಸ್ವತಃ ಜೀವನ ನಿರ್ವಹಣೆ ಮಾಡಲು ಸಮರ್ಥಳು ಆಗಿದ್ದಾಳೆ ಎಂಬುದು ಸಾಬೀತಾದರೆ ಜೀವನಾಂಶ ನೀಡಲು ಸೂಚಿಸಿ ಹೊರಡಿಸಿದ್ದ ಆದೇಶವನ್ನು ಮೇಲ್ಮನವಿ ನ್ಯಾಯಾಲಯವು (ಸೆಷನ್ಸ್) ತಿದ್ದುಪಡಿ ಮಾಡಬಹುದು ಇಲ್ಲವೇ ರದ್ದುಪಡಿಸಬಹುದು. ಆದರೆ, ಮದುವೆಯ ಸಿಂಧುತ್ವದ ಬಗ್ಗೆ ಯಾವುದೇ ಆದೇಶ ಪ್ರಕಟಿಸಿದರೆ, ಅದು ತನ್ನ ಅಧಿಕಾರ ವ್ಯಾಪ್ತಿ ಮೀರಿ ನಡೆದುಕೊಂಡಂತಾಗುತ್ತದೆ. ಅದರಂತೆ ಪ್ರಕರಣದಲ್ಲಿ ಸೆಷನ್ಸ್ ಕೋರ್ಟ್ ಅಧಿಕಾರ ವ್ಯಾಪ್ತಿ ಮೀರಿ ಮದುವೆಯ ಸಿಂಧುತ್ವದ ಬಗ್ಗೆ ತೀರ್ಮಾನಿಸಿ, ಜೀವನಾಂಶ ಪಾವತಿ ಕುರಿತಂತೆ ವಿಚಾರಣಾ ನ್ಯಾಯಾಲಯ ಆದೇಶ ಹೊರಡಿಸಿದೆ. ಇದು ರದ್ದುಪಡಿಸಲು ಅರ್ಹವಾಗಿದೆ ಎಂದು ನಿರ್ಧರಿಸಿತು.

ಈ ಪ್ರಕರಣದಲ್ಲಿ ಸಾಕ್ಷಿಗಳ ಹೇಳಿಕೆ ಮತ್ತು ಇತರೆ ಸಾಕ್ಷ್ಯಧಾರ ಪರಿಗಣಿಸಿದರೆ ಪತ್ನಿ, ಪತಿಯನ್ನು ಮದುವೆಯಾಗಿರುವುದು ಸ್ಪಷ್ಟವಾಗುತ್ತದೆ. ಮದುವೆ ಸಿಂಧುತ್ವದ ಬಗ್ಗೆ ಅರ್ಜಿ ಸಲ್ಲಿಸಿದ್ದರೆ ಮಾತ್ರ ಆ ಕುರಿತು ಸೆಷನ್ಸ್ ನ್ಯಾಯಾಲಯವು ಪರಿಶೀಲನೆ ನಡೆಸಿ, ಆದೇಶ ಹೊರಡಿಸಬೇಕಾಗುತ್ತದೆ. ಜೀವನಾಂಶ ಕೋರಿ ಅರ್ಜಿ ಸಲ್ಲಿಸಿದ ಸಂದರ್ಭದಲ್ಲಿ ನ್ಯಾಯಾಲಯಗಳು ಮದುವೆ ಸಿಂಧುತ್ವದ ಬಗ್ಗೆ ಪರಿಶೀಲನೆ ನಡೆಸುವಂತಿಲ್ಲ. ಪತಿಯಿಂದ ಪತ್ನಿ ಜೀವನಾಂಶ ಪಡೆಯಲು ಅರ್ಹರಾಗಿದ್ದಾರೆಯೇ ಎಂಬುದರ ಕುರಿತು ಆಕೆಯ ಸಾಕ್ಷ್ಯವನ್ನು ಪರಿಶೀಲನೆ ಮಾಡುವ ಮೇಲ್ಮನವಿ (ಸೆಷನ್ಸ್) ಕೋರ್ಟ್‌ಗೆ ನಡೆಸಲು ಅವಕಾಶವಿರುತ್ತದೆ ಎಂದು ಪೀಠ ತಿಳಿಸಿದೆ.

ಪ್ರಕರಣದ ಹಿನ್ನೆಲೆ ಏನು?:ಪ್ರಕರಣದಲ್ಲಿ ದಂಪತಿ 15 ವರ್ಷಗಳ ಹಿಂದೆ ಮದುವೆಯಾಗಿದ್ದರು. 2013ರಲ್ಲಿ ಜೆಎಂಎಫ್‌ಸಿ ಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದ ಸೌಮ್ಯಾ, ಮದುವೆ ಸಂದರ್ಭದಲ್ಲಿ ಪತಿಗೆ ತಮ್ಮ ಪೋಷಕರು ವರದಕ್ಷಿಣೆಯಾಗಿ ಹಣ ಮತ್ತು ಚಿನ್ನಾಭರಣ ನೀಡಿದ್ದರು. ಅದರ ಹೊರತಾಗಿಯೂ ಪತಿಯು ಹೆಚ್ಚುವರಿ ವರದಕ್ಷಿಣೆಗೆ ಬೇಡಿಕೆಯಿಡುತ್ತಾ ಕಿರುಕುಳ ನೀಡುತ್ತಿದ್ದರು. ಹಲವು ದಿನ ನನಗೆ ಆಹಾರ ಸಹ ನೀಡಿಲ್ಲ. ತಾಯಿ ಮತ್ತು ಸಹೋದರಿಯ ಪ್ರಚೋದನೆಯಿಂದ ಪತಿ, ನನ್ನನ್ನು ಮನೆಯಿಂದ ಹೊರ ಹಾಕಿದ್ದರು. ಇದರಿಂದ ನನಗೆ ಜೀವನಾಂಶ ಪಾವತಿಸಲು ಪತಿಗೆ ನಿರ್ದೇಶಿಸುವಂತೆ ಕೋರಿ ಕೌಟುಂಬಿಕ ದೌರ್ಜನ್ಯಗಳಿಂದ ಮಹಿಳೆ ರಕ್ಷಣೆ ಕಾಯ್ದೆಯ ಸೆಕ್ಷನ್ 12ರ ಅಡಿಯಲ್ಲಿ ಅರ್ಜಿ ಸಲ್ಲಿಸಿದ್ದರು.

ಆ ಅರ್ಜಿ ವಿಚಾರಣೆ ನಡೆಸಿದ್ದ ವಿಜಯಪುರ ಜೆಎಂಎಫ್‌ಸಿ ನ್ಯಾಯಾಲಯ, ಪತ್ನಿಗೆ ಮಾಸಿಕ ಮೂರು ಸಾವಿರ ರು. ಜೀವನಾಂಶ ಪಾವತಿಸುವಂತೆ ಪತಿಗೆ 2016ರ ಅ.26ರಂದು ನಿರ್ದೇಶಿಸಿತ್ತು. ಈ ಆದೇಶ ರದ್ದು ಕೋರಿ ರವಿ ಮೇಲ್ಮನವಿ ಸಲ್ಲಿಸಿದ್ದರು. ಮೇಲ್ಮನವಿಯ ವಿಚಾರಣೆ ನಡೆಸಿದ್ದ ವಿಜಯಪುರ 1ನೇ ಹೆಚ್ಚುವರಿ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಲಯ, ಪತಿಯೊಂದಿಗೆ (ಅರ್ಜಿದಾರ) ಕಾನೂನಾತ್ಮಕವಾಗಿ ವಿವಾಹವಾಗಿರುವುದನ್ನು ಸಾಬೀತುಪಡಿಸುವಲ್ಲಿ ಸೌಮ್ಯಾ ವಿಫಲವಾಗಿದ್ದಾರೆ ಎಂದು ತೀರ್ಮಾನಿಸಿ ಜೆಎಂಎಫ್‌ಸಿ ಆದೇಶವನ್ನು ರದ್ದುಪಡಿಸಿತ್ತು. ಈ ಆದೇಶ ಪ್ರಶ್ನಿಸಿ ಪತ್ನಿ ಹೈಕೋರ್ಟ್‌ಗೆ ಕ್ರಿಮಿನಲ್ ಮರು ಪರಿಶೀಲನಾ ಅರ್ಜಿ ಸಲ್ಲಿಸಿದ್ದರು.

ಇದನ್ನೂ ಓದಿ:ಪತ್ನಿ ಕೊಲೆ ಮಾಡಿದ್ದ ಅಪರಾಧಿಯ ಜೀವಾವಧಿ ಶಿಕ್ಷೆ ಏಳು ವರ್ಷಕ್ಕೆ ಇಳಿಸಿದ ಹೈಕೋರ್ಟ್

ABOUT THE AUTHOR

...view details