ಕರ್ನಾಟಕ

karnataka

ETV Bharat / state

ಕೋಳಿ ಮೊಟ್ಟೆ, ಮಾಂಸ ಮಾರಾಟಕ್ಕೆ ನಿರ್ಬಂಧವಿಲ್ಲ: ಸಚಿವ ಪ್ರಭು ಚವ್ಹಾಣ್ - ಸಚಿವ ಪ್ರಭು ಚವ್ಹಾಣ್

ಕೇರಳ ರಾಜ್ಯವನ್ನು ಹೊರತುಪಡಿಸಿ ಇತರೆ ರಾಜ್ಯಗಳಿಗೆ ಕೋಳಿ ಮತ್ತು ಕೋಳಿ ಉತ್ಪನ್ನಗಳ ಮಾರಾಟ ಹಾಗೂ ಸಾಗಾಣಿಕೆಗಳಿಗೆ ಯಾವುದೇ ನಿರ್ಬಂಧ ಇರುವುದಿಲ್ಲ ಎಂದು ಸಚಿವ ಪ್ರಭು ಚವ್ಹಾಣ್ ಹೇಳಿದ್ದಾರೆ.

Prabhu Chauhan
ಪ್ರಭು ಚವ್ಹಾಣ್

By

Published : Jan 8, 2021, 7:26 PM IST

ಬೆಂಗಳೂರು: ರಾಜ್ಯದಲ್ಲಿ ಇಲ್ಲಿಯವರೆಗೆ ಯಾವುದೇ ಹಕ್ಕಿಜ್ವರ ಪ್ರಕರಣ ಕಂಡುಬಂದಿಲ್ಲ. ಆದರೂ ಇಲಾಖೆಯ ಅಧಿಕಾರಿಗಳಿಗೆ ಹೆಚ್ಚು ಎಚ್ಚರಿಕೆ ವಹಿಸುವಂತೆ ಸೂಚನೆ ನೀಡಿರುವುದಾಗಿ ಪಶುಸಂಗೋಪನಾ ಸಚಿವ ಪ್ರಭು ಚವ್ಹಾಣ್ ತಿಳಿಸಿದ್ದಾರೆ.

ಆನ್‌ಲೈನ್ ಮೂಲಕ ಉನ್ನತ ಮಟ್ಟದ ಸಮಿತಿ ಸಭೆ ನಡೆಸಿದ ಸಚಿವ ಚವ್ಹಾಣ್, ರಾಜ್ಯದ ಎಲ್ಲ ಜಿಲ್ಲೆಗಳಲ್ಲಿ ಜಿಲ್ಲಾಧಿಕಾರಿಗಳಿಗೆ ಹಕ್ಕಿ ಜ್ವರದ ಬಗ್ಗೆ ತೀವ್ರವಾಗಿ ನಿಗಾವಹಿಸಲು ಸೂಚನೆ ನೀಡಿದರು.

ಸಾರ್ವಜನಿಕರು ಆತಂಕ ಪಡದೆ ಮೊಟ್ಟೆ ಮತ್ತು ಮಾಂಸ ಸೇವಿಸಬಹುದಾಗಿದೆ. ಕೇರಳ ರಾಜ್ಯವನ್ನು ಹೊರತುಪಡಿಸಿ ಇತರೆ ರಾಜ್ಯಗಳಿಗೆ ಕೋಳಿ ಮತ್ತು ಕೋಳಿ ಉತ್ಪನ್ನಗಳ ಮಾರಾಟ ಹಾಗೂ ಸಾಗಾಣಿಕೆಗಳಿಗೆ ಯಾವುದೇ ನಿರ್ಬಂಧ ಇರುವುದಿಲ್ಲ. ಆದ್ದರಿಂದ ಸಾರ್ವಜನಿಕರು ಯಾವುದೇ ರೀತಿ ಆತಂಕಪಡುವ ಅಗತ್ಯವಿಲ್ಲ. ಕೇರಳ ರಾಜ್ಯದಿಂದ ಒಳಬರುವ ಕೋಳಿ/ಕುಕ್ಕುಟ, ಕೋಳಿ ಉತ್ಪನ್ನಗಳ ಸಾಗಾಣಿಕೆಯನ್ನು ಸಂಪೂರ್ಣವಾಗಿ ನಿರ್ಬಂಧಿಸಲಾಗಿದೆ ಎಂದು ತಿಳಿಸಿದರು.

ಗಡಿ ಭಾಗದಲ್ಲಿ ಹೈಅಲರ್ಟ್ :ರಾಜ್ಯಕ್ಕೆ ಹೊಂದಿಕೊಂಡಿರುವ ಗಡಿ ಭಾಗದ ಜಿಲ್ಲೆಗಳು ಹಾಗೂ ಇತರೇ ಎಲ್ಲಾ ಜಿಲ್ಲೆಗಳ ಜಿಲ್ಲಾಧಿಕಾರಿಗಳಿಗೆ ಕೋಳಿ ಶೀತ ಜ್ವರದ ರೋಗೋದ್ರೇಕ ತಡೆಗಟ್ಟಲು, ರೋಗ ನಿಯಂತ್ರಣ ಸಮಿತಿ ಸಭೆಗಳನ್ನು ಜರುಗಿಸಿ ಸೂಕ್ತ ಮುಂಜಾಗ್ರತಾ ಕ್ರಮ ಕೈಗೊಳ್ಳಲು ಸೂಚನೆ ನೀಡಲಾಗಿದೆ. ಅರಣ್ಯ ಇಲಾಖೆ, ನಗರಾಭಿವೃದ್ಧಿ, ಗ್ರಾಮೀಣಾಭಿವೃದ್ಧಿ ಇಲಾಖೆ ಹಾಗೂ ಪೊಲೀಸ್ ಇಲಾಖೆ ಜೊತೆಗೂಡಿ ಸಮನ್ವಯತೆಯಿಂದ ಕಾರ್ಯನಿರ್ವಹಿಸಲು ತಿಳಿಸಲಾಗಿದೆ.

ಎಲ್ಲಾ ಕೋಳಿ ಫಾರಂಗಳಲ್ಲಿ ಮುಂಜಾಗ್ರತಾ ಕ್ರಮವಾಗಿ ರೋಗ ನಿಯಂತ್ರಣ ಔಷಧಿಗಳಿಂದ ಸ್ವಚ್ಛಗೊಳಿಸುವುದು ಮತ್ತು ಕನಿಷ್ಠ ಜೈವಿಕ ರಕ್ಷಣಾ ಪದ್ದತಿಗಳನ್ನು ಅಳವಡಿಕೊಳ್ಳುವಂತೆ ತೀರ್ಮಾನಿಸಿ ಕ್ರಮವಹಿಸುವಂತೆ ತಿಳಿಸಲಾಗಿದೆ.

ಕೇರಳ ರಾಜ್ಯದ ಗಡಿ ಭಾಗದ ಜಿಲ್ಲೆಗಳಾದ ಮೈಸೂರು, ದಕ್ಷಿಣ ಕನ್ನಡ, ಚಾಮರಾಜನಗರ, ಕೊಡಗು ಜಿಲ್ಲೆಗಳಲ್ಲಿ ಕಾಡು ಹಕ್ಕಿಗಳು/ನೀರು ಹಕ್ಕಿಗಳು/ವಲಸೆ ಹಕ್ಕಿಗಳು/ ಬಾತುಕೋಳಿಗಳು/ಗೀಜಗದ ಹಕ್ಕಿಗಳು ಇತ್ಯಾದಿ ವಿವಿಧ ಪ್ರಭೇದದ ಹಕ್ಕಿಗಳ ಅಸಹಜ ಸಾವು ಅಥವಾ ಹಕ್ಕಿ ಜ್ವರದ ಲಕ್ಷಣಗಳು ಕಂಡು ಬಂದಲ್ಲಿ ಕೂಡಲೇ ಗಮನಹರಿಸಿ ಕ್ರಮಕೈಗೊಳ್ಳುವಂತೆ ಅರಣ್ಯಾಧಿಕಾರಿಗಳಿಗೆ ಸೂಚಿಸಲಾಗಿದೆ.

ಮುಂಜಾಗ್ರತಾ ಕ್ರಮವಾಗಿ ಅವಶ್ಯವಿರುವ ಪರಿಕರಗಳು ಮತ್ತು ರೋಗ ನಿಯಂತ್ರಕ ರಾಸಾಯನಿಕಗಳನ್ನು ಕ್ರೋಢೀಕರಿಸಿ ಪರಿಸ್ಥಿತಿಯನ್ನು ನಿಭಾಯಿಸಲು ಸನ್ನದ್ಧರಾಗಲು ಸೂಚನೆ ನೀಡಲಾಗಿದೆ.

ಭಾರತ ಸರ್ಕಾರದ ಪರಿಷ್ಕರಿಸಿ ಹೊರಡಿಸಿರುವ 2021 ರ ಹಕ್ಕಿಜ್ವರದ ನಿಯಂತ್ರಣ ಹಾಗೂ ನಿರ್ವಹಣೆ ಮಾರ್ಗಸೂಚಿಗಳ ಪ್ರಕಾರ ಸರ್ವೇಕ್ಷಣೆ/ಕಣ್ಗಾವಲು ಕ್ರಮಗಳನ್ನು ಕಟ್ಟುನಿಟ್ಟಾಗಿ ಕೈಗೊಳ್ಳುವಂತೆ ಎಲ್ಲಾ ಜಿಲ್ಲೆಗಳ ಜಿಲ್ಲಾಧಿಕಾರಿಗಳಿಗೆ ಹಾಗೂ ಇಲಾಖೆಯ ಅಧಿಕಾರಿಗಳಿಗೆ ತಿಳಿಸಲಾಗಿದೆ.

ನಗರ ಸಭೆ, ಪುರಸಭೆ ವ್ಯಾಪ್ತಿಯಲ್ಲಿ ಎಚ್ಚರಚಹಿಸಲೂ ಸೂಚನೆ:

ನಗರ ಸಭೆ / ಪುರಸಭೆ ವ್ಯಾಪ್ತಿಯ ಪ್ರದೇಶದಲ್ಲಿ ಹಕ್ಕಿಗಳು, ಕೋಳಿಗಳ ಮರಣ ಸಂಭವಿಸಿದ್ದಲ್ಲಿ ಅದರ ಸಮೀಪ ಸಾರ್ವಜನಿಕರು ಹೋಗದಂತೆ ಮತ್ತು ಮುಟ್ಟದಂತೆ ತಿಳುವಳಿಕೆ ನೀಡುವುದು ಹಾಗೂ ವೈಯಕ್ತಿಕ ಸುರಕ್ಷತೆಯನ್ನು ಅನುಸರಿಸಿ ಅವುಗಳನ್ನು ಜೈವಿಕ ಸುರಕ್ಷತಾ ಕ್ರಮಗಳೊಂದಿಗೆ ವಿಲೇವಾರಿ ಮಾಡಲು ಪಶುಸಂಗೋಪನೆ ಇಲಾಖೆಯಿಂದ ಸಿಬ್ಬಂದಿಯವರಿಗೆ ಸೂಚನೆ ನೀಡಲಾಗಿದೆ.

ಪಕ್ಷಿಧಾಮ, ಪ್ರಾಣಿ ಸಂಗ್ರಹಾಲಯದಲ್ಲಿ ನಿಗಾ:

ಎಲ್ಲಾ ಕುಕ್ಕುಟ ಕ್ಷೇತ್ರಗಳಲ್ಲಿ ವಿಶೇಷವಾಗಿ ಪಕ್ಷಿಧಾಮ ಹಾಗೂ ನೀರು ಸಂಗ್ರಹಣಾ ಸ್ಥಳಗಳ ಬಗ್ಗೆ ತೀವ್ರ ನಿಗಾವಹಿಸುವುದು ಕೋಳಿ, ವಲಸೆ ಹಕ್ಕಿಗಳು ವನ್ಯ ಪಕ್ಷಿಗಳ ಅಸ್ವಾಭಾವಿಕ ಮರಣ ಕಂಡುಬಂದಲ್ಲಿ ಈ ಬಗ್ಗೆ ತೀವ್ರ ನಿಗಾವಹಿಸಿ, ವರದಿಗಳನ್ನು ಸಲ್ಲಿಸಲು ಅರಣ್ಯ ಇಲಾಖೆಗೆ ಸೂಚಿಸಲಾಗಿದೆ.

ಎಲ್ಲಾ ಜಿಲ್ಲೆಗಳ ವ್ಯಾಪ್ತಿಯಲ್ಲಿ ಬರುವ ಎಲ್ಲಾ ಕುಕ್ಕುಟ ಕ್ಷೇತ್ರಗಳಲ್ಲಿ ವಿಶೇಷವಾಗಿ, ಪಕ್ಷಿಧಾಮ, ಪ್ರಾಣಿ ಸಂಗ್ರಹಾಲಯ ಹಾಗೂ ನೀರು ಸಂಗ್ರಹಣ ಸ್ಥಳಗಳ (Water Bodies) ಬಗ್ಗೆ ಹೆಚ್ಚಿನ ನಿಗಾ ವಹಿಸುವುದು. ಕೋಳಿಗಳು, ಹಿತ್ತಲ ಕೋಳಿಗಳು, ಹಕ್ಕಿಗಳು, ಕಾಡು ಹಕ್ಕಿಗಳು, ವಲಸೆ ಹಕ್ಕಿಗಳ ಯಾವುದೇ ಅಸ್ವಾಭಾವಿಕ ಮರಣ ಸಂಭವಿಸಿದ್ದಲ್ಲಿ ಅಥವಾ ರೋಗ ಲಕ್ಷಣಗಳು ಕಂಡುಬಂದಲ್ಲಿ ಕೂಡಲೇ ಮೇಲಧಿಕಾರಿಗಳಿಗೆ ಮಾಹಿತಿ ನೀಡಿ, ಕೋಳಿ ಶೀತ ಜ್ವರದ ಸಂಭವನೀಯತೆಯನ್ನು ಪರಿಗಣಿಸಿ, ಸಂಬಂಧಪಟ್ಟ ಪ್ರಯೋಗಾಲಯಕ್ಕೆ ವರದಿ ಮಾಡಿ, ರೋಗ ವಿಶ್ಲೇಷಣೆ ನಡೆಸುವ ಬಗ್ಗೆ ಕ್ರಮ ವಹಿಸುವುದು ಹಾಗೂ ಜೈವಿಕ ಸುರಕ್ಷಾ (Biosecurity Measures) ಕ್ರಮಗಳನ್ನು ಕೈಗೊಳ್ಳುವಂತೆ ತಿಳಿಸಲಾಗಿದೆ.

ಸಭೆಯಲ್ಲಿ ಇಲಾಖೆಯ ಪ್ರಧಾನ ಕಾರ್ಯದರ್ಶಿ ರಾಜೇಂದ್ರಕುಮಾರ್ ಕಠಾರಿಯಾ, ಅಯುಕ್ತರಾದ ಹೆಚ್. ಬಸವರಾಜೇಂದ್ರ, ನಿರ್ದೇಶಕರಾದ ಡಾ.ಬಿ.ಎಸ್ ಶಿವಾರಾಮ್ ಹಾಗೂ ಆರೋಗ್ಯ ಮತ್ತು ಕುಟುಂಬ ಕಲ್ಯಾಣ, ಅರಣ್ಯ, ನಗರಾಭಿವೃದ್ಧಿ, ಸಾರಿಗೆ, ಗೃಹ ಇಲಾಖೆ, ಕಂದಾಯ ಇಲಾಖೆ ಹಾಗು ಹಣಕಾಸು ಇಲಾಖೆಯ ಅಧಿಕಾರಿಗಳು ಹಾಜರಿದ್ದರು.

ABOUT THE AUTHOR

...view details