ಬೆಂಗಳೂರು :ಸೂಕ್ಷ್ಮ ನೀರಾವರಿ ಯೋಜನೆಯಡಿ ಎಲ್ಲಾ ವರ್ಗದ ರೈತರಿಗೆ ಈ ಹಿಂದೆ ನೀಡುತ್ತಿದ್ದ ಸಬ್ಸಿಡಿಯನ್ನು ಅದೇ ಮಾದರಿಯಲ್ಲಿ ಮುಂದುವರೆಸುತ್ತಿರುವುದಾಗಿ ಕೃಷಿ ಸಚಿವ ಬಿ ಸಿ ಪಾಟೀಲ್ ಸ್ಪಷ್ಟಪಡಿಸಿದ್ದಾರೆ. ವಿಕಾಸಸೌಧದ ಸಮ್ಮೇಳನ ಸಭಾಂಗಣದಲ್ಲಿ ರಾಜ್ಯದ ಎಲ್ಲಾ ಜಿಲ್ಲೆಗಳ ಜಿಲ್ಲಾ ಕೃಷಿ ಅಧಿಕಾರಿಗಳ ಜತೆ ಮುಂಗಾರು ಹಂಗಾಮಿನ ಕೃಷಿ ಚಟುವಟಿಕೆ, ಜಿಲ್ಲೆಗಳಲ್ಲಿನ ಪ್ರಗತಿ ಕುರಿತು ಸಭೆ ನಡೆಸಿದರು.
ಸಭೆ ಬಳಿಕ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಚಿವ ಬಿ.ಸಿ.ಪಾಟೀಲ್, ಈ ಹಿಂದೆ ಎಲ್ಲಾ ವರ್ಗದ 2 ಹೆಕ್ಟೇರ್ ಭೂಮಿಯುಳ್ಳ ರೈತರಿಗೆ 90%ರಷ್ಟು, 5 ಹೆಕ್ಟೇರ್ ಭೂಮಿಯುಳ್ಳ ರೈತರಿಗೆ 45% ರಷ್ಟು ಸಬ್ಸಿಡಿ ನೀಡಲಾಗುತ್ತಿತ್ತು. ಸಿಎಂ ಆದೇಶದಂತೆ ಇದೀಗ ಮತ್ತೆ ಅದೇ ಹಳೆಯ ಮಾದರಿಯ ಸಬ್ಸಿಡಿಯನ್ನು ಮುಂದುವರೆಸಲಾಗುತ್ತಿದೆ. 5 ಹೆಕ್ಟೇರ್ ಮೇಲ್ಪಟ್ಟ ಯಾವುದೇ ರೈತರಿಗೆ ಸಬ್ಸಿಡಿ ಇರುವುದಿಲ್ಲ ಎಂದರು.
ಬಿತ್ತನೆ ಬೀಜ, ರಸ ಗೊಬ್ಬರದ ಕೊರತೆ ಇಲ್ಲ :ರಾಜ್ಯದಲ್ಲಿ ರಸಗೊಬ್ಬರ ಹಾಗೂ ಬಿತ್ತನೆ ಬೀಜಕ್ಕೆ ಕೊರತೆ ಇಲ್ಲ. ರೈತರ ಅಗತ್ಯಕ್ಕನುಸಾರವಾಗಿ ರಸಗೊಬ್ಬರ, ಬಿತ್ತನೆ ಬೀಜ ಪೂರೈಸಲು ಇಲಾಖೆ ಸಜ್ಜಾಗಿದೆ. ಕಾಳ ಸಂತೆಯಾಗಲಿ ಅಥವಾ ಅಕ್ರಮ ದಾಸ್ತಾನು ಮಾಡಿ ಕೃತಕ ಅಭಾವ ಸೃಷ್ಟಿಸುವುದಾಗಲಿ, ಡೀಲರ್ಸ್ಗಳು ಹಾಗೂ ಮಾರಾಟಗಾರರು ಮಾಡಬಾರದು ಎಂದು ಎಚ್ಚರಿಸಿದರು.
ಅಕ್ರಮ ಕಂಡು ಬಂದಲ್ಲಿ ರೈತರಿಗೆ ಅನ್ಯಾಯವೆಸಗುವವರ ಮೇಲೆ ನಿರ್ದಾಕ್ಷಿಣ್ಯ ಕ್ರಮ ಜರುಗಿಸಲಾಗುವುದು. ಮುಂಗಾರು ಹಂಗಾಮಿನಲ್ಲಿ ಈ ಬಾರಿ 77 ಲಕ್ಷ ಹೆಕ್ಟೇರ್ ಗುರಿ ಹೊಂದಲಾಗಿದೆ. ಈವರೆಗೆ 44.18 ಲಕ್ಷ ಹೆಕ್ಟೇರ್ ಪ್ರದೇಶದಲ್ಲಿ ಅಂದರೆ 57.38% ಶೇಕಡವಾರು ಬಿತ್ತನೆಯಾಗಿದೆ. ಈ ಬಾರಿ 6 ಲಕ್ಷ ಕ್ವಿಂಟಾಲ್ ಬಿತ್ತನೆ ಬೀಜಕ್ಕೆ ಬೇಡಿಕೆಯಿದೆ.