ಶಿವಮೊಗ್ಗ: ಜಿಲ್ಲೆಯಲ್ಲಿ ವಾಡಿಕೆ ಪ್ರಮಾಣದ ಮಳೆ ಕೊರತೆಯ ಹಿನ್ನೆಲೆಯಲ್ಲಿ ಕುಡಿಯುವ ನೀರಿನ ಸರಬರಾಜಿನಲ್ಲಿ ಸಮಸ್ಯೆ ಉಂಟಾಗಿದ್ದು, ಇದನ್ನು ನೀಗಿಸಲು ಸ್ಥಳೀಯ ಜಲಮೂಲಗಳನ್ನು ಬಳಸಿಕೊಳ್ಳುವಂತೆ ಹಾಗೂ ಅಗತ್ಯವಿರುವಲ್ಲಿ ಟ್ಯಾಂಕರ್ಗಳ ಮೂಲಕ ನೀರನ್ನು ಸರಬರಾಜು ಮಾಡುವಂತೆ ರಾಜ್ಯ ಪ್ರಾಥಮಿಕ ಮತ್ತು ಪ್ರೌಡ ಶಿಕ್ಷಣ ಸಚಿವ ಮಧು ಎಸ್.ಬಂಗಾರಪ್ಪ ಅಧಿಕಾರಿಗಳಿಗೆ ಸೂಚಿಸಿದರು. ತೀರ್ಥಹಳ್ಳಿ ತಾಲೂಕು ಪಂಚಾಯಿತಿ ಸಭಾಂಗಣದಲ್ಲಿ ತಾಲೂಕು ಮಟ್ಟದ ಅಧಿಕಾರಿಗಳೊಂದಿಗೆ ಸಮಾಲೋಚನೆ ನಡೆಸಿದರು.
ಬಳಿಕ ಪ್ರಸಕ್ತ ಸಾಲಿನ ಶಿಕ್ಷಕರ ವರ್ಗಾವಣೆಗೆ ಸುಮಾರು 87,000 ಶಿಕ್ಷಕರು ಅರ್ಜಿ ಸಲ್ಲಿಸಿದ್ದು, ಅದರಲ್ಲಿ 25,000 ಶಿಕ್ಷಕರು ವರ್ಗಾವಣೆಯಾಗಲಿದ್ದಾರೆ. ಮಕ್ಕಳ ಶೈಕ್ಷಣಿಕ ಚಟುವಟಿಕೆಗಳಿಗೆ ಅಡಚಣೆಯಾಗದಂತೆ ಈ ಪ್ರಕ್ರಿಯೆ ನಡೆಯಲಿದೆ ಎಂದರು.
ರಾಜ್ಯದಲ್ಲಿ ಸುಮಾರು 57,000 ಶಿಕ್ಷಕರ ಹುದ್ದೆ ಖಾಲಿ ಇದ್ದು, ತಕ್ಷಣದ ಕ್ರಮವಾಗಿ ಹಾಗೂ ನ್ಯಾಯಾಲಯದ ಸೂಚನೆಯಂತೆ 13,000 ಶಿಕ್ಷಕರ ನೇಮಕಾತಿಗೆ ಕ್ರಮ ವಹಿಸಲಾಗಿದೆ. ಈ ಶಿಕ್ಷಕರ ನೇಮಕಾತಿಯಲ್ಲಿ ಅತಿ ಹೆಚ್ಚಿನ ಅಂಕ ಪಡೆದ ಪ್ರತಿಭಾವಂತ ವಿದ್ಯಾರ್ಥಿಗಳು ನೇಮಕಗೊಳ್ಳುತ್ತಿರುವುದು ವಿಶೇಷ. ಅಲ್ಲದೇ ಶಿಕ್ಷಕರ ಕೊರತೆ ನೀಗಿಸಲು ಅತಿಥಿ ಶಿಕ್ಷಕರ ನೇಮಕ ಮಾಡಿಕೊಳ್ಳಲು ಉದ್ದೇಶಿಸಲಾಗಿದೆ ಎಂದರು.
ಗ್ರಾಮೀಣ ಶಾಲೆಗಳ ಸಮಸ್ಯೆಯನ್ನು ಮಕ್ಕಳ ಭವಿಷ್ಯವನ್ನು ಗಮನದಲ್ಲಿಟ್ಟುಕೊಂಡು ಅಲ್ಲಿನ ಪೋಷಕರು ಹಾಗೂ ಜನಪ್ರತಿನಿಧಿಗಳ ಸಹಕಾರದಿಂದ ಮತ್ತು ಅಧಿಕಾರಿಗಳ ಸಲಹೆ ಪಡೆದು ಸರಿಪಡಿಸಲು ಯತ್ನಿಸಲಾಗುವುದು.