ಬೆಂಗಳೂರು:2023ನೇ ಸಾಲಿನ ಶ್ರೀ ಮಹರ್ಷಿ ವಾಲ್ಮೀಕಿ ಜಯಂತ್ಯುತ್ಸವ ಕಾರ್ಯಕ್ರಮವನ್ನು ನಾಳೆ ರಾಜ್ಯಾದ್ಯಂತ ಸರ್ಕಾರದ ವತಿಯಿಂದ ಆಚರಿಸಲಾಗುತ್ತಿದೆ. ವಿಧಾನಸೌಧದಲ್ಲಿ ಇಂದು ಸುದ್ದಿಗೋಷ್ಠಿಯಲ್ಲಿ ಪರಿಶಿಷ್ಟ ಪಂಗಡಗಳ ಕಲ್ಯಾಣ ಹಾಗೂ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಸಚಿವ ಬಿ.ನಾಗೇಂದ್ರ ಮಾತನಾಡಿ, ರಾಜ್ಯಮಟ್ಟದ ಶ್ರೀ ವಾಲ್ಮೀಕಿ ಜಯಂತಿ ಹಾಗೂ ಶ್ರೀ ಮಹರ್ಷಿ ವಾಲ್ಮೀಕಿ ಪ್ರಶಸ್ತಿ ಪ್ರದಾನ ಸಮಾರಂಭವನ್ನು ಶನಿವಾರ ವಿಧಾನಸೌಧದ ಬ್ಯಾಕ್ವೆಟ್ ಹಾಲ್ ಆಯೋಜಿಸಲಾಗಿದೆ. ಬಸವನಗುಡಿಯಿಂದ ಶ್ರೀ ವಾಲ್ಮೀಕಿ ಜ್ಯೋತಿಯೊಂದಿಗೆ ಸಮುದಾಯದ ಮಹನೀಯರ ಕುರಿತ ಸ್ತಬ್ಧ ಚಿತ್ರಗಳ ಮೆರವಣಿಗೆ, ಬೈಕ್ ರ್ಯಾಲಿ ಆಯೋಜಿಸಲಾಗಿದೆ. ಬಸವೇಶ್ವರ ವೃತ್ತದಿಂದ ಶ್ರೀ ಮಹರ್ಷಿ ವಾಲ್ಮೀಕಿ ಭಾವಚಿತ್ರದ ಸಾರೋಟ್ನೊಂದಿಗೆ ವಿವಿಧ ಬುಡಕಟ್ಟು ಕಲಾ ತಂಡಗಳ ಪ್ರದರ್ಶನ ನಡೆಯಲಿದೆ ಎಂದು ತಿಳಿಸಿದರು.
ವಾಲ್ಮೀಕಿ ಜ್ಯೋತಿ:ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ನಾಳೆ ಬೆಳಿಗ್ಗೆ 9.30 ಗಂಟೆಗೆ ಶಾಸಕರ ಭವನದ ಮುಂಭಾಗದ ಶ್ರೀ ವಾಲ್ಮೀಕಿ ತಪೋವನದಲ್ಲಿರುವ ಮಹರ್ಷಿ ವಾಲ್ಮೀಕಿ ಪ್ರತಿಮೆಗೆ ಮಾಲಾರ್ಪಣೆ ನೆರವೇರಿಸುವರು. ನಂತರ ಬಸವನಗುಡಿಯ ಶ್ರೀ ಮಹರ್ಷಿ ವಾಲ್ಮೀಕಿ ಮಹಾಸಂಸ್ಥಾನ ಆದಿಗುರಪೀಠ ಬೇಡರ ಕಣ್ಣಪ್ಪ ಸ್ವಾಮಿ ದೇವಸ್ಥಾನದಿಂದ ಮೆರವಣಿಗೆಯೊಂದಿಗೆ ಆಗಮಿಸುವ ವಾಲ್ಮೀಕಿ ಜ್ಯೋತಿ ಸಾಂಪ್ರದಾಯಿಕವಾಗಿ ಬರಮಾಡಿಕೊಳ್ಳಲಿದ್ದಾರೆ.
ಬೆಳಿಗ್ಗೆ 10ಕ್ಕೆ ವೇದಿಕೆ ಕಾರ್ಯಕ್ರಮವನ್ನು ಮುಖ್ಯಮಂತ್ರಿಗಳು ಉದ್ಘಾಟಿಸಿ ಮಹರ್ಷಿ ವಾಲ್ಮೀಕಿ ಪ್ರಶಸ್ತಿ ಪ್ರದಾನ ಮಾಡಲಿದ್ದಾರೆ. ರಾಜನಹಳ್ಳಿಯ ಶ್ರೀ ಮಹರ್ಷಿ ಗುರುಪೀಠದ ಜಗದ್ಗುರು ಪ್ರಸನ್ನಾನಂದ ಪುರಿ ಸ್ವಾಮೀಜಿ ಸಾನಿಧ್ಯ ವಹಿಸುವರು ಎಂದು ಹೇಳಿದರು.