ಕರ್ನಾಟಕ

karnataka

ವಿಶ್ವ ಹಿಂದೂ ಪರಿಷತ್​ನ ಕ್ಷೇತ್ರೀಯ ಸಂಘಟನಾ ಕಾರ್ಯದರ್ಶಿ ಕೇಶವ ಹೆಗಡೆ ನಿಧನ: ಬಿಜೆಪಿ ನಾಯಕರಿಂದ ಸಂತಾಪ

By

Published : Jul 5, 2023, 10:09 PM IST

ವಿಶ್ವ ಹಿಂದೂ ಪರಿಷತ್​ನ ಕ್ಷೇತ್ರೀಯ ಸಂಘಟನಾ ಕಾರ್ಯದರ್ಶಿ ಕೇಶವ ಹೆಗಡೆ ಅವರಿಂದು ಹೃದಯಾಘಾತದಿಂದ ನಿಧನರಾಗಿದ್ದಾರೆ.

ಕೇಶವ ಹೆಗಡೆ ನಿಧನ
ಕೇಶವ ಹೆಗಡೆ ನಿಧನ

ಬೆಂಗಳೂರು : ಅಯೋಧ್ಯೆ ಶ್ರೀರಾಮಜನ್ಮಭೂಮಿ ಹೋರಾಟ, ದತ್ತಪೀಠ ಹೋರಾಟದಲ್ಲಿ ಭಾಗಿಯಾಗಿದ್ದ ವಿಶ್ವ ಹಿಂದೂ ಪರಿಷತ್​ನ ಕ್ಷೇತ್ರೀಯ ಸಂಘಟನಾ ಕಾರ್ಯದರ್ಶಿ ಕೇಶವ ಹೆಗಡೆ (63 ವರ್ಷ) ಇಂದು ಹೃದಯಾಘಾತದಿಂದ ನಿಧನರಾಗಿದ್ದಾರೆ.

1960ರ ಮಾರ್ಚ್ 15 ರಂದು ಉತ್ತರ ಕನ್ನಡ ಜಿಲ್ಲೆಯ ಶಿರಸಿಯ ಮಣ್ಣಿಮನೆಯಲ್ಲಿ ಜನಿಸಿದ ಕೇಶವ ಹೆಗಡೆಯವರು ತಮ್ಮ ಬಿಎ ಪದವಿ ವ್ಯಾಸಂಗದ ನಂತರ 1982ರಿಂದ ವಿಶ್ವ ಹಿಂದೂ ಪರಿಷತ್ತಿನ ಪೂರ್ಣಾವಧಿ ಕಾರ್ಯಕರ್ತರಾಗಿ ಸಾಮಾಜಿಕ ಸೇವೆಗೆ ತಮ್ಮನ್ನು ಸಮರ್ಪಿಸಿಕೊಂಡರು. ನಂತರ ರಾಷ್ಟ್ರೀಯ ಸ್ವಯಂಸೇವಕ ಸಂಘದ ಪ್ರಚಾರಕರಾಗಿ ಕಾರ್ಯನಿರ್ವಹಿಸಿದ್ದರು. ಕರ್ನಾಟಕದಲ್ಲಿ ವಿಶ್ವ ಹಿಂದೂ ಪರಿಷತ್ ಸಕ್ರಿಯವಾಗಿ ಕಾರ್ಯ ನಿರ್ವಹಿಸಲು ಶ್ರೀ ಕೇಶವ ಹೆಗಡೆ ಅವರು ಮಹತ್ತರವಾದ ಕೊಡುಗೆ ನೀಡಿದವರು.

ಅಯೋಧ್ಯೆ ರಾಮಮಂದಿರ ಹೋರಾಟ, ದತ್ತಪೀಠ ಹೋರಾಟ, ಲವ್ ಜಿಹಾದ್ ವಿರುದ್ಧದ ಹೋರಾಟ, ಹಿಂದೂ ದೇವಾಲಯಗಳ ರಕ್ಷಣೆ ಮುಂತಾದ ಹಿಂದೂ ಜಾಗೃತಿ ಕಾರ್ಯಗಳಲ್ಲಿ ತೊಡಗಿಸಿಕೊಂಡಿದ್ದರು. ಮೃತರ ನಿಧನಕ್ಕೆ ರಾಷ್ಟ್ರೀಯ ಸ್ವಯಂಸೇವಕ ಸಂಘದ ಸರಕಾರ್ಯವಾಹ ದತ್ತಾತ್ರೇಯ ಹೊಸಬಾಳೆ, ಕ್ಷೇತ್ರೀಯ ಸಂಘಚಾಲಕ ವಿ.ನಾಗರಾಜ್, ದಕ್ಷಿಣ ಮಧ್ಯ ಕ್ಷೇತ್ರೀಯ ಕಾರ್ಯವಾಹ ನಾ. ತಿಪ್ಪೇಸ್ವಾಮಿ, ವಿಶ್ವ ಹಿಂದೂ ಪರಿಷತ್ ನ ಪ್ರೊ.ಎಂ.ಬಿ ಪುರಾಣಿಕ್ ಸೇರಿದಂತೆ ಅನೇಕ ಪ್ರಮುಖರು ಸಂತಾಪ ವ್ಯಕ್ತಪಡಿಸಿದ್ದಾರೆ. ನಾಳೆ ಗುರುವಾರ ಬೆಳಗ್ಗೆ 11.00 ಗಂಟೆಗೆ ಮೃತರ ಹುಟ್ಟೂರು ಶಿರಸಿ ನಗರದ ನೆಮ್ಮದಿ ಕೇಂದ್ರದಲ್ಲಿ ಅಂತ್ಯಕ್ರಿಯೆ ನಡೆಯಲಿದೆ.

ಸಾರ್ವಜನಿಕ ಶ್ರದ್ಧಾಂಜಲಿ ಸಭೆ: ಜುಲೈ 10ರಂದು ಸಂಜೆ 6.00ಕ್ಕೆ ಶ್ರದ್ಧಾಂಜಲಿ ಕಾರ್ಯಕ್ರಮ ಬೆಂಗಳೂರಿನ ಚಾಮರಾಜಪೇಟೆಯ ಕೇಶವಶಿಲ್ಪಾ ಸಭಾಂಗಣದಲ್ಲಿ ನಡೆಯಲಿದೆ.‌

ಮಾಜಿ ಸಿಎಂ ಸಂತಾಪ: ವಿಶ್ವ ಹಿಂದೂ ಪರಿಷತ್ ಕ್ಷೇತ್ರೀಯ ಸಂಘಟನಾ ಕಾರ್ಯದರ್ಶಿ ಕೇಶವ ಹೆಗಡೆ ಅವರ ನಿಧನರಾದ ವಿಷಯ ಅತ್ಯಂತ ನೋವು ತಂದಿದೆ. ಭಗವಂತನು ಅವರ ಆತ್ಮಕ್ಕೆ ಶಾಂತಿ ಕರುಣಿಸಿ, ಅವರ ಕುಟುಂಬ ವರ್ಗಕ್ಕೆ ಅವರ ಅಗಲಿಕೆಯ ನೋವನ್ನು ಭರಿಸುವ ಶಕ್ತಿ ನೀಡಲಿ ಎಂದು ಪ್ರಾರ್ಥಿಸುತ್ತೇನೆ ಎಂದು ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಟ್ವೀಟ್ ಮಾಡಿ ಸಂತಾಪ ಸೂಚಿಸಿದ್ದಾರೆ.

ಕಟೀಲ್ ಸಂತಾಪ: ವಿಶ್ವ ಹಿಂದೂ ಪರಿಷತ್ತಿನ ಬೆಂಗಳೂರು ಕ್ಷೇತ್ರೀಯ ಸಂಘಟನಾ ಕಾರ್ಯದರ್ಶಿಗಳಾದ ಕೇಶವ ಹೆಗಡೆ ಅವರ ನಿಧನ ಅತ್ಯಂತ ನೋವು ತಂದಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಅವರು ತಮ್ಮ ಸಂತಾಪ ಸಂದೇಶದಲ್ಲಿ ತಿಳಿಸಿದ್ದಾರೆ.

ಉತ್ತರ ಕನ್ನಡ ಮೂಲದವರಾದ ಹೆಗಡೆಯವರು ಅತ್ಯಂತ ಸರಳ ಪ್ರವೃತ್ತಿಯವರಾಗಿದ್ದು, ರಾಷ್ಟ್ರೀಯ ಸ್ವಯಂಸೇವಕ ಸಂಘದಲ್ಲಿ ಪ್ರಚಾರಕರಾಗಿ ದೀರ್ಘಕಾಲ ರಾಜ್ಯದ ಬೇರೆ ಬೇರೆ ಭಾಗಗಳಲ್ಲಿ ಕಾರ್ಯ ನಿರ್ವಹಿಸಿರುತ್ತಾರೆ. ಸಾವಿರಾರು ಕಾರ್ಯಕರ್ತರಿಗೆ ಪ್ರೇರಕ ಶಕ್ತಿಯಂತೆ ಅವರು ಕೆಲಸ ಮಾಡುತ್ತಿದ್ದರು. ವಿಶ್ವ ಹಿಂದೂ ಪರಿಷತ್‍ನಡಿ ಪೂರ್ಣಕಾಲಿಕರಾಗಿ ಕರ್ತವ್ಯ ನಿರ್ವಹಿಸಿದವರು. ಅವರ ಅಕಾಲಿಕ ನಿಧನ ಸಮಾಜಕ್ಕಾದ ದೊಡ್ಡ ನಷ್ಟ ಎಂದು ತಿಳಿಸಿದ್ದಾರೆ. ದೇವರು ಮೃತರ ಆತ್ಮಕ್ಕೆ ಸದ್ಗತಿ ಕರುಣಿಸಲಿ, ಕುಟುಂಬದವರಿಗೆ ಈ ಅಗಲಿಕೆಯ ನೋವನ್ನು ಭರಿಸುವ ಶಕ್ತಿ ನೀಡಲಿ ಎಂದು ಪ್ರಾರ್ಥಿಸುವುದಾಗಿ ತಿಳಿಸಿದ್ದಾರೆ.

ಇದನ್ನೂ ಓದಿ:ಮಾಜಿ ಶಾಸಕ ಯು.ಆರ್ ಸಭಾಪತಿ ನಿಧನ.. ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿಕೆಶಿ ಸಂತಾಪ

ABOUT THE AUTHOR

...view details