ಬೆಂಗಳೂರು:ಹಾಸನದಲ್ಲಿ ಜೆಡಿಎಸ್ ಟಿಕೆಟ್ಗಾಗಿ ಸಮರ ತಾರಕಕ್ಕೇರಿದ್ದು, ಮಾಜಿ ಸಚಿವ ಹೆಚ್ ಡಿ ರೇವಣ್ಣ ಮಧ್ಯಪ್ರವೇಶದಿಂದ ಸ್ವಲ್ಪಮಟ್ಟಿಗೆ ತಣ್ಣಗಾಗಿದೆ. ಆದರೂ, ಒಳ, ಒಳಗಿನ ಬೇಗುದಿ ಇನ್ನೂ ಆರಿಲ್ಲ ಎಂದು ಹೇಳಲಾಗುತ್ತಿದೆ. ಕೆಲದಿನಗಳ ಹಿಂದೆ ಭವಾನಿ ರೇವಣ್ಣ ಅವರು ಒಂದು ಕಾರ್ಯಕ್ರಮದಲ್ಲಿ ಹಾಸನದ ಟಿಕೆಟ್ ವಿಷಯವಾಗಿ ಹೇಳಿದ ಹೇಳಿಕೆ ಇಷ್ಟೆಲ್ಲ ಗೊಂದಗಳಿಗೆ ಕಾರಣವಾಗಿದೆ.
ಇದರ ಜೊತೆಗೆ ವಿಧಾನ ಪರಿಷತ್ ಸದಸ್ಯ ಸೂರಜ್ ರೇವಣ್ಣ ನೀಡಿದ ಹೇಳಿಕೆಯೂ ಮಾಜಿ ಸಿಎಂ ಹೆಚ್ ಡಿ ಕುಮಾರಸ್ವಾಮಿ ಅವರ ಕಣ್ಣು ಕೆಂಪಾಗಿಸಿದೆ. ಇದರ ಮಧ್ಯೆ ಪರ -ವಿರೋಧದ ಚರ್ಚೆಗಳು ನಡೆದಿವೆ. ಭವಾನಿ ರೇವಣ್ಣ ಪರ-ವಿರೋಧದ ಟ್ವೀಟ್ ಸಹ ಜೋರಾಗಿತ್ತು. ಹಾಸನದಲ್ಲಿ ಭವಾನಿ ಅವರಿಗೆ ಟಿಕೆಟ್ ನೀಡಿದರೆ ಸೋಲು ಖಚಿತ. ಸ್ವರೂಪ್ ಅವರಿಗೆ ಟಿಕೆಟ್ ನೀಡಿದರೆ ಜೆಡಿಎಸ್ ಗೆಲುವು ನಿಶ್ಚಿತ ಎಂಬೆಲ್ಲಾ ಪೋಸ್ಟ್ಗಳು ಹರಿದಾಡಿದ್ದವು. ಹಾಗಾಗಿ, ಪಕ್ಷದ ಕಾರ್ಯಕರ್ತರಲ್ಲೇ ಅಸಮಾಧಾನದ ಹೊಗೆ ಆಡುತ್ತಿದೆ.
ಭವಾನಿ ರೇವಣ್ಣ ಟಿಕೆಟ್ಗಾಗಿ ಪಟ್ಟು: ಬಿಜೆಪಿ ತೆಕ್ಕೆಯಲ್ಲಿರುವ ಹಾಸನ ವಿಧಾನಸಭಾ ಕ್ಷೇತ್ರವನ್ನು ಮತ್ತೆ ತನ್ನ ತೆಕ್ಕೆಗೆ ತೆಗೆದುಕೊಳ್ಳಲು ಜೆಡಿಎಸ್ ವರಿಷ್ಠ ಹೆಚ್ ಡಿ ದೇವೇಗೌಡ ಹಾಗೂ ಮಾಜಿ ಸಿಎಂ ಹೆಚ್ ಡಿ ಕುಮಾರಸ್ವಾಮಿ ಅವರು, ಮಾಜಿ ಶಾಸಕ ದಿ ಎಚ್ ಎಸ್ ಪ್ರಕಾಶ್ ಅವರ ಪುತ್ರ ಹೆಚ್ ಪಿ ಸ್ವರೂಪ್ಗೆ ಟಿಕೆಟ್ ನೀಡಲು ಒಲವು ತೋರಿಸಿದ್ದರು. ಭವಾನಿ ರೇವಣ್ಣ ಅವರು ನನ್ನನ್ನೇ ಅಭ್ಯರ್ಥಿ ಮಾಡುತ್ತಾರೆ ಎಂದು ಯಾವಾಗ ಬಹಿರಂಗವಾಗಿ ಸ್ವಯಂ ಘೋಷಣೆ ಮಾಡಿಕೊಂಡರೋ ಅಲ್ಲಿಂದ ಹಾಸನ ಜೆಡಿಎಸ್ ಕ್ಷೇತ್ರದಲ್ಲಿ ಗೊಂದಲ ಏರ್ಪಡಲು ಆರಂಭವಾಯಿತು. ಟಿಕೆಟ್ ಬೇಕೇ ಬೇಕು ಎಂದು ಭವಾನಿ ರೇವಣ್ಣ ಪಟ್ಟು ಹಿಡಿದಿರುವುದರಿಂದ ಕುಟುಂಬ ಕದನ ಭುಗಿಲೇಳುವಂತೆ ಮಾಡಿದೆ. ಆದರೆ, ಇದಕ್ಕೆ ಕುಮಾರಸ್ವಾಮಿ ಅಡ್ಡಿಯಾಗಿರುವುದು ಹೆಚ್ ಡಿ ರೇವಣ್ಣ ಕುಟುಂಬಕ್ಕೆ ನುಂಗಲಾರದ ತುತ್ತಾಗಿದೆ.
ಹೆಚ್ಡಿಡಿ ಸಂದೇಶ: ಇದೆಲ್ಲಕ್ಕೂ ಬ್ರೇಕ್ ಹಾಕಲು ಮಾಜಿ ಪ್ರಧಾನಿ, ಜೆಡಿಎಸ್ ವರಿಷ್ಠ ಹೆಚ್ ಡಿ ದೇವೇಗೌಡರು ಮಧ್ಯಪ್ರವೇಶ ಮಾಡಿದ್ದು, 'ನಾನು ತಿಳಿಸುವವರೆಗೂ ಹಾಸನ ಟಿಕೆಟ್ ಕುರಿತು ಯಾರೂ ಮಾತನಾಡಬಾರದು' ಎಂದು ಮಗ ರೇವಣ್ಣನ ಮೂಲಕ ಗೌಡರು ಸಂದೇಶ ರವಾನಿಸಿದ್ದಾರೆ ಎನ್ನಲಾಗಿದೆ. ಹಾಗಾಗಿಯೇ, ಹೆಚ್ ಡಿ ರೇವಣ್ಣ ಅವರು ಹೊಳೇನರಸೀಪುರದ ತಮ್ಮ ನಿವಾಸದಲ್ಲಿ ಸುದ್ದಿಗೋಷ್ಠಿ ನಡೆಸಿ, ಟಿಕೆಟ್ ಹಂಚಿಕೆ ಬಗ್ಗೆ ನಾನು ಒಬ್ಬನೇ ತೀರ್ಮಾನ ಮಾಡುವ ಪ್ರಶ್ನೆಯೇ ಇಲ್ಲ. ನಮ್ಮ ಜಿಲ್ಲೆಯ 7 ವಿಧಾನಸಭಾ ಕ್ಷೇತ್ರದ ಟಿಕೆಟ್ ವಿಚಾರವನ್ನು ಜೆಡಿಎಸ್ ವರಿಷ್ಠ ಹೆಚ್ ಡಿ ದೇವೇಗೌಡ, ಶಾಸಕಾಂಗ ಪಕ್ಷದ ನಾಯಕ ಹೆಚ್ ಡಿ ಕುಮಾರಸ್ವಾಮಿ ಹಾಗೂ ರಾಜ್ಯದ ಅಧ್ಯಕ್ಷರಾದ ಇಬ್ರಾಹಿಂ ಅವರು ತೀರ್ಮಾನ ಮಾಡುತ್ತಾರೆ ಎಂದಿದ್ದಾರೆ.
ಅದೇ ಅಂತಿಮ. ನಾನು ಕುಮಾರಸ್ವಾಮಿ ಅವರನ್ನು ಬಿಟ್ಟು ಕೊಡುವ ಪ್ರಶ್ನೆಯೇ ಇಲ್ಲ. ಕೆಲವರು ಭವಾನಿ ರೇವಣ್ಣಗೆ ಟಿಕೆಟ್ ಕೊಡಿ ಅಂತಿದ್ದಾರೆ. ಇನ್ನು ಕೆಲವರು ಇನ್ನೊಬ್ಬರಿಗೆ ಕೊಡಿ ಎಂದು ಹೇಳುತ್ತಿದ್ದಾರೆ. ಆದರೆ, ಕುಳಿತು ತೀರ್ಮಾನ ಮಾಡುವುದು ಪಕ್ಷ. ಎಲ್ಲರೂ ಕುಳಿತು ಚರ್ಚೆ ಮಾಡಿ ಜನರ ವಿಶ್ವಾಸ, ಸ್ಥಳೀಯರ ಅಭಿಪ್ರಾಯ ಪಡೆದುಕೊಂಡ ನಂತರವೇ ಟಿಕೆಟ್ ನೀಡುವ ಬಗ್ಗೆ ತೀರ್ಮಾನ ಮಾಡಲಾಗುತ್ತದೆ ಎಂದು ಹೇಳುವ ಮೂಲಕ ಟಿಕೆಟ್ ಸಂಘರ್ಷಕ್ಕೆ ತಾತ್ಕಾಲಿಕವಾಗಿ ತೆರೆ ಎಳೆದಿದ್ದಾರೆ.