ಬೆಳಗಾವಿ : ಕೇಂದ್ರ ಸರ್ಕಾರ ಜಾರಿಗೆ ತಂದಿರುವ ಕೃಷಿ ಸಂಬಂಧಿತ ಮಸೂದೆಗಳಿಂದ ಕೃಷಿ ಭೂಮಿ ಖರೀದಿಗೆ ಹೆಚ್ಚಿನ ಅವಕಾಶವಿದ್ದು, ರಾಜ್ಯದ ಆರ್ಥಿಕಾಭಿವೃದ್ಧಿ, ಉದ್ಯೋಗ ಸೃಷ್ಟಿಗೆ ಅನುಕೂಲವಾಗಿದೆ ಎಂದು ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಹೇಳಿದರು.
ಅರಭಾವಿ ಮಂಡಲ ಬಿಜೆಪಿ ರೈತ ಮೋರ್ಚಾದ ವತಿಯಿಂದ ಅರಭಾವಿ ಬಳಿಯ ಸಭಾಭವನದಲ್ಲಿ ಹಮ್ಮಿಕೊಂಡ ನೂತನ ಕೃಷಿ ಮಸೂದೆ ಮಾಹಿತಿ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದ ಅವರು, ರೈತರ ಉತ್ಪನ್ನ, ವ್ಯಾಪಾರ ಮತ್ತು ವಾಣಿಜ್ಯ ಮಸೂದೆ, ರೈತರ ಬೆಲೆ ಭರವಸೆ ಮತ್ತು ಸೇವಾ ಒಪ್ಪಂದ ಮಸೂದೆ ಹಾಗೂ ಅಗತ್ಯ ಸರಕುಗಳ ತಿದ್ದುಪಡಿ ಮಸೂದೆಗಳನ್ನು ಕೇಂದ್ರ ಸರ್ಕಾರ ಜಾರಿಗೆ ತಂದಿದೆ ಎಂದು ಹೇಳಿದರು.
ಕೃಷಿಯೇತರ ಭೂಮಿ ಖರೀದಿಸಲು ಅವಕಾಶ, ಹೈನೋದ್ಯಮ, ಕುರಿ, ಮೇಕೆ, ಕೋಳಿ ಸಾಕಾಣಿಕೆಯಂತಹ ಉಪ ಕಸಬುಗಳಲ್ಲಿ ಯುವಕರು ತೊಡಗಿಸಿಕೊಳ್ಳಲು ಹೊಸ ಕಾನೂನುಗಳಿಂದ ಅವಕಾಶವಿದೆ. ಪ್ರತಿ ವರ್ಷ ಕೃಷಿ ವಿಶ್ವವಿದ್ಯಾಲಯದಿಂದ ಹೊರಬರುವ ಸುಮಾರು ನಾಲ್ಕು ಸಾವಿರ ಪದವೀಧರರಿಗೆ ಕೃಷಿ ಭೂಮಿ ಖರೀದಿಸಿ ಕೃಷಿಯಲ್ಲಿಯೂ ತೊಡಗಿಸಿಕೊಳ್ಳಲು ಅವಕಾಶವಿದೆ. ಕೃಷಿ ಕ್ಷೇತ್ರದಲ್ಲೂ ಹೂಡಿಕೆದಾರರ ಸೃಷ್ಟಿ, ಕೈಗಾರಿಕೆಗೆ ಸರಿಸಮಾನವಾಗಿ ಕೃಷಿ ಮತ್ತು ಕೃಷಿ ಆಧಾರಿತ ಕೈಗಾರಿಕೆಗಳ ಅಭಿವೃದ್ದಿಯು ವೇಗದಿಂದ ಸಾಗುತ್ತದೆ. ಕಾಯ್ದೆಗಳ ತಿದ್ದುಪಡಿಯಿಂದ ರೈತರಿಗೆ ಇಷ್ಟೆಲ್ಲಾ ಅನುಕೂಲಗಳು ಆಗಲಿವೆ ಎಂದು ಹೇಳಿದರು.
ಪ್ರತಿ ವರ್ಷವೂ ರೈತ ಅಪಾಯ ಅಡೆ ತಡೆಗಳನ್ನು ಎದುರಿಸಿಕೊಂಡು ಕೃಷಿಯಲ್ಲಿ ತೊಡಗಬೇಕಿತ್ತು. ಕಡಿಮೆ ಬೆಲೆಗೆ ಉತ್ಪನ್ನ ಮಾರುವುದರಿಂದ ಬೇರೆಲ್ಲ ಬೆಲೆಗಳು ಏರಿಕೆಯಾಗುವುದರಿಂದ ಸಾಲ ಮಾಡಿಯೇ ಕೃಷಿ ಮಾಡಬೇಕಿತ್ತು. ಇದರಿಂದಾಗಿ ರೈತರು ಸಾಲ ಬಾಧೆ ತಾಳರಾದೆ ಆತ್ಮಹತ್ಯೆ ಮಾಡಿಕೊಳ್ಳುತ್ತಿದ್ದಾರೆ. ಇನ್ನು ಮುಂದೆ ಈ ಹೊಸ ಕಾಯ್ದೆಗಳಿಂದ ರೈತರಿಗೆ ಇಂತಹ ಯಾವುದೇ ಸಮಸ್ಯೆಗಳು ಎದುರಾಗುವುದಿಲ್ಲ. ಹೊಸ ಕಾನೂನುಗಳಿಂದ ಮಾರುಕಟ್ಟೆಯಲ್ಲಿ ಉತ್ಪನ್ನದ ಬೆಲೆ ಏರಿಕೆಯಾದರೆ ನೇರವಾಗಿ ರೈತರಿಗೆ ಲಾಭವಾಗುತ್ತದೆ. ಬೆಲೆ ಕುಸಿದರೆ ಸರ್ಕಾರದ ಬೆಂಬಲ ಬೆಲೆ ಸಹಕಾರಿಯಾಗುತ್ತದೆ. ಆದ್ದರಿಂದ ರೈತ ಪರವಾದ ನೂತನ ಕೃಷಿ ಕಾಯ್ದೆಗಳಿಂದ ರೈತರಿಗೆ ವರದಾನವಾಗಲಿದೆ ಎಂದರು.