ಬೆಳಗಾವಿ: ಜಿಲ್ಲೆಯಲ್ಲಿ ಆಯುಷ್ಮಾನ್-ಆರೋಗ್ಯ ಕರ್ನಾಟಕ ಯೋಜನೆಯಡಿ ನೋಂದಣಿಯಾಗಿರುವ ಖಾಸಗಿ ಆಸ್ಪತ್ರೆಗಳಲ್ಲಿ ಒಟ್ಟಾರೆ 3,925 ಬೆಡ್ಗಳು ಲಭ್ಯವಿದೆ. ಇದರಲ್ಲಿ ಶೇ.50 ರಷ್ಟು ಬೆಡ್ಗಳನ್ನು ಕೋವಿಡ್ ಸೋಂಕಿತರ ಚಿಕಿತ್ಸೆಗಾಗಿ ಜಿಲ್ಲಾಡಳಿತದ ಸುಪರ್ದಿಗೆ ನೀಡಬೇಕು ಎಂದು ಜಿಲ್ಲಾಧಿಕಾರಿ ಡಾ.ಕೆ.ಹರೀಶ್ ಕುಮಾರ್ ಅವರು ಸೂಚನೆ ನೀಡಿದರು.
ಜಿಲ್ಲಾಧಿಕಾರಿ ಕಚೇರಿಯ ಸಭಾಂಗಣದಲ್ಲಿ ಸೋಮವಾರ ನಡೆದ ಜಿಲ್ಲಾ ತಜ್ಞರ ಸಲಹಾ ಸಮಿತಿ ಸಭೆಯಲ್ಲಿ ಮಾತನಾಡಿದ ಅವರು, ಜಿಲ್ಲೆಯ ಖಾಸಗಿ ಆಸ್ಪತ್ರೆಗಳು ಮತ್ತು ವೈದ್ಯಕೀಯ ಮಹಾವಿದ್ಯಾಲಯದಲ್ಲಿ ಲಭ್ಯವಿರುವ 3925 ಬೆಡ್ಗಳ ಪೈಕಿ ಶೇ.50 ರಷ್ಟು ಬೆಡ್ಗಳನ್ನು ಅಂದರೆ ಸುಮಾರು 2000 ಬೆಡ್ಗಳನ್ನು ಜಿಲ್ಲಾಡಳಿತಕ್ಕೆ ನೀಡಬೇಕಾಗುತ್ತದೆ. ಆದರೆ ಇದುವರೆಗೆ ಕೇವಲ 641 ಬೆಡ್ಗಳನ್ನು ಮಾತ್ರ ಮೀಸಲಿಡಲಾಗಿದೆ. ಸದ್ಯಕ್ಕೆ ಈ ಬೆಡ್ಗಳು ಸಾಕಾಗಬಹುದು. ಆದರೆ ಕೋವಿಡ್ ಸೋಂಕಿತರ ಸಂಖ್ಯೆ ಗಣನೀಯವಾಗಿ ಹೆಚ್ಚುತ್ತಿರುವುದರಿಂದ ಮುಂದಿನ ವಾರದೊಳಗೆ ಉಳಿದ ಬೆಡ್ಗಳನ್ನು ಕೋವಿಡ್ ಚಿಕಿತ್ಸೆಗೆ ಮೀಸಲಿಟ್ಟು ಜಿಲ್ಲಾಡಳಿತಕ್ಕೆ ನೀಡಬೇಕು ಎಂದು ತಿಳಿಸಿದರು.