ಬೆಳಗಾವಿ: ಲ್ಯಾಪ್ಸ್ ಆಗಿರುವ ಕಳೆದ ವರ್ಷದ ಜಿಲ್ಲಾ ಪಂಚಾಯತ ಅನುದಾನವನ್ನು ಮರಳಿ ಪಡೆಯುವ ಕುರಿತು ಸರ್ಕಾರದ ಉನ್ನತ ಮಟ್ಟದ ಅಧಿಕಾರಿಗಳೊಂದಿಗೆ ಚರ್ಚಿಸುವುದು ಸೇರಿದಂತೆ ಎಲ್ಲಾ ರೀತಿಯ ಪ್ರಯತ್ನ ಮಾಡಲಾಗುವುದು ಎಂದು ಜಿಲ್ಲಾ ಪಂಚಾಯತ ಸಿಇಓ ದರ್ಶನ.ಹೆಚ್.ವಿ. ತಿಳಿಸಿದರು.
ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಶುಕ್ರವಾರ ಆಯೋಜಿಸಲಾಗಿದ್ದ ಜಿಲ್ಲಾ ಪಂಚಾಯತ್ ಸಾಮಾನ್ಯ ಸಭೆಯಲ್ಲಿ ಅವರು ಮಾತನಾಡಿದರು. ಲ್ಯಾಪ್ಸ್ ಆಗಿರುವ ಅನುದಾನದ ಬಗ್ಗೆ ಈಗಾಗಲೇ ಮಾಹಿತಿಯನ್ನು ಪಡೆದುಕೊಂಡಿದ್ದು, ಸಂಬಂಧಿಸಿದ ಅಧಿಕಾರಿಗಳ ಮೇಲೆ ಕ್ರಮಕೈಗೊಳ್ಳಲಾಗುವುದು. ಲ್ಯಾಪ್ಸ್ ಆಗಿರುವ ಕಳೆದ ವರ್ಷದ ಅನುದಾನ ಮತ್ತೆ ಒದಗಿಸಲು ಸಾಮಾನ್ಯ ಸಭೆಯಲ್ಲಿ ಸರ್ವಾನುಮತದ ನಿರ್ಣಯ ಅಂಗೀಕರಿಸಿ ಸರ್ಕಾರಕ್ಕೆ ಕಳಿಸಬಹುದು. ಅಂದಾಗ ಮಾತ್ರ ಈ ನಿಟ್ಟಿನಲ್ಲಿ ಕ್ರಮ ಕೈಗೊಳ್ಳಬಹುದು. ಅನುದಾನ ಲ್ಯಾಪ್ಸ್ ಆಗಿರುವುದಕ್ಕೆ ಸಂಬಂಧಿಸಿದಂತೆ ಖಜಾನೆ ಅಧಿಕಾರಿಗಳ ಪ್ರತ್ಯೇಕ ಸಭೆ ಕರೆದು ಚರ್ಚೆ ನಡೆಸಲಾಗುವುದು ಎಂದು ಸಿಇಓ ದರ್ಶನ್ ತಿಳಿಸಿದರು.