ಚಿಕ್ಕೋಡಿ:ಬೆಳೆಹಾನಿ ಪರಿಹಾರಕ್ಕೆ ಸಂಬಂಧಿಸಿದಂತೆ ಮಹಾರಾಷ್ಟ್ರದ ಮಾದರಿಯನ್ನು ಅಧ್ಯಯನ ಮಾಡಲು ಜಿಲ್ಲಾಧಿಕಾರಿಗಳಿಗೆ ಸೂಚನೆ ನೀಡಲಾಗಿದೆ. ಅಧ್ಯಯನ ವರದಿಯ ಬಳಿಕ ಸರ್ಕಾರದ ಆರ್ಥಿಕ ಸ್ಥಿತಿ ಆಧರಿಸಿ ಸೂಕ್ತ ನಿರ್ಧಾರ ತೆಗೆದುಕೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಭರವಸೆ ನೀಡಿದ್ದಾರೆ.
ಬೆಳಗಾವಿ ಜಿಲ್ಲೆಯ ಅಥಣಿ ತಾಲೂಕಿನ ದರೂರ ಗ್ರಾಮದಲ್ಲಿ ನಡೆದ ಪರಿಹಾರ ವಿತರಣೆ ಅಹವಾಲು ಸ್ವೀಕಾರ ಸಭೆಯಲ್ಲಿ ಅವರು ಮಾತನಾಡಿ ಪ್ರವಾಹದಿಂದ ಮನೆ, ಬೆಳೆ ಕಳೆದುಕೊಂಡು ಜನರು ಸಂಕಷ್ಟದಲ್ಲಿದ್ದು, ಸಂತ್ರಸ್ತರಿಗೆ ರಾಜ್ಯ ಸರ್ಕಾರ ಸಾಧ್ಯವಿರುವ ಎಲ್ಲ ನೆರವು ನೀಡಿದೆ. ರಾಜ್ಯದ ಹಣಕಾಸು ಪರಿಸ್ಥಿತಿ ಸರಿ ಇಲ್ಲದಿದ್ದರೂ ಪ್ರವಾಹದಿಂದ ಸಂಪೂರ್ಣ ಮನೆ ಕಳೆದುಕೊಂಡಿರುವವರಿಗೆ ಐದು ಲಕ್ಷ ರೂಪಾಯಿ ನೀಡಲು ಸರ್ಕಾರ ನಿರ್ಧರಿಸಿದೆ ಎಂದರು.
ರೈತರು ಒಪ್ಪಿದರೆ ಶಾಶ್ವತ ಸ್ಥಳಾಂತರಕ್ಕೆ ಸರ್ಕಾರ ಸಿದ್ಧವಿದೆ. ಕೆಲವು ವರ್ಷಗಳ ಹಿಂದೆ ಸ್ಥಳಾಂತರ ಮಾಡಿದ ಗ್ರಾಮಗಳಿಗೆ ಜನರು ಹೋಗಲಿಲ್ಲ. ಗ್ರಾಮಸ್ಥರು ಒಟ್ಟಾಗಿ ಸಂಪೂರ್ಣ ಗ್ರಾಮ ಸ್ಥಳಾಂತರಕ್ಕೆ ಒಪ್ಪಿಗೆ ನೀಡಿದರೆ ತಕ್ಷಣ ಸ್ಥಳಾಂತರಕ್ಕೆ ಕ್ರಮ ಜರುಗಿಸಲಾಗುವುದು.16 ಗ್ರಾಮಗಳಿಗೆ ನೀರು ಪೂರೈಸುವ 89 ಕೋಟಿ ರೂಪಾಯಿ ವೆಚ್ಚದ ಬಹುಗ್ರಾಮ ಕುಡಿಯುವ ನೀರು ಯೋಜನೆಗೆ ಹದಿನೈದು ದಿನಗಳಲ್ಲಿ ಸಚಿವ ಸಂಪುಟ ಸಭೆಯಲ್ಲಿ ಒಪ್ಪಿಗೆ ನೀಡಲಾಗುವುದು ಎಂದು ಭರವಸೆ ನೀಡಿದರು.