ಕರ್ನಾಟಕ

karnataka

ಗಣೇಶೋತ್ಸವ ಪೂರ್ವಭಾವಿ ಸಭೆ: ಏಕಗವಾಕ್ಷಿ ಮೂಲಕ ತಕ್ಷಣ ಪರವಾನಿಗೆ.. ಸಚಿವ ಸತೀಶ್ ಜಾರಕಿಹೊಳಿ ಸೂಚನೆ

By

Published : Aug 8, 2023, 12:07 PM IST

ಗಣೇಶೋತ್ಸವ ಮಂಡಳಿಗಳಿಗೆ ರಿಯಾಯಿತಿ ದರದಲ್ಲಿ ವಿದ್ಯುತ್ ಒದಗಿಸುವ ಕುರಿತು ಸರ್ಕಾರದ ಮಟ್ಟದಲ್ಲಿ ಗಮನ ಸೆಳೆಯಲಾಗುವುದು. ಏನೇ ಸಮಸ್ಯೆಗಳಿದ್ದರೆ‌ ಅಧಿಕಾರಿಗಳ ಗಮನಕ್ಕೆ ತರಬೇಕು.‌ ಅಷ್ಟು ಮೀರಿ ಬಗೆಹರಿಯದಿದ್ದರೆ ನನ್ನ ಗಮನಕ್ಕೆ ತರುವಂತೆ ಸಚಿವ ಸತೀಶ್ ಜಾರಕಿಹೊಳಿ ಅಧಿಕಾರಿಗಳಿಗೆ ಸೂಚನೆ ನೀಡಿದರು.

Ganeshotsava pre meeting at Belagavi
ಗಣೇಶೋತ್ಸವ ಪೂರ್ವಭಾವಿ ಸಭೆ

ಬೆಳಗಾವಿ: ನಗರದಲ್ಲಿ ಅತ್ಯಂತ ಸಂಭ್ರಮದಿಂದ ಗಣೇಶೋತ್ಸವ ಆಚರಣೆಗೆ ಎಲ್ಲ ಸಿದ್ಧತೆ ಮಾಡಿಕೊಳ್ಳಬೇಕು ಹಾಗೂ ಉತ್ಸವ ಮಂಡಳಿಗಳಿಗೆ ಯಾವುದೇ ರೀತಿಯ ವಿಳಂಬವಾಗದಂತೆ ಏಕಗವಾಕ್ಷಿ ಯೋಜನೆ ಮೂಲಕ ಕೂಡಲೇ ಪರವಾನಿಗೆ ನೀಡಬೇಕು ಎಂದು ಜಿಲ್ಲಾ ಉಸ್ತುವಾರಿ ಸಚಿವ ಸತೀಶ್ ಜಾರಕಿಹೊಳಿ ಅಧಿಕಾರಿಗಳಿಗೆ ಸೂಚನೆ ನೀಡಿದರು. ಗಣೇಶೋತ್ಸವ ಹಿನ್ನೆಲೆ ಮಹಾನಗರ ಪಾಲಿಕೆಯ ಸಭಾಂಗಣದಲ್ಲಿ ನಿನ್ನೆ ಸಂಜೆ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಗಣೇಶೋತ್ಸವ ಮಂಡಳಿಗಳಿಗೆ ರಿಯಾಯಿತಿ ದರದಲ್ಲಿ ವಿದ್ಯುತ್ ಒದಗಿಸುವ ಕುರಿತು ಸರ್ಕಾರದ ಮಟ್ಟದಲ್ಲಿ ಗಮನ ಸೆಳೆಯಲಾಗುವುದು. ಏನೇ ಸಮಸ್ಯೆಗಳಿದ್ದರೆ‌ ಅಧಿಕಾರಿಗಳ ಗಮನಕ್ಕೆ ತರಬೇಕು.‌ ಅಷ್ಟು ಮೀರಿ ಬಗೆಹರಿಯದಿದ್ದರೆ ನನ್ನ ಗಮನಕ್ಕೆ ತರುವಂತೆ ಅವರು ತಿಳಿಸಿದರು. ಗಣೇಶೋತ್ಸವ ‌ಮಂಡಳಿಯವರು ಕೂಡ ನಿಗದಿತ ಅವಧಿಯಲ್ಲಿ ಮೆರವಣಿಗೆಯಲ್ಲಿ ಭಾಗವಹಿಸುವ ಮೂಲಕ ಆದಷ್ಟು ಬೇಗ ನಿಮಜ್ಜನಕ್ಕೆ ಸಹಕರಿಸಬೇಕು. ಪ್ರತಿವರ್ಷದಂತೆ ಈಗಾಗಲೇ ಎಲ್ಲ ಸಿದ್ಧತೆಗಳನ್ನು ಮಾಡಿಕೊಳ್ಳಲಾಗುತ್ತಿದ್ದು, ಹೊಂಡಗಳ ಸ್ವಚ್ಛತೆ, ರಸ್ತೆ ದುರಸ್ತಿ, ವಿದ್ಯುತ್ ತಂತಿಗಳ ತೆರವು, ಪೊಲೀಸ್ ಭದ್ರತೆ ಮತ್ತಿತರ ಅಗತ್ಯವಿರುವ ಕ್ರಮಗಳನ್ನು ತೆಗೆದುಕೊಳ್ಳಲಾಗುವುದು. ಮೆರವಣಿಗೆ ವೀಕ್ಷಣೆಗೆ ಆಗಮಿಸುವ ಮಹಿಳೆಯರಿಗೆ ಅನುಕೂಲವಾಗುವಂತೆ ಮಹಿಳಾ ಶೌಚಾಲಯಗಳನ್ನು ಹೆಚ್ಚಿನ ಪ್ರಮಾಣದಲ್ಲಿ ಕಲ್ಪಿಸಬೇಕು ಎಂದು ಸತೀಶ್ ಜಾರಕಿಹೊಳಿ ಹೇಳಿದರು.

ಮಹಾನಗರ ಪಾಲಿಕೆಯ ಆಯುಕ್ತ ಅಶೋಕ ದುಡಗುಂಟಿ ಅವರು, ಗಣೇಶೋತ್ಸವವನ್ನು ಪ್ರತಿವರ್ಷದಂತೆ ಸಂಭ್ರಮದಿಂದ‌ ಹಾಗೂ ಅಚ್ಚುಕಟ್ಟಾಗಿ ಆಚರಿಸಲು ಅನುಕೂಲವಾಗುವಂತೆ ಎಲ್ಲ ರೀತಿಯ ಸಿದ್ಧತೆಗಳನ್ನು ಕೈಗೊಳ್ಳಲಾಗುವುದು ಎಂದರು.

ಗಣೇಶೋತ್ಸವಕ್ಕೆ ಒಂದು ಕೋಟಿ‌ ರೂ. ಅನುದಾನ:ಸಭೆಯಲ್ಲಿ ಮಾತನಾಡಿದ ಜಿಲ್ಲಾಧಿಕಾರಿ ನಿತೇಶ್ ಪಾಟೀಲ 'ಗಣೇಶೋತ್ಸವವನ್ನು ಅಚ್ಚುಕಟ್ಟಾಗಿ ‌ನಡೆಸಲು ಪಾಲಿಕೆಯಲ್ಲಿ ಒಂದು ಕೋಟಿ ರೂಪಾಯಿ ಅನುದಾನ ಮೀಸಲಿಡಲಾಗಿದೆ. ಗಣೇಶೋತ್ಸವ ಮಂಡಳಿಗಳಿಗೆ ಪರವಾನಿಗೆ ನೀಡಲು ಅನುಕೂಲವಾಗುವಂತೆ ಎಂಟು ಪೊಲೀಸ್ ಠಾಣೆಗಳಲ್ಲಿ ಏಕಗವಾಕ್ಷಿ ವ್ಯವಸ್ಥೆ ಮಾಡಲಾಗುತ್ತಿದೆ. ಮೆರವಣಿಗೆ ವೀಕ್ಷಿಸಲು ಅನುಕೂಲವಾಗುವಂತೆ ದೊಡ್ಡ ಗ್ಯಾಲರಿ ನಿರ್ಮಿಸಲಾಗುವುದು. ಮೆರವಣಿಗೆ ಸಾಗುವ ಮಾರ್ಗವನ್ನು ಪರಿಶೀಲಿಸಿ ಸುಗಮ ಮೆರವಣಿಗೆಗೆ ಅಗತ್ಯ ವ್ಯವಸ್ಥೆ ಮತ್ತು ಹೆಚ್ಚುವರಿ ಸಿಸಿಟಿವಿ ಅಳವಡಿಕೆ ಮಾಡಲಾಗುವುದು' ಎಂದು ತಿಳಿಸಿದರು.

ಗಣೇಶೋತ್ಸವ ಮಹಾಮಂಡಳದ ಪದಾಧಿಕಾರಿ ವಿಕಾಸ್ ಕಲಘಟಗಿ ಮಾತನಾಡಿ, ನಗರದಲ್ಲಿ 378 ಗಣೇಶೋತ್ಸವ ಮಂಡಳಿಗಳು ಗಣೇಶ ಮೂರ್ತಿ ಪ್ರತಿಷ್ಠಾಪನೆ ಮಾಡುತ್ತಿವೆ. ಆದ್ದರಿಂದ ವಿದ್ಯುತ್ ಬಿಲ್​ನಲ್ಲಿ ರಿಯಾಯಿತಿ ನೀಡಬೇಕು. ಸಾಧ್ಯವಾದರೆ ಸಂಪೂರ್ಣ ಬಿಲ್ ಮನ್ನಾ‌ ಮಾಡಲು ಸರ್ಕಾರದ ಮಟ್ಟದಲ್ಲಿ ಸೂಕ್ತ ನಿರ್ಧಾರ ಕೈಗೊಳ್ಳಬೇಕು ಎಂದು ಮನವಿ ಮಾಡಿದರು.

ನೇತಾಜಿ ಜಾಧವ್​ ಮಾತನಾಡಿ 'ಗಣೇಶ ಮೂರ್ತಿಗಳ ನಿಮಜ್ಜನಕ್ಕೆ ಅನುಕೂಲವಾಗುವಂತೆ ಬಾವಿ ವ್ಯವಸ್ಥೆ ಮಾಡಿಕೊಡಬೇಕು. ವಿದ್ಯುತ್ ದೀಪಗಳನ್ನು ಮುಂಚಿಯವಾಗಿಯೇ ದುರಸ್ತಿ ಮಾಡಲು ಕ್ರಮ‌ ತೆಗೆದುಕೊಳ್ಳಬೇಕು ಎಂದು ಕೋರಿದರು. ರಮಾಕಾಂತ್ ಕೊಂಡುಸ್ಕರ್ ಮಾತನಾಡಿ, ಉಚಿತ ವಿದ್ಯುತ್ ಒದಗಿಸುವುದರ ಜತೆಗೆ ಪರವಾನಿಗೆ ವ್ಯವಸ್ಥೆಯನ್ನು ಸರಳೀಕರಣ ಮಾಡುವಂತೆ ಮನವಿ ಮಾಡಿದರು.

ಮತ್ತಿತರ ಪದಾಧಿಕಾರಿಗಳು ಮಾತನಾಡಿ "ದಸರಾ ಮಾದರಿಯಲ್ಲಿ ಬೆಳಗಾವಿ ಗಣೇಶೋತ್ಸವ ‌ಮೆರವಣಿಗೆ ನಡೆಸಲು ಅಗತ್ಯ ಕ್ರಮಗಳನ್ನು ಕೈಗೊಳ್ಳಬೇಕು. ರಸ್ತೆ ದುರಸ್ತಿ, ವಿದ್ಯುತ್ ದೀಪಗಳ ಅಳವಡಿಕೆ, ಜೋತು ಬಿದ್ದಿರುವ ವಿದ್ಯುತ್ ತಂತಿಗಳನ್ನು ಸರಿಪಡಿಸುವುದು, ಗಣೇಶ ನಿಮಜ್ಜನಕ್ಕೆ ಹೆಚ್ಚುವರಿ ಟ್ಯಾಂಕ್ ವ್ಯವಸ್ಥೆ ಮಾಡುವಂತೆ ಕೇಳಿಕೊಂಡರು.

ಸಭೆಯಲ್ಲಿ ಮೇಯರ್ ಶೋಭಾ ಸೋಮನಾಚೆ, ಉಪ ಮೇಯರ್ ರೇಷ್ಮಾ ಪಾಟೀಲ, ಶಾಸಕ ಆಸೀಫ್(ರಾಜು) ಸೇಠ್, ವಿಧಾನ ಪರಿಷತ್ ಸದಸ್ಯ ಚನ್ನರಾಜ್ ಹಟ್ಟಿಹೊಳಿ, ನಗರ ಪೊಲೀಸ್ ಆಯುಕ್ತ ಎಸ್ ಎನ್ ಸಿದ್ದರಾಮಪ್ಪ, ಜಿಪಂ ಸಿಇಒ ಹರ್ಷಲ್ ಭೋಯರ್ ಮತ್ತಿತರರು ಉಪಸ್ಥಿತರಿದ್ದರು.

ಇದನ್ನೂ ಓದಿ:ಪಿಒಪಿ, ಬಣ್ಣದ ಮೂರ್ತಿ ತಯಾರಿಕೆ, ದಾಸ್ತಾನು ಮಾರಾಟ ಮಾಡದಂತೆ ಸಚಿವ ಈಶ್ವರ ಖಂಡ್ರೆ ಸೂಚನೆ

ABOUT THE AUTHOR

...view details