ಚಿಕ್ಕೋಡಿ : ಕಳೆದ 2 ತಿಂಗಳಿನಿಂದ ಉತ್ತರ ಕರ್ನಾಟಕದ ಜೀವನದಿ ಕೃಷ್ಣೆಯ ಒಡಲು ಬತ್ತಿ ಬರಿದಾಗಿದೆ. ಕೃಷ್ಣಾ ನದಿ ತೀರದಲ್ಲಿ ಬರುವ ಬೆಳಗಾವಿ, ವಿಜಯಪುರ, ಬಾಗಲಕೋಟೆ, ರಾಯಚೂರು ಜಿಲ್ಲೆಗಳ ಸಾವಿರಾರು ಹಳ್ಳಿಗಳ ಜನರು ನೀರಿಗಾಗಿ ಪ್ರತಿನಿತ್ಯ ಪರದಾಡುವಂತಾಗಿದೆ. ರಾಜ್ಯದಲ್ಲಿನ ಸಮಿಶ್ರ ಸರ್ಕಾರ ಉತ್ತರ ಕರ್ನಾಟಕ ಬಗ್ಗೆ ದಿವ್ಯ ನಿರ್ಲಕ್ಷ್ಯ ತೋರುತ್ತಿದೆ ಎಂಬ ಕೂಗು ಈ ಭಾಗದಲ್ಲಿ ಹರದಾಡುತ್ತಿದೆ.
ಕೃಷ್ಣಾ ನದಿಗೆ ನೀರು ಬಿಡುಗಡೆ ಮಾಡುವಂತೆ ಕಾಂಗ್ರೆಸ್, ಬಿಜೆಪಿ ಜನಪ್ರತಿನಿಧಿಗಳು ಮಹಾರಾಷ್ಟ್ರದ ಮುಖ್ಯಮಂತ್ರಿ ದೇವೆಂದ್ರ ಫಡ್ನವಿಸ್ ಹಾಗೂ ಅಲ್ಲಿನ ಜಲಸಂಪನ್ಮೂಲ ಸಚಿವರನ್ನು ಪ್ರತ್ಯೇಕವಾಗಿ ಭೇಟಿ ಮಾಡಿ ಮನವಿ ಸಲ್ಲಿಸಿದ್ದರು. ಸೊಲ್ಲಾಪುರ ಹಾಗೂ ಜತ್ತ ತಾಲೂಕಿನ ಕೆಲವು ಪ್ರದೇಶಗಳಿಗೆ ಆಲಮಟ್ಟಿ ಜಲಾಶಯದಿಂದ 2 ಟಿಎಂಸಿ ನೀರು ಹರಿಸಿದರೆ, ಕೋಯ್ನಾದಿಂದ 2 ಟಿಎಂಸಿ ನೀರನ್ನು ಕೃಷ್ಣಾ ನದಿಗೆ ಬಿಡುಗಡೆ ಮಾಡಲಾಗುವುದು ಎಂದು ಮಹಾರಾಷ್ಟ್ರದ ಮುಖ್ಯಮಂತ್ರಿ ಅವರು ಕರ್ನಾಟಕ ಸರ್ಕಾರಕ್ಕೆ ಷರತ್ತು ಹಾಕಿದ್ದರು. ಕರ್ನಾಟಕ ರಾಜ್ಯದ ಸಮಿಶ್ರ ಸರ್ಕಾರದ ಜಲಸಂಪನ್ಮೂಲ ಸಚಿವ ಡಿ.ಕೆ.ಶಿವಕುಮಾರ್ ಅವರು ಬೆಳಗಾವಿ ಭಾಗದ ಜನಪ್ರತಿನಿಧಿ ಹಾಗೂ ಅಧಿಕಾರಿಗಳ ಸಭೆ ಕರೆದು ಪರಸ್ಪರ ನೀರು ಬಿಡುಗಡೆ ಬಗ್ಗೆ ಮಾತುಕತೆ ನಡೆಸಿ ಮಹಾರಾಷ್ಟ್ರದ ಷರತ್ತಿಗೆ ಒಪ್ಪಿಗೆ ಸೂಚಿಸಿದ್ದರು. ಅಲ್ಲದೆ ಕೃಷ್ಣಾ ನದಿಗೆ ನೀರು ಹರಿಸುವಂತೆ ಮಹಾರಾಷ್ಟ್ರ ಸರ್ಕಾರಕ್ಕೆ ಮನವಿ ಮಾಡಿದ್ದರು. ಸಭೆ ನಡೆಸಿ 1 ವಾರ ಕಳೆದರೂ ಕೃಷ್ಣಾ ನದಿಗೆ ನೀರು ಮಾತ್ರ ಬಂದಿಲ್ಲ. ಇದರಿಂದಾಗಿ ನದಿ ತೀರದ ಜನರು ಪ್ರತಿನಿತ್ಯ ನೀರು ಇಂದು ಬರುತ್ತೆ, ನಾಳೆ ಬರುತ್ತೆ ಎಂಬ ನಿರೀಕ್ಷೆಯಲ್ಲೇ ಕಾಲ ಕಳೆಯುತ್ತಿದ್ದಾರೆ.