ಕರ್ನಾಟಕ

karnataka

'ಗ್ಯಾರಂಟಿಗಳನ್ನು ಕೊಟ್ಟೆವೆಂದು ಬೀಗುತ್ತಿರುವ ಕಾಂಗ್ರೆಸ್ ಸರ್ಕಾರಕ್ಕೆ ರೈತನ ಬದುಕಿಗೆ ಗ್ಯಾರಂಟಿ ಕೊಡಲು ಸಾಧ್ಯವಿಲ್ಲವೇ?': ಹೆಚ್​ಡಿಕೆ ಪ್ರಶ್ನೆ

HD Kumaraswamy post in 'x' about formers suicides in Karnataka: ರಾಜ್ಯದಲ್ಲಿ ರೈತರ ಆತ್ಮಹತ್ಯೆ ಪ್ರಕರಣದ ಸಂಖ್ಯೆ ನೋಡಿ ಮಾಜಿ ಮುಖ್ಯಮಂತ್ರಿ ಕುಮಾರ ಸ್ವಾಮಿ ರಾಜ್ಯ ಕಾಂಗ್ರೆಸ್​ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.

By ETV Bharat Karnataka Team

Published : Sep 16, 2023, 12:51 PM IST

Published : Sep 16, 2023, 12:51 PM IST

ಹೆಚ್​ಡಿಕೆ
ಹೆಚ್​ಡಿಕೆ

ಬೆಂಗಳೂರು: 'ಬೆಳ್ಳಂ ಬೆಳಗ್ಗೆಯೇ ಈ ವರದಿ ಓದಿದಾಕ್ಷಣ ಬಹಳ ಸಂಕಟವಾಯಿತು, ಕಣ್ಣಾಲಿಗಳು ತುಂಬಿ ಬಂದವು. ಇನ್ನೆಷ್ಟು ದಿನ ಇಂತಹ ಸಾವುಗಳನ್ನು ನೋಡಬೇಕು. ಕೇವಲ ಪ್ರಚಾರ, ಅಧಿಕಾರದ ಸುಖ ಅನುಭವಿಸುತ್ತಿರುವ ಕಾಂಗ್ರೆಸ್ ಸರ್ಕಾರಕ್ಕೆ ಅನ್ನದಾತನ ಸಾವಿನ ಕೇಕೆ ಸವಿಗಾನವಾಗಿದೆಯಾ? ಇವರಿಗೆ ವಾಸ್ತವ ಅರಿವಿಲ್ಲವೆ?' ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಈ ಕುರಿತು ಎಕ್ಸ್​ ಖಾತೆಯಲ್ಲಿ ಸರಣಿ ಪೋಸ್ಟ್​ ಮಾಡಿರುವ ಅವರು, ಗ್ಯಾರಂಟಿಗಳನ್ನು ಕೊಟ್ಟೆವೆಂದು ಬೀಗುತ್ತಿರುವ ಕಾಂಗ್ರೆಸ್ ಸರ್ಕಾರಕ್ಕೆ ರೈತನ ಬದುಕಿಗೆ ಗ್ಯಾರಂಟಿ ಕೊಡಲು ಸಾಧ್ಯವಿಲ್ಲವೇ? ಇದೇನಾ 'ಕರ್ನಾಟಕ ಮಾದರಿ'? ರಾಜ್ಯದಲ್ಲಿ ಕೃಷಿ ಇಲಾಖೆ ಎನ್ನುವುದು ಇದೆಯಾ? ಅದು ಕೃಷಿ ಇಲಾಖೆಯಾ, ಕಸಾಯಿಖಾನೆಯಾ? ಕಂದಾಯಕ್ಕೂ ಆದಾಯದ ಚಿಂತೆಯಾ? ರಾಜ್ಯಕ್ಕೆ ಬರ, ಕೆಲವರಿಗೆ ಅದೇ ವರ..!! ಇದು ನೈಜಸ್ಥಿತಿ ಎಂದು ಕಿಡಿಕಾರಿದ್ದಾರೆ.

ಆಗಸ್ಟ್, ಸೆಪ್ಟೆಂಬರ್​ನಲ್ಲಿ ಕೆಲವೆಡೆ ಮಳೆಯಾದರೂ ಪ್ರಯೋಜನವಾಗಿಲ್ಲ. ಹಾಗೆ ಬೆಳೆಗಳು ನಾಶವಾಗಿವೆ. ತುರ್ತಾಗಿ ಕೇಂದ್ರಕ್ಕೆ ಮನವಿ ಮಾಡಬೇಕಿದ್ದ ಸರಕಾರ ಮಾರ್ಗಸೂಚಿ ನೆಪದಲ್ಲಿ ಕಾಲಹರಣ ಮಾಡುತ್ತಿದೆ. ಕಾಲಹರಣವೂ ಜೀವಹರಣವೂ ಬೇರೆ ಬೇರೆ ಅಲ್ಲ. ತುರ್ತಾಗಿ ಜಿಲ್ಲಾಧಿಕಾರಿಗಳ ಖಾತೆಯಲ್ಲಿರುವ ಹಣ ಬಿಡುಗಡೆ ಮಾಡಬಹುದಲ್ಲವೇ? ಎಂದು ಪ್ರಶ್ನಿಸಿದ್ದಾರೆ.

ಬೆಳೆ ವಿಮೆಯೂ ಅನ್ನದಾತರ ಆಪತ್ತಿಗೆ ಆಗುತ್ತಿಲ್ಲ, ಅದರ ಬಗ್ಗೆ ಅವರಿಗೆ ವಿಶ್ವಾಸವೇ ಇಲ್ಲ. ಅವರು ಸಾವಿನ ದವಡೆಗೆ ಬೀಳುತ್ತಿದ್ದರೆ ಅಧಿಕಾರಿಗಳು ಅರ್ಹ - ಅನರ್ಹ ಸಾವು ಎಂದು ವಿಭಜಿಸಿ ಲೆಕ್ಕ ಹಾಕಿಕೊಂಡು ಕೂತಿದ್ದಾರೆ. ಸಾವಿನಲ್ಲೂ ಅರ್ಹತೆ, ಅನರ್ಹತೆ ಹುಡುಕುವ ಈ ಕ್ರೂರತೆಗೆ ಏನೆಂದು ಹೇಳುವುದು? ರೈತರ ಸಾವುಗಳೆಂದರೆ ಇವರಿಗೆ ಇಷ್ಟು ಹಗುರವೇ? ಎಂದಿದ್ದಾರೆ.

ಮುಂದೆ, ನನ್ನ ಮನವಿ ಇಷ್ಟೇ; ರೈತರು ಎದೆಗುಂದಬಾರದು. ನಿಮ್ಮ ದುಡುಕಿನ ನಿರ್ಧಾರ ನಿಮ್ಮ ಕುಟುಂಬವನ್ನು ಅನಾಥಗೊಳಿಸುತ್ತದೆ, ನಿಮ್ಮೊಂದಿಗೆ ನಾನಿದ್ದೇನೆ. ಸರಕಾರ ಇಂತಹ ಆತ್ಮಹತ್ಯೆ ಪ್ರಕರಣಗಳಿಗೆ ಇತಿಶ್ರೀ ಹಾಡಲೇಬೇಕು. ಶಾಶ್ವತವಾಗಿ ಪರಿಹಾರೋಪಾಯ ಕಂಡುಕೊಳ್ಳಬೇಕು. ಜೀವ ಬಿಟ್ಟ ರೈತ ಕುಟುಂಬಗಳಿಗೆ ಮಾನವೀಯತೆಯ ನೆರವು ಕೊಡಬೇಕು. ವಿಳಂಬ ಸರಿಯಲ್ಲ ಎಂದು ಹೆಚ್​ಡಿಕೆ ಆಗ್ರಹಿಸಿದ್ದಾರೆ.

ಕರ್ನಾಟಕ ಸಂಕಷ್ಟದಲ್ಲಿದೆ, ನಾವೆಲ್ಲರೂ ಪಣತೊಟ್ಟು ಹೊರಾಡೋಣ:ತಮ್ಮ ಆರೋಗ್ಯ ಸುಧಾರಿಸಿದ ಬಳಿಕ ಹೆಚ್​ಡಿಕೆ ಮೊನ್ನೆ ಸರಣಿ ಪೋಸ್ಟ್ ಮಾಡಿದ್ದರು. ಆ ಪೋಸ್ಟ್​ನಲ್ಲಿ ಕರ್ನಾಟಕ ಸಂಕಷ್ಟದಲ್ಲಿದೆ. ತೀವ್ರ ಬರ - ನೆರೆ, ಅನಧಿಕೃತ ಲೋಡ್ ಶೆಡ್ಡಿಂಗ್, ಕಾವೇರಿ ಬಿಕ್ಕಟ್ಟಿನಿಂದ ತತ್ತರಿಸುತ್ತಿದೆ. ಅನ್ನ ಕೊಡುವ ರೈತರನ್ನು, ತೆರಿಗೆ ತೆರುವ ನಾಗರಿಕರನ್ನು ಕಾಲ ಕಸದಂತೆ ಕಡೆಗಣಿಸಲಾಗಿದೆ. ಈ ಸಂಕಷ್ಟದ ದಿನಗಳಲ್ಲಿ ನಾವು ಜನರ ಜತೆ ಬದ್ಧತೆಯಿಂದ ನಿಲ್ಲಬೇಕು. ಜನಪರ ನಿಲುವು, ಹೋರಾಟ ನಮ್ಮೆಲ್ಲರ ಹೊಣೆ, ನೈತಿಕ ಜವಾಬ್ದಾರಿ ಎಂದು ಕುಮಾರಸ್ವಾಮಿ ಹೇಳಿದ್ದರು.

ಸೋತಿದ್ದೇವೆ, ನಿಜ. ಆದರೆ ಸೋಲೇ ಕೊನೆಯಲ್ಲ. ಹೋರಾಟದ ಹಾದಿಯಲ್ಲಿ ನಾವೆಲ್ಲರೂ ಸ್ಥೈರ್ಯ, ಅರ್ಪಣಾಭಾವದಿಂದ ಹೆಜ್ಜೆ ಹಾಕಲೇಬೇಕು. ನಾನೂ ಸೇರಿ ಪ್ರತಿಯೊಬ್ಬರೂ ಪಕ್ಷದ ಕಟ್ಟಾಳುಗಳೇ ಎನ್ನವುದನ್ನು ಯಾರೂ ಮರೆಯುವಂತಿಲ್ಲ. ಪಕ್ಷದ ಉಳಿವು, ಗೆಲುವಿಗಾಗಿ ಅವಿರತವಾಗಿ ಶ್ರಮಿಸೋಣ. ತಪ್ಪದೇ ಸಭೆಗೆ ಬನ್ನಿ, ಮುಕ್ತವಾಗಿ ಮಾತನಾಡೋಣ. ಮುಂದಿನ ಹೆಜ್ಜೆಗಳನ್ನು ದೃಢವಾಗಿ ಇಡೋಣ ಎಂದು ನುಡಿದಿದ್ದರು.

ಇದನ್ನೂ ಓದಿ:ವೀರಪ್ಪ ಮೊಯ್ಲಿ ದೇವೇಗೌಡರ ಕುಟುಂಬದ ಬಗ್ಗೆ ಸುಳ್ಳು ಹೇಳುವುದನ್ನು ಬಿಡಲಿ : ಹೆಚ್​ಡಿಕೆ

ABOUT THE AUTHOR

...view details