ಚಿಕ್ಕೋಡಿ/ಬೆಳಗಾವಿ: ನವೆಂಬರ್ 1ರ ಕನ್ನಡ ರಾಜ್ಯೋತ್ಸವ ದಿನದ ಒಳಗಾಗಿ ಚಿಕ್ಕೋಡಿಯನ್ನು ಜಿಲ್ಲೆಯಾಗಿ ಘೋಷಣೆ ಮಾಡಬೇಕು. ಇಲ್ಲವಾದರೆ ಉಗ್ರ ಹೋರಾಟ ಮಾಡಲಾಗುವುದು ಎಂದು ಚಿಕ್ಕೋಡಿ ಜಿಲ್ಲಾ ಹೋರಾಟ ಸಮಿತಿ ಅಧ್ಯಕ್ಷ ಬಿ.ಆರ್.ಸಂಗಪ್ಪಗೋಳ ಸರ್ಕಾರಕ್ಕೆ ಎಚ್ಚರಿಕೆ ನೀಡಿದ್ದಾರೆ.
ನ. 1ರೊಳಗೆ ಚಿಕ್ಕೋಡಿಯನ್ನು ಜಿಲ್ಲೆಯಾಗಿ ಘೋಷಣೆ ಮಾಡುವಂತೆ ಒತ್ತಾಯ - ಚಿಕ್ಕೋಡಿ ಜಿಲ್ಲಾ ಹೋರಾಟ ಸಮಿತಿ
ನವೆಂಬರ್ 1ರ ಒಳಗಾಗಿ ಚಿಕ್ಕೋಡಿಯನ್ನು ಜಿಲ್ಲೆಯಾಗಿ ಘೋಷಣೆ ಮಾಡದಿದ್ದರೆ ಉಗ್ರ ಹೋರಾಟ ಮಾಡುವುದಾಗಿ ಚಿಕ್ಕೋಡಿ ಜಿಲ್ಲಾ ಹೋರಾಟ ಸಮಿತಿ ಎಚ್ಚರಿಕೆ ನೀಡಿದೆ.
ಚಿಕ್ಕೋಡಿ ಪ್ರವಾಸಿ ಮಂದಿರದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಚಿಕ್ಕೋಡಿಯನ್ನು ಜಿಲ್ಲೆಯನ್ನಾಗಿ ಘೋಷಣೆ ಮಾಡದಿದ್ದರೆ ಚಿಕ್ಕೋಡಿ ಶೈಕ್ಷಣಿಕ ಜಿಲ್ಲೆಗೆ ಬರುವಂತ ಪ್ರತಿ ಪಂಚಾಯ್ತಿ ಹಾಗೂ ಗ್ರಾಮದ ಜನ ಸೇರಿ ಪಾದಯಾತ್ರೆ ಮಾಡಿ ಸರ್ಕಾರಕ್ಕೆ ಎಚ್ಚರಿಕೆ ನೀಡಲಿದ್ದೇವೆ ಎಂದರು. ಸಾರ್ವಜನಿಕರ ಹಿತದೃಷ್ಟಿಯಿಂದ ಜಿಲ್ಲೆ ಮಾಡಲು ಮುಂದಾಗಿ ಎಂದು ಆಗ್ರಹಿಸಿದರು.
ಒಂದು ವೇಳೆ ಜಿಲ್ಲೆ ಮಾಡದೆ ಇದ್ದರೆ ಉತ್ತರ ಕರ್ನಾಟಕವನ್ನು ಪ್ರತ್ಯೇಕ ರಾಜ್ಯ ಮಾಡಬೇಕಾಗುತ್ತದೆ. ತೆಲಂಗಾಣ ರಾಜ್ಯದ ಮಾದರಿಯಲ್ಲಿ ಕರ್ನಾಟಕದಲ್ಲೂ ಹೋರಾಟ ಮಾಡಲಾಗುವುದು ಎಂದು ಚಿಕ್ಕೋಡಿ ಜಿಲ್ಲಾ ಹೋರಾಟ ಸಮಿತಿ ಅಧ್ಯಕ್ಷ ಬಿ.ಆರ್.ಸಂಗಪ್ಪಗೋಳ ನೇರವಾಗಿ ಸರ್ಕಾರಕ್ಕೆ ಎಚ್ಚರಿಕೆ ನೀಡಿದ್ರು.