ಬೆಳಗಾವಿ: ಮಾದರಿ ಕೈಗಾರಿಕಾ ನೀತಿ ಜಾರಿಗೆ ತರಲು ಸಿದ್ಧತೆ ನಡೆದಿದ್ದು, ಉತ್ತರ ಕರ್ನಾಟಕ ಭಾಗದಲ್ಲಿ ಹೆಚ್ಚಿನ ಪ್ರಮಾಣದಲ್ಲಿ ಕೈಗಾರಿಕೆ ಸ್ಥಾಪನೆ ಮತ್ತು ಬೆಳವಣಿಗೆಗೆ ಆದ್ಯತೆ ನೀಡಲಾಗುತ್ತಿದೆ ಎಂದು ಬೃಹತ್ ಹಾಗೂ ಮಧ್ಯಮ ಕೈಗಾರಿಕಾ ಸಚಿವ ಜಗದೀಶ್ ಶೆಟ್ಟರ್ ತಿಳಿಸಿದರು.
ನಗರದ ವಾಣಿಜ್ಯೋದ್ಯಮ ಮತ್ತು ಕೈಗಾರಿಕಾ ಸಂಸ್ಥೆ (ಬಿಸಿಸಿಐ) ಸಭಾಂಗಣದಲ್ಲಿ ನಡೆದ ವಾಣಿಜ್ಯೋದ್ಯಮಿಗಳ ಸಭೆಯಲ್ಲಿ ಮಾತನಾಡಿದ ಶೆಟ್ಟರ್, ಉದ್ಯಮ್ಬಾಗ್ ಅತ್ಯಂತ ಹಳೆಯ ಕೈಗಾರಿಕಾ ಪ್ರದೇಶವಾಗಿದೆ. ಇಲ್ಲಿನ ಪರಿಸ್ಥಿತಿಯನ್ನು ಅವಲೋಕಿಸಿದಾಗ ತಕ್ಷಣವೇ ರಸ್ತೆ ಸೇರಿದಂತೆ ಎಲ್ಲ ಬಗೆಯ ಮೂಲ ಸೌಕರ್ಯಗಳನ್ನು ಒದಗಿಸುವ ತುರ್ತು ಅಗತ್ಯವಿರುವುದು ಕಂಡುಬಂದಿದೆ. ಕೈಗಾರಿಕೋದ್ಯಮಿಗಳು ಕೂಡ ಸ್ಥಳೀಯ ತೆರಿಗೆ ನೀಡುವುದರಿಂದ ಮಹಾನಗರ ಪಾಲಿಕೆ ವತಿಯಿಂದ ಕೂಡ ಸುಧಾರಣಾ ಕಾಮಗಾರಿಗಳನ್ನು ಕೈಗೆತ್ತಿಕೊಳ್ಳುವಂತೆ ಪಾಲಿಕೆ ಆಯುಕ್ತರಿಗೆ ಸೂಚಿಸಿದರು.