ಬೆಳಗಾವಿ:ರಾಜ್ಯ ರಾಜ್ಯೋತ್ಸವ ಸಂಭ್ರಮದಲ್ಲಿರುವಾಗ ಮಹಾರಾಷ್ಟ್ರ ಸರ್ಕಾರದ ಸಚಿವರು ಬ್ಲ್ಯಾಕ್ ಡೇ ಆಚರಿಸುತ್ತಿದ್ದು, ಇದನ್ನು ಗಂಭೀರವಾಗಿ ಪರಿಗಣಿಸುವಂತೆ ಬೆಳಗಾವಿಯ ಕನ್ನಡ ಸಂಘಟನೆಗಳ ಕ್ರಿಯಾ ಸಮಿತಿ ಅಧ್ಯಕ್ಷ ಅಶೋಕ ಚಂದರಗಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ರಮೇಶ್ ಜಾರಕಿಹೊಳಿಗೆ ಪತ್ರ ಬರೆದಿದ್ದಾರೆ.
ಕರ್ನಾಟಕ ಇದೇ ನವೆಂಬರ್ 1 ರಂದು ರಾಜೋತ್ಸವವನ್ನು ಆಚರಿಸುತ್ತಿರುವ ಸಂದರ್ಭದಲ್ಲಿ ನೆರೆಯ ಮಹಾರಾಷ್ಟ್ರ ಸರ್ಕಾರವು ಕರಾಳ ದಿನವನ್ನು ಆಚರಿಸುವ ನಿರ್ಧಾರ ಕೈಗೊಂಡಿರುವುದು ಅತ್ಯಂತ ಗಂಭೀರ ವಿಷಯವಾಗಿದೆ. ಒಕ್ಕೂಟ ವ್ಯವಸ್ಥೆಯ ವಿರೋಧಿ ಕ್ರಮವಾಗಿದೆ. ಉಭಯ ರಾಜ್ಯಗಳ ನಡುವಣ ಗಡಿ ವಿವಾದವು 2004ರಿಂದಲೂ ಸುಪ್ರೀಂಕೋರ್ಟ್ ನ್ಯಾಯಾಲಯದ ಮುಂದಿದೆ. ಆದರೂ ನವೆಂಬರ್ 1ರಂದು ಮಹಾರಾಷ್ಟ್ರ ಸರ್ಕಾರದ ಇಡೀ ಮಂತ್ರಿ ಮಂಡಳದ ಸಚಿವರು ಕೈಗೆ ಕಪ್ಪು ಪಟ್ಟಿ ಧರಿಸಿಯೇ ಕಾರ್ಯ ನಿರ್ವಹಿಸುವ ನಿರ್ಧಾರ ಕೈಗೊಂಡಿರುವುದು ಸರ್ವೋನ್ನತ ನ್ಯಾಯಾಲಯದ ನಿಂದನೆಯಾಗಿದೆ.