ಅಥಣಿ (ಬೆಳಗಾವಿ):ಮಹಾರಾಷ್ಟ್ರದ ಪಶ್ಚಿಮ ಘಟ್ಟದಲ್ಲಿ ಹಾಗೂ ಅಥಣಿ ತಾಲೂಕಿನಲ್ಲಿ ಕಳೆದ ನಾಲ್ಕು ದಿನದಿಂದ ಮಳೆ ಕಡಿಮೆಯಾಗಿದ್ದರಿಂದ ನದಿ ತೀರದಲ್ಲಿ ಪ್ರವಾಹ ಕಡಿಮೆಯಾಗಿದ್ದು, ನದಿ ದಂಡೆಯ ಗ್ರಾಮದ ಜನರು ಪ್ರವಾಹದಿಂದ ನಿರಾಳರಾಗಿದ್ದಾರೆ. ಮತ್ತೊಂದೆಡೆ ಗ್ರಾಮಗಳಲ್ಲಿ ಸೊಳ್ಳೆಗಳು ಹೆಚ್ಚಾಗಿದ್ದರಿಂದ ಗ್ರಾಮಸ್ಥರಲ್ಲಿ ಮಲೇರಿಯಾ, ಡೆಂಗ್ಯೂ ರೋಗದ ಆತಂಕ ಹೆಚ್ಚಾಗಿದೆ.
ಕೃಷ್ಣಾ ನದಿ ಪ್ರವಾಹ ಇಳಿಮುಖ: ಸಾಂಕ್ರಾಮಿಕ ರೋಗದ ಭೀತಿಯಲ್ಲಿ ಗ್ರಾಮಸ್ಥರು - belgum news
ಬೆಳಗಾವಿ ಜಿಲ್ಲೆಯ ಅಥಣಿ ತಾಲೂಕಿನಲ್ಲಿ ಕೃಷ್ಣಾ ನದಿ ಪ್ರವಾಹ ಇಳಿಮುಖವಾಗಿದೆ. ಆದರೆ ನದಿ ತೀರದ ಗ್ರಾಮಸ್ಥರಲ್ಲಿ ಸಾಂಕ್ರಾಮಿಕ ರೋಗ ಹರಡುವ ಭೀತಿ ಎದುರಾಗಿದೆ.
![ಕೃಷ್ಣಾ ನದಿ ಪ್ರವಾಹ ಇಳಿಮುಖ: ಸಾಂಕ್ರಾಮಿಕ ರೋಗದ ಭೀತಿಯಲ್ಲಿ ಗ್ರಾಮಸ್ಥರು ಕೃಷ್ಣಾ ನದಿ ಪ್ರವಾಹ ಇಳಿಮುಖ](https://etvbharatimages.akamaized.net/etvbharat/prod-images/768-512-8565431-985-8565431-1598440621954.jpg)
ಅಥಣಿ ತಾಲೂಕಿನ ನದಿ ತೀರದ ಗ್ರಾಮಗಳಾದ ಝುಂಜರವಾಡ, ಶಿರಹಟ್ಟಿ, ಸವದಿ, ನದಿ ಇಂಗಳಗಾಂವ, ಜನವಾಡ, ಸಪ್ತಸಾಗರ, ದರೂರ, ಹಲ್ಯಾಳ, ಮಹಿಷವಾಡಗಿ, ಅವರಕೊಡ, ಖವಟಗೊಪ್ಪ ಇತರೆ ನದಿ ತೀರದ ಗ್ರಾಮಗಳಲ್ಲಿ ಸೊಳ್ಳೆಗಳು ಹೆಚ್ಚಾಗಿದ್ದು, ಇವುಗಳ ಕಾಟದಿಂದ ಪಾರಾಗಲು ಹಗಲು ರಾತ್ರಿ ಪರದಾಡುವಂತಾಗಿದೆ.
ಕೆಲವು ನದಿ ತೀರದ ಗ್ರಾಮ ಪಂಚಾಯಿತಿ ಅಧಿಕಾರಿಗಳು ಗ್ರಾಮದಲ್ಲಿನ ಸೊಳ್ಳೆಗಳ ನಿಯಂತ್ರಣಕ್ಕೆ ಮುಂದಾಗುತ್ತಿಲ್ಲ. ಗ್ರಾಮದ ಓಣಿಗಳಲ್ಲಿ ಕೀಟ ನಿವಾರಣೆಗೆ ಔಷಧ ಸಿಂಪಡಣೆ ಮಾಡುತ್ತಿಲ್ಲ ಎಂದು ಗ್ರಾಮಸ್ಥರು ಆರೋಪಿಸಿದ್ದಾರೆ. ಕೊರೊನಾ ಆತಂಕದ ನಡುವೆ ನಮಗೆ ಈ ಸೊಳ್ಳೆಗಳಿಂದ ಸಾಂಕ್ರಾಮಿಕ ರೋಗ ಹರಡುವ ಭೀತಿ ಎದುರಾಗಿದೆ ಎಂದು ಝುಂಜರವಾಡ ಗ್ರಾಮಸ್ಥರು ತಾಲೂಕು ಆಡಳಿತ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ.