ಕರ್ನಾಟಕ

karnataka

ETV Bharat / state

ಸರ್ಕಾರದ ಯೋಜನೆಗಳನ್ನು ಸಮರ್ಪಕವಾಗಿ ಅನುಷ್ಠಾನಗೊಳಿಸಬೇಕು: ಸಚಿವ ಸತೀಶ್ ಜಾರಕಿಹೊಳಿ

ಮೊದಲನೆಯ ತ್ರೈಮಾಸಿಕ ಕರ್ನಾಟಕ ಅಭಿವೃದ್ಧಿ ಕಾರ್ಯಕ್ರಮಗಳ ಪ್ರಗತಿ ಪರಿಶೀಲನಾ ಸಭೆಯಲ್ಲಿ ಅಧಿಕಾರಿಗಳಿಗೆ ಯೋಜನೆಗಳನ್ನು ಸಮರ್ಪಕವಾಗಿ ಅನುಷ್ಠಾನಗೊಳಿಸಲು ಸಚಿವ ಸತೀಶ್ ಜಾರಕಿಹೊಳಿ ಸೂಚನೆ ಕೊಟ್ಟಿದ್ದಾರೆ.

By

Published : Jul 24, 2023, 7:47 PM IST

ಸಚಿವ ಸತೀಶ್ ಜಾರಕಿಹೊಳಿ
ಸಚಿವ ಸತೀಶ್ ಜಾರಕಿಹೊಳಿ

ಬೆಳಗಾವಿ : ಜಿಲ್ಲೆಯಲ್ಲಿ ಮಳೆಯಾಗುತ್ತಿದ್ದರೂ ಕೆಲವೆಡೆ ಬರದ ಛಾಯೆ ಇದೆ. ಆದ್ದರಿಂದ ಅವಶ್ಯಕತೆ ಆಧರಿಸಿ ಕಾಳಜಿ ಕೇಂದ್ರಗಳು, ಮೇವಿನ ಕೊರತೆ ಇರುವ ಕಡೆಗಳಲ್ಲಿ ಗೋಶಾಲೆ ಆರಂಭಿಸಬೇಕು. ಅನ್ನಭಾಗ್ಯ, ಗೃಹಲಕ್ಷ್ಮಿ ಯೋಜನೆ ಸೇರಿದಂತೆ ಸರ್ಕಾರದ ಯೋಜನೆಗಳನ್ನು ಸಮರ್ಪಕವಾಗಿ ಅನುಷ್ಠಾನಗೊಳಿಸಬೇಕು ಎಂದು ಜಿಲ್ಲಾ ಉಸ್ತುವಾರಿ ಸಚಿವ ಸತೀಶ್ ಜಾರಕಿಹೊಳಿ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.

ಕರ್ನಾಟಕ ಅಭಿವೃದ್ಧಿ ಕಾರ್ಯಕ್ರಮಗಳ ಪ್ರಗತಿ ಪರಿಶೀಲನಾ ಸಭೆ

ಸುವರ್ಣ ವಿಧಾನಸೌಧದ ಕಾನ್ಫರೆನ್ಸ್ ಸಭಾಂಗಣದಲ್ಲಿ ಸೋಮವಾರ 2023-24 ನೇ ಸಾಲಿನ ಮೊದಲನೇಯ ತ್ರೈಮಾಸಿಕ ಕರ್ನಾಟಕ ಅಭಿವೃದ್ಧಿ ಕಾರ್ಯಕ್ರಮಗಳ ಪ್ರಗತಿ ಪರಿಶೀಲನಾ ಸಭೆ ನಡೆಯಿತು. ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಸಚಿವರು, ನರೇಗಾ ಯೋಜನೆಯಡಿ ಹೊಲಗಳಿಗೆ ಹೋಗುವ ರಸ್ತೆಗಳನ್ನು ನಿರ್ಮಿಸಿಕೊಡಲು ಕ್ರಿಯಾ ಯೋಜನೆಯಲ್ಲಿ ಅಳವಡಿಸಿಕೊಳ್ಳಬೇಕು. 2019-20 ನೇ ಸಾಲಿನಲ್ಲಿ ಪ್ರವಾಹ/ಅತಿವೃಷ್ಟಿಯಿಂದ ಮನೆ ಕಳೆದುಕೊಂಡಿರುವವರಿಗೆ ಪರಿಹಾರ ಒದಗಿಸಲು ಅನುಕೂಲವಾಗುವಂತೆ ಕೂಡಲೇ ಮರು ಸಮೀಕ್ಷೆ ಮಾಡಿ ರಾಜೀವ್ ಗಾಂಧಿ ವಸತಿ ನಿಗಮಕ್ಕೆ ಕಳುಹಿಸಬೇಕು ಎಂದು ಹೇಳಿದರು.

ಸಭೆಯಲ್ಲಿ ಮಾತನಾಡಿದ ಶಾಸಕ ರಾಜು ಕಾಗೆ, ಕಾಗವಾಡ ಕ್ಷೇತ್ರದ ವ್ಯಾಪ್ತಿಯಲ್ಲಿ ಕೆಲವೆಡೆ ಐದು ವರ್ಷಗಳ ಹಿಂದೆ ಪ್ರವಾಹದಲ್ಲಿ ಮನೆಗಳನ್ನು ಕಳೆದುಕೊಂಡಿರುವವರಿಗೆ ಇದುವರೆಗೆ ಪರಿಹಾರ ದೊರಕಿರುವುದಿಲ್ಲ. ಶಾಪುರದಲ್ಲಿ 90 ಮನೆಗಳ ಕೆಟಗರಿ ವರ್ಗೀಕರಣ ಅಸಮರ್ಪಕವಾಗಿ ಮಾಡಲಾಗಿದ್ದು, ಇದರಿಂದ ಸಾರ್ವಜನಿಕರು ಅಸಮಾಧಾನ ವ್ಯಕ್ತಪಡಿಸುತ್ತಿದ್ದಾರೆ. ಇದನ್ನು ಸರಿಪಡಿಸಬೇಕು. ಅಲ್ಲದೇ ದ್ರಾಕ್ಷಿ ಬೆಳೆಗಾರರ ಸಮಸ್ಯೆಯನ್ನು ಬಗೆಹರಿಸಿ, ಮೇವಿನ ಕೊರತೆಯನ್ನು ನೀಗಿಸಬೇಕು. ಜಿಲ್ಲೆಯಲ್ಲಿ ಒಂದೆಡೆ ಬರಗಾಲ ಪರಿಸ್ಥಿತಿ ಇದ್ದರೆ, ಇನ್ನೊಂದೆಡೆ ಮಳೆ ಜಾಸ್ತಿಯಿದೆ ಎಂದು ಕಳವಳ ವ್ಯಕ್ತಪಡಿಸಿದರು.

ಈ ವೇಳೆ, ಮಾತನಾಡಿದ ಸತೀಶ ಜಾರಕಿಹೊಳಿ, ಅಥಣಿ ಭಾಗದಲ್ಲಿ ದ್ರಾಕ್ಷಿ ಬೆಳೆಗಾರರ ಸಭೆಯನ್ನು ನಡೆಸಿ ವಿಮಾ ಯೋಜನೆ ಸೇರಿದಂತೆ ಅಗತ್ಯವಿರುವ ಮಾಹಿತಿಯನ್ನು ನೀಡಬೇಕು. ಜಿಲ್ಲೆಯ ಕೆಲವೆಡೆ ಬರಗಾಲ ಪರಿಸ್ಥಿತಿ ಇರುವ ಬಗ್ಗೆ ಶಾಸಕರು ಗಮನ ಸೆಳೆದಾಗ ಮೇವಿನ ಕೊರತೆ ಇದ್ದಲ್ಲಿ ಅಗತ್ಯತೆ ಆಧರಿಸಿ ಗೋಶಾಲೆಗಳನ್ನು ಅಧಿಕಾರಿಗಳು ಆರಂಭಿಸಬೇಕು. ಜಿಲ್ಲಾಧಿಕಾರಿ ಹಾಗೂ ಜಿಪಂ ಸಿಇಒ ಅವರು ಖುದ್ದಾಗಿ ಪರಿಶೀಲಿಸಿ ಕ್ರಮವನ್ನು ತೆಗೆದುಕೊಳ್ಳಬೇಕು ಎಂದು ಸೂಚನೆ ನೀಡಿದರು.

ಪಿಡಿಒಗಳ ವಿರುದ್ಧ ಕ್ರಮ : ಸಭೆಯಲ್ಲಿ ಪಿಡಿಒಗಳ ವಿರುದ್ಧ ಹರಿಹಾಯ್ದ ರಾಜು ಕಾಗೆ, ಪಿಡಿಒಗಳು ಎಂದರೆ ಸಾಮಾನ್ಯರಲ್ಲ. ಅವರು ಯಾರ ನಿಯಂತ್ರಣದಲ್ಲೂ ಇಲ್ಲ. ಕೆಲಸಕ್ಕೆ ಮಧ್ಯಾಹ್ನ 2 ಗಂಟೆಗೆ ಬರುತ್ತಾರೆ. ಇನ್ನು ಮಹಿಳಾ ಪಿಡಿಒಗಳ ಜೊತೆಗೆ ವಾದ ಮಾಡಲು ನಮ್ಮಿಂದ ಆಗುತ್ತಿಲ್ಲ‌.‌ ಏನಾದರು ವಾದ ಮಾಡಿದರೆ ಮಹಿಳಾ ಅಧಿಕಾರಿ ಮೇಲೆ ಶಾಸಕರ ದರ್ಬಾರ್ ಎಂದು ಮಾಧ್ಯಮಗಳಲ್ಲಿ ಸುದ್ದಿ ಬರುತ್ತದೆ. ಹಾಗಾಗಿ ಪಿಡಿಒಗಳನ್ನು ಸುಧಾರಿಸುವ ಕೆಲಸ ಮಾಡಬೇಕು ಎಂದು ಒತ್ತಾಯಿಸಿದರು. ಈ ವೇಳೆ, ಅಂತಹ ಪಿಡಿಒಗಳ ವಿರುದ್ಧ ಕ್ರಮ ಕೈಗೊಳ್ಳುವಂತೆ ಸತೀಶ ಜಾರಕಿಹೊಳಿ ಜಿ.ಪಂ.‌ ಸಿಇಒ ಅವರಿಗೆ ಸೂಚಿಸಿದರು.

ರಸ್ತೆ ಅಗೆತ; ನಿಗಾ ವಹಿಸಲು ನಿರ್ದೇಶನ :ರಸ್ತೆ ದುರಸ್ತಿಗೆ ಈಗಾಗಲೇ ಅನುದಾನ ಬಿಡುಗಡೆ ಮಾಡಲಾಗಿರುತ್ತದೆ. ಕೇಬಲ್ ಅಳವಡಿಸಲು ಕೆಲವೆಡೆ ರಸ್ತೆ ಅಗೆಯಲಾಗುತ್ತಿದ್ದು, ಇದನ್ನು ತಡೆಗಟ್ಟಲು ಕ್ರಮ ಕೈಗೊಳ್ಳಬೇಕು.‌ ಅನುಮತಿ ಇಲ್ಲದೇ ರಸ್ತೆ ಅಗೆಯುವುದನ್ನು ಕಟ್ಟುನಿಟ್ಟಾಗಿ ತಡೆಗಟ್ಟಬೇಕು. ನಿಯಮಾವಳಿ ಪ್ರಕಾರ ದುಡ್ಡು ಪಾವತಿಸಿ ಅನುಮತಿ ಪಡೆಯಬೇಕು. ಇಲ್ಲದಿದ್ದರೆ ಅಂತಹ ಕಾಮಗಾರಿಗಳನ್ನು ತಡೆಹಿಡಿಯಬೇಕು ಎಂದರು.

ಇಸ್ಲಾಂಪುರ ಸೇರಿದಂತೆ ವಿವಿಧ ಗ್ರಾಮ ಪಂಚಾಯಿತಿಗಳಲ್ಲಿ ನಡೆದಿರುವ ಅವ್ಯವಹಾರಗಳ ಕುರಿತು ಕೂಡಲೇ ಪ್ರಕರಣಗಳನ್ನು ದಾಖಲಿಸಿ ಅವರ ವಿರುದ್ಧ ಕಟ್ಟುನಿಟ್ಟಿನ ಕ್ರಮಗಳನ್ನು ತೆಗೆದುಕೊಳ್ಳಬೇಕು. ಹಾಗೂ ಅನ್ನಭಾಗ್ಯ ಯೋಜನೆಯಡಿ ಎಲ್ಲ ಅರ್ಹ ಫಲಾನುಭವಿಗಳಿಗೆ ನಗದು ಜಮೆ ಮಾಡಬೇಕು ಎಂದು ಜಿಲ್ಲಾ ಪಂಚಾಯತ್​​ ಅಧಿಕಾರಿಗಳಿಗೆ ಸತೀಶ್​ ಜಾರಕಿಹೊಳಿ ತಿಳಿಸಿದರು.

ನೂತನ ಜಿಲ್ಲಾಧಿಕಾರಿ ಕಚೇರಿ ಸಂಕೀರ್ಣ :ಸದ್ಯಕ್ಕೆ ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿ ಲಭ್ಯವಿರುವ ಒಟ್ಟಾರೆ 9 ಎಕರೆ ಜಾಗದಲ್ಲಿ ಎರಡು ಎಕರೆ ಜಾಗ ಬಳಸಿಕೊಂಡು ಜಿಲ್ಲಾಧಿಕಾರಿ ಕಚೇರಿ ನಿರ್ಮಿಸಲು ಉದ್ದೇಶಿಸಲಾಗಿದೆ. ಉಳಿದ ಜಾಗದಲ್ಲಿ ಪಾರ್ಕಿಂಗ್, ಉದ್ಯಾನ ಮತ್ತಿತರ ಮೂಲಸೌಕರ್ಯ ಒದಗಿಸಲಾಗುವುದು. ಈ ಯೋಜನೆ ಕುರಿತು ಜನಪ್ರತಿನಿಧಿಗಳು ಮತ್ತು ಸಂಬಂಧಿಸಿದ ಇಲಾಖೆ ಅಧಿಕಾರಿಗಳು ತಮ್ಮ ಅಭಿಪ್ರಾಯ ಹಾಗೂ ಸಲಹೆಗಳನ್ನು ನೀಡಬೇಕು ಎಂದು ಸಚಿವರು ತಿಳಿಸಿದರು.

ವಿಕಲಚೇತನರಿಗೆ ವಾಹನ; ಸಚಿವೆ ಹೆಬ್ಬಾಳಕರ್ :ರಾಜ್ಯದಲ್ಲಿರುವ ಎಲ್ಲ ವಿಕಲಚೇತನರಿಗೆ ಅವರ ಅಗತ್ಯತೆ ಆಧರಿಸಿ ಒಂದು ಬಾರಿಗೆ ದ್ವಿಚಕ್ರ ವಾಹನ ನೀಡಲು ತೀರ್ಮಾನಿಸಲಾಗಿದೆ. ಆದ್ದರಿಂದ ಅರ್ಹ ವ್ಯಕ್ತಿಗಳ ಮಾಹಿತಿ ಸಂಗ್ರಹಿಸಬೇಕು. ಹೆಸ್ಕಾಂ ನಿರ್ಲಕ್ಷ್ಯದಿಂದ ವಿದ್ಯುತ್ ತಂತಿ ತಗುಲಿ ಮರಣ ಹೊಂದಿರುವವರಿಗೆ ಕೂಡಲೇ ಪರಿಹಾರ ಒದಗಿಸಲು ಕ್ರಮ ಕೈಗೊಳ್ಳಬೇಕು ಎಂದು ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಹೇಳಿದರು.

ಗೃಹಲಕ್ಷ್ಮಿ ಯೋಜನೆ ಫಲಾನುಭವಿಗಳ ನೋಂದಣಿಗೆ ಸೂಚನೆ :ಗೃಹಲಕ್ಷ್ಮೀ ಯೋಜನೆಗೆ 17 ಸಾವಿರ ಕೋಟಿ ರೂಪಾಯಿ ಅನುದಾನ ಒದಗಿಸಲಾಗಿದೆ. ಜುಲೈ 20 ರಿಂದ ಗೃಹಲಕ್ಷ್ಮಿ ಯೋಜನೆಯ ಫಲಾನುಭವಿಗಳ ನೋಂದಣಿ ಪ್ರಕ್ರಿಯೆ ಆರಂಭವಾಗಿದೆ. ನೋಂದಣಿ ಪ್ರಕ್ರಿಯೆ ಹಾಗೂ ನೋಂದಾಯಿತ ಫಲಾನುಭವಿಗಳ ಸಂಖ್ಯೆ ಮತ್ತಿತರ ವಿಷಯಗಳನ್ನು ಸ್ಥಳೀಯ ಶಾಸಕರ ಗಮನಕ್ಕೆ ತರಬೇಕು ಎಂದು ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್​ ಅವರು ತಹಶೀಲ್ದಾರರಿಗೆ ಸೂಚನೆ ನೀಡಿದರು.

ಇದೇ ವೇಳೆ, ಮಾತನಾಡಿದ ಶಾಸಕ ಮಹಾಂತೇಶ ಕೌಜಲಗಿ, ನರೇಗಾ ಯೋಜನೆಯಡಿ ಹೊಲಗಳಿಗೆ ಹೋಗುವ ರಸ್ತೆಗಳನ್ನು ನಿರ್ಮಿಸಿಕೊಡಬೇಕು. ಜಲ ಜೀವನ ಮಿಷನ್ ಪೂರ್ಣಗೊಂಡಿರುವ ಕಾಮಗಾರಿಗಳನ್ನು ಕೂಡಲೇ ಹಸ್ತಾಂತರಿಸಬೇಕು.‌ ಧಾರವಾಡ ಜಿಲ್ಲೆಗೆ ಹೋಲಿಸಿದರೆ ಪಕ್ಕದಲ್ಲೇ ಇರುವ ಬೆಳಗಾವಿ ಜಿಲ್ಲೆಯ ರೈತರಿಗೆ ಆಗಿರುವ ಬೆಳೆ ವಿಮೆ ಪರಿಹಾರದಲ್ಲಿನ ತಾರತಮ್ಯವನ್ನು ಇದುವರೆಗೆ ಸರಿಪಡಿಸುತ್ತಿಲ್ಲ. ಹಾಗೂ ತಾಲೂಕು ಆಸ್ಪತ್ರೆಯಲ್ಲಿ ಹಾಗೂ ಸಮುದಾಯ ಆರೋಗ್ಯ ಕೇಂದ್ರಗಳಲ್ಲಿ ದಾಸ್ತಾನು ಇದ್ದಾಗಲೂ ಬೇಡಿಕೆ ಸಲ್ಲಿಸಿದರೆ ಸಕಾಲದಲ್ಲಿ ಔಷಧ ಸಾಮಗ್ರಿ ಪೂರೈಸುತ್ತಿಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದರು.

ಶಾಸಕ ಆಸಿಫ್ ಸೇಠ್ ಮಾತನಾಡಿ, ಬೆಳಗಾವಿ ನಗರದಲ್ಲಿ ಇರುವ ಸರಕಾರಿ ಆಸ್ಪತ್ರೆಯಲ್ಲಿ ಶೇ.60 ರಷ್ಟು ನರ್ಸಿಂಗ್ ಸಿಬ್ಬಂದಿ ಕೊರತೆ ಇದೆ. ವಿಧಾನ ಪರಿಷತ್ ಸದಸ್ಯರಾದ ಪ್ರಕಾಶ್ ಹುಕ್ಕೇರಿ, ನರೇಗಾ ಯೋಜನೆಯಡಿ ಈ ವರ್ಷ ಅಂಬೇಡ್ಕರ್ ಭವನಗಳ ದುರಸ್ತಿ ಹಾಗೂ ಕಾಂಪೌಂಡ್ ನಿರ್ಮಾಣ ಕಾಮಗಾರಿ ಕೈಗೆತ್ತಿಕೊಳ್ಳಬೇಕು. 2019-20 ನೇ ಸಾಲಿನಲ್ಲಿ ಪ್ರವಾಹ/ಅತಿವೃಷ್ಟಿ ಯಿಂದ ಮನೆ ಕಳೆದುಕೊಂಡಿರುವವರಿಗೆ ಪರಿಹಾರ ಒದಗಿಸಲು ಅನುಕೂಲವಾಗುವಂತೆ ಕೆಟಗರಿಗಳ ಪ್ರಕಾರ ಮರು ಸಮೀಕ್ಷೆಗೆ ಆದೇಶ ಮಾಡಲಾಗಿದೆ. ಆ ಆದೇಶದ ಪ್ರಕಾರ ಕೂಡಲೇ ಮರು ಸಮೀಕ್ಷೆ ಮಾಡಿ ರಾಜೀವ್ ಗಾಂಧಿ ವಸತಿ ನಿಗಮಕ್ಕೆ ಕಳುಹಿಸಬೇಕು ಎಂದರು.

ಶೇ.11ರಷ್ಟು ಮಳೆ ಕೊರತೆ :ಜೂನ್​ನಲ್ಲಿ ಶೇ.68 ರಷ್ಟು ಕಡಿಮೆ ಮಳೆಯಾಗಿದ್ದು, ಜುಲೈ ತಿಂಗಳಿನಲ್ಲಿ ಶೇ.47ರಷ್ಟು ಹೆಚ್ಚಿನ ಮಳೆಯಾಗಿದೆ. ಎರಡೂ ತಿಂಗಳ ವಾಡಿಕೆಗಿಂತ ಶೇ.11 ರಷ್ಟು ಕಡಿಮೆ ಮಳೆಯಾಗಿದೆ. ಅಲ್ಲದೇ 2.40 ಲಕ್ಷ ಕ್ಯೂಸೆಕ್ ನೀರು ಒಳಹರಿವು ಇದ್ದಾಗ ಪ್ರವಾಹ ಸಾಧ್ಯತೆ ಇರುತ್ತದೆ. ಸದ್ಯಕ್ಕೆ 1.14 ಲಕ್ಷ ಕ್ಯೂಸೆಕ್ ಒಳಹರಿವು ಇರುವುದರಿಂದ ಯಾವುದೇ ಆತಂಕವಿಲ್ಲ ಎಂದು ಜಿಲ್ಲಾಧಿಕಾರಿ ನಿತೇಶ್ ಪಾಟೀಲ ತಿಳಿಸಿದರು.

ಸಭೆಯಲ್ಲಿ ಶಾಸಕರಾದ ದುರ್ಯೋಧನ ಐಹೊಳೆ, ಬಾಬಾಸಾಹೇಬ್ ಪಾಟೀಲ, ವಿಠ್ಠಲ ಹಲಗೇಕರ, ಮಹೇಂದ್ರ ತಮ್ಮಣ್ಣವರ, ಶಾಸಕರಾದ ವಿಶ್ವಾಸ ವೈದ್ಯ, ನಿಖಿಲ್ ಕತ್ತಿ, ವಿಧಾನಪರಿಷತ್ ಸದಸ್ಯರಾದ ಚನ್ನರಾಜ್ ಹಟ್ಟಿಹೊಳಿ, ಡಾ.ಸಾಬಣ್ಣ ತಳವಾರ, ಜಿ.ಪಂ. ಸಿಇಓ ಹರ್ಷಲ್ ಭೊಯರ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ. ಸಂಜೀವ ಪಾಟೀಲ, ಡಿಸಿಪಿ ಟಿ. ಶೇಖರ್, ಅಪರ ಜಿಲ್ಲಾಧಿಕಾರಿ ವಿಜಯಕುಮಾರ್ ಹೊನಕೇರಿ, ಜಿಲ್ಲಾ ಪಂಚಾಯತ ಉಪ ಕಾರ್ಯದರ್ಶಿ ಬಸವರಾಜ ಹೆಗ್ಗನಾಯಕ ಸೇರಿ ಎಲ್ಲ ಇಲಾಖೆಗಳ ಜಿಲ್ಲಾಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.

ಇದನ್ನೂ ಓದಿ :ಎಕ್ಸ್​​​​ಪ್ರೆಸ್ ವೇನಲ್ಲಿ ಅಪಘಾತ ಹೆಚ್ಚಳಕ್ಕೆ ಅತಿವೇಗವೇ ಕಾರಣ: ಜಾರಕಿಹೊಳಿ

ABOUT THE AUTHOR

...view details