ಕರ್ನಾಟಕ

karnataka

By

Published : Jun 12, 2023, 7:27 PM IST

ETV Bharat / state

ಕಳಪೆ ಬೀಜ ವಿತರಣೆ ಕಂಡು ಬಂದರೆ ಅಧಿಕಾರಿಗಳೇ ಹೊಣೆ : ಸಚಿವ ಚೆಲುವರಾಯಸ್ವಾಮಿ ಎಚ್ಚರಿಕೆ

ಮುಂಗಾರು ವಿಳಂಬವಾಗಿರುವ ಹಿನ್ನೆಲೆ, ಮುಂದೆ ರೈತರಿಗೆ ಬೇಕಾದ ಬೀಜ - ಗೊಬ್ಬರ ಕೊರತೆಯಾಗದಂತೆ ಅಗತ್ಯ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳುವಂತೆ ಕೃಷಿ ಸಚಿವ ಎನ್.ಚೆಲುವರಾಯಸ್ವಾಮಿ ಅಧಿಕಾರಿಗಳಿಗೆ ಸೂಚಿಸಿದ್ದಾರೆ.

officials-are-responsible-for-poor-seed-distribution-says-minister-chaluvarayaswamy
ಕಳಪೆ ಬೀಜ ವಿತರಣೆ ಕಂಡು ಬಂದರೆ ಅಧಿಕಾರಿಗಳೇ ಹೊಣೆ : ಸಚಿವ ಚಲುವರಾಯಸ್ವಾಮಿ

ಬೆಳಗಾವಿ: ರಾಜ್ಯದಲ್ಲಿ ಮುಂಗಾರು ವಿಳಂಬವಾಗಿದ್ದು, ಬಿತ್ತನೆ ಕೂಡ ತಡವಾಗುತ್ತಿದೆ. ಆದ್ದರಿಂದ ಮಳೆಯಾದ ಕೂಡಲೇ ಎಲ್ಲೆಡೆ ಏಕಕಾಲಕ್ಕೆ ಬಿತ್ತನೆ ಆರಂಭಗೊಳ್ಳಲಿದೆ. ಈ ಸಂದರ್ಭದಲ್ಲಿ ಬೀಜ-ಗೊಬ್ಬರ ಕೊರತೆಯಾಗದಂತೆ ಅಧಿಕಾರಿಗಳು ಅಗತ್ಯ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಬೇಕು. ಕಳಪೆ ಬೀಜ ವಿತರಣೆ ಕಂಡುಬಂದರೆ ಅಧಿಕಾರಿಗಳನ್ನೇ ಹೊಣೆ ಮಾಡಲಾಗುವುದು ಎಂದು ಕೃಷಿ ಸಚಿವ ಎನ್. ಚೆಲುವರಾಯಸ್ವಾಮಿ ಎಚ್ಚರಿಕೆ ನೀಡಿದರು.

ಮುಂಗಾರು ಸಿದ್ಧತೆ ಪರಿಶೀಲನೆಗೆ ಸಂಬಂಧಿಸಿದಂತೆ ಜಿಲ್ಲಾ ಪಂಚಾಯತ್​​ ಸಭಾಂಗಣದಲ್ಲಿ ಇಂದು ನಡೆದ ಅಧಿಕಾರಿಗಳ ವಿಭಾಗಮಟ್ಟದ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದ ಅವರು, ಬಿತ್ತನೆ ಬೀಜ ಮತ್ತು ಗೊಬ್ಬರದ ಬೇಡಿಕೆ, ಪೂರೈಕೆ ಹಾಗೂ ವಿತರಣೆ ಮೇಲೆ ನಿಗಾ ವಹಿಸಬೇಕು. ಮಳೆ ವಿಳಂಬವಾಗಿರುವುದರಿಂದ ರೈತರು ಕೂಡ ಆತಂಕದಲ್ಲಿರುತ್ತಾರೆ. ಆದ್ದರಿಂದ ಬೀಜ-ಗೊಬ್ಬರ ವಿತರಣೆಗೆ ಸಂಬಂಧಿಸಿದಂತೆ ಯಾವುದೇ ದೂರುಗಳು ಬರದಂತೆ ಎಚ್ಚರ ವಹಿಸಬೇಕು. ಬಿತ್ತನೆ ಬೀಜ ಹಾಗೂ ರಸಗೊಬ್ಬರದ ಸಾಕಷ್ಟು ದಾಸ್ತಾನು ಇರುವುದರಿಂದ ಯಾವುದೇ ರೀತಿಯ ಸಮಸ್ಯೆ ಉದ್ಭವಿಸಬಾರದು. ಎಲ್ಲ ಅಧಿಕಾರಿಗಳು ಸಮನ್ವಯತೆ ಹಾಗೂ ಶಿಸ್ತಿನಿಂದ ಕೆಲಸ ಮಾಡಬೇಕು. ಸಮಸ್ಯೆ ಉಂಟಾದರೆ ಸಂಬಂಧಿಸಿದ ಅಧಿಕಾರಿಗಳ ಮೇಲೆ ಕ್ರಮ ಕೈಗೊಳ್ಳಲಾಗುವುದು ಎಂದು ಎಚ್ಚರಿಕೆ ನೀಡಿದರು. ಕ್ಯೂಆರ್ ಕೋಡ್ ಮೂಲಕ ಬೀಜ ವಿತರಣೆ ಮಾಡಲಾಗುತ್ತಿದ್ದು, ಕೆಲವೊಮ್ಮೆ ತಾಂತ್ರಿಕ ತೊಂದರೆ ಉಂಟಾದಾಗ ಪರ್ಯಾಯ ವ್ಯವಸ್ಥೆ ಕೂಡ ಮಾಡಿಕೊಳ್ಳಬೇಕು ಎಂದರು.

ಕಳಪೆ ಬೀಜ ವಿತರಣೆಯಾಗುತ್ತಿರುವ ಬಗ್ಗೆ ಕೆಲ ಜಿಲ್ಲೆಗಳಿಂದ ದೂರುಗಳು ಬರುತ್ತಿವೆ. ಈ ಬಗ್ಗೆ ಅಧಿಕಾರಿಗಳು ತೀವ್ರ ನಿಗಾ ವಹಿಸಬೇಕು. ಇಂತಹ ಘಟನೆಗಳು ಮರುಕಳಿಸಬಾರದು. ಇಂತಹ ಘಟನೆ ಕಂಡುಬಂದರೆ ಸಂಬಂಧಿಸಿದ ಅಧಿಕಾರಿಗಳನ್ನೇ ಹೊಣೆ ಮಾಡಲಾಗುವುದು. ಪ್ರಮಾಣೀಕರಣ ಇಲ್ಲದೇ ಬೀಜ ಮಾರಾಟವನ್ನು ವಿಚಕ್ಷಣಾ ತಂಡಗಳು ಪತ್ತೆ ಮಾಡಬೇಕು. ಈ ರೀತಿಯ ಅಕ್ರಮ ಕಂಡುಬಂದರೆ ತ್ವರಿತವಾಗಿ ಕಠಿಣ ಕ್ರಮ ಕೈಗೊಳ್ಳಬೇಕು. ಬೀಜ-ಗೊಬ್ಬರ ಮಾರಾಟ ಮಳಿಗೆಗಳನ್ನು ಸ್ವತಃ ಪರಿಶೀಲಿಸಿ ದಾಸ್ತಾನು ಲಭ್ಯತೆ ಹಾಗೂ ಸಮರ್ಪಕವಾಗಿ ವಿತರಣೆಗೆ ಕ್ರಮ ವಹಿಸಬೇಕು. ಇತ್ತೀಚೆಗೆ ಮಳೆಯಿಂದ ಉಂಟಾಗಿರುವ ಬೆಳೆಹಾನಿ ಕುರಿತು ಕೂಡಲೇ ಜಂಟಿ ಸಮೀಕ್ಷೆ ಪೂರ್ಣಗೊಳಿಸಿ ಪರಿಹಾರ ಪೋರ್ಟಲ್ ನಲ್ಲಿ ದತ್ತಾಂಶ ದಾಖಲಿಸಬೇಕು ಎಂದು ತಿಳಿಸಿದರು. ರೈತರ ದೂರುಗಳ ಸ್ವೀಕಾರ ಹಾಗೂ ಪರಿಹಾರ ಕ್ರಮಗಳನ್ನು ತ್ವರಿತಗೊಳಿಸಲು ಅನುಕೂಲವಾಗುವಂತೆ ಸಹಾಯವಾಣಿ ಕೇಂದ್ರಗಳನ್ನು ಸ್ಥಾಪಿಸಬೇಕು. ತಕ್ಷಣವೇ ಸ್ಪಂದಿಸುವ ಕೆಲಸ ಮಾಡಬೇಕು ಎಂದು ನಿರ್ದೇಶನ ನೀಡಿದರು.

ಈ ವೇಳೆ ಮಾತನಾಡಿದ ಕೃಷಿ ಇಲಾಖೆಯ ಕಾರ್ಯದರ್ಶಿ ಅನ್ಬುಕುಮಾರ್, ಮುಂಗಾರು ಮಳೆ ವಿಳಂಬದಿಂದಾಗಿ ಏಕ ಕಾಲಕ್ಕೆ ಬಿತ್ತನೆ ಆರಂಭಗೊಳ್ಳಲಿರುವುದರಿಂದ ಬಿತ್ತನೆ ಬೀಜ, ರಸಗೊಬ್ಬರ ಲಭ್ಯತೆಯನ್ನು ರಾಜ್ಯದಾದ್ಯಂತ ಖಚಿತಪಡಿಸಿಕೊಳ್ಳಲಾಗಿದೆ. ಬೆಳಗಾವಿ ಜಿಲ್ಲೆಯ ಮೂಡಲಗಿಯಲ್ಲಿ ಇತ್ತೀಚೆಗೆ ಆಲಿಕಲ್ಲು ಮಳೆಯಿಂದ ಉಂಟಾದ ಹಾನಿಯ ಕುರಿತು ಜಂಟಿ ಸಮೀಕ್ಷೆ ಪೂರ್ಣಗೊಳಿಸಿ ಪರಿಹಾರ ಪೋರ್ಟಲ್ ನಲ್ಲಿ ಅಪ್ ಲೋಡ್ ಮಾಡಲಾಗಿದೆ. ಕೂಡಲೇ ಪರಿಹಾರ ನೀಡಲಾಗುವುದು ಎಂದು ಅನ್ಬುಕುಮಾರ್ ತಿಳಿಸಿದರು.

ಬಿತ್ತನೆಗೆ ಅನುಕೂಲ ಆಗುವಂತೆ ಮಳೆ ಆಗಿಲ್ಲ: ಬೆಳಗಾವಿ ಜಿಲ್ಲೆಯಲ್ಲಿ ಇದುವರೆಗೆ 93 ಮಿ.ಮೀ. ಮಳೆಯಾಗಬೇಕಿತ್ತು. 86 ಮಿ.ಮೀ. ಮಳೆಯಾಗಿದ್ದು, ಶೇ.7ರಷ್ಟು ಮಳೆ ಕೊರತೆಯಾಗಿರುತ್ತದೆ. ಬೆಳಗಾವಿ ಜಿಲ್ಲೆಯಲ್ಲಿ 35 ರೈತ ಸಂಪರ್ಕ ಕೇಂದ್ರಗಳು ಸೇರಿದಂತೆ 170 ಕೇಂದ್ರಗಳಲ್ಲಿ ಬೀಜ ವಿತರಣೆ ಮಾಡಲಾಗುತ್ತಿದೆ. 47,375 ಕ್ವಿಂಟಲ್ ಬಿತ್ತನೆ ಬೀಜ ದಾಸ್ತಾನು ಇದೆ. ಜಿಲ್ಲೆಯಲ್ಲಿ ಬಿತ್ತನೆ ಬೀಜಗಳ ಕೊರತೆ ಇರುವುದಿಲ್ಲ. ರಸಗೊಬ್ಬರ 2.25 ಲಕ್ಷ ಮೆಟ್ರಿಕ್ ಟನ್ ಲಭ್ಯವಿರುತ್ತದೆ. ಯಾವುದೇ ರೀತಿಯ ಕೊರತೆ ಇರುವುದಿಲ್ಲ. ಆದರೆ ಬಿತ್ತನೆಗೆ ಅನುಕೂಲ ಆಗುವಂತೆ ಮಳೆಯಾಗಿರುವುದಿಲ್ಲ ಎಂದು ಕೃಷಿ ಇಲಾಖೆಯ ಉಪ ನಿರ್ದೇಶಕರು ಸಭೆಯಲ್ಲಿ ವಿವರಿಸಿದರು.

ಸಭೆಯಲ್ಲಿ ಕೃಷಿ ನಿರ್ದೇಶಕರಾದ ಜಿ.ಟಿ.ಪುತ್ರ, ಅಪರ ಕೃಷಿ ನಿರ್ದೇಶಕರಾದ ಸಿ.ಬಿ.ಬಾಲರೆಡ್ಡಿ, ಜಿಲ್ಲಾ ಪಂಚಾಯತ್​ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಹರ್ಷಲ್ ಭೋಯರ್, ಅಪರ ಜಿಲ್ಲಾಧಿಕಾರಿ ಕೆ.ಟಿ.ಶಾಂತಲಾ ಉಪಸ್ಥಿತರಿದ್ದರು. ಬೆಳಗಾವಿ ವಿಭಾಗದ ವಿಜಯಪುರ, ಬಾಗಲಕೋಟ, ಗದಗ, ಹಾವೇರಿ, ಬೆಳಗಾವಿ, ಉತ್ತರ ಕನ್ನಡ, ಧಾರವಾಡ ಜಿಲ್ಲೆಗಳ ಜಂಟಿ ಕೃಷಿ ನಿರ್ದೇಶಕರು ಪಾಲ್ಗೊಂಡಿದ್ದರು.

ಇದನ್ನೂ ಓದಿ :ಸಣ್ಣ ನೀರಾವರಿ ಇಲಾಖೆಯಲ್ಲಿ ಯಾವುದೇ ಅಕ್ರಮ ಕಂಡು ಬಂದರೆ ವರದಿ ನೀಡಲು ಸೂಚನೆ: ಸಚಿವ ಬೋಸರಾಜ್

ABOUT THE AUTHOR

...view details