ಅಥಣಿ:ತಾಲೂಕಿನ ಅಡಹಳ್ಳಿ ಗ್ರಾಮ ಪಂಚಾಯತ್ನ ಕೆಲವು ಅಧಿಕಾರಿಗಳು ಹಾಗೂ ಸಿಬ್ಬಂದಿ, ಸರ್ಕಾರದ ಯೋಜನೆಗಳನ್ನು ತಮ್ಮ ಸಂಬಂಧಿಕರಿಗೆ ಹಾಗೂ ಅವರ ಕುಟುಂಬದವರಿಗೆ ಬಳಸಿಕೊಳ್ಳುತ್ತಿದ್ದಾರೆ ಎಂದು ಗ್ರಾಮಸ್ಥರು ಆರೋಪಿಸಿ ಅಥಣಿ ತಹಶೀಲ್ದಾರ್ ದುಂಡಪ್ಪ ಕೋಮಾರ ಅವರಿಗೆ ಮನವಿ ಪತ್ರ ಸಲ್ಲಿಸಿದರು.
ಅಡಹಳ್ಳಿ ಗ್ರಾಮ ಪಂಚಾಯತ್ನಲ್ಲಿ ಅವ್ಯವಹಾರ ಆರೋಪ: ಗ್ರಾಮಸ್ಥರಿಂದ ಪ್ರತಿಭಟನೆ - ಅಡಹಳ್ಳಿ ಗ್ರಾಮ ಪಂಚಾಯತ್ನಲ್ಲಿ ಅವ್ಯವಹಾರ
ಅಥಣಿ ತಾಲೂಕಿನ ಅಡಹಳ್ಳಿ ಗ್ರಾಮ ಪಂಚಾಯತ್ನಲ್ಲಿ ಅವ್ಯವಹಾರ ನಡೆದಿದೆ ಎಂದು ಆರೋಪಿಸಿ ಗ್ರಾಮಸ್ಥರು ತಹಶೀಲ್ದಾರ್ ಕಚೇರಿ ಎದುರು ಪ್ರತಿಭಟನೆ ನಡೆಸಿ ಅವ್ಯವಹಾರ ಮಾಡಿರುವ ಅಧಿಕಾರಗಳ ವಿರುದ್ಧ ಕ್ರಮಕ್ಕೆ ಆಗ್ರಹಿಸಿದರು.

ಪಟ್ಟಣದ ಮಿನಿ ವಿಧಾನಸೌಧದ ಮುಂಭಾಗದಲ್ಲಿ ನ್ಯಾಯಕ್ಕಾಗಿ ಸಾಂಕೇತಿಕವಾಗಿ ಪ್ರತಿಭಟನೆ ನಡೆಸಿ, ಗ್ರಾಮ ಪಂಚಾಯತ್ ಅಧಿಕಾರಿಗಳ ವಿರುದ್ಧ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು. ಇದೇ ವೇಳೆ ಗ್ರಾಮಸ್ಥ ಸಂತೋಷ ಕೆಂಚನ್ನವರ ಮಾತನಾಡಿ, ಕಳೆದ ಹಲವಾರು ವರ್ಷಗಳಿಂದ ರಾಜ್ಯ ಮತ್ತು ಕೇಂದ್ರ ಸರ್ಕಾರದ ಯೋಜನೆಗಳು ಬಡ ಜನರಿಗೆ ತಲುಪುತ್ತಿಲ್ಲ. ಫಲಾನುಭವಿಗಳಾಗಿ ಕೇವಲ ತಮ್ಮ ಸಂಬಂಧಿಕರಿಗೆ ಯೋಜನೆಗಳನ್ನು ತಲುಪಿಸಿ ಸಾರ್ವಜನಿಕರಿಗೆ ಮತ್ತು ಸರ್ಕಾರವನ್ನು ವಂಚಿಸಲಾಗುತ್ತಿದೆ ಎಂದು ಆರೋಪಿಸಿದರು.
ಪಂಚಾಯತಿಯಲ್ಲಿ ಅವ್ಯವಹಾರ ನಡೆದಿರುವ ಬಗ್ಗೆ ಅಥಣಿ ತಾಲೂಕು ಪಂಚಾಯತ್ ಕಾರ್ಯನಿರ್ವಾಹಕ ಅಧಿಕಾರಿ ರವಿ ಬಂಗಾರಪ್ಪನವರ ಗಮನಕ್ಕೆ ತಂದರೂ ಕೂಡ ಸರಿಯಾದ ಸ್ಪಂದನೆ ಸಿಗಲಿಲ್ಲ. ಈ ಹಿನ್ನೆಲೆಯಲ್ಲಿ ಅಡಹಳ್ಳಿ ಗ್ರಾಮಸ್ಥರು ತಾಲೂಕು ದಂಡಾಧಿಕಾರಿ ದುಂಡಪ್ಪಾ ಕೋಮಾರ ಅವರಿಗೆ ಮನವಿ ಸಲ್ಲಿಸಿ ಈ ಬಗ್ಗೆ ಸೂಕ್ತ ತನಿಖೆ ನಡೆಸಿ ನ್ಯಾಯ ಒದಗಿಸಿಕೊಡಬೇಕೆಂದು ಆಗ್ರಹಿಸಿದರು.