ತುಮಕೂರು:ಇಲ್ಲಿನ ಡಿಸಿಸಿ ಬ್ಯಾಂಕ್ ಸೂಪರ್ ಸೀಡ್ ಆದೇಶಕ್ಕೆ ಸಹಕಾರ ಸಂಘಗಳ ಅಪರ ನಿಬಂಧಕರ ನ್ಯಾಯಾಲಯ ತಡೆಯಾಜ್ಞೆ ನೀಡಿದೆ.
ತುಮಕೂರು ಡಿಸಿಸಿ ಬ್ಯಾಂಕ್ ಸೂಪರ್ ಸೀಡ್ ಆದೇಶಕ್ಕೆ ತಡೆಯಾಜ್ಞೆ ನೀಡಿದೆ ತುಮಕೂರು ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕ್ ಆಡಳಿತ ಮಂಡಳಿಯನ್ನು ರದ್ದುಗೊಳಿಸುವ ಸಂದರ್ಭದಲ್ಲಿ ಸಹಜ ನ್ಯಾಯ ತತ್ವ ಪಾಲನೆ ಮಾಡಿಲ್ಲ ಹಾಗೂ ಭಾರತೀಯ ರಿಸರ್ವ್ ಬ್ಯಾಂಕ್ ರಾಷ್ಟ್ರೀಯ ಬ್ಯಾಂಕಿನೊಂದಿಗೆ ಸಮಾಲೋಚನೆ ನಡೆಸಿಲ್ಲ ಮತ್ತು ಸಹಕಾರ ಸಂಘಗಳ ಕಾಯ್ದೆ ಪಾಲನೆ ಆಗದಿರುವುದು ಮೇಲ್ನೋಟಕ್ಕೆ ಕಂಡುಬಂದಿದೆ ಎಂದು ತಡೆಯಾಜ್ಞೆ ಆದೇಶದಲ್ಲಿ ಉಲ್ಲೇಖಿಸಲಾಗಿದೆ.
ಜುಲೈ19ರಂದು ಬೆಂಗಳೂರು ಪ್ರಾಂತದ ಸಹಕಾರ ಸಂಘಗಳ ಜಂಟಿ ನಿಬಂಧಕರು ಸೂಪರ್ ಸೀಡ್ಗೆ ಆದೇಶ ಮಾಡಿದ್ದರು. ಜಿಲ್ಲಾಧಿಕಾರಿ ರಾಕೇಶ್ ಕುಮಾರ್ ಡಿಸಿಸಿ ಬ್ಯಾಂಕ್ ಆಡಳಿತಾಧಿಕಾರಿಯಾಗಿ ಅಧಿಕಾರ ವಹಿಸಿಕೊಂಡಿದ್ದರು.
ಸೂಪರ್ ಸೀಡ್ ಆದೇಶವನ್ನು ರದ್ದುಗೊಳಿಸುವಂತೆ ಕೋರಿ ಡಿಸಿಸಿ ಬ್ಯಾಂಕಿನ ಅಧ್ಯಕ್ಷರು ಕೆ ಎನ್ ರಾಜಣ್ಣ ಮತ್ತು ಇತರ ನಿರ್ದೇಶಕರು ಸಹಕಾರ ಸಂಘಗಳ ಅಪರ ನಿಬಂಧಕರ ನ್ಯಾಯಾಲಯದ ಮೊರೆ ಹೋಗಿದ್ದರು.
ಪ್ರತಿವಾದಿಗಳನ್ನಾಗಿ ಸಹಕಾರ ಸಂಘಗಳ ಜಂಟಿ ನಿಬಂಧಕರು, ಡಿಸಿಸಿ ಬ್ಯಾಂಕ್ ಮುಖ್ಯಕಾರ್ಯನಿರ್ವಹಣಾಧಿಕಾರಿ, ಡಿಸಿಸಿ ಬ್ಯಾಂಕ್ ಆಡಳಿತಾಧಿಕಾರಿ ಹಾಗೂ ಜಿಲ್ಲಾಧಿಕಾರಿ, ಅಪೆಕ್ಸ್ ಬ್ಯಾಂಕ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ, ಸಹಕಾರ ಚುನಾವಣಾ ಪ್ರಾಧಿಕಾರ ಆಯುಕ್ತರನ್ನು ಮಾಡಲಾಗಿತ್ತು.
ವಾದ ಮತ್ತು ಪ್ರತಿವಾದವನ್ನು ಆಲಿಸಿರುವ ನ್ಯಾಯಾಲಯವು ಮೇಲ್ಮನವಿದಾರರ ಕೆ ಎನ್ ರಾಜಣ್ಣ ಅವರ ಆರೋಪಗಳನ್ನು ಪರಾಮರ್ಶಿಸಲು ಮತ್ತು ದಾಖಲಾತಿಗಳನ್ನು ಪರಿಶೀಲಿಸಬೇಕಾಗಿದೆ ಪರಿಶೀಲಿಸಲು ಸಮಯದ ಅವಶ್ಯಕತೆ ಇದೆ. ಅಲ್ಲಿವರೆಗೂ ಮೇಲ್ಮನವಿದಾರರಿಗೆ ಉಂಟಾಗಬಹುದಾದ ಬಾಧಕತೆ ಮತ್ತು ನಷ್ಟ ಪರಿಗಣಿಸಿ ಪ್ರಶ್ನೆ ಆದೇಶವನ್ನು ಮೇಲಿನ ತಿಳಿಸಿರುವ ಮಾನ್ಯ ನ್ಯಾಯಾಲಯದ ಆದೇಶಕ್ಕೆ ಅನುಗುಣವಾಗಿ ಸೂಪರ್ ಸೀಡ್ ಆದೇಶವನ್ನು ತಡೆಹಿಡಿಯುವುದು ಸೂಕ್ತವೆಂದು ನ್ಯಾಯಾಲಯ ನಿರ್ಧರಿಸಿದೆ.