ಕರ್ನಾಟಕ

karnataka

ETV Bharat / state

ನಾಳೆ ವಿಜಯನಗರ ಶ್ರೀ ಕೃಷ್ಣದೇವರಾಯ ವಿವಿ ಘಟಿಕೋತ್ಸವ.. ಮೂವರಿಗೆ ಗೌರವ ಡಾಕ್ಟರೇಟ್ ಪ್ರದಾನ

ರಾಜ್ಯಪಾಲರು ಥಾವರಚಂದ್ ಗೆಹ್ಲೋಟ್ ಅವರು ಕೃಷ್ಣದೇವರಾಯ ವಿವಿ ಘಟಿಕೋತ್ಸವದ ಅಧ್ಯಕ್ಷತೆ ವಹಿಸಲಿದ್ದಾರೆ. ವಿವಿಧ ಕ್ಷೇತ್ರಗಳಲ್ಲಿ ಸಾಧನೆಗೈದ ಕವಿತಾ ಮಿಶ್ರಾ, ಹಿರೇಹಾಳ್ ಇಬ್ರಾಹಿಂ, ಪಂಡಿತ ಎಂ ವೆಂಕಟೇಶ್ ಕುಮಾರ್ ಅವರಿಗೆ ಗೌರವ ಡಾಕ್ಟರೇಟ್ ನೀಡಿ ಗೌರವಿಸಲಾಗುವುದು: ಕುಲಪತಿ ಸಿದ್ದು ಆಲಗೂರು ಮಾಹಿತಿ

By

Published : Jul 12, 2023, 5:25 PM IST

Prof Siddu P Algur addressed the press conference.
ಕೃಷ್ಣದೇವರಾಯ ವಿವಿ ಕುಲಪತಿ ಪ್ರೊ ಸಿದ್ದು ಪಿ ಆಲಗೂರ್ ಸುದ್ದಿಗೋಷ್ಠಿಯಲ್ಲಿ ಮಾತನಾಡಿದರು.

ಬಳ್ಳಾರಿ:ಇಲ್ಲಿನ ವಿಜಯನಗರ ಶ್ರೀ ಕೃಷ್ಣದೇವರಾಯ ವಿಶ್ವವಿದ್ಯಾಲಯದ 2021-22 ನೇ ಸಾಲಿನ 11ನೇ ವಾರ್ಷಿಕ ಘಟಿಕೋತ್ಸವ ಕಾರ್ಯಕ್ರಮವು ಜುಲೈ 13 (ಗುರುವಾರ) ಬೆಳಗ್ಗೆ 10ಕ್ಕೆ ವಿಶ್ವವಿದ್ಯಾಲಯದ ಬಯಲು ರಂಗಮಂದಿರದ ಆವರಣದಲ್ಲಿ ನಡೆಯಲಿದೆ. ಘಟಿಕೋತ್ಸವದಲ್ಲಿ ವಿವಿಧ ಕ್ಷೇತ್ರಗಳಲ್ಲಿ ಸಾಧನೆಗೈದ ಮೂರು ಜನ ಮಹನೀಯರಿಗೆ ಗೌರವ ಡಾಕ್ಟರೇಟ್ ಪ್ರದಾನ ಮಾಡಲಾಗುವುದು ಎಂದು ಕುಲಪತಿ ಪ್ರೊ ಸಿದ್ದು ಪಿ ಆಲಗೂರ್ ತಿಳಿಸಿದರು.

ವಿಶ್ವ ವಿದ್ಯಾಲಯದ ಅಂಬೇಡ್ಕರ್ ಸಭಾಂಗಣದಲ್ಲಿ ಕರೆದ ಮಾಧ್ಯಮಗೋಷ್ಟಿಯಲ್ಲಿ ಮಾತನಾಡಿದ ಅವರು, ಘಟಿಕೋತ್ಸವದಲ್ಲಿ ರಾಜ್ಯದ ಘನತೆವೆತ್ತ ರಾಜ್ಯಪಾಲರು ಹಾಗೂ ವಿಶ್ವವಿದ್ಯಾಲಯದ ಕುಲಾಧಿಪತಿಯಾದ ಥಾವರಚಂದ್ ಗೆಹ್ಲೋಟ್ ಸಮಾರಂಭದ ಅಧ್ಯಕ್ಷತೆ ವಹಿಸಲಿದ್ದಾರೆ. ಘಟಿಕೋತ್ಸವದ ಭಾಷಣವನ್ನು ನವದೆಹಲಿಯ ಇಂಡಿಯನ್ ಕೌನ್ಸಿಲ್ ಆಫ್ ಸೋಶಿಯಲ್ ಸೈನ್ಸ್ ರಿಸರ್ಚ್‍ನ ಅಧ್ಯಕ್ಷ ಡಾ. ಜೆ ಕೆ ಬಜಾಜ್ ಅವರು ಮಾಡಲಿದ್ದಾರೆ ಎಂದು ತಿಳಿಸಿದರು.

ಉನ್ನತ ಶಿಕ್ಷಣ ಸಚಿವ ಡಾ ಎಂ ಸಿ ಸುಧಾಕರ್ ಅವರು ಕಾರ್ಯಕ್ರಮದಲ್ಲಿ ಹಾಜರಿರಲಿದ್ದಾರೆ. ವಾರ್ಷಿಕ ಘಟಿಕೋತ್ಸವದ ನೇತೃತ್ವವನ್ನು ವಿಶ್ವವಿದ್ಯಾಲಯದ ಕುಲಪತಿ ಪ್ರೊ ಸಿದ್ದು ಆಲಗೂರ ವಹಿಸಲಿದ್ದಾರೆ. ವಿಶ್ವವಿದ್ಯಾಲಯದ ಸಿಂಡಿಕೇಟ್ ಸದಸ್ಯರು, ವಿದ್ಯಾವಿಷಯಕ ಪರಿಷತ್ ಸದಸ್ಯರುಗಳು, ಕುಲಸಚಿವ ಎಸ್ ಸಿ ಪಾಟೀಲ್, ಕುಲಸಚಿವ (ಮೌಲ್ಯಮಾಪನ) ರಮೇಶ್ ಓಲೇಕಾರ ಅವರು ಭಾಗವಹಿಸುವರು ಎಂದು ಮಾಹಿತಿ ನೀಡಿದರು.

3 ಜನರಿಗೆ ಗೌರವ ಡಾಕ್ಟರೇಟ್ ಪ್ರದಾನ: ವಿವಿಧ ಕ್ಷೇತ್ರಗಳಲ್ಲಿ ಸಾಧನೆಗೈದ ಕವಿತಾ ಮಿಶ್ರಾ, ಹಿರೇಹಾಳ್ ಇಬ್ರಾಹಿಂ, ಪಂಡಿತ ಎಂ.ವೆಂಕಟೇಶ್ ಕುಮಾರ್ ಸೇರಿದಂತೆ ಮೂವರಿಗೆ ಈ ಬಾರಿಯ ಘಟಿಕೋತ್ಸವದಲ್ಲಿ ಗೌರವ ಡಾಕ್ಟರೇಟ್ ನೀಡಿ ಗೌರವಿಸಲಾಗುವುದು ಎಂದು ಕುಲಪತಿ ಸಿದ್ದು ಆಲಗೂರು ಹೇಳಿದರು.

ಈ ಬಾರಿಯ ಘಟಿಕೋತ್ಸವದಲ್ಲಿ ಸ್ನಾತಕ ಮತ್ತು ಸ್ನಾತಕೋತ್ತರ ವಿವಿಧ ವಿಭಾಗಗಳ 42 ವಿದ್ಯಾರ್ಥಿಗಳು 53 ಚಿನ್ನದ ಪದಕಗಳನ್ನು ಮುಡಿಗೇರಿಸಿಕೊಳ್ಳಲಿದ್ದಾರೆ. ವಿವಿಧ ವಿಭಾಗದ ಒಟ್ಟು 32 ಸಂಶೋಧನಾರ್ಥಿಗಳು ಡಾಕ್ಟರೇಟ್ ಪದವಿ ಪಡೆಯಲಿದ್ದಾರೆ. ಎಲ್ಲ ವಿಭಾಗಗಳ ಸ್ನಾತಕ ಪದವಿಯ 51 ವಿದ್ಯಾರ್ಥಿಗಳು ಮತ್ತು ಸ್ನಾತಕೋತ್ತರ ಪದವಿಯಿಂದ 72 ಸೇರಿ ಒಟ್ಟು 123 ವಿದ್ಯಾರ್ಥಿಗಳು ರ್ಯಾಂಕ್ ಪ್ರಮಾಣ ಪತ್ರಗಳನ್ನು ಸ್ವೀಕರಿಸಲಿದ್ದಾರೆ.

03 ಚಿನ್ನದ ಪದಕ ಪಡೆದ ವಿದ್ಯಾರ್ಥಿಗಳು: ಸ್ನಾತಕೋತ್ತರ ಕೇಂದ್ರ ನಂದಿಹಳ್ಳಿಯ ಖನಿಜ ಸಂಸ್ಕರಣ ವಿಭಾಗದಲ್ಲಿ ರುಬಾನ್.ಎಲ್, ವಿಜಯನಗರ ಶ್ರೀಕೃಷ್ಣದೇವರಾಯ ವಿಶ್ವವಿದ್ಯಾಲಯದ ಔದ್ಯೋಗಿಕ ರಸಾಯನ ಶಾಸ್ತ್ರದಲ್ಲಿ ವಿದ್ಯಾರ್ಥಿ ಹಜಿರಾಜಿ.ಎ ಹಾಗೂ ಕೊಪ್ಪಳ ಶ್ರೀ ಗವಿಸಿದ್ದೇಶ್ವರ ಮಹಾವಿದ್ಯಾಲಯದ ವಾಣಿಜ್ಯ ಶಾಸ್ತ್ರದಲ್ಲಿ ರುಷಬ್ ಕುಮಾರ್ ಮೆಹ್ತಾ ತಲಾ ಮೂರು ಚಿನ್ನದ ಪದಕ ಪಡೆದಿದ್ದಾರೆ.

02 ಚಿನ್ನದ ಪದಕ ಪಡೆದವರು: ಸ್ನಾತಕೋತ್ತರ ಕೇಂದ್ರ ನಂದಿಹಳ್ಳಿಯ ಕನ್ನಡ ವಿಷಯದಲ್ಲಿ ಮೋಹನ್‍ಕುಮಾರ್ ಆರ್.ಜಿ, ವಿಜಯನಗರ ಶ್ರೀಕೃಷ್ಣದೇವರಾಯ ವಿಶ್ವವಿದ್ಯಾಲಯದ ರಸಾಯನಶಾಸ್ತ್ರ ವಿಷಯದಲ್ಲಿ ಸ್ವಾತಿ.ಎ, ಭೌತಶಾಸ್ತ್ರ ವಿಷಯದಲ್ಲಿ ಕಾರ್ತಿಕ್ ರೆಡ್ಡಿ ಹೆಚ್​. ಕೆ, ಸ್ನಾತಕೋತ್ತರ ಕೇಂದ್ರ ನಂದಿಹಳ್ಳಿಯ ಸಮಾಜಶಾಸ್ತ್ರದಲ್ಲಿ ಸುಮಾ ಕಾಯಣ್ಣನವರ ಹಾಗೂ ಹೊಸಪೇಟೆಯ ವಿಜಯನಗರ ಮಹಾವಿದ್ಯಾಲಯದ ಬಿಎಸ್‍ಸಿ ವಿಭಾಗದಲ್ಲಿ ವಿಶಾಲಾಕ್ಷಿ ಅವರು ತಲಾ ಎರಡು ಚಿನ್ನದ ಪದಕ ಪಡೆದುಕೊಂಡಿದ್ದಾರೆ.

ಪರೀಕ್ಷಾ ಫಲಿತಾಂಶ: ವಿಶ್ವವಿದ್ಯಾಲಯದ ಸ್ನಾತಕ ಪದವಿಯಲ್ಲಿ ಒಟ್ಟು 12,423 ಸ್ನಾತಕ ಪದವಿ ವಿದ್ಯಾರ್ಥಿಗಳು ಅಂತಿಮ ಪರೀಕ್ಷೆ ಬರೆದು, ತಮ್ಮ ಪದವಿಗಳನ್ನು ಯಶಸ್ವಿಯಾಗಿ ಪೂರ್ಣಗೊಳಿಸಿದ್ದಾರೆ. ಸ್ನಾತಕೋತ್ತರ ಪದವಿಯಲ್ಲಿ ಒಟ್ಟು 1,712 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿ, ಉತ್ತೀರ್ಣರಾಗಿದ್ದಾರೆ.

ಗೌರವ ಡಾಕ್ಟರೇಟ್ ಪಡೆದ ಮಹನೀಯರು..

ಗೌರವ ಡಾಕ್ಟರೇಟ್ ಪಡೆದ ಕವಿತಾ ಮಿಶ್ರಾ, ದಿ.ಹಿರೇಹಾಳ್ ಇಬ್ರಾಹಿಂ, ಪಂಡಿತ ಎಂ. ವೆಂಕಟೇಶ್ ಕುಮಾರ್

ಕವಿತಾ ಮಿಶ್ರಾ(ಕೃಷಿ ಕ್ಷೇತ್ರ): ಕವಿತಾ ಮಿಶ್ರಾ ಅವರು ಕೃಷಿ ಮತ್ತು ಕೃಷಿ ಆಧಾರಿತ ಉದ್ಯಮದಲ್ಲಿ ಮಹತ್ತರ ಸಾಧನೆಗೈದಿದ್ದಾರೆ. ಬಹುಬೆಳೆ ಪದ್ಧತಿಯನ್ನು ಅಳವಡಿಸಿಕೊಂಡು ಕಾರ್ಯರೂಪಕ್ಕೆ ತರುವುದರ ಜೊತೆ-ಜೊತೆಗೆ ಹೈನುಗಾರಿಕೆ ಮತ್ತು ಕೃಷಿ ನರ್ಸರಿ ಪ್ರಾರಂಭಿಸಿರುತ್ತಾರೆ. ಸುಸ್ಥಿರ ಕೃಷಿ ಪದ್ಧತಿಯ ಕುರಿತು ಹಳ್ಳಿಗಳಲ್ಲಿ ಜಾಗೃತಿ ಮೂಡಿಸಿರುವ ಅವರಿಗೆ ಅತ್ಯುತ್ತಮ ರೈತ ಪ್ರಶಸ್ತಿ, ಗೋಲ್ಡ್ ಪ್ರಶಸ್ತಿ, ಅತ್ಯುತ್ತಮ ತೋಟಗಾರಿಕಾ ಪ್ರಶಸ್ತಿ, ಕೃಷಿ-ಋಷಿ ಪ್ರಶಸ್ತಿ, ರಾಣಿ ಚೆನ್ನಮ್ಮ ಪ್ರಶಸ್ತಿ ಜೊತೆಗೆ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ಲಭಿಸಿವೆ.

ದಿ. ಹಿರೇಹಾಳ್ ಇಬ್ರಾಹಿಂ(ಸಮಾಜ ಸೇವೆ):ದಿ.ಹಿರೇಹಾಳ್ ಇಬ್ರಾಹಿಂ ಅವರು ಸಾಹಿತ್ಯ ಮತ್ತು ಧಾರ್ಮಿಕ ಸಾಮರಸ್ಯಕ್ಕೆ ಅಪಾರ ಕೊಡುಗೆ ನೀಡಿದ್ದಾರೆ. ಶಿವಮೊಗ್ಗದಲ್ಲಿ ನಡೆದ 49ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಸ್ವಾಗತ ಮತ್ತು ಸಾಂಸ್ಕೃತಿಕ ಸಮಿತಿಯ ನೇತೃತ್ವ ವಹಿಸಿದ್ದರು. ಕರ್ನಾಟಕ ಸಂಘದ ಉಪಾಧ್ಯಕ್ಷರಾಗಿ, ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಸದಸ್ಯರಾಗಿ ಸೇವೆ ಸಲ್ಲಿಸಿರುವ ಅವರು ಶಿವಮೊಗ್ಗದಲ್ಲಿ ಜೀವನ ಸಂಜೆ ಎಂಬ ವೃದ್ಧಾಶ್ರಮ ಸ್ಥಾಪಿಸಿರುವರು. ಮುಸ್ಲಿಂ ಪ್ರವಚನಗಳನ್ನು ಕನ್ನಡಕ್ಕೆ ಅನುವಾದಿಸಿರುವ ಇಬ್ರಾಹಿಂ ಅವರು ಕೋಮು ಸಾಮರಸ್ಯವನ್ನು ಬೆಳೆಸುವಲ್ಲಿ ಪ್ರಮುಖ ಪಾತ್ರವನ್ನು ವಹಿಸಿದ್ದಾರೆ.

ಪಂಡಿತ ಎಂ. ವೆಂಕಟೇಶ್ ಕುಮಾರ್(ಸಂಗೀತ ಕ್ಷೇತ್ರ):ಹೆಸರಾಂತ ಹಿಂದೂಸ್ತಾನಿ ಗಾಯಕ ಪಂಡಿತ ಎಂ ವೆಂಕಟೇಶ್ ಕುಮಾರ್ ಅವರು ಪಂಡಿತ್ ಪುಟ್ಟರಾಜ್ ಗವಾಯಿಗಳ ಮಾರ್ಗದರ್ಶನದಲ್ಲಿ ಸಂಗೀತ ತರಬೇತಿ ಪಡೆದಿದ್ದಾರೆ. ಕರ್ನಾಟಕ ಕಾಲೇಜಿನ ಸಂಗೀತ ವಿಭಾಗದಲ್ಲಿ ಅಧ್ಯಾಪಕರಾಗಿ ಸೇವೆ ಸಲ್ಲಿಸಿದ್ದಾರೆ.

ದಾಸರ ಪದಗಳು ಹಾಗೂ ವಚನಗಳ ಗಾಯನದ ಮೂಲಕ ಮನೆ ಮಾತಾಗಿರುವ ಇವರಿಗೆ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ, ಸಂಗೀತ ನಾಟಕ ಅಕಾಡೆಮಿ ಪ್ರಶಸ್ತಿ, ಕರ್ನಾಟಕ ವಿಶ್ವವಿದ್ಯಾಲಯ, ಧಾರವಾಡದಿಂದ ಗೌರವ ಡಾಕ್ಟರೇಟ್ ಪದವಿ, ವಚನ ಸಾಹಿತ್ಯಶ್ರೀ ಪ್ರಶಸ್ತಿ ಮತ್ತು 2016ರಲ್ಲಿ ಭಾರತ ಸರ್ಕಾರವು ಪದ್ಮ ಶ್ರೀ ಪ್ರಶಸ್ತಿಯನ್ನು ನೀಡಿ ಗೌರವಿಸಿದೆ ಎಂದು ಮಾಹಿತಿ ನೀಡಿದರು.

ನೂತನ ಕಟ್ಟಡ ಉದ್ಘಾಟನೆ ಸಮಾರಂಭ:ವಿಜಯನಗರ ಶ್ರೀ ಕೃಷ್ಣದೇವರಾಯ ವಿಶ್ವವಿದ್ಯಾಲಯದಲ್ಲಿ ಆಡಳಿತ ಕಟ್ಟಡದ ಮೊದಲನೇ ಮಹಡಿ, ಸೆಂಟರ್ ಆಫ್ ಎಕ್ಸಲೆನ್ಸ್ ಫಾರ್ ಮಲ್ಟಿಡಿಸಿಪ್ಲಿನರಿ ಅಡ್ವಾನ್ಸ್ಡ್ ರಿಸರ್ಚ್ ಫೆಸಿಲಿಟಿ, ಸಾಮಾನ್ಯ ವಿದ್ಯಾರ್ಥಿಗಳ ವಸತಿ ನಿಲಯ ಮತ್ತು ಸ್ವಾಮಿ ವಿವೇಕಾನಂದರ ಪ್ರತಿಮೆ ಅನಾವರಣ ಸೇರಿದಂತೆ ನೂತನ ಕಟ್ಟಡಗಳ ಉದ್ಘಾಟನೆ ಸಮಾರಂಭವು ಜುಲೈ 13 ರಂದು ಬೆಳಗ್ಗೆ 10 ಕ್ಕೆ ವಿಶ್ವ ವಿದ್ಯಾಲಯದ ಮುಖ್ಯ ಆವರಣದಲ್ಲಿ ನಡೆಯಲಿದೆ ಎಂದು ಕುಲಪತಿ ಸಿದ್ದು ಪಿ.ಆಲಗೂರ ತಿಳಿಸಿದರು.

ರಾಜ್ಯದ ರಾಜ್ಯಪಾಲರು ಹಾಗೂ ವಿಜಯನಗರ ಶ್ರೀಕೃಷ್ಣ ದೇವರಾಯ ವಿಶ್ವವಿದ್ಯಾಲಯದ ಕುಲಾಧಿಪತಿ ಥಾವರಚಂದ್ ಗೆಹ್ಲೋಟ್ ಅವರು ಉದ್ಘಾಟಿಸಲಿದ್ದಾರೆ. ಯುವಜನ ಸೇವಾ ಮತ್ತು ಕ್ರೀಡಾ ಇಲಾಖೆ, ಪರಿಶಿಷ್ಟ ವರ್ಗಗಳ ಕಲ್ಯಾಣ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಬಿ. ನಾಗೇಂದ್ರ, ಸಂಸದ ದೇವೆಂದ್ರಪ್ಪ ಅವರು ಭಾಗವಹಿಸಲಿದ್ದಾರೆ.

ಇದನ್ನೂಓದಿ:ಗ್ಯಾರಂಟಿ ಹಣ ಭರಿಸಲು ಸರ್ಕಾರಿ ಭೂಮಿ ಮಾರಾಟ ಇಲ್ಲ: ಕೃಷ್ಣ ಬೈರೇಗೌಡ

ABOUT THE AUTHOR

...view details