ಬಸವಕಲ್ಯಾಣ: ರಾಜ್ಯದಲ್ಲಿ ನೂತನವಾಗಿ ಅಸ್ತಿತ್ವಕ್ಕೆ ಬಂದಿರುವ ಮರಾಠ ಅಭಿವೃದ್ಧಿ ಪ್ರಾಧಿಕಾರಕ್ಕೆ ಸರ್ಕಾರ ತಮ್ಮನ್ನು ಅಧ್ಯಕ್ಷರನ್ನಾಗಿ ಮಾಡಿ ಸಮಾಜದ ಸೇವೆ ಸಲ್ಲಿಸಲು ಅವಕಾಶ ಕಲ್ಪಿಸಬೇಕು ಎಂದು ಚಿತ್ರನಟ ಹಾಗೂ ಬಿಜೆಪಿ ಪಕ್ಷದ ಬೆಂಗಳೂರು ನಗರದ ಕಲಾ ಮತ್ತು ಸಾಂಸ್ಕೃತಿಕ ಪ್ರಕೋಷ್ಠ ಸಂಚಾಲಕ ಕೆ.ಗಣೇಶರಾವ್ ಕೇಸರ್ಕರ್ ಮನವಿ ಮಾಡಿದ್ದಾರೆ.
ಚಿತ್ರನಟ ಕೆ.ಗಣೇಶರಾವ್ ಕೇಸರಕರ್ ನಗರದ ಜೀಜಾಮಾತಾ ಕಾಲೇಜಿನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕಳೆದ 22 ವರ್ಷಗಳಿಂದಲೂ ಬಿಜೆಪಿ ಪಕ್ಷದ ಸಕ್ರಿಯ ಕಾರ್ಯಕರ್ತನಾಗಿ ಹಾಗೂ ಪಕ್ಷ ಸೂಚಿಸಿರುವ ಜವಾಬ್ದಾರಿಗಳನ್ನು ಸಮರ್ಥವಾಗಿ ನಿಭಾಯಿಸುವ ಮೂಲಕ ಪಕ್ಷದ ಸಂಘನೆಗಾಗಿ ಶ್ರಮಿಸಿದ್ದು, ತಾವು ಸಲ್ಲಿಸಿದ ಸೇವೆ ಪರಿಗಣಿಸಿ ತಮ್ಮನ್ನು ಮರಾಠ ಅಭಿವೃದ್ಧಿ ಪ್ರಾಧಿಕಾರಕ್ಕೆ ಅಧ್ಯಕ್ಷರನ್ನಾಗಿ ನೇಮಕ ಮಾಡಬೇಕು ಎಂದು ಕೋರಿಕೊಂಡರು.
ಹಿಂದುಳಿದ ಮರಾಠಾ ಸಮಾಜದ ಸರ್ವಾಂಗೀಣ ಪ್ರಗತಿಯ ಉದ್ದೇಶದಿಂದ ರಾಜ್ಯ ಸರ್ಕಾರ ಮರಾಠ ಅಭಿವೃದ್ಧಿ ಪ್ರಾಧಿಕಾರ ಸ್ಥಾಪಿಸಿದ್ದು, ಸಮಾಜಕ್ಕೆ ಹರ್ಷ ತಂದಿದೆ. ಆದರೆ ಪ್ರಾಧಿಕಾರಕ್ಕೆ ಇನ್ನೂ ಅಧ್ಯಕ್ಷರ ನೇಮಕ ಮಾಡಿಲ್ಲ. ರಾಜ್ಯದಲ್ಲಿರುವ ಮರಾಠ ಸಮಾಜದ ಜನರೊಂದಿಗೆ ನಿರಂತರ ಸಂಪರ್ಕ ಹಾಗೂ ಉತ್ತಮ ಬಾಂಧವ್ಯ ಹೊಂದಿರುವ ತಮ್ಮನ್ನು ಅಧ್ಯಕ್ಷರನ್ನಾಗಿ ನೇಮಕ ಮಾಡಿದಲ್ಲಿ ಮರಾಠ ಸಮಾಜದ ಪ್ರಗತಿಗೆ ಅನುಕೂಲವಾಗಲಿದೆ ಎಂದರು.
ಓದಿ:ಮೈಸೂರು ಪಾಲಿಕೆ ಚುನಾವಣೆಯಲ್ಲಿ ಜೆಡಿಎಸ್-ಬಿಜೆಪಿ ಹೊಂದಾಣಿಕೆ: ಜಿಟಿಡಿ ಬೇಸರ
ಬೀದರ್ ಭಾಗದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಮರಾಠ ಸಮುದಾಯದ ಜನರಿದ್ದಾರೆ. ಈ ಭಾಗದ ಹಿರಿಯ ರಾಜಕೀಯ ಮುತ್ಸದ್ದಿಗಳು ಆಗಿರುವ ಮರಾಠ ಸಮಾಜದ ಹಿರಿಯ ಮುಖಂಡ ಮಾಜಿ ಶಾಸಕ ಎಂ.ಜಿ.ಮುಳೆ ಅವರ ಆಶೀರ್ವಾದ ಕೋರಲಾಗಿದೆ. ರಾಜ್ಯದ ವಿವಿಧೆಡೆ ತಾಲೂಕು, ಜಿಲ್ಲಾ ಕೇಂದ್ರಗಳಲ್ಲಿ ಸಭೆ ನಡೆಸಲಾಗುತ್ತಿದೆ. ಸಮುದಾಯದ ಜನರು ಎಲ್ಲೆಡೆ ನನ್ನ ಹೆಸರು ಪ್ರಸ್ತಾಪಿಸುತ್ತಿದ್ದಾರೆ. ರಾಜ್ಯದ ಅನೇಕ ಸಂಘಟನೆಗಳು ನನ್ನ ಬೆಂಬಲಕ್ಕೆ ನಿಂತಿವೆ. ಮುಖ್ಯಮಂತ್ರಿ ಬಿಎಸ್ವೈ ಅವರು ನನ್ನನ್ನು ಅಧ್ಯಕ್ಷ ಸ್ಥಾನಕ್ಕೆ ನೇಮಕ ಮಾಡಿ ಆದೇಶ ಹೊರಡಿಸಬೇಕು ಎಂದು ಕೋರಿದರು.