ಬಸವಕಲ್ಯಾಣ : ಅಬಕಾರಿ ಇಲಾಖೆಯಲ್ಲಿ ಕಾರ್ಯನಿರ್ವಹಿಸುತ್ತಿದ್ದ ಮಹಿಳಾ ಪಿಎಸ್ಐ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ನಗರದಲ್ಲಿ ನಡೆದಿದೆ.
ರೇಖಾ ಕರಣಕುಮಾರ ಕೋರಿ (29) ಆತ್ಮಹತ್ಯೆ ಮಾಡಿಕೊಂಡ ಮಹಿಳಾ ಪಿಎಸ್ಐ. ಇವರು ಮೂಲತಃ ಕಲಬುರಗಿ ಜಿಲ್ಲೆ ಆಳಂದ ತಾಲೂಕಿನ ಕಡಗಂಚಿ ಗ್ರಾಮದ ನಿವಾಸಿಯಾಗಿದ್ದು, ಕಳೆದ 8 ತಿಂಗಳಿಂದ ಇಲ್ಲಿಯ ಅಬಕಾರಿ ಇಲಾಖೆಯಲ್ಲಿ ಆರಕ್ಷಕ ಉಪ ನಿರೀಕ್ಷಕರಾಗಿ ಸೇವೆ ಸಲ್ಲಿಸುತ್ತಿದ್ದರು.
ಪತಿ ಹಾಗೂ ಕುಟುಂಬ ಸದಸ್ಯರೊಂದಿಗೆ ಬಾಡಿಗೆ ಮನೆಯೊಂದರಲ್ಲಿ ವಾಸಿಸುತಿದ್ದ ಇವರು, ಮನೆಯಿಂದ ಪತಿ ಹೊರಗಡೆ ತೆರಳಿದ್ದಾಗ ಫ್ಯಾನ್ಗೆ ನೇಣು ಬಿಗಿದುಕೊಂಡಿದ್ದಾರೆ. ತಕ್ಷಣ ಇವರನ್ನು ಆಸ್ಪತ್ರೆಗೆ ಸಾಗಿಸಲಾಗಿತ್ತಾದರೂ ಮಾರ್ಗದಲ್ಲಿಯೇ ಕೊನೆಯುಸಿರೆಳೆದರು.
ಮೃತ ಪಿಎಸ್ಐಗೆ 7 ವರ್ಷ ಹಾಗೂ ಒಂದೂವರೆ ವರ್ಷದ ಪುತ್ರರಿದ್ದಾರೆ ಎಂದು ಹೇಳಲಾಗಿದೆ. ಆತ್ಮಹತ್ಯೆಗೆ ಪ್ರಮುಖ ಕಾರಣ ತಿಳಿದು ಬಂದಿಲ್ಲ. ನಗರ ಪೊಲೀಸ್ ಠಾಣಾ ಪೊಲೀಸರು ಪ್ರಕರಣದ ತನಿಖೆ ನಡೆಸುತ್ತಿದ್ದಾರೆ.